Ankola Landslide: ಅಂಕೋಲ ಗುಡ್ಡ ಕುಸಿತ ಪ್ರಕರಣದ ಬಗ್ಗೆ ಅಪ್ಡೇಟ್ ನೀಡಿದ ಸಚಿವ ಕೃಷ್ಣ ಬೈರೇಗೌಡ
ಬೆಂಗಳೂರು, ಜುಲೈ. 16: ಅಂಕೋಲಾ ತಾಲೂಕಿನ ಶಿರೂರಿನಲ್ಲಿ ರಾಷ್ಟ್ರೀಯ ಹೆದ್ದಾರಿ ಬಳಿ ಭಾರಿ ಭೂಕುಸಿತ ಸಂಭವಿಸಿದ್ದು, ಒಂದೇ ಕುಟುಂಬದ ಐವರು ಸೇರಿದಂತೆ ಏಳು ಮಂದಿ ಮಣ್ಣಿನಡಿ ಸಿಲುಕಿರುವ ಆತಂಕ ಎದುರಾಗಿದೆ. ಇದೇ ವೇಳೆ ಅಂಕೋಲ ಗುಡ್ಡ ಕುಸಿತ ಪ್ರಕರಣವನ್ನು ಸರ್ಕಾರ ಗಂಭೀರವಾಗಿ ಪರಿಗಣಿಸಿದೆ, ರಕ್ಷಣಾ ಕಾರ್ಯಾಚರಣೆ ಮುಂದುವರೆದಿದೆ ಎಂದು ಕಂದಾಯ ಸಚಿವ ಕೃಷ್ಣ ಬೈರೇಗೌಡ ಮಾಹಿತಿ ನೀಡಿದ್ದಾರೆ.
ಉತ್ತರ ಕನ್ನಡ ಜಿಲ್ಲೆ ಅಂಕೋಲಾ ತಾಲ್ಲೂಕಿನ ಶಿರೂರು ಬಳಿಯ ರಾಷ್ಟ್ರೀಯ ಹೆದ್ದಾರಿಯಲ್ಲಿ ಗುಡ್ಡ ಕುಸಿದು ಒಂದೇ ಕುಟುಂಬದ ನಾಲ್ವರು ಸೇರಿ ಒಟ್ಟು ಏಳು ಜನ ಮಣ್ಣಿನ ಅಡಿ ಸಿಲುಕಿ ಮೃತಪಟ್ಟಿರುವ ಸಾಧ್ಯತೆ ಇದ್ದು, ಈ ಪ್ರಕರಣವನ್ನು ಸರ್ಕಾರ ಗಂಭೀರವಾಗಿ ಪರಿಗಣಿಸಿದೆ. ರಕ್ಷಣಾ ಕಾರ್ಯಾಚರಣೆ ಮುಂದುವರೆಯುತ್ತಿದ್ದು, ಮೃತಪಟ್ಟವರಿಗೆ ಕೂಡಲೇ 5 ಲಕ್ಷ ರೂಪಾಯಿ ನೀಡುವಂತೆ ಜಿಲ್ಲಾಡಳಿತಕ್ಕೆ ಸೂಚಿಸಲಾಗಿದೆ ಎಂದು ಸಚಿವ ಕೃಷ್ಣ ಬೈರೇಗೌಡ ಮಾಹಿತಿ ನೀಡಿದ್ದಾರೆ.

ವಿಧಾನಸಭಾ ಅಧಿವೇಶನದಲ್ಲಿ ಅಂಕೋಲ ಅಪಘಾತದ ಬಗ್ಗೆ ಮಾಹಿತಿ ನೀಡಿದ ಅವರು, "ನದಿ ಹಾಗೂ ಗುಡ್ಡದ ನಡುವೆ ರಾಷ್ಟ್ರೀಯ ಹೆದ್ದಾರಿ ಇದ್ದು, ರಸ್ತೆ ಬದಿಯಲ್ಲಿ ಅನಧಿಕೃತವಾಗಿ ಕೆಲವರು ಸಣ್ಣ ಮಟ್ಟದ ಕ್ಯಾಂಟೀನ್ಗಳನ್ನು ನಿರ್ಮಿಸಿಕೊಂಡಿದ್ದಾರೆ. ಇಲ್ಲಿ ಅಡುಗೆ ಅನಿಲ ಹೊತ್ತೊಯ್ಯುವ ಟ್ಯಾಂಕರ್ ಚಾಲಕರು ಟೀ ಕುಡಿಯಲು ವಾಹನ ನಿಲ್ಲಿಸಿದ್ದಾಗ ಅವಘಡ ಸಂಭವಿಸಿದೆ" ಎಂದಿದ್ದಾರೆ.
