ಸಿಎಂ 'ತಂತಿಯ ಮೇಲಿನ ನಡಿಗೆ'ಗೆ ಸಚಿವೆ ಜೊಲ್ಲೆ ಹೀಗಂದ್ರು!
ಕಾರವಾರ, ಅಕ್ಟೋಬರ್ 1: ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರು ತಂತಿಯ ಮೇಲೆ ನಡೆಯುತ್ತಿದ್ದೇನೆ ಎಂದು ನೀಡಿದ್ದ ಹೇಳಿಕೆಯನ್ನು ಉತ್ತರ ಕನ್ನಡ ಜಿಲ್ಲಾ ಉಸ್ತುವಾರಿಯೂ ಆಗಿರುವ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಸಚಿವೆ ಶಶಿಕಲಾ ಜೊಲ್ಲೆ ಸಮರ್ಥಿಸಿಕೊಂಡಿದ್ದಾರೆ.
ಜಿಲ್ಲಾ ಉಸ್ತುವಾರಿಯಾಗಿ ನೇಮಕವಾದ ಬಳಿಕ ಮೊದಲ ಬಾರಿಗೆ ಮಂಗಳವಾರ ಜಿಲ್ಲೆಗೆ ಭೇಟಿ ನೀಡಿದ ಅವರು, ಮಾಧ್ಯಮದವರೊಂದಿಗೆ ಮಾತನಾಡಿದರು.
ಈ ವೇಳೆ ಬಿ.ಎಸ್.ವೈ ಹೇಳಿಕೆಯ ಕುರಿತು ಮಾಧ್ಯಮದವರು ಕೇಳಿದ ಪ್ರಶ್ನೆಗೆ ಪ್ರತಿಕ್ರಿಯೆ ನೀಡಿದ ಅವರು, ಸರ್ಕಾರ ಅಧಿಕಾರಕ್ಕೆ ಬಂದಾಗಿನಿಂದಲೂ ಉತ್ತಮವಾಗಿ ನಡೆಯುತ್ತಿದೆ. ತಂತಿಯ ಮೇಲಿನ ನಡುಗೆ ಎನ್ನುವುದಕ್ಕಿಂತಲೂ, ಪಕ್ಷದ ಹೈಕಮಾಂಡ್ ಸೂಚನೆಯಂತೆ ಎಲ್ಲರೂ ನಡೆದುಕೊಳ್ಳುತ್ತಿದ್ದೇವೆ ಎಂದು ಹೇಳಿದ್ದಾರೆ.
ಪಕ್ಷದ ಎಲ್ಲ ಮುಖಂಡರು ಸೇರಿದಂತೆ ಅನರ್ಹ ಶಾಸಕರು ಕೂಡ ಚುನಾವಣೆಗೆ ಸಿದ್ದರಾಗುತ್ತಿದ್ದಾರೆ. ಬಿಜೆಪಿ ಹೈಕಮಾಂಡ್ ಸೂಚನೆಗೆ ಎಲ್ಲರೂ ಒಪ್ಪಿ ನಡೆಯುತ್ತಿದ್ದೇವೆ. ಅನರ್ಹ ಶಾಸಕರ ಬಗ್ಗೆಯೂ ನಮ್ಮ ಪಕ್ಷದ ಹಿರಿಯರು ಯೋಗ್ಯವಾದ ನಿರ್ಣಯ ತೆಗೆದುಕೊಳ್ಳುತ್ತಾರೆ ಎಂದರು.
'ನಾನು ಒಂದು ರೀತಿ ತಂತಿ ಮೇಲೆ ನಡೆಯುತ್ತಿದ್ದೇನೆ. ಯಾವುದೇ ರೀತಿಯ ನಿರ್ಧಾರ ತೆಗೆದುಕೊಳ್ಳಬೇಕಾದರೆ ಹತ್ತಾರು ಸಲ ವಿಚಾರ ಮಾಡಬೇಕಾಗಿದೆ' ಎಂದು ಸೆ.29ರಂದು ದಾವಣಗೆರೆಯಲ್ಲಿ ನಡೆದ ದಸರಾ ಧರ್ಮ ಸಮ್ಮೇಳನದಲ್ಲಿ ಮುಖ್ಯಮಂತ್ರಿ ಹೇಳಿಕೆ ನೀಡಿದ್ದರು.