ಉತ್ತರ ಕನ್ನಡ ಮಲ್ಟಿಸ್ಪೆಷಾಲಿಟಿ ಆಸ್ಪತ್ರೆಗಾಗಿ ತೀವ್ರಗೊಂಡ ಹೋರಾಟ
ಕಾರವಾರ, ಜುಲೈ, 30: ಉತ್ತರಕನ್ನಡ ಜಿಲ್ಲೆಯಲ್ಲಿ ಆಂಬುಲೆನ್ಸ್ ಅಪಘಾತದ ಬಳಿಕ ಮಲ್ಟಿಸ್ಪೆಷಾಲಿಟಿ ಆಸ್ಪತ್ರೆಗಾಗಿ ಹೋರಾಟ ಜೋರಾಗತೊಡಗಿದೆ. ಈಗಾಗಲೇ ದೊಡ್ಡ ಮಟ್ಟದಲ್ಲಿ ಟ್ವಿಟ್ಟರ್ ಅಭಿಯಾನದ ಮೂಲಕ ಬೇಡಿಕೆ ಈಡೇರಿಸುವಂತೆ ಆಗ್ರಹಿಸಿ, ಜನಪ್ರತಿನಿಧಿಗಳಿಗೆ ಬಿಸಿ ಮುಟ್ಟಿಸಿದ್ದರು. ಇದೀಗ ಎಲ್ಲಿ ಆಸ್ಪತ್ರೆ ನಿರ್ಮಾಣ ಮಾಡಬೇಕು ಎನ್ನುವ ಗೊಂದಲ ಸೃಷ್ಟಿಯಾಗಿದ್ದು, ಇಂದು ಮತ್ತೆ ಉತ್ತರಕನ್ನಡ ಭಾಗದ ಜನರು ಬೆಂಗಳೂರಿನಲ್ಲಿ ಪ್ರತಿಭಟನೆಗೆ ಸಜ್ಜಾಗಿದ್ದಾರೆ.
ಉತ್ತರ ಕನ್ನಡದ ಜನತೆ ಇಷ್ಟು ದಿನ ಜಿಲ್ಲೆಗೊಂದು ಮಲ್ಟಿ ಸ್ಪೆಷಾಲಿಟಿ ಆಸ್ಪತ್ರೆ ನಿರ್ಮಿಸಿಕೊಡುವಂತೆ ಹೋರಾಟ ಮಾಡತೊಡಗಿದ್ದರು. ಅದರಲ್ಲಿಯೂ ಆಂಬುಲೆನ್ಸ್ ಅಪಘಾತದ ಬಳಿಕ ಈ ಕೂಗು ಜೋರಾಗಿತ್ತು. ಸಾಮಾಜಿಕ ಜಾಲತಾಣಗಳ ಮೂಲಕ ಸುಸಜ್ಜಿತ ಆಸ್ಪತ್ರೆಗಾಗಿ ಸರ್ಕಾರ ಹಾಗೂ ಜಿಲ್ಲೆಯ ಜನಪ್ರತಿನಿಧಿಗಳ ವಿರುದ್ಧ ಹರಿಹಾಯ್ದಿದ್ದರು. ಅಲ್ಲದೆ ಈಗಾಗಲೇ ಜನರು ಟ್ವಿಟ್ಟರ್ ಅಭಿಯಾನದ ಮೂಲಕ ಜನಪ್ರತಿನಿಧಿಗಳು, ಸರ್ಕಾರದ ಗಮನವನ್ನು ಸೆಳೆಯಲು ಯಶಸ್ವಿಯಾಗಿದ್ದರು. ಮತ್ತೆ ಅಲ್ಲಿನ ಜನರು ಇಂದಿನಿಂದ ಉಪವಾಸ ಸತ್ಯಾಗ್ರಹಕ್ಕೆ ಮುಂದಾಗಿದ್ದಾರೆ.