ಗುಡ್ಡ ಕುಸಿದು ಟ್ಯಾಂಕರ್ ಲಾರಿ ಹಾಗೂ ಕ್ಯಾಂಟೀನ್ ನದಿಗೆ ಕೊಚ್ಚಿ ಹೋಗಿದೆ. ಪರಿಣಾಮ ಕ್ಯಾಂಟೀನ್ ನಡೆಸುತ್ತಿದ್ದ ಒಂದೇ ಕುಟುಂಬದ ನಾಲ್ವರು, ಟ್ಯಾಂಕರ್ ಚಾಲಕರು ಸೇರಿ ಒಟ್ಟು 7 ಜನ ಮೃತಪಟ್ಟಿರುವ ಶಂಕೆ ಇದೆ. ಮೃತರಾದವರನ್ನು ಲಕ್ಷ್ಮಣ ನಾಯ್ಕ (47), ಶಾಂತಿ ನಾಯ್ಕ (36), ರೋಶನ್ (11), ಅವಾಂತಿಕಾ (6), ಜಗನ್ನಾಥ (55) ಎಂದು ಗುರುತಿಸಲಾಗಿದೆ. ಅಲ್ಲದೆ, ರಕ್ಷಣಾ ಕಾರ್ಯಾಚರಣೆಯ ವೇಳೆ ಶಾಂತಿ ನಾಯ್ಕ ಎಂಬ ಮಹಿಳೆಯ ಮೃತ ದೇಹವನ್ನು ಪತ್ತೆ ಮಾಡಲಾಗಿದೆ ಎಂದು ಸಚಿವ ಕೃಷ್ಣ ಬೈರೇಗೌಡ ಅವರು ಸದನಕ್ಕೆ ಮಾಹಿತಿ ನೀಡಿದ್ದಾರೆ.

ರಕ್ಷಣಾ ಕಾರ್ಯಾಚರಣೆ ಮುಂದುವರೆಯುತ್ತಿದ್ದು, ಅಗ್ನಿಶಾಮಕ ದಳ ಹಾಗೂ ಎನ್ಡಿಆರ್ಎಫ್ ತುಕಡಿಯನ್ನು ಸ್ಥಳಕ್ಕೆ ಕಳುಹಿಸಲಾಗಿದೆ. ಅಲ್ಲದೆ, ಜಿಲ್ಲಾ ಉಸ್ತುವಾರಿ ಸಚಿವರೂ ಸ್ಥಳಕ್ಕೆ ಧಾವಿಸಿದ್ದಾರೆ. ಭಾರತೀಯ ಪೆಟ್ರೋಲಿಯಂ ಲಿಮಿಟೆಡ್ನ ಅಧಿಕಾರಿಗಳೂ ಸ್ಥಳದಲ್ಲಿ ಇದ್ದು, ನೀರಿನಲ್ಲಿ ಕೊಚ್ಚಿಹೋಗಿರುವ ಸಿಲಿಂಡರ್ ಅನ್ನು ಸುರಕ್ಷಿತವಾಗಿ ಹೊರತೆಗೆಯುವ ಕೆಲಸವೂ ಪ್ರಗತಿಯಲ್ಲಿದೆ ಎಂದಿದ್ದಾರೆ.
