'ರೈತಾಪಿ ವರ್ಗಕ್ಕೆ ಕುಮಾರಸ್ವಾಮಿ ಮೋಸ ಮಾಡಿದ್ದಾರೆ'
ಕಾರವಾರ, ಮೇ 28: ಮುಖ್ಯಮಂತ್ರಿ ಎಚ್.ಡಿ. ಕುಮಾರಸ್ವಾಮಿ ಅವರು ತಾವು ಅಧಿಕಾರಕ್ಕೆ ಬರುವ ಮುನ್ನ ಘೋಷಿಸಿದಂತೆ ರೈತರ ಸಾಲ ಮನ್ನಾ ಮಾಡಬೇಕೆಂದು ಆಗ್ರಹಿಸಿ ಬಿಜೆಪಿ ಘೋಷಿಸಿದ್ದ ಬಂದ್ಗೆ ಉತ್ತರ ಕನ್ನಡ ಜಿಲ್ಲೆಯಲ್ಲಿ ಮಿಶ್ರ ಪ್ರತಿಕ್ರಿಯೆ ವ್ಯಕ್ತವಾಗಿದೆ.
ಕಾರವಾರದಲ್ಲಿ ಬಿಜೆಪಿ ಶಾಸಕಿ ರೂಪಾಲಿ ನಾಯ್ಕ ಅವರ ನೇತೃತ್ವದಲ್ಲಿ ಬಿಜೆಪಿ ಮುಖಂಡರು ಹಾಗೂ ಕಾರ್ಯಕರ್ತರು ನಗರದಲ್ಲಿ ಪ್ರತಿಭಟನೆ ನಡೆಸಿದರು. ನಗರದ ವಿವಿಧ ರಸ್ತೆಗಳಲ್ಲಿ ಪ್ರತಿಭಟನಾ ಮೆರವಣಿಗೆ ಹೊರಟು, ಸರ್ಕಾರ ಹಾಗೂ ಕುಮಾರಸ್ವಾಮಿ ಅವರ ವಿರುದ್ಧ ಧಿಕ್ಕಾರ ಕೂಗಿದರು.
ಪೊಲೀಸ್ ಬಲ ಬಳಸಿ ಬಿಜೆಪಿಯ ಪ್ರತಿಭಟನೆ ಹತ್ತಿಕ್ಕಲು ಯತ್ನ: ಬಿಎಸ್ವೈ
ಕುಮಾರಸ್ವಾಮಿ ಅವರು ಚುನಾವಣೆಗೂ ಪೂರ್ವ ರಾಜ್ಯದ ರೈತರ ಸಾಲಮನ್ನಾ ಮಾಡುವುದಾಗಿ ಹೇಳಿ ಮುಖ್ಯಮಂತ್ರಿ ಆಗಿದ್ದಾರೆ. ಆದರೆ ಇನ್ನೂ ಕೊಟ್ಟ ಮಾತಿನಂತೆ ಅವರು ನಡೆದುಕೊಂಡಿಲ್ಲ. ಇದರಿಂದ ರಾಜ್ಯದ ರೈತಾಪಿ ವರ್ಗಕ್ಕೆ ಕುಮಾರಸ್ವಾಮಿಯವರು ಮೋಸ ಮಾಡಿದಂತಾಗಿದೆ.
ಕೊಟ್ಟ ಮಾತಿನಂತೆ ಈ ತಕ್ಷಣದಿಂದ ಮುಖ್ಯಮಂತ್ರಿ ಕುಮಾರಸ್ವಾಮಿ ಅವರು ರಾಜ್ಯದ ರೈತರ ಸಾಲ ಮನ್ನಾ ಮಾಡಬೇಕು. ಇಲ್ಲವಾದಲ್ಲಿ ತಮ್ಮ ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಬೇಕು ಎಂದು ಬಿಜೆಪಿಗರು ಆಗ್ರಹಿಸಿದರು.
ಜಿಲ್ಲೆಯಲ್ಲಿ ಬಂದ್ ಆಚರಿಸಲು ಯಾವುದೇ ಅನುಮತಿ ಪಡೆದಿಲ್ಲ. ಅದಕ್ಕೆ ಅನುಮತಿ ನೀಡಿಯೂ ಇಲ್ಲ ಎಂದು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ವಿನಾಯಕ ಪಾಟೀಲ ತಿಳಿಸಿದರು.
ಸುಪ್ರೀಂ ಕೋರ್ಟ್ನ ಅನ್ವಯ ಬಂದ್ ಆಚರಿಸುವುದು ಅಸಂವಿಧಾನಾತ್ಮಕ ಕ್ರಮ. ಸ್ವಯಂ ಪ್ರೇರಿತವಾಗಿ ಅಂಗಡಿ ಮುಂಗಟ್ಟುಗಳನ್ನು ತೆರೆಯದಿದ್ದರೆ ಏನೂ ಮಾಡಲಾಗುವುದಿಲ್ಲ. ಆದರೆ, ಒತ್ತಾಯಪೂರ್ವಕವಾಗಿ ಬಂದ್ ಆಚರಿಸಲು ಹೊರಟರೆ ಅವರ ವಿರುದ್ಧ ಸೂಕ್ತ ಕ್ರಮ ಕೈಗೊಳ್ಳುತ್ತೇವೆ ಎಂದು ತಿಳಿಸಿದರು.