ಹೊಸ ವರ್ಷಾಚರಣೆ: ಕರಾವಳಿಯಲ್ಲಿ ಸಂಜೆಯಿಂದ ನಿಷೇಧಾಜ್ಞೆ
ಕಾರವಾರ, ಡಿಸೆಂಬರ್ 31; ರೂಪಾಂತರಗೊಂಡ ಕೋವಿಡ್ ವೈರಸ್ ಹರಡುವಿಕೆ ತಡೆಯಲು ಉತ್ತರ ಕನ್ನಡ ಜಿಲ್ಲೆಯಲ್ಲಿ ಕ್ರಮ ಕೈಗೊಳ್ಳಲಾಗಿದೆ. ಜಿಲ್ಲೆಯಲ್ಲಿ ನಿಷೇಧಾಜ್ಞೆ ಜಾರಿಗೊಳಿಸಲಾಗತ್ತಿದ್ದು, ಈ ಮೂಲಕ ಅದ್ಧೂರಿ ಹೊಸ ವರ್ಷಾಚರಣೆಗೆ ಈ ಬಾರಿ ಕಡಿವಾಣ ಹಾಕಲಾಗಿದೆ.
ಕರ್ನಾಟಕದಲ್ಲಿ ಹೊಸ ಸ್ವರೂಪದ ಕೋವಿಡ್ ಸೋಂಕು ಪತ್ತೆಯಾಗಿದೆ. ಇದರಿಂದಾಗಿ ಆತಂಕ ಹೆಚ್ಚಾಗಿದೆ. ಈ ಹಿನ್ನೆಲೆಯಲ್ಲಿ ಸರ್ಕಾರ ಸುರಕ್ಷತಾ ಕ್ರಮ ಕೈಗೊಳ್ಳಲು ಸೂಚನೆಯನ್ನು ನೀಡಿದೆ. ಕೋವಿಡ್ ಹರಡದಂತೆ ಕೇಂದ್ರ ಸರ್ಕಾರ ಕೂಡ ಮಾರ್ಗದರ್ಶಿ ಸೂತ್ರಗಳನ್ನು ಬಿಡುಗಡೆಗೊಳಿಸಿದೆ.
ಹೊಸ ವರ್ಷ ಸಂಭ್ರಮಾಚರಣೆಗಳ ಮೇಲೆ ನಿರ್ಬಂಧ: ರಾಜ್ಯಗಳಿಗೆ ಕೇಂದ್ರದ ಸಲಹೆ
ಈ ಎಲ್ಲಾ ಬೆಳವಣಿಗೆ ಹಿನ್ನಲೆಯಲ್ಲಿ ಉತ್ತರ ಕನ್ನಡ ಜಿಲ್ಲೆಯಲ್ಲಿ ಸಂಭ್ರಮಾಚರಣೆಗೆ ನಿರ್ಬಂಧ ವಿಧಿಸಿ ಜಿಲ್ಲಾಧಿಕಾರಿ ಡಾ. ಕೆ. ಹರೀಶಕುಮಾರ್ ಆದೇಶ ಹೊರಡಿಸಿದ್ದಾರೆ. ಕರಾವಳಿಯ ತಾಲೂಕುಗಳಲ್ಲಿ ಗುರುವಾರ ಸಂಜೆಯಿಂದಲೇ ನಿಷೇಧಾಜ್ಞೆ ಜಾರಿಗೆ ಬರಲಿದೆ.
