ಉ.ಕ.ದಲ್ಲಿ ಮಳೆಯದ್ದೇ ಹವಾ: 91 ಮನೆಗಳಿಗೆ ಹಾನಿ, 3 ತಾಲ್ಲೂಕಿನಲ್ಲಿ ಕಾಳಜಿ ಕೇಂದ್ರ

ಕಾರವಾರ: ಉತ್ತರಕನ್ನಡ ಜಿಲ್ಲೆಯಲ್ಲಿ ಕಳೆದೊಂದು ವಾರದಿಂದ ಧಾರಾಕಾರವಾಗಿ ಸುರಿಯುತ್ತಿದ್ದು, ಶುಕ್ರವಾರವೂ ಮುಂದುವರಿದಿದೆ. ಒಂದೇ ವಾರದ ಅವಧಿಯಲ್ಲಿ ಜಿಲ್ಲೆಯಾದ್ಯಂತ ಬರೋಬ್ಬರಿ 4,960 ಮಿ.ಮೀ ಮಳೆಯಾಗಿದ್ದು, 91 ಮನೆಗಳು ಧರೆಗುರುಳಿದಿದ್ದು, 3 ತಾಲ್ಲೂಕುಗಳಲ್ಲಿ ಕಾಳಜಿ ಕೇಂದ್ರ ತೆರೆಯಲಾಗಿದೆ.

ಕಳೆದೊಂದು ವಾರದಿಂದ ಧಾರಾಕಾರವಾಗಿ ಸುರಿದ ಮಳೆಯಿಂದಾಗಿ ಸಾಕಷ್ಟು ಅವಾಂತರ ಸೃಷ್ಟಿಯಾಗಿದೆ. ಜಿಲ್ಲೆಯಲ್ಲಿ ಜೂನ್ ತಿಂಗಳಿಂದ ಮಳೆ ಪ್ರಾರಂಭವಾಗಿದ್ದು ಕಳೆದ ಕೆಲ ದಿನಗಳಿಂದ ಸುರಿಯುತ್ತಿರುವ ಧಾರಾಕಾರ ಮಳೆಗೆ ತಗ್ಗು ಪ್ರದೇಶಗಳಿಗೆ ನೀರು ನುಗ್ಗಿದೆ. ಕಾರವಾರ ತಾಲ್ಲೂಕಿನ ಅವೈಜ್ಞಾನಿಕ ಹೆದ್ದಾರಿ ಕಾಮಗಾರಿಯಿಂದಾಗಿ ರಸ್ತೆಯಂಚಿನ ಮನೆಗಳು ಜಲಾವೃತವಾಗುವಂತಾಗಿದೆ. ಹೊನ್ನಾವರದ ಭಾಸ್ಕೇರಿ ಬಳಿ ಹಳ್ಳವೊಂದು ಉಕ್ಕಿ ಹರಿದ ಕಾರಣ ಮನೆಗಳು ಸಂಪೂರ್ಣ ಜಲಾವೃತಗೊಂಡಿವೆ.

ಜಿಲ್ಲೆಯ ಪ್ರಮುಖ ನದಿಗಳಾದ ಕಾಳಿ, ಗಂಗಾವಳಿ, ಅಘನಾಶಿನಿ, ಶರಾವತಿ ಸೇರಿದಂತೆ ಹಲವು ನದಿಗಳು ಮೈದುಂಬಿ ಹರಿಯುತ್ತಿರುವುದರಿಂದ ಕುಮಟಾ ತಾಲೂಕಿನ ಊರುಕೇರಿ, ಬಡಗಣಿ, ಹೆಗಡೆ ಭಾಗದಲ್ಲಿ ಪ್ರವಾಹ ಪರಿಸ್ಥಿತಿ ನಿರ್ಮಾಣವಾಗಿದೆ. ಹೊನ್ನಾವರ ತಾಲೂಕಿನ ಗುಂಡಬಾಳ, ಹಡಿನಬಾಳ ಸೇರಿದಂತೆ ಹಲವೆಡೆ ಮನೆ ಹಾಗೂ ತೋಟಗಳಿಗೆ ನೀರು ನುಗ್ಗಿದ್ದು ಜನಜೀವನ ಅಸ್ತವ್ಯಸ್ತವಾಗಿದೆ.

