ಸೇತುವೆಗಾಗಿ ಸಿಎಂಗೆ ಪದ್ಮಶ್ರೀ ತುಳಸಜ್ಜಿ ಮನವಿ; ಶಾಸಕಿ ರೂಪಾಲಿ ಭರವಸೆ
ಕಾರವಾರ, ಜುಲೈ 9: ಲಕ್ಷಾಂತರ ಗಿಡಗಳನ್ನು ನೆಟ್ಟು ವೃಕ್ಷಮಾತೆ ಎನಿಸಿಕೊಂಡ ತುಳಸಿ ಗೌಡ ಅವರಿಗೂ ಭಾರಿ ಮಳೆಯಿಂದ ಸಂಕಷ್ಟ ಎದುರಾಗಿದೆ. ಮನೆ ಮುಂಭಾಗ ಹರಿಯುವ ಸಣ್ಣ ಹಳ್ಳವೊಂದನ್ನು ದಾಟಲು ಸಾಧ್ಯವಾಗದೆ ಪ್ರತಿ ಮಳೆಗಾಲದಲ್ಲಿಯೂ ಪರದಾಡುತ್ತಿದ್ದು ಈ ಬಗ್ಗೆ ಅಧಿಕಾರಿಗಳು ಹಾಗೂ ಜನಪ್ರತಿನಿಧಿಗಳ ಬಳಿ ಗೋಗರೆದರೂ ಈವರೆಗೂ ಯಾವುದೇ ಪ್ರಯೋಜನವಾಗದ ಹಿನ್ನೆಲೆಯಲ್ಲಿ ಇದೀಗ ನಾಡಿನ ದೊರೆ ಮುಖ್ಯಮಂತ್ರಿಗೆ ಸ್ವತಃ ಮನವಿ ಮಾಡಿದ್ದಾರೆ.
ಅಂಕೋಲಾ ತಾಲ್ಲೂಕಿನ ಹೊನ್ನಳ್ಳಿ ಎಂಬ ಪುಟ್ಟ ಗ್ರಾಮದ ಹಾಲಕ್ಕಿ ಸಮುದಾಯದ ತುಳಸಿ ಗೌಡ ದೇಶದ ಅತ್ಯುನ್ನತ ನಾಗರಿಕ ಸಮ್ಮಾನಗಳಲ್ಲೊಂದಾದ ಪದ್ಮಶ್ರೀ ಪುರಸ್ಕಾರಕ್ಕೊಳಗಾಗಿದ್ದಾರೆ. ನವದೆಹಲಿಯ ರಾಷ್ಟ್ರಪತಿ ಭವನಕ್ಕೆ ಹಳ್ಳಿಯಿಂದ ಬರಿಗಾಲಲ್ಲಿ ತೆರಳಿ ಪ್ರಶಸ್ತಿ ಸ್ವೀಕರಿಸಿ ಬಂದವರು. ಆದರೆ, ಎಷ್ಟೇ ದೊಡ್ಡ ಮಟ್ಟದ ಪ್ರಶಸ್ತಿ ಸ್ವೀಕರಿಸಿದರೂ ತಮ್ಮ ಪಾಲಿಗೆ ಬದುಕಲು ಸೂಕ್ತ ಮೂಲಭೂತ ಸೌಕರ್ಯವಿಲ್ಲದೆ ಪರದಾಡಬೇಕಾಗಿದೆ ಎಂದು ನೋವು ತೋಡಿಕೊಂಡಿದ್ದಾರೆ.
ಗಿಡಗಳನ್ನ ನೆಟ್ಟು ಪೋಷಿಸಿದ್ದಕ್ಕಾಗಿ ಪದ್ಮಶ್ರೀ ಪ್ರಶಸ್ತಿಯನ್ನೂ ಪಡೆದ ವೃಕ್ಷಮಾತೆ ತುಳಸಿ ಗೌಡರ ಮಳೆಗಾಲದಲ್ಲಿ ತುಂಬಿ ಹರಿಯುವ ಮನೆಯೆದುರಿನ ತೊರೆಯಿಂದಾಗಿ ತುಳಸಜ್ಜಿ ಸಾಕಷ್ಟು ತೊಂದರೆ ಅನುಭವಿಸುತ್ತಿದ್ದಾರೆ. ಸದ್ಯಕ್ಕೆ ಒಂದು ಕಾಲುಸಂಕವನ್ನಾದರೂ ನಿರ್ಮಿಸಿಕೊಡುವಂತೆ ಮುಖ್ಯಮಂತ್ರಿ ಹಾಗೂ ಜಿಲ್ಲಾಧಿಕಾರಿಗಳಿಗೆ ಕೈಮುಗಿದು ಬೇಡಿಕೊಂಡಿದ್ದಾರೆ.

