Breaking News: ಅಂಕೋಲಾದ ಶಿರೂರಿನಲ್ಲಿ ಗುಡ್ಡ ಕುಸಿತ, ನದಿಯಲ್ಲಿ ಲಾರಿ ಪತ್ತೆ
ಕಾರವಾರ, ಸೆಪ್ಟೆಂಬರ್ 21: ಉತ್ತರ ಕನ್ನಡ ಜಿಲ್ಲೆಯ ಅಂಕೋಲ ತಾಲೂಕಿನ ಶಿರೂರಿನಲ್ಲಿ ಗುಡ್ಡ ಕುಸಿತದಿಂದ ನಾಪತ್ತೆಯಾಗಿದ್ದ ಲಾರಿ ಶನಿವಾರ ಪತ್ತೆಯಾಗಿದೆ. ಕೇರಳ ಮೂಲದ ಲಾರಿ ಚಾಲಕ ಅರ್ಜುನ್ ಬಗ್ಗೆ ಮಾತ್ರ ಯಾವುದೇ ಮಾಹಿತಿ ಸಿಕ್ಕಿಲ್ಲ. ಜುಲೈ 16ರಂದು ಭಾರೀ ಮಳೆಯ ಕಾರಣ ಗುಡ್ಡ ಕುಸಿದು, ಲಾರಿಯ ಸಮೇತ ಚಾಲಕ ಅರ್ಜುನ್ ಗಂಗಾವಳಿ ನದಿಗೆ ಬಿದ್ದಿದ್ದ. ಈಗ ನದಿಯಲ್ಲಿ ನೀರಿನ ಮಟ್ಟ ಕಡಿಮೆಯಾಗಿದ್ದು, ಕಾರ್ಯಾಚರಣೆ ಆರಂಭಿಸಲಾಗಿದೆ.
ಶನಿವಾರ ಈಶ್ವರ ಮಲ್ಪೆ ನೇತೃತ್ವದ ಮುಳುಗು ತಜ್ಞರ ತಂಡಕ್ಕೆ ಅರ್ಜುನ್ ಲಾರಿಯ ಅವಶೇಷಗಳು ಪತ್ತೆಯಾಗಿವೆ. ಈ ಕುರಿತು ಉತ್ತರ ಕನ್ನಡ ಎಸ್ಪಿ ಮಾಹಿತಿ ನೀಡಿದ್ದು, ಉತ್ತರ ಕನ್ನಡ ಜಿಲ್ಲೆಯ ಅಂಕೋಲ ತಾಲೂಕಿನ ಶಿರೂರಿನಲ್ಲಿ ಗುಡ್ಡ ಕುಸಿತದಿಂದ ನದಿಯಲ್ಲಿ ಕಾಣೆಯಾದ ಲಾರಿಯ ಕುರುಹು ದೊರೆತಿದ್ದು, ಶೋಧ ಕಾರ್ಯಾಚರಣೆ ಮುಂದುವರೆದಿದೆ ಎಂದು ಹೇಳಿದ್ದಾರೆ.

ಮಳೆಗಾಲ ಮುಗಿದ ಬಳಿಕ ಗಂಗಾವಳಿ ನದಿಯಲ್ಲಿ ನೀರಿನ ಮಟ್ಟ ಕಡಿಮೆಯಾಗಿದೆ. ಆದ್ದರಿಂದ ಲಾರಿ ಚಾಲಕ ಅರ್ಜುನ್ ಮೃತದೇಹಕ್ಕಾಗಿ ಹುಡುಕಾಟ ಆರಂಭಿಸಲಾಗಿದೆ. ಬೃಹತ್ ಬಾರ್ಜ್ ಸಹಿತ ಡ್ರಜ್ಜಿಂಗ್ ಮಷಿನ್ ಮೂಲಕ ಶಿರೂರು ಗುಡ್ಡ ಕುಸಿತದಲ್ಲಿ ಕಾಣೆಯಾದವರ ಶೋಧ ಕಾರ್ಯಾಚರಣೆ ಮುಂದುವರಿದಿದೆ ಎಂದು ಪೊಲೀಸರು ಹೇಳಿದ್ದಾರೆ.
ಶಿರೂರು ಗುಡ್ಡ ಕುಸಿತ ಪ್ರಕರಣದಲ್ಲಿ 8ಕ್ಕೂ ಅಧಿಕ ಮಂದಿ ಮೃತಪಟ್ಟಿದ್ದಾರೆ. ಕರ್ನಾಟಕ ಸರ್ಕಾರ ಮೃತ ಪಟ್ಟವರ ಕುಟುಂಬ ಸದಸ್ಯರಿಗೆ ತಲಾ 5 ಲಕ್ಷ ಪರಿಹಾರ ನೀಡಿದೆ. ಅಲ್ಲದೇ ಲಾರಿ ಚಾಲಕ ಅರ್ಜುನ್ಗಾಗಿ ಹುಡುಕಾಟ ನಡೆಸಬೇಕು ಎಂದು ಕೇರಳ ಸರ್ಕಾರ ಕರ್ನಾಟಕ ಸರ್ಕಾರಕ್ಕೆ ಮನವಿ ಮಾಡಿತ್ತು. ಈ ಹಿನ್ನಲೆಯಲ್ಲಿ ಈಗ ನದಿಯ ನೀರು ಇಳಿಮುಖವಾದ ಬಳಿಕ ಕಾರ್ಯಾಚರಣೆ ಆರಂಭಿಸಲಾಗಿದೆ.