ಅಪಘಾತದಲ್ಲಿ ಮೃತಪಟ್ಟವರಿಗೆ ಕೂಡಲೇ 5 ಲಕ್ಷ ರೂಪಾಯಿ ಪರಿಹಾರ ನೀಡುವಂತೆ ಜಿಲ್ಲಾಡಳಿತಕ್ಕೆ ಸೂಚನೆ ನೀಡಲಾಗಿದೆ. ಇನ್ನೂ ವಾಹನ ಚಾಲಕರು ನಮ್ಮ ರಾಜ್ಯದವರಲ್ಲ. ಆದರೂ, ಅವರು ಕೆಲಸದ ಮೇಲೆ ನಮ್ಮ ರಾಜ್ಯಕ್ಕೆ ಬಂದಿದ್ದು, ಈ ವೇಳೆ ದುರಾದೃಷ್ಟವಶಾತ್ ಅಪಘಾತ ಸಂಭವಿಸಿದೆ. ಹೀಗಾಗಿ ಅವರಿಗೂ ಪರಿಹಾರ ನೀಡುವ ಬಗ್ಗೆ ಕ್ರಮ ಜರುಗಿಸಲಾಗುವುದು ಎಂದು ಅವರು ತಿಳಿಸಿದ್ದಾರೆ.
ಈ ಅಪಘಾತ ನಡೆಯಲು ಕಾರಣವೇನು?
ಈ ಅಪಘಾತ ನಡೆಯಲು ಕಾರಣವೇನು? ಎಂಬ ಬಗ್ಗೆ ಮಾತನಾಡಿದ ಸಚಿವ ಕೃಷ್ಣ ಬೈರೇಗೌಡ, "ಕಳೆದ ವರ್ಷ ಅತಿವೃಷ್ಟಿಯ ಸಂದರ್ಭದಲ್ಲೇ ನಾನು ಈ ಭಾಗಕ್ಕೆ ತೆರಳಿದ್ದೆ. ರಾಷ್ಟ್ರೀಯ ಹೆದ್ದಾರಿಗಳು ವೈಜ್ಞಾನಿಕವಾಗಿ ನಿರ್ಮಾಣವಾಗಿಲ್ಲ. ಅಲ್ಲದೆ, ಕೈಗಾ ಪರಮಾಣು ವಿದ್ಯುತ್ ಸ್ಥಾವರದ ಕಾಲುವೆಗಳೂ ಕ್ರಮಬದ್ಧವಾಗಿಲ್ಲ. ಹೀಗಾಗಿ ಭೂ ಕುಸಿತ ಸಂಭವಿಸುವ ಬಗ್ಗೆ ಆಗಲೇ ಎಚ್ಚರಿಕೆ ನೀಡಿದ್ದೆ. ಆದರೆ, ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರದ ಅಧಿಕಾರಿಗಳು ನಮ್ಮ ಮಾತಿಗೆ ಕಿವಿಕೊಡುವ ಗೋಜಿಗೇ ಹೋಗಿಲ್ಲ" ಎಂದು ಅಸಮಾಧಾನ ಹೊರಹಾಕಿದ್ದಾರೆ.
ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರದ ಅಧಿಕಾರಿಗಳು ನಮ್ಮ ಮಾತನ್ನು ಕೇಳುವುದೇ ಇಲ್ಲ. ನಾವು ಏನೇ ಹೇಳಿದರೂ, ನಮ್ಮ ಕೇಂದ್ರ ಕಚೇರಿ ದೆಹಲಿಯಲ್ಲಿದೆ. ಅಲ್ಲಿಗೆ ಪತ್ರ ಬರೆಯುತ್ತೇವೆ ಎಂದಷ್ಟೇ ಹೇಳಿ ಕೈ ತೊಳೆದುಕೊಳ್ಳುತ್ತಾರೆ. ಆದರೆ, ಈ ಪ್ರಕರಣವನ್ನು ಸರ್ಕಾರ ಗಂಭೀರವಾಗಿ ಪರಿಗಣಿಸಿದೆ. ಮುಂದಿನ ದಿನಗಳಲ್ಲಿ ಇಂತಹ ಅಪಘಾತಗಳು ನಡೆಯದಂತೆ ತಡೆಯುವ ನಿಟ್ಟಿನಲ್ಲಿ ಎಲ್ಲಾ ಸೂಕ್ತ ಕ್ರಮಗಳನ್ನೂ ತೆಗೆದುಕೊಳ್ಳಲಾಗುವುದು ಎಂದಿದ್ದಾರೆ.












Click it and Unblock the Notifications