ಉತ್ತರ ಕನ್ನಡ ಜಿಲ್ಲೆಯಲ್ಲಿ ನಿಲ್ಲದ ಮಳೆ; ತಗ್ಗು ಪ್ರದೇಶಗಳಿಗೆ ಹರಿದ ನೀರು
ಕಾರವಾರ, ಆಗಸ್ಟ್ 10: ಉತ್ತರ ಕನ್ನಡ ಜಿಲ್ಲೆಯಲ್ಲಿ ಮಳೆಯ ಅವಾಂತರಗಳು ಮುಂದುವರಿದಿವೆ. ಇಂದು ಬಿಟ್ಟೂಬಿಡದೇ ಬೆಳಿಗ್ಗೆಯಿಂದ ಒಂದೇ ಸಮನೆ ಜಿಟಿಜಿಟಿ ಮಳೆ ಸುರಿಯುತ್ತಿದ್ದು, ಇದರಿಂದಾಗಿ ತಗ್ಗು ಪ್ರದೇಶಗಳಿಗೆ ನೀರು ನುಗ್ಗಿ ಹಾನಿ ಸಂಭವಿಸಿದೆ.
Recommended Video
ಹೊನ್ನಾವರ ತಾಲೂಕಿನ ಗುಂಡಬಾಳ, ಭಾಸ್ಕೇರಿ, ಸಾಲ್ಕೋಡ್, ಬಡಗಣೆ ಹೊಳೆಯು ತುಂಬಿದ್ದು, ಗುಂಡಬಾಳ, ಚಿಕ್ಕನಕೋಡ್, ಗುಂಡಿಬೈಲ್, ಹಾಡಗೇರಿ, ಮುಟ್ಟಾ, ಹಡಿನಬಾಳ, ಭಾಸ್ಕೇರಿ, ಗಜನಿಕೇರಿ, ದೊಡ್ಡಹಿತ್ತಲ್, ರ್ನಕೇರಿ, ಕೋಣಾರ್, ಕರ್ಕಿ, ಕಡತೋಕಾ ಭಾಗದ ಹಲವು ಮನೆಗಳಿಗೆ ನೀರು ನುಗ್ಗಿ ಜನಜೀವನ ಅಸ್ತವ್ಯಸ್ತವಾಗಿದೆ.

ಸ್ಥಳದಲ್ಲೇ ಬೀಡುಬಿಟ್ಟ ಅಧಿಕಾರಿಗಳು
ಕಂದಾಯ, ಪೋಲಿಸ್, ಪಂಚಾಯತಿ ಅಧಿಕಾರಿಗಳು ಹಾಗೂ ನಿಯೋಜಿಸಲಾದ ನೋಡಲ್ ಅಧಿಕಾರಿಗಳು ಸ್ಥಳದಲ್ಲೇ ಬೀಡುಬಿಟ್ಟಿದ್ದು, ಸಂತ್ರಸ್ತರನ್ನು ಕಾಳಜಿ ಕೇಂದ್ರದತ್ತ ಕರೆದೊಯ್ಯುತ್ತಿದ್ದಾರೆ. ತಹಶೀಲ್ದಾರ ವಿವೇಕ ಶೇಣ್ವಿ ಅಧಿಕಾರಿಗಳೊಂದಿಗೆ ಸ್ಥಳಕ್ಕೆ ಭೇಟಿ ನೀಡಿದ್ದು, ಮಳೆ ಕಡಿಮೆಯಾಗುವವರೆಗೆ ಕಾಳಜಿ ಕೇಂದ್ರಕ್ಕೆ ಬರಲು ನೆರೆಯ ಭೀತಿ ಎದುರಿಸುತ್ತಿರುವ ಕುಟುಂಬಗಳಿಗೆ ಮನವಿ ಮಾಡಿದ್ದಾರೆ.

ಸಕಲ ರೀತಿ ವ್ಯವಸ್ಥೆ
ಸರ್ಕಾರ ಸಕಲ ರೀತಿಯು ವ್ಯವಸ್ಥೆ ಕಲ್ಪಿಸಲು ಸಜ್ಜಾಗಿದೆ. ಕೊರೊನಾ ಹಿನ್ನೆಲೆಯಲ್ಲಿ ಸಾಮಾಜಿಕ ಅಂತರಕ್ಕಾಗಿ ಹೆಚ್ಚುವರಿ ಕೊಠಡಿಗಳನ್ನು ಒದಗಿಸಲಾಗುವುದು. ಊಟ ವಸತಿಯ ಜೊತೆ ಆರೋಗ್ಯ ತಪಾಸಣೆ ಕೂಡ ನಡೆಸಲಾಗುವುದು ಎಂದು ಅವರು ಮಾಹಿತಿ ನೀಡಿದ್ದಾರೆ.