ಮುಳುಗು ತಜ್ಞ ಈಶ್ವರ ಮಲ್ಪೆ ನೇತೃತ್ವದ ತಂಡ ಆಗಸ್ಟ್ನಲ್ಲಿ ಕಾರ್ಯಾಚರಣೆ ಕೈಗೊಂಡಿತ್ತು. ಆದರೆ ಯಾವುದೇ ಕುರುಹು ಪತ್ತೆಯಾಗಿರಲಿಲ್ಲ. ಆದರೆ ಈಗ ನದಿಯಲ್ಲಿ ನೀರಿನ ಮಟ್ಟ ಕಡಿಮೆಯಾದಾಗ ಮುಳುಗಿದ್ದ ಲಾರಿ ಪತ್ತೆಯಾಗಿದೆ. ನದಿಯಿಂದ ಲಾರಿಯನ್ನು ಮೇಲೆತ್ತಲು ವಿಶೇಷ ಕಾರ್ಯಾಚರಣೆ ನಡೆಸುವ ನಿರೀಕ್ಷೆ ಇದೆ.
ಅಂಕೋಲ ತಾಲೂಕಿನ ಶಿರೂರಿನಲ್ಲಿ ಗುಡ್ಡ ಕುಸಿತದಿಂದ ಲಾರಿ ಚಾಲಕ ಅರ್ಜುನ್ ನಾಪತ್ತೆಯಾಗಿದ್ದಾರೆ. ಜುಲೈ 16 ರಂದು ಭೂಕುಸಿತವಾಗುವಾಗ ಅರ್ಜುನ್ ಮರ ತುಂಬಿದ ಲಾರಿಯಲ್ಲಿ ಕೋಝಿಕ್ಕೋಡ್ ಕಡೆಗೆ ಹೋಗುತ್ತಿದ್ದರು. ಗುಡ್ಡದ ಮಣ್ಣಿನ ಜೊತೆಗೆ ಲಾರಿ ಸಮೇತ ಅರ್ಜುನ್ ಗಂಗಾವಳಿ ನದಿಗೆ ಬಿದಿದ್ದರು. ಅಂದಿನಿಂದಲೂ ಅವರ ಕುರಿತು ಯಾವುದೇ ಸುಳಿವು ಸಿಕ್ಕಿಲ್ಲ. ಕೇರಳ ಸರ್ಕಾರ ಅರ್ಜುನ್ ಪತ್ತೆಗೆ ಕಾರ್ಯಾಚರಣೆ ನಡೆಸಬೇಕು ಎಂದು ಕರ್ನಾಟಕ ಸರ್ಕಾರಕ್ಕೆ ಮನವಿ ಮಾಡಿದೆ. ಲಾರಿಯ ಮೇಲೆ ಭಾರೀ ಮಣ್ಣು ಬಿದ್ದಿರುವ ಕಾರಣ ಹುಡುಕಾಟಕ್ಕೆ ಇಷ್ಟು ದಿನ ತೆಗೆದುಕೊಂಡಿದೆ.
ಮುಖ್ಯಮಂತ್ರಿ ಸಿದ್ದರಾಮಯ್ಯ, ಕೇಂದ್ರ ಸಚಿವ ಎಚ್. ಡಿ. ಕುಮಾರಸ್ವಾಮಿ ಸೇರಿದಂತೆ ಅನೇಕ ರಾಜಕೀಯ ನಾಯಕರು ಶಿರೂರು ಗುಡ್ಡ ಕುಸಿತದ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದರು. ಈ ಪ್ರಕರಣದಲ್ಲಿ ಯಾರೇ ತಪ್ಪು ಮಾಡಿದ್ದರೂ ಸಹ ಕ್ರಮ ಕೈಗೊಳ್ಳಲಾಗುತ್ತದೆ. ಘಟನೆಗೆ ಸಂಬಂಧಿಸಿದಂತೆ ನಾವು ಯಾವುದೇ ರಾಜಕಾರಣ ಮಾಡಲ್ಲ. ಬಿಜೆಪಿ ಮೇಲೆ ಆರೋಪ ಮಾಡುವ, ಕೆಸರೆರಚಾಟ ಮಾಡುವುದಿಲ್ಲ ಎಂದು ಸಿದ್ದರಾಮಯ್ಯ ಹೇಳಿದ್ದರು.












Click it and Unblock the Notifications