ಪರೇಶ್ ಮೇಸ್ತಾ ಸಾವು: 106 ಕ್ರಿಮಿನಲ್ ಕೇಸ್ ಜಡಿದ ಪೊಲೀಸರು
ಕಾರವಾರ, ಡಿಸೆಂಬರ್ 14: ಇಡೀ ಉತ್ತರ ಕನ್ನಡವೇ ಹೊತ್ತಿ ಉರಿದಿದ್ದ ಹೊನ್ನಾವರದ ಪರೇಶ್ ಮೇಸ್ತಾ ಸಾವಿನ ಪ್ರಕರಣಕ್ಕೆ ಸಂಬಂಧಿಸಿದಂತೆ ಈವರೆಗೆ ಒಟ್ಟು 106 ಕ್ರಿಮಿನಲ್ ಪ್ರಕರಣಗಳು ದಾಖಲಾಗಿವೆ.
ಹೊನ್ನಾವರದ ಪರೇಶ ಮೇಸ್ತಾ ಸಾವಿನ ಬಗ್ಗೆ ಸುಳ್ಳು ವದಂತಿಗಳನ್ನು ಸೃಷ್ಟಿಸಿ ಸಾಮಾಜಿಕ ಜಾಲತಾಣಗಳಾದ ವಾಟ್ಸಪ್, ಫೇಸ್ ಬುಕ್ ನಲ್ಲಿ ಶೇರ್ ಮಾಡಿದವರ ವಿರುದ್ಧ ಉತ್ತರ ಕನ್ನಡ ಜಿಲ್ಲೆಯ ವಿವಿಧ ಪೊಲೀಸ್ ಠಾಣೆಗಳಲ್ಲಿ ಈವರೆಗೆ ಒಟ್ಟು 106 ಕ್ರಿಮಿನಲ್ ಪ್ರಕರಣಗಳು ದಾಖಲಾಗಿದ್ದು, ಆರೋಪಿಗಳನ್ನು ಬಂಧಿಸಿ ಕಾನೂನು ಕ್ರಮ ಕೈಗೊಳ್ಳಲಾಗುವುದು ಎಂದು ಜಿಲ್ಲಾ ಪೊಲೀಸ್ ಅಧೀಕ್ಷ ವಿನಾಯಕ ಪಾಟೀಲ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಸಾವಿನ ಕುರಿತಾಗಿ ಸುಳ್ಳು ವದಂತಿಗಳನ್ನು ಸೃಷ್ಟಿಸಿ ಹಿಂದೂ-ಮುಸ್ಲಿಂ ಭಾವೈಕ್ಯತೆಗೆ ನಿರಂತರವಾಗಿ ಭಂಗ ತರುತ್ತಾ ಪ್ರಚೋದನಾಕಾರಿ ಸಂದೇಶಗಳನ್ನು ಸಾಮಾಜಿಕ ಜಾಲತಾಣಗಳಲ್ಲಿ ಪ್ರಸಾರ ಹಾಗೂ ಶೇರ್ ಮಾಡುವುದು ಒಂದು ಗಂಭೀರವಾದ ಅಪರಾಧವಾಗಿದೆ.
ಈಗಾಗಲೇ ಇಂತಹ ಕಿಡಿಗೇಡಿಗಳ ವಿರುದ್ಧ ಭಾರತ ದಂಡ ಸಂಹಿತೆ ಕಲಂ 153,153 (ಎ), 505, 295 (ಎ), 504, 506 ಐ.ಪಿ.ಸಿ ಹಾಗೂ ಮಾಹಿತಿ ತಂತ್ರಜ್ಞಾನ ಕಾಯ್ದೆ 2008ರಂತೆ ಕ್ರಿಮಿನಲ್ ಪ್ರಕರಣಗಳನ್ನು ದಾಖಲಿಸಿ ಹಲವು ಆರೋಪಿತರನ್ನು ಈಗಾಗಲೇ ಬಂಧಿಸಿ ನ್ಯಾಯಾಂಗ ಬಂಧನಕ್ಕೆ ಕಳುಹಿಸಲಾಗಿದೆ ಎಂದು ವಿನಾಯಕ ಪಾಟೀಲ್ ತಿಳಿಸಿದರು.