ಈ ಹೋರಾಟದ ಬೆಳವಣಿಗೆಗಳ ಬೆನ್ನಲ್ಲೇ ಸಭಾಧ್ಯಕ್ಷ ವಿಶ್ವೇಶ್ವರ ಹೆಗಡೆ ಕಾಗೇರಿ, ಶಾಸಕಿ ರೂಪಾಲಿ ನಾಯ್ಕ ಸೇರಿದಂತೆ ಜಿಲ್ಲೆಯ ಬಹುತೇಕ ಎಲ್ಲ ಜನಪ್ರತಿನಿಧಿಗಳು ಆಸ್ಪತ್ರೆ ಅಭಿಯಾನಕ್ಕೆ ಬೆಂಬಲವನ್ನು ವ್ಯಕ್ತಪಡಿಸಿದ್ದರು. ಜೊತೆಗೆ ಜಿಲ್ಲಾ ಉಸ್ತುವಾರಿ ಸಚಿವ ಕೋಟಾ ಶ್ರೀನಿವಾಸ್ ಪೂಜಾರಿ ಕುಮಟಾ ತಾಲ್ಲೂಕಿನ ಹೃದಯಭಾಗದಲ್ಲೇ 15 ರಿಂದ 20 ಎಕರೆ ಪ್ರದೇಶವನ್ನ ಗುರುತಿಸಿದ್ದಾರೆ. ಮತ್ತು ಶೀಘ್ರದಲ್ಲೇ ಮುಖ್ಯಮಂತ್ರಿಗಳಿಂದ ಆಸ್ಪತ್ರೆ ನಿರ್ಮಾಣದ ಬಗ್ಗೆ ಘೋಷಣೆಯಾಗಲಿದೆ ಎಂದು ಭರವಸೆ ನೀಡಿದ್ದು ಜಿಲ್ಲೆಯಲ್ಲಿ ಹೊಸ ಚರ್ಚೆಯನ್ನು ಹುಟ್ಟುಹಾಕಿದೆ.
ಮೆಡಿಕಲ್ ಕಾಲೇಜಿಗೆ ಮಂಜೂರಾದ ವೆಚ್ಚ
ಮೆಡಿಕಲ್ ಕಾಲೇಜಿಗೆ ಮಂಜೂರಾದ ವೆಚ್ಚ ಉತ್ತರ ಕನ್ನಡ ಜಿಲ್ಲೆಯಲ್ಲಿ ಸುಸಜ್ಜಿತ ಆಸ್ಪತ್ರೆ ನಿರ್ಮಾಣ ತುರ್ತಾಗಿ ಆಗಬೇಕು ಅನ್ನೋದು ಅಲ್ಲಿನ ಜನರ ಬೇಡಿಕೆಯಾಗಿದೆ. ಸದ್ಯ ಹೊಸದಾಗಿ ಜಾಗ ಗುರುತಿಸಿ ಅಲ್ಲಿ ಕಾಮಗಾರಿ ಆರಂಭಿಸಿ ಪೂರ್ಣಗೊಳಿಸಲು ಸಾಕಷ್ಟು ಸಮಯ ಬೇಕಾಗುತ್ತದೆ. ಅಷ್ಟರಲ್ಲಿ ಸರ್ಕಾರದ ಅವಧಿ ಮುಗಿಯುವ ಸಾಧ್ಯತೆಯಿದ್ದು, ಮುಂದೆ ಬರುವ ಸರ್ಕಾರ ಮತ್ತೊಮ್ಮೆ ಯೋಜನೆ ಕುರಿತು ಪರಿಶೀಲಿಸುವ ಪ್ರಕ್ರಿಯೆ ನಡೆಸಬೇಕಾಗುತ್ತದೆ. ಹೀಗಾಗಿ ಜಿಲ್ಲಾ ಕೇಂದ್ರ ಕಾರವಾರದಲ್ಲಿರುವ ಮೆಡಿಕಲ್ ಕಾಲೇಜು ಆಸ್ಪತ್ರೆಯಲ್ಲೇ ತುರ್ತು ಚಿಕಿತ್ಸೆ ನೀಡಲು ಅಗತ್ಯವಿರುವ ನ್ಯೂರೋ ಸರ್ಜನ್, ಕಾರ್ಡಿಯಾಲಜಿಸ್ಟ್ ಸೇರಿದಂತೆ ಯಂತ್ರೋಪಕರಣಗಳನ್ನು ನೀಡಿ. ಆಗ ಗಂಭೀರ ಪ್ರಕರಣಗಳಿಗೆ ಚಿಕಿತ್ಸೆ ಒದಗಿಸಲು ಸಾಧ್ಯವಾಗಲಿದೆ ಅನ್ನುವುದು ಬಿಜೆಪಿ ಯುವ ಮೋರ್ಚಾ ಅಧ್ಯಕ್ಷ ಶುಭಂ ಕಳಸ ಅವರ ಆಗ್ರಹವಾಗಿದೆ.
