ಉ. ಕ.ದಲ್ಲಿ ಭಾರೀ ಮಳೆ : ಮಳೆಗಾಲದ ಪೂರ್ವ ಸಭೆ ನಡೆಸಿದ ಜಿಲ್ಲಾಧಿಕಾರಿ
ಕಾರವಾರ, ಜೂನ್.11: ಉತ್ತರ ಕನ್ನಡ ಜಿಲ್ಲೆಗೆ ಮುಂಗಾರು ಪ್ರವೇಶಗೊಂಡು ವಾರವೇ ಕಳೆದಿದೆ. ವಿವಿಧೆಡೆ ಮನೆಗಳ ಮೇಲೆ ಮರಗಳು ಬಿದ್ದು ಆಸ್ತಿಪಾಸ್ತಿ ಹಾನಿಯಾಗಿದೆ. ವಿದ್ಯುತ್ ತಂತಿಗಳು ಹರಿದು, ಕಂಬಗಳು ಧರೆಗುರುಳಿದೆ.
ಮಳೆಗಾಲದಲ್ಲಿ ಸಂಭವಿಸಬಹುದಾದ ಅವಘಡಕ್ಕೂ ಮುನ್ನ ಕ್ರಮ ಕೈಗೊಳ್ಳುವಂತೆ ಜಿಲ್ಲಾ ನೋಡಲ್ ಕಾರ್ಯದರ್ಶಿ ಮೊನೀಶ್ ಮೌದ್ಗೀಲ್ ಮಳೆಗಾಲದಲ್ಲಿಯೇ ಜಿಲ್ಲೆಗೆ ಬಂದು ಮಳೆಗಾಲದ ಪೂರ್ವ ಸಭೆ ನಡೆಸಿದ್ದಾರೆ.
ಜಿಲ್ಲಾಡಳಿತ ಮತ್ತು ಇತರೆ ಇಲಾಖೆಗಳು ಮಳೆಗಾಲದಲ್ಲಿ ಉಂಟಾಗುವ ಅವಘಡಗಳನ್ನು ತಪ್ಪಿಸಲು ಸೂಕ್ತ ಕ್ರಮ ಕೈಗೊಳ್ಳಬೇಕು ಎಂದು ಸೂಚನೆ ನೀಡಿದ್ದಾರೆ. ಮಳೆಗಾಲದಲ್ಲಿ ಸಾಂಕ್ರಾಮಿಕ ರೋಗಗಳ ಹಾವಳಿ ಹೆಚ್ಚಾಗುವುದರಿಂದ ಆರೋಗ್ಯ ಇಲಾಖೆ ಮತ್ತು ಸ್ಥಳೀಯ ಸಂಸ್ಥೆಗಳು ನೈರ್ಮಲ್ಯಕ್ಕೆ ಹೆಚ್ಚು ಒತ್ತು ಕೊಟ್ಟು ಕಾರ್ಯನಿರ್ವಹಿಸಬೇಕೆಂದು ಅಧಿಕಾರಿಗಳಿಗೆ ಸೂಚಿಸಿದ್ದಾರೆ.

ಜಿಲ್ಲಾಡಳಿತ ಕೈಗೊಂಡ ಕ್ರಮಗಳು
ಜಿಲ್ಲಾಧಿಕಾರಿ ಎಸ್ ಎಸ್.ನಕುಲ್ ಈ ಬಗ್ಗೆ ಮಾಹಿತಿ ನೀಡಿ, ಮಳೆಗಾಲದ ಮುಂಜಾಗ್ರತಾ ಕ್ರಮವಾಗಿ ಗುಡ್ಡ ಕುಸಿದು ಜೀವಹಾನಿ ಸಂಭವಿಸದಂತೆ ಹೊನ್ನಾವರ ತಾಲೂಕಿನ ಕೆಳಗಿನೂರು, ಕರ್ಕಿ ಹಾಗೂ ಕುಮಟಾ ತಾಲೂಕಿನ ತಂಡ್ರಕುಳಿಯಲ್ಲಿ ಕುಟುಂಬಗಳನ್ನು ತಾತ್ಕಾಲಿಕವಾಗಿ ಮೂರ್ನಾಲ್ಕು ತಿಂಗಳ ಅವಧಿಗೆ ಬೇರೆ ಸ್ಥಳಗಳಿಗೆ ಸ್ಥಳಾಂತರಿಸಲಾಗಿದೆ.
ಆ ಕುಟುಂಬದ ಸದಸ್ಯರಿಗೆ ಪ್ರತಿ ತಿಂಗಳು 10 ಸಾವಿರ ಪರಿಹಾರ ಧನ ಐಆರ್ ಬಿ ಕಂಪನಿಯಿಂದ ನೀಡುವ ಕಾರ್ಯ ಪ್ರಗತಿಯಲ್ಲಿದೆ.
ರಾಷ್ಟ್ರೀಯ ಹೆದ್ದಾರಿಗಳಲ್ಲಿ ಅಪಘಾತ ಸಂಭವಿಸಬಹುದಾದ ಸ್ಥಳಗಳಲ್ಲಿ ಮುಂಜಾಗ್ರತಾ ಹಾಗೂ ಪರಿಹಾರ ಕ್ರಮ ಕೈಗೊಳ್ಳಲು ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರದಿಂದ ತಂಡ ರಚಿಸಲಾಗಿದೆ ಎಂದು ತಿಳಿಸಿದರು.

