ಅಗ್ಗದ ಪ್ರಚಾರಕ್ಕೆ ಅನಂತಕುಮಾರ್ ಹೆಗಡೆ ಹೇಳಿಕೆ; ದೇಶಪಾಂಡೆ
ಹಳಿಯಾಳ, ಫೆಬ್ರವರಿ 04: "ರಾಷ್ಟ್ರಪಿತ ಮಹಾತ್ಮಾ ಗಾಂಧೀಜಿಯವರ ಅಹಿಂಸಾ ಹೋರಾಟ ಹಾಗೂ ಉಪವಾಸ ಸತ್ಯಾಗ್ರಹವನ್ನು ಒಂದು ನಾಟಕ ಎನ್ನುವಂತೆ ಮಾತನಾಡಿರುವ ಸಂಸದ ಅನಂತಕುಮಾರ ಹೆಗಡೆ ಅವರ ಹೇಳಿಕೆ ಖಂಡನೀಯ" ಎಂದು ಶಾಸಕ ಆರ್.ವಿ.ದೇಶಪಾಂಡೆ ಹೇಳಿದ್ದಾರೆ.
ಮಹಾತ್ಮಾ ಗಾಂಧೀಜಿಯವರ ಕುರಿತಾಗಿ ಸಂಸದ ಅನಂತಕುಮಾರ ಹೆಗಡೆ ನೀಡಿದ ಹೇಳಿಕೆಯನ್ನು ಖಂಡಿಸಿ ಅವರು ಮಂಗಳವಾರ ಪತ್ರಿಕಾ ಹೇಳಿಕೆಯನ್ನು ಬಿಡುಗಡೆ ಮಾಡಿದ್ದಾರೆ.
ಅನಂತಕುಮಾರ್ ಹೆಗಡೆ ವಿರುದ್ಧ ಲೋಕಸಭೆಯಲ್ಲಿ ತೀವ್ರ ಆಕ್ರೋಶ
ಜವಾಬ್ದಾರಿಯುತ ಸ್ಥಾನದಲ್ಲಿರುವ ವ್ಯಕ್ತಿಯೊಬ್ಬರು ಹೀಗೆ ಸ್ವಾತಂತ್ರ್ಯ ಹೋರಾಟಗಾರರ ಕುರಿತು, ಅದರಲ್ಲೂ ಮಹಾತ್ಮಾ ಗಾಂಧೀಜಿಯವರ ಹೋರಾಟದ ಕುರಿತು ಅವಹೇಳನಕಾರಿಯಾಗಿ ಮಾತನಾಡಿದ್ದಾರೆ. ಈ ಹಿಂದೆಯೂ ಸಂವಿಧಾನವನ್ನು ಬದಲಾಯಿಸುತ್ತೇವೆ ಎಂದು ಬಹಿರಂಗ ಹೇಳಿಕೆ ನೀಡಿದ್ದರು. ಗೋಡ್ಸೆಯವರನ್ನ ಹೊಗಳಿದ್ದು ಸೇರಿದಂತೆ ಅನೇಕ ಬಾರಿ ಸಂವಿಧಾನ ವಿರೋಧಿ, ಪ್ರಚೋದನಾತ್ಮಕ ಹಾಗೂ ಅಸಂಬದ್ಧ ಹೇಳಿಕೆಗಳನ್ನು ನೀಡಿ ಟೀಕೆಗೆ ಗುರಿಯಾಗಿದ್ದರು. ಕೇವಲ ಅಗ್ಗದ ಪ್ರಚಾರಕ್ಕಾಗಿ ಇಂಥ ವಿವಾದಾತ್ಮಕ ಹೇಳಿಕೆಗಳನ್ನು ನೀಡಿ, ಅನಗತ್ಯ ವಿವಾದ ಸೃಷ್ಟಿಸಿ, ಅವರನ್ನು ಆರಿಸಿ ಕಳುಹಿಸಿದ ಉತ್ತರ ಕನ್ನಡ ಜನರಿಗೆ ಅಪಮಾನ ಎಸಗಿದ್ದಾರೆ ಎಂದು ಹೇಳಿದರು.
ಈ ಹೇಳಿಕೆ ಕುರಿತಂತೆ ಬಿಜೆಪಿ ತನ್ನ ನಿಲುವನ್ನು ಸ್ಪಷ್ಟಪಡಿಸಬೇಕು ಹಾಗೂ ಸಂಸದರು ದೇಶದ ಜನರ ಬಹಿರಂಗ ಕ್ಷಮೆ ಯಾಚಿಸಬೇಕು. ಗೌರವಾನ್ವಿತ ಲೋಕಸಭಾ ಸ್ಪೀಕರ್ ಅವರು ಈ ಸಂಸದರ ಮೇಲೆ ಸೂಕ್ತ ಕ್ರಮ ಕೈಗೊಳ್ಳಬೇಕು ಎಂದು ಆಗ್ರಹಿಸುತ್ತೇನೆ ಎಂದು ಪತ್ರಿಕಾ ಹೇಳಿಕೆಯಲ್ಲಿ ತಿಳಿಸಿದ್ದಾರೆ.