ಹೊಸ ವರ್ಷದ ಸಂಭ್ರಮ; ಮೈಸೂರಲ್ಲಿ ನಿಷೇಧಾಜ್ಞೆ ಜಾರಿ
ಕಾರವಾರ, ಅಂಕೋಲಾ, ಕುಮಟಾ, ಹೊನ್ನಾವರ ಮತ್ತು ಭಟ್ಕಳ ತಾಲೂಕುಗಳಲ್ಲಿ ಡಿಸೆಂಬರ್ 31ರ ಸಂಜೆ 4 ಗಂಟೆಯಿಂದ ಜನವರಿ 1ರ ಬೆಳಗ್ಗೆ 6 ಗಂಟೆಯವರೆಗೆ ಈ ನಿಷೇಧಾಜ್ಞೆ ಜಾರಿಯಲ್ಲಿರಲಿದೆ. ಹೊಸ ವರ್ಷಾಚರಣೆ ಸಮಯದಲ್ಲಿ ಕೋವಿಡ್ ಸಾಂಕ್ರಾಮಿಕ ರೋಗ ಹರಡದಂತೆ ತಡೆಯಲು ಈ ಕ್ರಮ ಕೈಗೊಳ್ಳಲಾಗಿದೆ.
ಹೊಸ ವರ್ಷಾಚರಣೆ ಸಂಭ್ರಮಕ್ಕೆ ನಿಯಮ ವಿಧಿಸಿಲ್ಲ: ಕೋಲಾರ ಜಿಲ್ಲಾಧಿಕಾರಿ
ಜಿಲ್ಲೆಯಲ್ಲಿ ಕಾನೂನು ಸುವ್ಯವಸ್ಥೆ ಕಾಪಾಡುವ ದೃಷ್ಟಿಯಿಂದ ಕರಾವಳಿ ಭಾಗದ ಬೀಚ್ಗಳಲ್ಲಿ, ಐತಿಹಾಸಿಕ ಸ್ಥಳಗಳು, ಜನಸಂದಣಿ ಪ್ರದೇಶಗಳು ಮತ್ತು ಪ್ರಮುಖ ಸಾರ್ವಜನಿಕ ಸ್ಥಳಗಳಲ್ಲಿ ಯಾವುದೇ ಸಾರ್ವಜನಿಕ ಮೆರವಣಿಗೆ, ವಿಜಯೋತ್ಸವ, ಪ್ರತಿಭಟನಾ ಮೆರವಣಿಗೆ ಹಾಗೂ ಸಾರ್ವಜನಿಕ ಸಭೆ, ಸಮಾರಂಭಗಳಿಗೆ ನಿರ್ಬಂಧ ಹೇರಲಾಗಿದೆ.
ಭಾರತೀಯ ದಂಡ ಸಂಹಿತೆಯ ಕಲಂ 144ರಂತೆ ನಿಷೇಧಾಜ್ಞೆಯನ್ನು ಜಿಲ್ಲಾಧಿಕಾರಿಗಳು ಜಾರಿಗೊಳಿಸಿದ್ದಾರೆ. ಆದರೆ, ಈ ಆದೇಶವು ಸರ್ಕಾರದ ಆದೇಶದಂತೆ ನಡೆಸಲ್ಪಡುವ ಯಾವುದೇ ಕಾರ್ಯಕ್ರಮ, ಧಾರ್ಮಿಕ ಹಬ್ಬ, ಹರಿದಿನಗಳು ಮತ್ತು ಶವಸಂಸ್ಕಾರಗಳಿಗೆ ಇದು ಅನ್ವಯವಾಗುವುದಿಲ್ಲ ಎಂದು ಸ್ಪಷ್ಟಪಡಿಸಲಾಗಿದೆ.
ನಿಷೇಧಾಜ್ಞೆಯನ್ನು ಉಲ್ಲೇಖಿಸಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಶಿವಪ್ರಕಾಶ್ ದೇವರಾಜು ಕೂಡ ವಿವರಣೆ ನೀಡಿದ್ದಾರೆ. ಹೊಸ ವಷಾಚರಣೆ ಸಂಬಂಧ ನಿಷೇಧಾಜ್ಞೆ ಜಾರಿ ಇರುವ ಪ್ರದೇಶಗಳಲ್ಲಿ ಹಾಗೂ ಸಾರ್ವಜನಿಕ ಸ್ಥಳಗಳಲ್ಲಿ 5 ಅಥವಾ ಅದಕ್ಕಿಂತ ಹೆಚ್ಚು ಜನರು ಸೇರುವುದನ್ನು ನಿಷೇಧಿಸಲಾಗಿದೆ. ಅಲ್ಲದೇ ಇತರೇ ಸಾರ್ವಜನಿಕ ಸ್ಥಳಗಳಲ್ಲಿ ಯಾವುದೇ ರೀತಿಯ ಗುಂಪು ಸೇರುವುದು ಹಾಗೂ ಹೊಸವರ್ಷಾಚರಣೆ ಮಾಡುವುದನ್ನು ನಿಷೇಧಿಸಲಾಗಿರುತ್ತದೆ ಎಂದು ಹೇಳಿದ್ದಾರೆ.