ತುರ್ತು ಸಂದರ್ಭದಲ್ಲೂ ಸಮಸ್ಯೆ
ಹೊನ್ನಳ್ಳಿಯಲ್ಲಿರುವ ಮನೆ ಎದುರು ಸಣ್ಣ ಹಳ್ಳವೊಂದು ಮಳೆಗಾಲದಲ್ಲಿ ತುಂಬಿ ಹರಿಯುತ್ತದೆ. ಪ್ರತಿನಿತ್ಯ ಪೇಟೆಗಾಗಲಿ, ತುರ್ತು ಸಂದರ್ಭದಲ್ಲಿ ಆಸ್ಪತ್ರೆಗಾಗಲಿ, ಮಕ್ಕಳಿಗೆ ಶಾಲೆಗಾಗಲಿ ಹೋಗಬೇಕಾದರೆ ಈ ತುಂಬಿದ ತೊರೆಯನ್ನೇ ಜೀವಭಯದಲ್ಲೇ ದಾಟಿ ಹೋಗಬೇಕಿದೆ. ಪದ್ಮಶ್ರೀ ಪ್ರಶಸ್ತಿ ದೊರೆತ ಸಂದರ್ಭದಲ್ಲಿ ತುಳಸಜ್ಜಿಯವರನ್ನ ಭೇಟಿಯಾಗಿದ್ದ ಅಧಿಕಾರಿಗಳಿಗೆ ಈ ಮಳೆಗಾಲದ ಸಮಸ್ಯೆಯ ಬಗ್ಗೆ ಅಜ್ಜಿ ಗಮನಕ್ಕೆ ತಂದಿದ್ದರಂತೆ. ಒಂದು ಸಣ್ಣ ಕಾಲುಸಂಕವನ್ನಾದರೂ ನಿರ್ಮಿಸಿಕೊಡಲು ಮನವಿ ಮಾಡಿಕೊಂಡಿದ್ದರಂತೆ. ಆದರೆ ಯಾರೂ ಕೂಡ ಈವರೆಗೆ ಕಿವಿ ಕೊಟ್ಟಿಲ್ಲ ಎಂದು ತುಳಸಜ್ಜಿ ಬೇಸರ ವ್ಯಕ್ತಪಡಿಸಿದ್ದಾರೆ.

ಶಾಸಕಿಯಿಂದ ಸೇತುವೆ,ರಸ್ತೆ ಭರವಸೆ
ಪದ್ಮಶ್ರೀ ತುಳಸಿ ಗೌಡ ಅವರ ನಿವಾಸ ಸಂಪರ್ಕಿಸುವ ಕಿರು ಸೇತುವೆಗೆ 25 ಲಕ್ಷ ರೂ. ಹಾಗೂ ರಸ್ತೆಗೆ 15 ಲಕ್ಷ ರೂ. ಮಂಜೂರಾಗಿದ್ದು, ಮಳೆಗಾಲದ ತರುವಾಯ ಕಾಮಗಾರಿ ಶುರುವಾಗಲಿದೆ. ತುಳಸಿ ಗೌಡ ಅವರ ಸಂಚಾರಕ್ಕಾಗಿ ತಾತ್ಕಾಲಿಕ ಸೇತುವೆಯನ್ನು ವಾರದೊಳಗೆ ನಿರ್ಮಿಸಲಾಗುವುದು ಎಂದು ಶಾಸಕಿ ರೂಪಾಲಿ ಎಸ್.ನಾಯ್ಕ ಭರವಸೆ ನೀಡಿದ್ದಾರೆ.
ತುಳಸಿ ಗೌಡ ಅವರ ನಿವಾಸದ ಬಳಿ ಸೇತುವೆ ಹಾಗೂ ರಸ್ತೆಗಾಗಿ 40 ಲಕ್ಷ ರೂ. ಮಾರ್ಚ್ 2022ರಲ್ಲೇ ಮಂಜೂರಾಗಿದೆ. ಇದನ್ನು ತಾವು ತುಳಸಿ ಗೌಡ ಅವರ ಗಮನಕ್ಕೂ ತಂದಿದ್ದೆ. ಆದರೆ ವಿಧಾನ ಪರಿಷತ್ ಚುನಾವಣೆಯ ನೀತಿ ಸಂಹಿತೆ ಹಿನ್ನೆಲೆಯಲ್ಲಿ ಕಾಮಗಾರಿ ಆರಂಭವಾಗಿಲ್ಲ. ನಂತರ ಮಳೆ ಬಂದಿದ್ದರಿಂದ ಮತ್ತೆ ವಿಳಂಬವಾಗಿದೆ ಎಂದು ತಿಳಿಸಿದ್ದಾರೆ.
