ಉತ್ತರ ಕನ್ನಡದಲ್ಲಿ ಭಾರೀ ಮಳೆ; 3 ದಿನ ಆರೆಂಜ್ ಅಲರ್ಟ್

ಕಾರವಾರ, ಜೂನ್ 22; ಉತ್ತರ ಕನ್ನಡ ಜಿಲ್ಲೆಯಾದ್ಯಂತ ಅಬ್ಬರಿಸುತ್ತಿರುವ ಮಳೆ ಬುಧವಾರವೂ ಮುಂದುವರಿದಿದ್ದು, ಮೂರು ದಿನಗಳ‌‌ ಕಾಲ‌ ಆರೆಂಜ್ ಅಲರ್ಟ್ ಎಚ್ಚರಿಕೆ ನೀಡಲಾಗಿದೆ.

ರಾಜ್ಯದ ಕರಾವಳಿ ಜಿಲ್ಲೆಗಳು ಸೇರಿದಂತೆ ಹಲವು ಜಿಲ್ಲೆಗಳಲ್ಲಿ ಜೂನ್ 25ರವರೆಗೂ ಭಾರೀ ಮಳೆಯಾಗುವ ಮುನ್ಸೂಚನೆಯಿದೆ ಎಂದು ರಾಜ್ಯ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಕರಾವಳಿಯಲ್ಲಿ ಪ್ರತಿ ಗಂಟೆಗೆ 45 ಕಿ. ಮೀ. ವೇಗದಲ್ಲಿ ಗಾಳಿ ಬೀಸುತ್ತಿದ್ದು, ಸಮುದ್ರಕ್ಕೆ ಇಳಿಯದಂತೆ ಮೀನುಗಾರರಿಗೆ ಎಚ್ಚರಿಕೆ ನೀಡಲಾಗಿದೆ.

ಜಿಲ್ಲೆಯ ಕರಾವಳಿ ಹಾಗೂ ಮಲೆನಾಡು ಭಾಗಗಳಲ್ಲಿ ಬುಧವಾರ ಬೆಳಿಗ್ಗೆ 8 ಗಂಟೆವರೆಗೆ ಇದ್ದ ರೆಡ್ ಅಲರ್ಟ್ ವೇಳೆ ಧಾರಾಕಾರವಾಗಿ ಮಳೆಯಾಗಿದೆ. ಇದರಿಂದ ಕಾರವಾರ ಸೇರಿದಂತೆ ಕರಾವಳಿಯಲ್ಲಿ ತಗ್ಗು ಪ್ರದೇಶಗಳು ಜಲಾವೃತಗೊಂಡಿದ್ದು ಜನಸಾಮಾನ್ಯರು ಪರದಾಡುವಂತಾಗಿತ್ತು.

ಅಲ್ಲದೇ ಕಾರವಾರ ನಗರ ಪ್ರದೇಶಗಳಲ್ಲಿ ಭಾರೀ ಪ್ರಮಾಣದಲ್ಲಿ ಮಳೆ ಸುರಿದ ಕಾರಣ ನಗರದ ಕೆಲವೆಡೆ ತಗ್ಗು ಪ್ರದೇಶಗಳು ಜಲಾವೃತಗೊಂಡಿತ್ತು. ನಗರದ ಹಬ್ಬುವಾಡ, ಸೋನಾರವಾಡ, ಹೈಚರ್ಚ್ ರಸ್ತೆ ಸೇರಿದಂತೆ ಹಲವು ಪ್ರದೇಶಗಳಲ್ಲಿ ಮಳೆಯ ನೀರು ನದಿಯಂತೆ ಹರಿದು ರಸ್ತೆಗಳು ಜಲಾವೃತಗೊಂಡಿವೆ.

