ಉತ್ತರ ಕನ್ನಡ: ಅಭ್ಯರ್ಥಿಗಳ ಆಯ್ಕೆ ಊಹಾಪೋಹಗಳಿಗೆ ತೆರೆ ಎಳೆದ ಬಿಜೆಪಿ ಹೈಕಮಾಂಡ್
ಕಾರವಾರ, ಏಪ್ರಿಲ್ 12: ಬಿಜೆಪಿ ಅಭ್ಯರ್ಥಿಗಳ ಮೊದಲ ಪಟ್ಟಿ ಕೊನೆಗೂ ಬಿಡುಗಡೆಗೊಂಡಿದ್ದು, ಉತ್ತರ ಕನ್ನಡ ಜಿಲ್ಲೆಯಲ್ಲಿ ಕಳೆದ ಬಾರಿ ಕಣಕ್ಕಿಳಿದವರನ್ನೇ ಅಭ್ಯರ್ಥಿಗಳನ್ನಾಗಿ ಘೋಷಣೆ ಮಾಡಲಾಗಿದೆ.
ಶಿರಸಿ-ಸಿದ್ದಾಪುರ ಕ್ಷೇತ್ರದಿಂದ ಸ್ಪೀಕರ್ ವಿಶ್ವೇಶ್ವರ ಹೆಗಡೆ ಕಾಗೇರಿ, ಕಾರವಾರ-ಅಂಕೋಲಾ ಕ್ಷೇತ್ರದಿಂದ ಶಾಸಕಿ ರೂಪಾಲಿ ನಾಯ್ಕ, ಯಲ್ಲಾಪುರ-ಮುಂಡಗೋಡ ಕ್ಷೇತ್ರ ಸಚಿವ ಶಿವರಾಮ್ ಹೆಬ್ಬಾರ್, ಕುಮಟಾ-ಹೊನ್ನಾವರ ಕ್ಷೇತ್ರದಿಂದ ಶಾಸಕ ದಿನಕರ ಶೆಟ್ಟಿ, ಭಟ್ಕಳ-ಹೊನ್ನಾವರ ಕ್ಷೇತ್ರದಿಂದ ಶಾಸಕ ಸುನೀಲ್ ನಾಯ್ಕ, ಹಳಿಯಾಳ ಜೊಯಿಡಾದಿಂದ ಮಾಜಿ ಶಾಸಕ ಸುನೀಲ್ ಹೆಗಡೆ ಅವರಿಗೆ ಟಿಕೆಟ್ ಘೋಷಣೆ ಮಾಡಿ ಬಿಜೆಪಿ ಹೈಕಮಾಂಡ್ ಕೊನೆಗೂ ಜಿಲ್ಲೆಯಲ್ಲಿ ಎದ್ದಿರುವ ಊಹಾಪೋಹಗಳಿಗೆ ತೆರೆ ಎಳೆದಿದೆ.

ಆರು ಬಾರಿ ಶಾಸಕರಾಗಿರುವ ವಿಶ್ವೇಶ್ವರ ಹೆಗಡೆ ಕಾಗೇರಿ ಅವರು ಏಳನೇ ಬಾರಿ ಕೂಡ ಸ್ಪರ್ಧೆ ಬಯಸಿ ಸಾಕಷ್ಟು ಪ್ರಚಾರ ಕೂಡ ನಡೆಸಿದ್ದರು. ಆದರೆ ಹೊಸಬರಿಗೆ ಅವಕಾಶ ನೀಡುವ ನಿಟ್ಟಿನಲ್ಲಿ ಕಾಗೇರಿ ಅವರಿಗೆ ಈ ಬಾರಿ ಟಿಕೆಟ್ ನೀಡುತ್ತಿಲ್ಲ ಎಂಬ ಸುದ್ದಿ ಕೂಡ ಹರಿದಾಡಲಾರಂಭಿಸಿತ್ತು.