ಮಳೆಗಾಲ ಮುಗಿದ ಮೇಲೆ ಶಾಶ್ವತ ಸೇತುವೆ
ಎಲ್ಲೆಡೆ ಭಾರಿ ಮಳೆ ಬೀಳುತ್ತಿದೆ. ಪದ್ಮಶ್ರೀ ತುಳಸಿ ಗೌಡ ಅವರ ನಿವಾಸದ ಬಳಿಯೂ ನೀರು ತುಂಬಿರುವುದನ್ನು ಗಮನಿಸಿದ್ದೇನೆ. ಅವರಿಗೆ ಸಂಚಾರಕ್ಕೆ ತೊಂದರೆಯಾಗದಂತೆ ವಾರದೊಳಗೆ ತಾತ್ಕಾಲಿಕ ಸೇತುವೆಯನ್ನು ನಿರ್ಮಿಸಿಕೊಡಲಾಗುವುದು. ಮಳೆಗಾಲ ಮುಗಿದ ಮೇಲೆ ಶಾಶ್ವತ ಸೇತುವೆ ನಿರ್ಮಾಣ ಕಾರ್ಯ ಆರಂಭವಾಗಲಿದೆ. ವೃಕ್ಷಮಾತೆ ತುಳಸಿ ಗೌಡ ಹಾಗೂ ಹಾಡುಹಕ್ಕಿ ಸುಕ್ರಿ ಗೌಡ ಅವರು ನಮ್ಮ ಕ್ಷೇತ್ರದ ಹೆಮ್ಮೆಯಾಗಿದ್ದು ಅವರಿಗೆ ಅಗತ್ಯ ಸೌಲಭ್ಯ ಕಲ್ಪಿಸಲಾಗುವುದು ಎಂದು ರೂಪಾಲಿ ಎಸ್.ನಾಯ್ಕ ತಿಳಿಸಿದ್ದಾರೆ.

ಗ್ರಾಮ ಪಂಚಾಯತ್ಗಳಿಗೆ ನೋಡಲ್ ಅಧಿಕಾರಿಗಳನ್ನು ನೇಮಕ
ಇನ್ನು ಜಿಲ್ಲೆಯಲ್ಲಿ ಭಾರಿ ಮಳೆಗೆ ಸುಮಾರು 90 ಮನೆಗಳಿಗೆ ಹಾನಿ ಸಂಭವಿಸಿದೆ. ಈ ಪೈಕಿ 81 ಮನೆಗಳಿಗೆ ಈಗಾಗಲೇ ಪರಿಹಾರವನ್ನು ಒದಗಿಸಲಾಗಿದೆ. ಹಲವೆಡೆ ಮನೆಗಳಿಗೆ ನೀರು ನುಗ್ಗಿ ಹಾನಿ ಉಂಟುಮಾಡಿದ ಹಿನ್ನಲೆ ಈಗಾಗಲೇ ಕಾರವಾರ, ಕುಮಟಾ ಹಾಗೂ ಹೊನ್ನಾವರ ತಾಲ್ಲೂಕುಗಳಲ್ಲಿ ಕಾಳಜಿ ಕೇಂದ್ರಗಳನ್ನು ತೆರೆದಿಯಲಾಗಿದೆ.
ಜಿಲ್ಲೆಯಲ್ಲಿ ಮಳೆಯ ಪ್ರಮಾಣ ನಿರೀಕ್ಷೆಗೂ ಮೀರಿ ಬರುತ್ತಿದ್ದು, ತುರ್ತು ಅಗತ್ಯ ಕ್ರಮ ಕೈಗೊಳ್ಳುವ ನಿಟ್ಟಿನಲ್ಲಿ ಪ್ರತಿ ಗ್ರಾಮ ಪಂಚಾಯತ್ಗಳಿಗೆ ನೋಡಲ್ ಅಧಿಕಾರಿಗಳನ್ನು ನೇಮಕ ಮಾಡಲಾಗಿದೆ. ಜೊತೆಗೆ ಕಂಟ್ರೋಲ್ ರೂಮ್ ತೆರೆಯುವ ಮೂಲಕ 24 ಗಂಟೆಯೂ ಯಾವುದೇ ಸಮಸ್ಯೆ ಕಂಡುಬಂದರೂ ಪರಿಹಾರ ಒದಗಿಸುವ ಕಾರ್ಯಕ್ಕೆ ಸಿದ್ಧವಾಗಿರುವಂತೆ ನೋಡಿಕೊಳ್ಳಲಾಗಿದೆ ಎಂದು ಜಿಲ್ಲಾ ಉಸ್ತುವಾರಿ ಸಚಿವ ಕೋಟಾ ಶ್ರೀನಿವಾಸ ಪೂಜಾರಿ ಮಾಹಿತಿ ನೀಡಿದ್ದಾರೆ.












Click it and Unblock the Notifications