ಮನೋಕಾಮನೆ ತೀರಿಸಿಕೊಳ್ಳಲು ಸಾಮಾಜಿಕ ಜಾಲತಾಣ
ಕೆಲ ಕಿಡಿಗೇಡಿಗಳು ತಮ್ಮ ವಿಕೃತ ಮನೋಕಾಮನೆಗಳನ್ನು ತೀರಿಸಿಕೊಳ್ಳಲು ಸಾಮಾಜಿಕ ಜಾಲತಾಣಗಳನ್ನು ಬಳಸುತ್ತಿದ್ದು, ಅಂತವರ ವಿರುದ್ಧ ಪೊಲೀಸ್ ಇಲಾಖೆ ಹಾಗೂ ಜಿಲ್ಲಾಡಳಿತ ಉನ್ನತ ಮಟ್ಟದಲ್ಲಿ ಇಂಟರ್ ನೆಟ್ ಹಾಗೂ ಸೋಷಿಯಲ್ ಮಿಡಿಯಾ ಮೊನಿಟರಿಂಗ್ ತಂತ್ರಾಂಶದ ಮೂಲಕ ನಿರಂತರವಾಗಿ ತೀವ್ರ ನಿಗಾ ಇಡಲಾಗಿದೆ ಎಂದು ಎಸ್ಪಿ ವಿನಾಯಕ ಪಾಟೀಲ್ ಹೇಳಿದರು.

ಕಠಿಣ ಕಾನೂನು ಕ್ರಮ
ಈ ರೀತಿ ವಾಟ್ಸಪ್, ಫೇಸ್ಬುಕ್ ಮತ್ತು ಆನ್ಲೈನ್ ಸುದ್ದಿ ಜಾಲತಾಣಗಳಲ್ಲಿ ಹಿಂದೂ ಹಾಗೂ ಮುಸ್ಲಿಂ ಭಾವೈಕ್ಯತೆಯನ್ನು ಹಾಳುಗಡವುತ್ತಾ, ಸಮಾಜದಲ್ಲಿ ಶಾಂತಿ ಸುವ್ಯವಸ್ಥೆ, ಸಾರ್ವಜನಿಕ ನೆಮ್ಮದಿಗೆ ಭಂಗ ತರುತ್ತಿರುವವರ ವಿರುದ್ಧ ಕಠಿಣ ಕಾನೂನು ಕ್ರಮ ಕೈಗೊಳ್ಳಲಾಗುತ್ತಿದೆ ಎಂದು ವಿನಾಯಕ ಪಾಟೀಲ್ ತಿಳಿಸಿದ್ದಾರೆ.

ಶಾಂತಿ ಕಾಪಾಡುವಂತೆ ಮನವಿ
ಸಾಮಾಜಿಕ ಜಾಲತಾಣಗಳಲ್ಲಿ ಬರುವ ಸುಳ್ಳು ಹಾಗೂ ಪ್ರಚೋದನಾಕಾರಿ ಸಂದೇಶಗಳಿಗೆ ಸಾರ್ವಜನಿಕರು ಕಿವಿಗೊಡದೆ ಸಮಾಜದಲ್ಲಿ ಶಾಂತಿ ಕಾಪಾಡುವಂತೆ ವಿನಾಯಕ ಪಾಟೀಲ್ ಮನವಿ ಮಾಡಿದ್ದಾರೆ.

ಪರೇಶ ಮೇಸ್ತ ಶವ ಡಿ.8ರಂದು ಪತ್ತೆ
ಡಿಸೆಂಬರ್ 6ರ ಬುಧವಾರ ಉತ್ತರ ಕನ್ನಡ ಜಿಲ್ಲೆಯ ಹೊನ್ನಾವರದಲ್ಲಿ ಗಲಭೆ ನಡೆದಿತ್ತು. ಗಲಭೆ ದಿನ ಕಾಣೆಯಾಗಿದ್ದ 21 ವರ್ಷದ ಪರೇಶ ಮೇಸ್ತ ಶವ ಡಿ.8ರಂದು ಕೆರೆಯಲ್ಲಿ ಪತ್ತೆಯಾಗಿತ್ತು.

ಪರೇಶ್ ಸಾವಿನ ತನಿಖೆ ಸಿಬಿಐಗೆ
ಇದೊಂದು ಸಂಚಿನ ಕೊಲೆ ಎಂದು ಹಿಂದೂಪರ ಸಂಘಟನೆಗಳು ಉತ್ತರ ಕನ್ನಡ ಜಿಲ್ಲೆಯಲ್ಲಿ ಉಗ್ರ ಹೋರಾಟ ಮಾಡಿದ್ದವು. ಇದಾದ ಬಳಿಕ ರಾಜ್ಯ ಸರ್ಕಾರ ಪರೇಶ್ ಸಾವಿನ ತನಿಖೆಯನ್ನು ಸಿಬಿಐಗೆ ವಹಿಸಿದೆ.












Click it and Unblock the Notifications