 ಆಶ್ರಯ ಕಳೆದುಕೊಂಡವರಿಗೆ ಕಾಳಜಿ ಕೇಂದ್ರ

ಆಶ್ರಯ ಕಳೆದುಕೊಂಡವರಿಗೆ ಕಾಳಜಿ ಕೇಂದ್ರ

ಜಿಲ್ಲೆಯಲ್ಲಿ ಇದುವರೆಗೆ 91 ಮನೆಗಳಿಗೆ ಹಾನಿ ಸಂಭವಿಸಿದೆ. ಈ ಪೈಕಿ 81 ಮನೆಗಳಿಗೆ ಈಗಾಗಲೇ ಪರಿಹಾರವನ್ನು ಒದಗಿಸಲಾಗಿದೆ. ಹಲವೆಡೆ ಮನೆಗಳಿಗೆ ನೀರು ನುಗ್ಗಿ ಹಾನಿ ಉಂಟುಮಾಡಿದ ಹಿನ್ನಲೆ ಈಗಾಗಲೇ ಕಾರವಾರ, ಕುಮಟಾ ಹಾಗೂ ಹೊನ್ನಾವರ ತಾಲ್ಲೂಕುಗಳಲ್ಲಿ ಕಾಳಜಿ ಕೇಂದ್ರಗಳನ್ನು ತೆರೆದಿದ್ದು ಮಳೆಯಿಂದ ತೊಂದರೆ ಅನುಭವಿಸಿದವರಿಗೆ ಆಶ್ರಯ ಒದಗಿಸಲಾಗಿದೆ.

 ಕಂಟ್ರೋಲ್ ರೂಮ್ ಮೂಲಕ ನೆರವು

ಕಂಟ್ರೋಲ್ ರೂಮ್ ಮೂಲಕ ನೆರವು

ಜಿಲ್ಲೆಯಲ್ಲಿ ಇದುವರೆಗೆ ಸುರಿದ ಮಳೆಗೆ ಓರ್ವ ಸಾವನ್ನಪ್ಪಿದ್ದು ಎರಡು ಜಾನುವಾರುಗಳು ಅಸುನೀಗಿವೆ. ಈಗಾಗಲೇ ಮಳೆಯ ಪ್ರಮಾಣ ನಿರೀಕ್ಷೆಗೂ ಮೀರಿ ಬರುತ್ತಿದ್ದು, ತುರ್ತು ಅಗತ್ಯ ಕ್ರಮ ಕೈಗೊಳ್ಳುವ ನಿಟ್ಟಿನಲ್ಲಿ ಪ್ರತಿ ಗ್ರಾಮ ಪಂಚಾಯತ್‌ಗಳಿಗೆ ನೋಡಲ್ ಅಧಿಕಾರಿಗಳನ್ನು ನೇಮಕ ಮಾಡಲಾಗಿದೆ. ಜೊತೆಗೆ ಕಂಟ್ರೋಲ್ ರೂಮ್ ತೆರೆಯುವ ಮೂಲಕ 24 ಗಂಟೆಯೂ ಯಾವುದೇ ಸಮಸ್ಯೆ ಕಂಡುಬಂದರೂ ಪರಿಹಾರ ಒದಗಿಸುವ ಕಾರ್ಯಕ್ಕೆ ಸಿದ್ಧವಾಗಿರುವಂತೆ ನೋಡಿಕೊಳ್ಳಲಾಗಿದೆ ಎಂದು ಜಿಲ್ಲಾ ಉಸ್ತುವಾರಿ ಸಚಿವ ಕೋಟಾ ಶ್ರೀನಿವಾಸ ಪೂಜಾರಿ ಮಾಹಿತಿ ನೀಡಿದ್ದಾರೆ.