ಕಾರವಾರದ ಮೆಡಿಕಲ್ ಕಾಲೇಜಿಗೆ 160 ಕೋಟಿ ವೆಚ್ಚದ 450 ಹಾಸಿಗೆಯ ಆಸ್ಪತ್ರೆ ಮಂಜೂರಾಗಿದೆ. ಇದರೊಂದಿಗೆ ಟ್ರೌಮಾ ಸೆಂಟರ್ ಸಹ ನಿರ್ಮಾಣವಾಗಲಿದೆ. ಈಗಾಗಲೇ ಆಸ್ಪತ್ರೆ ಕಾಮಗಾರಿ ಸಹ ಪ್ರಾರಂಭವಾಗಿದ್ದು, ಸುಸಜ್ಜಿತ ಆಸ್ಪತ್ರೆ ಇದಾಗಲಿದೆ. ಮಲ್ಟಿ ಸ್ಪೆಷಾಲಿಟಿ ಆಸ್ಪತ್ರೆಗಾಗಿ ಬೇರೆಡೆ ಜಾಗ ನೋಡಿ ಯೋಜನೆ ರೂಪಿಸಿ ಕಾಮಗಾರಿ ಆರಂಭ ಮಾಡುವುದು ವಿಳಂಬವಾಗಲಿದೆ. ಆದ್ದರಿಂದ ಮೆಡಿಕಲ್ ಕಾಲೇಜಿನಲ್ಲೇ ಅಗತ್ಯ ಸೌಲಭ್ಯಗಳನ್ನ ಒದಗಿಸಿ ತುರ್ತು ಚಿಕಿತ್ಸೆ ಸಿಗುವಂತೆ ಮಾಡಬೇಕು ವ್ಯವಸ್ಥೆ ಮಾಡಬೇಕು ಎಂದು ಅಲ್ಲಿನ ಸ್ಥಳೀಯರ ಬೇಡಿಕೆಯಾಗಿದೆ.
ಉತ್ತರ ಕನ್ನಡದ ಜನಪ್ರತಿನಿಧಿಗಳ ಪ್ರತಿಕ್ರಿಯೆ
ಈ ಕುರಿತು ಪ್ರತಿಕ್ರಿಯಿಸಿರುವ ಶಾಸಕಿ ರೂಪಾಲಿ ನಾಯ್ಕ ಮೆಡಿಕಲ್ ಕಾಲೇಜು ಬಳಿ ಜಾಗದ ಕೊರತೆಯಿದೆ. ಆದ ಕಾರಣ ಕೇಂದ್ರ ಸರ್ಕಾರದಿಂದ ಕ್ರಿಟಿಕಲ್ ಕೇರ್ ಸ್ಥಾಪನೆ ಮಾಡಲು ಅಂಕೋಲಾ ತಾಲ್ಲೂಕಿನ ಹಟ್ಟಿಕೇರಿ ಬಳಿ ಜಾಗ ಗುರುತಿಸಲಾಗಿದೆ. ಆದಷ್ಟು ಬೇಗ ಜಿಲ್ಲೆಯಲ್ಲಿ ಮಲ್ಟಿ ಸ್ಪೆಷಾಲಿಟಿ ಆಸ್ಪತ್ರೆ ನಿರ್ಮಾಣವಾಗುವಂತೆ ಪ್ರಯತ್ನಿಸುತ್ತಿದ್ದೇವೆ ಎಂದರು.
ಈಗಾಗಲೇ ಕೆಲ ಸಂಘಟನೆಗಳು ಮಲ್ಟಿ ಸ್ಪೆಷಾಲಿಟಿ ಆಸ್ಪತ್ರೆ ನಿರ್ಮಾಣವಾಗಬೇಕೆಂದು ಜಿಲ್ಲಾಧಿಕಾರಿಗೆ ಮನವಿ ಸಲ್ಲಿಸಿದ್ದು, ಇನ್ನು ಕೆಲವರು ಜಿಲ್ಲೆಯ ಮಧ್ಯ ಭಾಗವಾಗಿರುವ ಕುಮಟಾದಲ್ಲಿ ಮಲ್ಟಿ ಸ್ಪೆಷಾಲಿಟಿ ಆಸ್ಪತ್ರೆ ನಿರ್ಮಾಣವಾಗಬೇಕು ಎಂದು ಆಗ್ರಹಿಸಿದ್ದಾರೆ. ಜಿಲ್ಲಾ ಉಸ್ತುವಾರಿ ಸಚಿವರು ಈ ಬಗ್ಗೆ ಪ್ರತಿಕ್ರಿಯಿಸಿದ್ದು, ಇನ್ನು ಆಯಾ ಕ್ಷೇತ್ರದ ಜನಪ್ರತಿನಿಧಿಗಳು ಕೂಡ ತಮ್ಮ ಭಾಗದಲ್ಲಿ ಸುಸಜ್ಜಿತ ಆಸ್ಪತ್ರೆ ನಿರ್ಮಾಣಕ್ಕೆ ಶತಪ್ರಯತ್ನ ನಡೆಸುತ್ತಿದ್ದಾರೆ ಎಂದರು.