ಪಾದಚಾರಿಗಳು, ವಾಹನ ಸವಾರರ ಪರದಾಟ

ಪಾದಚಾರಿಗಳು, ವಾಹನ ಸವಾರರ ಪರದಾಟ

ಮಳೆಯ ನೀರು ಕಾಲುವೆಗಳಲ್ಲಿ ಸರಾಗವಾಗಿ ಹರಿದುಹೋಗಲು ಸಾಧ್ಯವಾಗದ ಹಿನ್ನಲೆಯಲ್ಲಿ ತಗ್ಗು ಪ್ರದೇಶಗಳಲ್ಲಿ ನೀರು ಸಂಗ್ರಹವಾಗಿದ್ದು ರಸ್ತೆಗಳಲ್ಲಿ ಸಂಚರಿಸಲು ವಾಹನ ಸವಾರರು ಪರದಾಡುತ್ತಿದ್ದಾರೆ. ಕೆಲವೆಡೆ ರಸ್ತೆಗಳಲ್ಲಿ ಮೊಣಕಾಲಿನವರೆಗೆ ನೀರು ನಿಂತಿದ್ದು ರಸ್ತೆ, ಗುಂಡಿಗೆ ವ್ಯತ್ಯಾಸ ಇಲ್ಲದಂತಾಗಿ ಪಾದಚಾರಿಗಳು ಓಡಾಡಲು ಹರಸಾಹಸ ಪಡುವಂತಾಗಿತ್ತು. ಮಳೆಗಾಲಕ್ಕೆ ಮುನ್ನ ನಗರಸಭೆ ವತಿಯಿಂದ ಮಳೆ ನೀರಿನ ಕಾಲುವೆಗಳನ್ನು ಸ್ವಚ್ಛಗೊಳಿಸದ್ದರಿಂದಲೇ ಈ ಪರಿಸ್ಥಿತಿ ನಿರ್ಮಾಣವಾಗುವಂತಾಗಿದ್ದು ಜನಸಾಮಾನ್ಯರು ನಗರಸಭೆ ಅಧಿಕಾರಿಗಳ ನಿರ್ಲಕ್ಷ್ಯಕ್ಕೆ ಹಿಡಿಶಾಪ ಹಾಕಿದ್ದಾರೆ.

ಅರೆಬಾರಿ ಕಾಮಗಾರಿಯಿಂದ ಮನೆಗೆ ನುಗ್ಗಿದ ನೀರು

ಅರೆಬಾರಿ ಕಾಮಗಾರಿಯಿಂದ ಮನೆಗೆ ನುಗ್ಗಿದ ನೀರು

ಇನ್ನು ಜಿಲ್ಲೆಯಲ್ಲಿ ಕಳೆದ 24 ಗಂಟೆಗಳ ಅವಧಿಯಲ್ಲಿ ಕಾರವಾರದಲ್ಲಿ 32.5 ಮಿಮೀ, ಅಂಕೋಲಾ 42.9 ಮಿಮೀ, ಕುಮಟಾ 35.3 ಮಿಮೀ, ಹೊನ್ನಾವರ 38.2 ಮಿಮೀ ಹಾಗೂ ಭಟ್ಕಳದಲ್ಲಿ 41.7 ಮಿಮೀ ಮಳೆ ಸುರಿದಿದೆ. ತಾಲ್ಲೂಕಿನ ರಾಷ್ಟ್ರೀಯ ಹೆದ್ದಾರಿ 66ರ ಅರಗಾ, ಚೆಂಡಿಯಾ ಗ್ರಾಮಗಳಲ್ಲಿ ಜನವಸತಿ ಪ್ರದೇಶಗಳಿಗೆ ನೀರು ನುಗ್ಗುವಂತಾಗಿತ್ತು. ತಗ್ಗು ಪ್ರದೇಶದ ಹಲವಾರು ಮನೆಗಳಿಗೆ ನೀರು ನುಗ್ಗಿತ್ತು. ಈ ಭಾಗದ ನಿವಾಸಿಗಳು ತಮ್ಮ ವಸ್ತುಗಳನ್ನು ಸುರಕ್ಷಿತವಾಗಿ ಇಟ್ಟುಕೊಳ್ಳಲು ಪರದಾಡುವಂತಾಯಿತು. ಹೆದ್ದಾರಿ ಅಗಲೀಕರಣ ಕಾರ್ಯ ಕೈಗೊಂಡಿರುವ ಐಆರ್‌ಬಿ ನಿರ್ಲಕ್ಷ್ಯದಿಂದಾಗಿ ಮತ್ತು ನೌಕಾನೆಲೆಯ ಅರೆಬರೆ ಕಾಮಗಾರಿಯಿಂದ ನೀರು ಸಮುದ್ರ ಸೇರಲು ಅಡ್ಡಿಯಾಗಿದೆ ಎಂದು ಸ್ಥಳೀಯರು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಆರೆಂಜ್ ಅಲರ್ಟ್ ಘೋಷಣೆ