ಆರೆಂಜ್ ಅಲರ್ಟ್ ಘೋಷಣೆ
ಶಿರಸಿ- ಕುಮಟಾ ಹೆದ್ದಾರಿ ಜಲಾವೃತಗೊಂಡ ಹಿನ್ನೆಲೆಯಲ್ಲಿ ಹೆದ್ದಾರಿ ಸಂಚಾರವನ್ನು ತಾತ್ಕಾಲಿಕವಾಗಿ ಈ ಭಾಗದಲ್ಲಿ ಸ್ಥಗಿತಗೊಳಿಸಲಾಗಿದೆ. ನಿರಂತರವಾಗಿ ಸುರಿಯುತ್ತಿರುವ ಮಳೆಯಿಂದಾಗಿ ಜಿಲ್ಲೆಯ ನದಿಗಳಾದ ಅಘನಾಶಿನಿ, ಗಂಗಾವಳಿ, ವರದಾ ನದಿಗಳಲ್ಲಿ ನೀರು ಉಕ್ಕಿ ಹರಿಯುತ್ತಿರುವ ಕಾರಣ ಕುಮಟಾ ಕತಗಾಲ್ ಬಳಿ ಹೆದ್ದಾರಿಯ ಮೇಲೆ ನೀರು ನಿಂತಿದೆ. ಹೀಗಾಗಿ ಈ ಭಾಗದಲ್ಲಿ ವಾಹನ ಸಂಚಾರವನ್ನು ಸ್ಥಗಿತಗೊಳಿಸಲಾಗಿಮುಂದಿನ ಐದು ದಿನಗಳ ಕಾಲ ಜಿಲ್ಲೆಯಲ್ಲಿ ಭಾರೀ ಮಳೆಯಾಗುವ ಸಾಧ್ಯತೆ ಇದ್ದು, ಇಂದು ಆರೆಂಜ್ ಅಲರ್ಟ್ ಅನ್ನು ಹವಾಮಾನ ಇಲಾಖೆ ಘೋಷಿಸಿದೆ. ಕರಾವಳಿ ಭಾಗದಲ್ಲಿ ತೀವ್ರ ಮಳೆ ಹಿನ್ನೆಲೆಯಲ್ಲಿ ಮುನ್ನೆಚ್ಚರಿಕಾ ಕ್ರಮವಾಗಿ ಜಿಲ್ಲೆಯ ಎಲ್ಲ ಕಡಲತೀರಗಳಿಗೆ ಪ್ರವಾಸಿಗರು ಹಾಗೂ ಸಾರ್ವಜನಿಕರು ತೆರಳದಂತೆ ನಿಷೇಧಿಸಲಾಗಿದೆ.ದೆ.

ಕ್ರಮಕ್ಕೆ ಉಸ್ತುವಾರಿ ಕಾರ್ಯದರ್ಶಿ ಸೂಚನೆ
ಪ್ರವಾಹ ಕುರಿತು ಸರ್ಕಾರದ ಮಾರ್ಗಸೂಚಿಯಂತೆ ಸೂಕ್ತ ಮುನ್ನೆಚ್ಚರಿಕಾ ಕ್ರಮ ತೆಗೆದುಕೊಳ್ಳಬೇಕು ಎಂದು ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿ ಕೆ.ಪಿ.ಮೋಹನರಾಜ್ ಅಧಿಕಾರಿಗಳಿಗೆ ಈಗಾಗಲೇ ಸೂಚನೆ ನೀಡಿದ್ದಾರೆ.
ಜಿಲ್ಲೆಯಲ್ಲಿ ತೀವ್ರ ಮಳೆಯಾಗುತ್ತಿರುವ ಹಿನ್ನಲೆಯಲ್ಲಿ ಕಾಳಜಿ ಕೇಂದ್ರಗಳನ್ನು ಮಾರ್ಗಸೂಚಿಯಂತೆ ಸಿದ್ಧಪಡಿಸಲು ಹಾಗೂ ಪ್ರಸ್ತುತ ಕೋವಿಡ್ ಪರಿಸ್ಥಿತಿ ಇರುವುದರಿಂದ ಅದರ ಮಾರ್ಗಸೂಚಿಯಂತೆ ಕಾಳಜಿ ಕೇಂದ್ರದಲ್ಲಿ ಸೂಕ್ತ ಮುನ್ನೆಚ್ಚರಿಕೆಯನ್ನು ವಹಿಸುವಂತೆ ತಿಳಿಸಿದ್ದಾರೆ. ಈವರೆಗಿನ ಮಳೆ ಹಾಗೂ ಪ್ರವಾಹದಿಂದ ಬಾಧಿತರಾದ ಸಂತ್ರಸ್ತರಿಗೆ ಕೂಡಲೇ ಪರಿಹಾರ ನೀಡುವಲ್ಲಿ ಕ್ರಮ ಕೈಗೊಳ್ಳಬೇಕು. ಇಗಾಗಲೇ ಜಿಲ್ಲೆಯ ಎಲ್ಲಾ ಜಲಾಶಯಗಳು ಬಹುತೇಕ ಭರ್ತಿಯಾಗುವ ಹಂತದಲ್ಲಿದ್ದು, ಮುಂದಿನ ದಿನಗಳಲ್ಲಿ ಕೂಡ ತೀವ್ರ ಮಳೆಯಾಗುವ ಸಾಧ್ಯತೆಗಳು ಇರುವುದರಿಂದ ಜಲಾಶಯಗಳಿಂದ ಹೆಚ್ಚುವರಿ ನೀರನ್ನು ನದಿಗೆ ಬಿಡುಗಡೆಗೊಳಿಸುವ ಕುರಿತು ಎಲ್ಲಾ ಮುನ್ನೆಚ್ಚರಿಕಾ ಕ್ರಮಗಳನ್ನು ತೆಗೆದುಕೊಳ್ಳಲು ನಿರ್ದೇಶಿಸಿದ್ದಾರೆ.












Click it and Unblock the Notifications