ಅಲ್ಲದೇ, ದಿನಕರ ಶೆಟ್ಟಿ ಅವರಿಗೂ ಈ ಬಾರಿ ಟಿಕೆಟ್ ನೀಡುತ್ತಿಲ್ಲ ಎಂಬ ಸುದ್ದಿಗಳು ಹರಿದಾಡಿ ಕ್ಷೇತ್ರದ ಬಿಜೆಪಿ ಕಾರ್ಯಕರ್ತರಲ್ಲಿ ಗೊಂದಲಕ್ಕೂ ಕಾರಣವಾಗಿತ್ತು. ಆದರೆ ಹೈಕಮಾಂಡ್ ಇದೀಗ ಮೊದಲ ಪಟ್ಟಿಯಲ್ಲಿಯೇ ಟಿಕೆಟ್ ಘೋಷಣೆ ಮಾಡುವ ಮೂಲಕ ಎಲ್ಲ ಗೊಂದಲಕ್ಕೂ ತೆರೆ ಎಳೆದಿದೆ.
ಇನ್ನು ಭಟ್ಕಳ ಹೊನ್ನಾವರ ಕ್ಷೇತ್ರದ ಶಾಸಕ ಸುನೀಲ್ ನಾಯ್ಕ ವಿರುದ್ಧ ಸಾಕಷ್ಟು ಆರೋಪಗಳು ಕೇಳಿ ಬಂದ ಹಿನ್ನಲೆಯಲ್ಲಿ ಮತ್ತು ಬಿಜೆಪಿ ಮುಖಂಡ ಸಿಟಿ ರವಿ ಅವರಿಗೆ ಮಾಂಸದೂಟ ಮಾಡಿಸಿ ದೇವಸ್ಥಾನಕ್ಕೆ ಕರೆದುಕೊಂಡು ತೆರಳಿದ ಬಳಿಕ ಬಿಜೆಪಿ ಮುಜುಗರ ಅನುಭವಿಸಿದ ಹಿನ್ನೆಲೆಯಲ್ಲಿ ಟಿಕೆಟ್ ತಪ್ಪಲಿದೆ. ಅವರ ಬದಲಿಗೆ ಬೆರೆಯವರಿಗೆ ನೀಡಲಾಗುತ್ತಿದೆ ಎಂದು ಸಾಕಷ್ಟು ಸುದ್ದಿಗಳು ಹರಿದಾಡಿತ್ತು.
ಶಾಸಕಿ ರೂಪಾಲಿ ನಾಯ್ಕ ಅವರಿಗೂ ಕೊನೆ ಗಳಿಗೆಯಲ್ಲಿ ಟಿಕೆಟ್ ತಪ್ಪಿಸುವ ಪ್ರಯತ್ನ ನಡೆಸಲಾಗುತ್ತಿದೆ. ಸಂಸದ ಅನಂತಕುಮಾರ್ ಹೆಗಡೆ ಅವರು ಇಬ್ಬರಿಗೂ ಟಿಕೆಟ್ ನೀಡುವುದಕ್ಕೆ ಅಡ್ಡಿಯಾಗಿದ್ದಾರೆ ಎಂಬ ಆರೋಪಗಳು ಕೇಳಿ ಬಂದಿದ್ದವು. ಆದರೆ ಇಂದು ಪ್ರಕಟವಾದ ಮೊದಲ ಪಟ್ಟಿಯಲ್ಲಿಯೇ ಜಿಲ್ಲೆಯ ಆರು ಕ್ಷೇತ್ರಗಳ ಅಭ್ಯರ್ಥಿ ಪ್ರಕಟ ಮಾಡಿದ್ದು ಎಲ್ಲ ಊಹಾಪೋಹಗಳಿಗೆ ಸ್ಪಷ್ಟನೆ ಸಿಕ್ಕಂತಾಗಿದೆ.