ಆರೆಂಜ್ ಅಲರ್ಟ್ ಘೋಷಣೆ

ಇನ್ನು ಮೂರು ದಿನಗಳ‌ ಕಾಲ ಮಳೆ‌ ಮುಂದುವರಿಯುವ ಬಗ್ಗೆ ಕೆಎಸ್‌ಎನ್‌ಡಿಎಂಸಿ‌ ಸೂಚನೆ ನೀಡಿದ್ದು, ಜೂ. 25 ರವರೆಗೆ ಭಾರೀ ಮಳೆಯಾಗುವ ಬಗ್ಗೆ ಆರೆಂಜ್ ಅಲರ್ಟ್ ನೀಡಿದೆ. ಇದೇ ಕಾರಣಕ್ಕೆ ಸಾರ್ವಜನಿಕರು, ಪ್ರವಾಸಿಗರು ಅಗತ್ಯ ಮುನ್ನೆಚ್ಚರಿಕೆ ವಹಿಸುವಂತೆ ಜಿಲ್ಲಾಡಳಿತ ಕೂಡ ಎಚ್ಚರಿಕೆ ನೀಡಿದೆ. ಕೇವಲ ಒಂದು ದಿನ ಸುರಿದ ಮಳೆಯೇ ಇಷ್ಟೆಲ್ಲ ಅವಾಂತರ ಸೃಷ್ಟಿಸಿದ್ದು ಜನರು ಪರದಾಡುವಂತಾಗಿದೆ. ಇನ್ನೂ ನಾಲ್ಕೈದು ದಿನಗಳು ಭಾರೀ ಮಳೆ ಸುರಿಯುವ ಮುನ್ನೆಚ್ಚರಿಕೆಯನ್ನು ಹವಾಮಾನ ಇಲಾಖೆ ನೀಡಿದ್ದು ಇದು ತಗ್ಗು ಪ್ರದೇಶದ ನಿವಾಸಿಗಳ ಆತಂಕಕ್ಕೆ ಕಾರಣವಾಗಿದೆ.

ರಾಜ್ಯದ ಹಲವು ಭಾಗಗಳಲ್ಲಿ ಮಳೆ

ರಾಜ್ಯದ ಹಲವು ಭಾಗಗಳಲ್ಲಿ ಮಳೆ

ಮುಂಗಾರು ಚುರುಕುಗೊಂಡಿರುವ ಹಿನ್ನಲೆ ರಾಜ್ಯದ ಹಲವು ಭಾಗಗಳಲ್ಲೂ ಮಳೆ ಸುರಿಯುತ್ತಿದೆ. ದಕ್ಷಿಣ ಕನ್ನಡದಲ್ಲಿ ಎರಡು ಗಂಟೆ ಮಳೆಯಾಗಿ ರಸ್ತೆಗಳೆಲ್ಲಾ ತುಂಬಿವೆ. ಉಡುಪಿ ನಗರಭಾಗದಲ್ಲಿ ಕಳೆದ ಎರಡು ದಿನಗಳಿಂದ ಮಳೆಯಾಗಿದೆ. ಮಡಿಕೇರಿಯಲ್ಲಿ ವರುಣನ ಆರ್ಭಟ ನಡೆಯುತ್ತಿದ್ದು, ಶನಿವಾರಸಂತೆ, ಸಿದ್ದಾಪುರ, ಸೋಮವಾರಪೇಟೆ, ಸುಂಟಿಕೊಪ್ಪ, ಗೋಣಿಕೊಪ್ಪಲು ಪ್ರದೇಶಗಳಲ್ಲಿ ತುಂತುರು ಮಳೆ ಸುರಿದಿದೆ. ಮೈಸೂರಿನಲ್ಲೂ ಕೆಲಹೊತ್ತು ಮಳೆ ಸುರಿದಿದೆ.

ಬೆಳಗಾವಿಯಲ್ಲಿ ಸಾಧಾರಣ ಮಳೆಯಾಗಿದ್ದರೆ, ಗದಗ ಜಿಲ್ಲೆಯ ಮುಂಡರಗಿ ಮತ್ತು ಸುತ್ತಮುತ್ತಲಿನ ಭಾಗದಲ್ಲಿ ಬಿರುಸಿನ ಮಳೆಯಾಗಿದೆ.


Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+