ಸುಳ್ಳು ಜಾತಿ ಪ್ರಮಾಣಪತ್ರ ಪತ್ತೆಯಾದರೆ ಅಧಿಕಾರಿಗಳಿಗೂ ಕುತ್ತು!
ಕಾರವಾರ, ಸೆಪ್ಟೆಂಬರ್ 4: ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡ ಎಂದು ಸುಳ್ಳು ಜಾತಿ ಪ್ರಮಾಣ ಪತ್ರವನ್ನು ನೀಡುವುದಕ್ಕೆ ಬ್ರೇಕ್ ಹಾಕಲು ಸರ್ಕಾರ ಇನ್ನಷ್ಟು ಕಠಿಣ ಕ್ರಮಕ್ಕೆ ಮುಂದಾಗಿದೆ. ನಾಗರಿಕ ಹಕ್ಕು ಜಾರಿ ನಿರ್ದೇಶನಾಲಯ ಈ ಬಗ್ಗೆ ಹೊಸ ಸುತ್ತೋಲೆ ಹೊರಡಿಸಿದ್ದು, ನಕಲಿ ಜಾತಿ ಪ್ರಮಾಣಪತ್ರ ತಡೆಗೆ ಇದು ಪ್ರಮುಖ ಅಸ್ತ್ರವಾಗಲಿದೆ ಎನ್ನಲಾಗಿದೆ.
ಈ ಹಿಂದೆ ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ ಎಂದು ಸುಳ್ಳು ಜಾತಿ ಪ್ರಮಾಣ ಪತ್ರವನ್ನು ಪಡೆದು ಸರ್ಕಾರದಿಂದ ಬರುವ ಸೌಲಭ್ಯಗಳನ್ನು ಹಲವರು ಬಳಸಿಕೊಂಡ ಉದಾಹರಣೆಗಳಿದ್ದವು. ಇದಲ್ಲದೇ ಹಲವರು ಸುಳ್ಳು ಜಾತಿ ಪ್ರಮಾಣ ಪತ್ರ ನೀಡಿ ಮೀಸಲಾತಿಯಲ್ಲಿ ಸರ್ಕಾರಿ ಕೆಲಸವನ್ನು ಸಹ ಪಡೆದು ನೈಜ ದಲಿತರಿಗೆ ಅನ್ಯಾಯ ಮಾಡಿದ ಘಟನೆಗಳು ಸಹ ನಡೆದಿದ್ದವು.
ಇನ್ನು ಸುಳ್ಳು ಜಾತಿ ಪ್ರಮಾಣ ಪತ್ರ ಪಡೆದಿದ್ದಾನೆ ಎಂದು ತಿಳಿದು ಬಂದರೆ, ಅಂತಿಮ ಆದೇಶಕ್ಕಾಗಿ ಜಿಲ್ಲಾ ಜಾತಿ ಪರಿಶೀಲನಾ ಸಮಿತಿಗೆ ಕಳುಹಿಸಿಕೊಡಲಾಗುತ್ತಿತ್ತು. ಜಿಲ್ಲಾ ಜಾತಿ ಪರಿಶೀಲನಾ ಸಮಿತಿ ಅಸಿಂಧುಗೊಳಿಸಿದ ನಂತರ ಮತ್ತು ತಹಶೀಲ್ದಾರರು ಜಾತಿ ಪ್ರಮಾಣ ಪತ್ರವನ್ನು ರದ್ದುಪಡಿಸಿದ ನಂತರ ಯಾರು ಸುಳ್ಳು ಜಾತಿ ಪ್ರಮಾಣ ಪತ್ರವನ್ನು ಪಡೆದಿರುತ್ತಾನೋ ಅಂತವನ ವಿರುದ್ಧ ಮಾತ್ರ ಎಫ್ಐಆರ್ ದಾಖಲಿಸಲಾಗುತ್ತಿತ್ತು.