ಪರಿಹಾರ ವಿತರಣೆ
ಜಿಲ್ಲೆಯಲ್ಲಿ 2018-19ನೇ ಸಾಲಿನಲ್ಲಿ ಪ್ರಕೃತಿ ವಿಕೋಪದಡಿ ಎರಡು ಮಾನವ ಜೀವ ಹಾನಿಯಾಗಿದ್ದು, ಮೃತರ ವಾರಸುದಾರರಿಗೆ ಸರ್ಕಾರದ ಮಾರ್ಗಸೂಚಿಯಂತೆ ತಲಾ 4 ಲಕ್ಷ ಪರಿಹಾರ ವಿತರಿಸಲಾಗಿದೆ.
ಮುಖ್ಯಮಂತ್ರಿ ಪರಿಹಾರ ನಿಧಿಯಿಂದ ತಲಾ 1 ಲಕ್ಷ ಪರಿಹಾರ ವಿತರಿಸುವ ಕುರಿತು ಸರ್ಕಾರಕ್ಕೆ ಪತ್ರ ಬರೆಯಲಾಗಿದೆ. ಒಟ್ಟು 198 ವಾಸದ ಮನೆಗಳು ಹಾನಿಯಾಗಿದ್ದು, ಇವುಗಳಲ್ಲಿ 39 ಮನೆಗಳಿಗೆ ಒಟ್ಟು 1.75 ಲಕ್ಷ ಪರಿಹಾರ ವಿತರಿಸಲಾಗಿದೆ.
ಉಳಿದ 116 ಮನೆಗಳಿಗೆ ಪರಿಹಾರ ವಿತರಿಸುವ ಕಾರ್ಯ ಪ್ರಗತಿಯಲ್ಲಿದೆ ಎಂದು ಜಿಲ್ಲಾಧಿಕಾರಿ ವಿವರಿಸುತ್ತಾರೆ.

ಪ್ರವಾಸಿಗರ ಸಂಖ್ಯೆಯಲ್ಲಿ ಇಳಿಕೆ
ಜಿಲ್ಲೆಯಲ್ಲಿ ಮಳೆಯೊಂದಿಗೆ ಆಗಾಗ ರಭಸದ ಗಾಳಿಯೂ ಬೀಸುತ್ತಿದ್ದು, ಅರಬ್ಬಿ ಸಮುದ್ರದಲ್ಲಿ ಬೃಹತ್ ಅಲೆಗಳು ದಡಕ್ಕೆ ಅಪ್ಪಳಿಸುತ್ತಿವೆ. ಕಾರವಾರದಲ್ಲಿ ಪ್ರವಾಸಿಗರಿಗೆ ಮುಖ್ಯ ಆಕರ್ಷಣೆಯಾಗಿರುವ ರವೀಂದ್ರನಾಥ ಟ್ಯಾಗೋರ್ ಕಡಲತೀರ ಭಣಗುಟ್ಟುತ್ತಿದೆ.
ಅದೇ ರೀತಿ, ಶಿಲ್ಪ ಉದ್ಯಾನಕ್ಕೆ ಭೇಟಿ ನೀಡುವವರ ಸಂಖ್ಯೆಯೂ ಸ್ವಲ್ಪ ಕಡಿಮೆಯಾಗಿದೆ.

ವಾಹನ ಸವಾರರ ಪರದಾಟ
ಕಾರವಾರದ ವಿವಿಧ ಬಡಾವಣೆಗಳ ರಸ್ತೆಗಳಲ್ಲಿ ನೀರು ನಿಂತಿದ್ದು, ಸೂಕ್ತ ನಿರ್ವಹಣೆ ಮಾಡದ ನಗರಸಭೆ ವಿರುದ್ಧ ನಾಗರಿಕರು ಅಸಮಾಧಾನ ವ್ಯಕ್ತಪಡಿಸುತ್ತಿದ್ದಾರೆ. ಕರ್ನಾಟಕ ಗೃಹ ಮಂಡಳಿ ಕಾಲೋನಿ, ಸುಂಕ್ರಿವಾಡ, ಪದ್ಮನಾಭ ನಗರ ಸೇರಿದಂತೆ ತಗ್ಗು ಪ್ರದೇಶದಲ್ಲಿರುವ ವಿವಿಧ ಬಡಾವಣೆಗಳಲ್ಲಿ ವಾಹನ ಸವಾರರು, ಪಾದಚಾರಿಗಳು ಸಂಚರಿಸಲು ಪರದಾಡುತ್ತಿದ್ದಾರೆ.
ಕೆಲವೆಡೆ ಕಿತ್ತುಹೋಗಿರುವ ಕಾಂಕ್ರೀಟ್ ರಸ್ತೆಗಳ ಹೊಂಡದಲ್ಲಿ ಮಳೆ ನೀರು ನಿಂತಿದೆ. ಇದರಿಂದ ರಸ್ತೆ ಮತ್ತು ಹೊಂಡದ ವ್ಯತ್ಯಾಸ ತಿಳಿಯದೇ ವಾಹನ ಸವಾರರು ಅಪಾಯಕ್ಕೀಡಾಗುವ ಸಾಧ್ಯತೆಯಿದೆ.












Click it and Unblock the Notifications