ಹೊಸ ವರ್ಷಾಚರಣೆ ಸಂಭ್ರಮದ ಕಾರ್ಯಕ್ರಮವನ್ನು ಯಾವುದೇ ತೆರೆದ ಸ್ಥಳ, ಪಾರ್ಕ್ ಹಾಗೂ ಇತರೇ ಮೈದಾನಗಳಲ್ಲಿ ಹಮ್ಮಿಕೊಳ್ಳಬಾರದು. ಅದೇ ರೀತಿ ಸಾರ್ವಜನಿಕರು ತಮ್ಮ ಮನೆಯಲ್ಲಿ ತಮ್ಮ ಕುಟುಂಬಸ್ಥರ ಜೊತೆಯಲ್ಲಿ ಯಾವುದೇ ವಿಶೇಷ ಕಾರ್ಯಕ್ರಮ ಆಯೋಜಿಸದೇ, ಮನೆ/ ಮನೆಯ ಆವರಣದಲ್ಲಿ ಮಾಡಿಕೊಳ್ಳಲು ಅಭ್ಯಂತರವಿರುವುದಿಲ್ಲ.
ಆದರೆ, ಹೊರಗಿನವರಿಗೆ ಅವಕಾಶ ಕಲ್ಪಿಸತಕ್ಕದ್ದಲ್ಲ. ಹೊಟೇಲ್/ ಬಾರ್ ಇತರೇ ವಾಣಿಜ್ಯ ಸ್ಥಳಗಳಲ್ಲಿ ಎಂದಿನಂತೆ ವ್ಯಾಪಾರ, ವಹಿವಾಟು ನಡೆಸಿಕೊಂಡು ಹೋಗಬಹುದು. ಆದರೆ, ಹೊಸ ವರ್ಷದ ನಿಮಿತ್ತ ಯಾವುದೇ ಕಾರ್ಯಕ್ರಮ ಆಯೋಜಿಸಬಾರದು ಎಂದು ಸೂಚನೆ ನೀಡಲಾಗಿದೆ.
Recommended Video
ಹೊಸ ವರ್ಷಾಚರಣೆ ಸಮಯ ಸಾರ್ವಜನಿಕ ರಸ್ತೆಗಳಲ್ಲಿ ಸಾರ್ವಜನಿಕರು ಅನಾವಶ್ಯಕವಾಗಿ ನಿರ್ಧಿಷ್ಟ ಕಾರಣವಿಲ್ಲದೇ ಕಾರು/ ಬೈಕ್ ಹಾಗೂ ಇನ್ನಿತರ ವಾಹನಗಳ ಮೂಲಕ ಓಡಾಡಿ ಸಂಚಾರ ನಿಯಮ ಉಲ್ಲಂಘಿಸಿದರೆ ವಿಪತ್ತು ನಿರ್ವಹಣೆ ಕಾಯ್ದೆ 2005ರ ಕಲಂ 51ರಿಂದ 60 ಹಾಗೂ ಸಾಂಕ್ರಾಮಿಕ ಕಾಯಿಲೆಗಳ ಕಾಯ್ದೆ ಸಹಿತ ಐಪಿಸಿ 188ರನ್ವಯ ಸೂಕ್ತ ಕಾನೂನು ಕ್ರಮ ಜರುಗಿಸಲಾಗುತ್ತದೆ.