ಸುಳ್ಳು ಜಾತಿ ಪ್ರಮಾಣ ಪತ್ರ ಪಡೆದ ವ್ಯಕ್ತಿಯ ವಿರುದ್ಧ ಎಫ್ಐಆರ್ ದಾಖಲು ಮಾಡಿದರೆ, ಆತ ಮಾತ್ರ ಶಿಕ್ಷೆಗೆ ಗುರಿಯಾಗುತ್ತಿದ್ದ. ಕಾನೂನಿನಲ್ಲಿ ಈ ಶಿಕ್ಷೆ ಇದ್ದರೂ ಸುಳ್ಳು ಜಾತಿ ಪ್ರಮಾಣ ಪತ್ರ ಪಡೆಯುವವರ ಸಂಖ್ಯೆ ಏರುತ್ತಲೇ ಇತ್ತು. ಇದೀಗ ಇಂತಹದಕ್ಕೆ ಬ್ರೇಕ್ ಹಾಕಲು ನಾಗರಿಕ ಹಕ್ಕು ಜಾರಿ ನಿರ್ದೇಶನಾಲಯದ ಡಿಜಿಪಿ ಹೊಸ ಸುತ್ತೋಲೆಯೊಂದನ್ನು ರಾಜ್ಯದ ಎಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಕಚೇರಿಗೆ ರವಾನೆ ಮಾಡಿದ್ದಾರೆ.
ಒಂದೊಮ್ಮೆ ವ್ಯಕ್ತಿಯೋರ್ವ ಸುಳ್ಳು ಜಾತಿ ಪ್ರಮಾಣ ಪತ್ರ ಪಡೆದಿರುವ ಬಗ್ಗೆ ಖಚಿತವಾದರೆ ಆತನೊಟ್ಟಿಗೆ ಎಫ್ಐಆರ್ನಲ್ಲಿ ಸುಳ್ಳು ಜಾತಿ ಪ್ರಮಾಣ ಪತ್ರ ನೀಡಿದ ತಹಶೀಲ್ದಾರ್, ಜಾತಿ ಪ್ರಮಾಣ ಪತ್ರ ನೀಡಲು ವರದಿ ಸಲ್ಲಿಸಿದ್ದ ಕಂದಾಯ ನಿರೀಕ್ಷಕರು ಹಾಗೂ ಗ್ರಾಮ ಲೆಕ್ಕಿಗರ ಮೇಲೆ ಸಹ ಎಫ್ಐಆರ್ ದಾಖಲು ಮಾಡುವಂತೆ ಸುತ್ತೋಲೆಯಲ್ಲಿ ಅಧಿಕಾರಿಗಳಿಗೆ ಸೂಚಿಸಲಾಗಿದೆ.
ಅಧಿಕಾರಿಗಳ ಮೇಲೆ ದೂರು ದಾಖಲು ಮಾಡಬೇಕಾದರೆ ಈ ಹಿಂದೆ ಅನುಮತಿ ಪಡೆಯುವ ಅಗತ್ಯವಿತ್ತು. ಆದರೆ ಸುಳ್ಳು ಜಾತಿ ಪ್ರಮಾಣ ಪತ್ರ ನೀಡುವ ವಿಚಾರ ಕ್ರಿಮಿನಲ್ ಪ್ರಕರಣ ಆಗುವುದರಿಂದ ಯಾವುದೇ ಅನುಮತಿ ಪಡೆಯದೇ ಎಫ್ಐಆರ್ನಲ್ಲಿ ಸಂಬಂಧಪಟ್ಟ ಅಧಿಕಾರಿಗಳ ಹೆಸರನ್ನು ಸೇರಿಸುವಂತೆ ತಿಳಿಸಲಾಗಿದೆ.

