Rameshwaram Cafe Blast: ರಾಮೇಶ್ವರಂ ಕೆಫೆ ಬ್ಲಾಸ್ಟ್ ಬಗ್ಗೆ ಪ್ರಮೋದ್ ಮುತಾಲಿಕ್ ಪ್ರತಿಕ್ರಿಯೆ ಹೇಗಿತ್ತು ಗೊತ್ತಾ?-ಮಾಹಿತಿ
ಕಾರವಾರ, ಮಾರ್ಚ್, 04: ಬೆಂಗಳೂರು ರಾಮೇಶ್ವರಂ ಕೆಫೆ ಬಾಂಬ್ ಸ್ಫೋಟ ಪ್ರಕರಣ ಕ್ಷಣಕ್ಕೊಂದು ತಿರುವು ಪಡೆದುಕೊಳ್ಳುತ್ತಲೇ ಇದೆ. ಜೊತೆಗೆ ರಾಜಕೀಯ ಕೆಸೆರೆರಚಾಟಗಳು ಕೂಡ ನಡೆಯುತ್ತಿವೆ. ಇನ್ನು ಈ ಬಗ್ಗೆ ಕಾರವಾರದಲ್ಲಿ ಸುದ್ದಿಗೋಷ್ಠಿ ನಡೆಸಿದ ಪ್ರಮೋದ್ ಮುತಾಲಿಕ್ ಏನು ಹೇಳಿದ್ದಾರೆ ಎನ್ನುವ ಮಾಹಿತಿಯನ್ನು ಇಲ್ಲಿ ತಿಳಿಯಿರಿ.
"ಬೆಂಗಳೂರು ರಾಮೇಶ್ವರಂ ಕೆಫೆ ಬಾಂಬ್ ಸ್ಪೋಟ ಪೂರ್ವಯೋಜಿತ ಕೃತ್ಯ. ಸತ್ಯಾಸತ್ಯತೆ ಹೊರಬರಬೇಕಾದರೆ ಎನ್ಐಎ ತನಿಖೆಗೆ ವಹಿಸಬೇಕು. ಎರಡೂ ರಾಷ್ಟ್ರೀಯ ಪಕ್ಷಗಳು ಬಾಯಿ ಮುಚ್ಚಿಕೊಂಡು ಕೂರಬೇಕು. ನಿಮ್ಮ ನಿಮ್ಮ ಕಾಲದಲ್ಲಿ ಏನೇನಾಗಿದೆ ಎಂಬುದನ್ನು ಅರ್ಥ ಮಾಡಿಕೊಳ್ಳಿ. ಬಾಂಬ್ ಸ್ಫೋಟ ಆಗಲು ಎರಡೂ ಪಕ್ಷದವರು ಕಾರಣ. ನಿಮ್ಮ ರಾಜಕೀಯ ಲಾಭಕ್ಕಾಗಿ ಇಲ್ಲಸಲ್ಲದ ಹೇಳಿಕೆ ಕೊಡಬೇಡಿ," ಎಂದು ಶ್ರೀರಾಮ ಸೇನೆ ಮುಖ್ಯಸ್ಥ ಪ್ರಮೋದ್ ಮುತಾಲಿಕ್ ವಾಗ್ದಾಳಿ ನಡೆಸಿದ್ದಾರೆ ಎಂದು ಪಬ್ಲಿಕ್ ಟಿವಿ ವರದಿ ಮಾಡಿದೆ.

ಕಾರವಾರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ರಾಜಕೀಯ ಪಕ್ಷಗಳ ಹೇಳಿಕೆಗಳು ತನಿಖೆಯ ದಾರಿ ತಪ್ಪಿಸಲಿದೆ. ಬಿಜೆಪಿ ಅವಧಿಯಲ್ಲಿಯೂ ಸ್ಫೋಟ ನಡೆದಿತ್ತು. ಕಾಂಗ್ರೆಸ್ ಅವಧಿಯಲ್ಲೂ ನಡೆದಿದೆ. ರಾಜಕೀಯ ಪಕ್ಷಗಳ ನಿರ್ಲಕ್ಷ್ಯದ ಪರಿಣಾಮವೇ ಪದೇ ಪದೇ ಬಾಂಬ್ ಸ್ಫೋಟಕ್ಕೆ ಕಾರಣ. ರಾಜ್ಯ ಸರ್ಕಾರದ ಬದಲು ರಾಷ್ಟ್ರೀಯ ತನಿಖಾ ದಳಕ್ಕೆ ಒಪ್ಪಿಸಬೇಕು. ರಾಜ್ಯ ಸರ್ಕಾರ ಪೊಲೀಸರ ಕೈ ಕಟ್ಟಿಹಾಕಿದೆ. ಪೊಲೀಸರನ್ನು ಕಟ್ಟಿಹಾಕಬೇಡಿ ಎಂದು ಆಕ್ರೋಶ ಹೊರಹಾಕಿದರು.
ಇನ್ನು ಪಾಕಿಸ್ತಾನ ಪರ ಘೋಷಣೆ ಕೂಗುವವರು ದೇಶದ ಪಾಲಿಗೆ ಕ್ಯಾನ್ಸರ್ ವೈರಸ್ ಇದ್ದಂತೆ. ಮೊದಲು ನಾಸಿರ್ ಹುಸೇನ್ ವಿರುದ್ಧ ಕ್ರಮ ಜರುಗಿಸಬೇಕು. ಭಟ್ಕಳಕ್ಕೆ ಪಾಕಿಸ್ತಾನದ ನಂಟಿದೆ ಎಂದು ಜಗನ್ನಾಥ ಶೆಟ್ಟಿ ಆಯೋಗ ವರದಿ ನೀಡಿತ್ತು. ವರದಿಯನ್ನು ಬಿಜೆಪಿ ಅಧಿಕಾರದಲ್ಲಿದ್ದಾಗಲೇ ಒಪ್ಪಲಿಲ್ಲ. ಬಿಜೆಪಿ, ಕಾಂಗ್ರೆಸ್ಗೆ ಹೆಚ್ಚು ವ್ಯತ್ಯಾಸವಿಲ್ಲ ಎಂದು ಕಿಡಿಕಾರಿದ್ದಾರೆ.











Click it and Unblock the Notifications