ಈ ಮೂಲಕ ಕಳೆದ ಬಾರಿ ನಿಂತವರೇ ಬಿಜೆಪಿಯಲ್ಲಿ ಅಭ್ಯರ್ಥಿಯಾಗಿದ್ದು, ಕಳೆದ ಬಾರಿ ಉಪ ಚುನಾವಣೆಯಲ್ಲಿ ಬಿಜೆಪಿಯಿಂದ ಸ್ಪರ್ಧಿಸಿ ಗೆದ್ದಿದ್ದ ಶಿವರಾಮ್ ಹೆಬ್ಬಾರಗೂ ಈ ಬಾರಿಯೂ ಟಿಕೆಟ್ ನೀಡಿದೆ. ಇದರೊಂದಿಗೆ ಜಿಲ್ಲೆಯಲ್ಲಿ ಕುಮಟಾದಲ್ಲಿ ಕಾಂಗ್ರೆಸ್ ಅಭ್ಯರ್ಥಿ ಹೊರತು ಪಡಿಸಿ ಬಿಜೆಪಿ-ಕಾಂಗ್ರೆಸ್ನಲ್ಲಿ ಎಲ್ಲ ಕ್ಷೇತ್ರಗಳಲ್ಲಿ ಅಭ್ಯರ್ಥಿ ಘೋಷಣೆ ಮಾಡಲಾಗಿದೆ.
ಜೆಡಿಎಸ್ ಕುಮಟಾ, ಶಿರಸಿ, ಹಳಿಯಾಳದಲ್ಲಿ ಮಾತ್ರ ಅಭ್ಯರ್ಥಿಗಳನ್ನು ಘೋಷಣೆ ಮಾಡಿ ಮೂರು ಕ್ಷೇತ್ರಗಳ ಅಭ್ಯರ್ಥಿ ಹೆಸರು ಘೋಷಣೆ ಬಾಕಿ ಉಳಿಸಿಕೊಂಡಿದೆ.
52 ಹೊಸ ಮುಖಗಳಿಗೆ ಬಿಜೆಪಿ ಟಿಕೆಟ್
ಕರ್ನಾಟಕ ವಿಧಾನಸಭೆ ಚುನಾವಣೆಗೆ ನಿರೀಕ್ಷಿತ ಬಿಜೆಪಿ ಅಭ್ಯರ್ಥಿಗಳ ಮೊದಲ ಪಟ್ಟಿ ಬಿಡುಗಡೆಯಾಗಿದ್ದು, 189 ಮಂದಿ ಅಭ್ಯರ್ಥಿಗಳಿಗೆ ಬಿಜೆಪಿ ಹೈಕಮಾಂಡ್ ಟಿಕೆಟ್ ಘೋಷಣೆ ಮಾಡಿದೆ. ಒಬಿಸಿ 32, ಎಸ್ಸಿ 30, ಎಸ್ಟಿ 16 ಹಾಗೂ 9 ವೈದ್ಯರು, ನಿವೃತ್ತ ಐಎಎಸ್, ಐಪಿಎಸ್ ಅಧಿಕಾರಿಗಳಿಗೆ ಟಿಕೆಟ್ ನೀಡಲಾಗಿದೆ. 8 ಮಂದಿ ಮಹಿಳೆಯರು, ಐವರು ವಕೀಲರು, ಮೂವರು ಶಿಕ್ಷಕರು, 9 ಸ್ನಾತಕೋತ್ತರ ಪದವೀಧರರಿಗೆ ಟಿಕೆಟ್ ನೀಡುವ ಮೂಲಕ ಈ ಬಾರಿಯ ಚುನಾವಣೆಯಲ್ಲಿ ಸ್ಪರ್ಧಿಸಲು 52 ಹೊಸ ಮುಖಗಳಿಗೆ ಬಿಜೆಪಿ ಟಿಕೆಟ್ ನೀಡಿದೆ.












Click it and Unblock the Notifications