ಸರ್ಕಾರ ಹೊರಡಿಸಿರುವ ಸುತ್ತೋಲೆಯಿಂದ ದಾಖಲೆಗಳನ್ನು ಸರಿಯಾಗಿ ಪರಿಶೀಲನೆ ಮಾಡದೆ ಬೇಕಾಬಿಟ್ಟಿ ಜಾತಿ ಪ್ರಮಾಣಪತ್ರ ನೀಡುತ್ತಿದ್ದ ಅಧಿಕಾರಿಗಳಿಗೆ ಎಚ್ಚರಿಕೆ ಮೂಡಿಸಿದಂತಾಗಿದೆ. ಒಂದೊಮ್ಮೆ ತಾವು ಗಮನಹರಿಸದೇ ಪ್ರಮಾಣ ಪತ್ರ ನೀಡಿದರೆ ತಾವು ಸಹ ಸಂಕಷ್ಟಕ್ಕೆ ಸಿಲುಕಬಹುದು ಎನ್ನುವ ಮುನ್ನೆಚ್ಚರಿಕೆಯನ್ನು ಸರ್ಕಾರ ನೀಡಿದ್ದು, ಈ ಮೂಲಕ ಅಧಿಕಾರಿಗಳು ಅಲರ್ಟ್ ಆಗಲಿದ್ದಾರೆ ಎನ್ನುವುದು ಇದರ ಹಿಂದಿನ ಉದ್ದೇಶವಾಗಿದೆ.
ಉತ್ತರ ಕನ್ನಡ ಜಿಲ್ಲೆಯಲ್ಲಿ ಅಧಿಕ ಪ್ರಕರಣ
ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ ಎಂದು ಸುಳ್ಳು ಜಾತಿ ಪ್ರಮಾಣ ಪತ್ರ ಪಡೆದು ಸರ್ಕಾರದ ಸೌಲಭ್ಯಗಳನ್ನು ಪಡೆಯುವ ಪ್ರಕರಣ ಉತ್ತರ ಕನ್ನಡ ಜಿಲ್ಲೆಯಲ್ಲಿ ಸಾಕಷ್ಟು ನಡೆದಿದ್ದು, ಈ ಬಗ್ಗೆ ಅಧಿಕಾರಿಗಳು ಕ್ರಮವನ್ನು ಸಹ ತೆಗೆದುಕೊಂಡಿದ್ದಾರೆ.
ಉತ್ತರ ಕನ್ನಡ ಜಿಲ್ಲೆಯ ಭಟ್ಕಳ, ಮುಂಡಗೋಡ, ಶಿರಸಿ ಸೇರಿದಂತೆ ಹಲವೆಡೆ ಸುಳ್ಳು ಜಾತಿ ಪ್ರಮಾಣ ಪತ್ರವನ್ನು ಪಡೆದಿರುವ ಪ್ರಕರಣ ನಡೆದಿದ್ದು, ಈ ಬಗ್ಗೆ ಹಲವರು ನ್ಯಾಯಾಲಯದ ಮೆಟ್ಟಿಲನ್ನು ಸಹ ಏರಿದ್ದರು. ಇನ್ನು ಜಿಲ್ಲಾ ಜಾತಿ ಪರಿಶೀಲನಾ ಸಮಿತಿ ಈ ಬಗ್ಗೆ ಪರಿಶೀಲನೆ ನಡೆಸಿ ಜಾತಿ ಪ್ರಮಾಣ ಪತ್ರವನ್ನು ಹಲವು ಪ್ರಕರಣದಲ್ಲಿ ರದ್ದು ಮಾಡಿದೆ.
ಕೆಲ ಪ್ರಕರಣದಲ್ಲಿ ಸರ್ಕಾರಿ ಕೆಲಸದಲ್ಲಿ ಇದ್ದವರು ತಮ್ಮ ಕೆಲಸವನ್ನು ಕಳೆದುಕೊಳ್ಳುವಂತಾಗಿದೆ. ಉತ್ತರ ಕನ್ನಡ ಜಿಲ್ಲೆಯಲ್ಲಿ ಸುಳ್ಳು ಜಾತಿ ಪ್ರಮಾಣ ಪತ್ರ ಪಡೆದವರ ವಿರುದ್ಧ ಆಗಾಗ ಹೋರಾಟಗಳು ನಡೆಯುತ್ತಿರುತ್ತವೆ. ಇದೀಗ ಅಧಿಕಾರಿಗಳ ಹೆಸರು ಸಹ ಎಫ್ಐಆರ್ನಲ್ಲಿ ದಾಖಲಾಗುವುದರಿಂದ ಅಧಿಕಾರಿಗಳು ಎಚ್ಚೆತ್ತುಕೊಳ್ಳಲಿದ್ದಾರೆ ಎನ್ನಲಾಗಿದೆ.












Click it and Unblock the Notifications