 ರೆಡ್‌ ಅಲರ್ಟ್, ಶಾಲಾ ಕಾಲೇಜಿಗೆ ರಜೆ ವಿಸ್ತರಣೆ

ರೆಡ್‌ ಅಲರ್ಟ್, ಶಾಲಾ ಕಾಲೇಜಿಗೆ ರಜೆ ವಿಸ್ತರಣೆ

ಜಿಲ್ಲೆಯಲ್ಲಿ ಸದ್ಯ ಜುಲೈ 9ರ ಬೆಳಗ್ಗೆ 8:30ರ ವರೆಗೆ ರೆಡ್ ಅಲರ್ಟ್‌ ಮುನ್ಸೂಚನೆಯನ್ನು ಹವಾಮಾನ ಇಲಾಖೆ ನೀಡಿದೆ. ಹೀಗಾಗಿ ಭಾರಿ ಪ್ರಮಾಣದ ಗಾಳಿಯ ಜೊತೆಗೆ ಮಳೆ ಬೀಳುವ ಸಾಧ್ಯತೆಗಳಿರುವ ಹಿನ್ನಲೆ ಜಿಲ್ಲೆಯ ಕರಾವಳಿಯ ಕಾರವಾರ, ಅಂಕೋಲಾ, ಹೊನ್ನಾವರ, ಕುಮಟಾ, ಭಟ್ಕಳ ತಾಲ್ಲೂಕು ಹಾಗೂ ಘಟ್ಟದ ಮೇಲಿನ ಶಿರಸಿ, ಸಿದ್ದಾಪುರ ಹಾಗೂ ಜೋಯಿಡಾ ತಾಲ್ಲೂಕಿನ ಎಲ್ಲಾ ಅಂಗನವಾಡಿ, ಶಾಲೆ ಹಾಗೂ ಕಾಲೇಜುಗಳಿಗೆ ರಜೆಯನ್ನು ಶುಕ್ರವಾರವೂ ವಿಸ್ತರಣೆ ಮಾಡಲಾಗಿದೆ.

 ಅವೈಜ್ಞಾನಿಕ ಕಾಮಗಾರಿಯಿಂದ ಕೃತಕ ನೆರೆ

ಅವೈಜ್ಞಾನಿಕ ಕಾಮಗಾರಿಯಿಂದ ಕೃತಕ ನೆರೆ

ರಾಷ್ಟ್ರೀಯ ಹೆದ್ದಾರಿ ಅವೈಜ್ಞಾನಿಕ ಕಾಮಗಾರಿಯಿಂದ ಕೆಲವೆಡೆ ಕೃತಕನೆರೆ ಪರಿಸ್ಥಿತಿ ನಿರ್ಮಾಣವಾಗುತ್ತಿರುವ ಕುರಿತು ಪ್ರತಿಕ್ರಿಯಿಸಿರುವ ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್ ಈಗಾಗಲೇ ಸಮಸ್ಯೆ ಕುರಿತು ಪರಿಶೀಲನೆ ನಡೆಸಲಾಗಿದೆ. ಮುಂದಿನ ದಿನಗಳಲ್ಲಿ ಮತ್ತೆ ಈ ಸಮಸ್ಯೆ ಮರುಕಳಿಸದಂತೆ ಕಾಮಗಾರಿಯಿಂದಾದ ತೊಂದರೆಗಳನ್ನು ಸರಿಪಡಿಸಲು ಸೂಕ್ತ ಕ್ರಮ ಕೈಗೊಳ್ಳಲು ಸೂಚಿಸಿರುವುದಾಗಿ ತಿಳಿಸಿದ್ದಾರೆ.

ಒಟ್ಟಾರೇ ಉತ್ತರಕನ್ನಡ ಜಿಲ್ಲೆಯಲ್ಲಿ ಸುರಿಯುತ್ತಿರುವ ಧಾರಾಕಾರ ಮಳೆಗೆ ಸಾಕಷ್ಟು ಹಾನಿ ಸಂಭವಿಸಿದ್ದು ಜನಜೀವನ ಅಸ್ತವ್ಯಸ್ತಗೊಂಡಿದೆ. ಈ ನಿಟ್ಟಿನಲ್ಲಿ ಜಿಲ್ಲಾಡಳಿತ ತುರ್ತು ಪರಿಸ್ಥಿತಿ ನಿರ್ವಹಣೆಗೆ ಸಿದ್ಧತೆ ಮಾಡಿಕೊಂಡಿದ್ದು ಮುಂದಿನ ದಿನಗಳಲ್ಲಿ ಮಳೆಯ ಅಬ್ಬರ ಯಾವ ರೀತಿಯಲ್ಲಿ ಇರಲಿದೆ ಅನ್ನೋದನ್ನ ಕಾದುನೋಡಬೇಕು.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+