ಜನರ ಪರವಾಗಿ ನಿಂತ ರಾಘವೇಶ್ವರ ಶ್ರೀ
ಇನ್ನು ಮಲ್ಟಿ ಸ್ಪೆಷಾಲಿಟಿ ಆಸ್ಪತ್ರೆ ಹೋರಾಟಕ್ಕೆ ಹೊಸನಗರದ ರಾಮಚಂದ್ರಾಪುರ ಮಠದ ರಾಘವೇಶ್ವರ ಭಾರತಿ ಸ್ವಾಮೀಜಿ ಬೆಂಬಲ ಸೂಚಿಸಿದ್ದಾರೆ. ಉತ್ತರ ಕನ್ನಡ ಜಿಲ್ಲೆಯಲ್ಲಿ ನಡೆಯುತ್ತಿರುವ ಹೋರಾಟ ನ್ಯಾಯಯುತವಾಗಿದೆ. ಉತ್ತರಕನ್ನಡ ಜಿಲ್ಲೆ ರಾಜ್ಯ, ರಾಷ್ಟ್ರಕ್ಕಾಗಿ ಅನೇಕ ಕೊಡುಗೆಗಳನ್ನು ನೀಡಿದೆ. ಜಿಲ್ಲೆಯಲ್ಲಿನ ಅನೇಕ ಬೃಹತ್ ಯೋಜನೆಯಿಂದ ದೇಶಕ್ಕೆ ಲಾಭವಾಗುತ್ತಿದೆ. ಆದರೆ ಇಲ್ಲಿ ಉತ್ತಮ ಆಸ್ಪತ್ರೆ ಇಲ್ಲದ ಕಾರಣಕ್ಕೆ ರೋಗಿಗಳನ್ನು ಹೊರ ಜಿಲ್ಲೆಗೆ ಕರೆದುಕೊಂಡು ಹೋಗುವಾಗ ಪ್ರಾಣ ಕಳೆದುಕೊಳ್ಳುವ ಸನ್ನಿವೇಶ ಎದುರಾಗುತ್ತಿದೆ. ಈ ಕಾರಣದಿಂದ ಸರ್ಕಾರ ಮಲ್ಟಿ ಸ್ಪೆಷಾಲಿಟಿ ಆಸ್ಪತ್ರೆ ನಿರ್ಮಾಣಕ್ಕೆ ಕೂಡಲೇ ಕ್ರಮ ಕೈಗೊಳ್ಳಬೇಕು ಎಂದು ಸ್ವಾಮೀಜಿ ಒತ್ತಾಯಿಸಿದರು.
ಗೊಂದಲದ ಗೂಡಾಯ್ತಾ ಆಸ್ಪತ್ರೆ ನಿರ್ಮಾಣ ಜಾಗ?
ಉತ್ತರ ಕನ್ನಡ ಜಿಲ್ಲೆಯಲ್ಲಿ ಸುಸಜ್ಜಿತ ಆಸ್ಪತ್ರೆ ನಿರ್ಮಾಣಕ್ಕಾಗಿ ಒತ್ತಾಯಿಸಿ ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಇಂದು ಮೌನ ಪ್ರತಿಭಟನೆ ಹಮ್ಮಿಕೊಳ್ಳಲಾಗಿದೆ. ಪ್ರತಿಭಟನೆಯಲ್ಲಿ ಬೆಂಗಳೂರಿನಲ್ಲಿರುವ ಉತ್ತರ ಕನ್ನಡಿಗರು ಸೇರಿದಂತೆ, ಇತರ ಜಿಲ್ಲೆಯವರು ಕೂಡ ಭಾಗವಹಿಸಲಿದ್ದಾರೆ. ಪಕ್ಷ ಭೇದ ಮರೆತು ಹೆಚ್ಚಿನ ಸಂಖ್ಯೆಯಲ್ಲಿ ಜನ ಸೇರುವಂತೆ ಹಾಗೂ ಉತ್ತರ ಕನ್ನಡಿಗರಿಗೆ ಮಲ್ಟಿ ಸ್ಪೆಷಾಲಿಟಿ ಆಸ್ಪತ್ರೆ ಬೇಕೆಂಬ ಕೂಗಿಗೆ ದನಿಯಾಗುವಂತೆ ಸಂಘಟಕರು ಕೋರಿದ್ದಾರೆ. ಒಟ್ಟಿನಲ್ಲಿ ಜಿಲ್ಲೆಯಲ್ಲಿ ಮಲ್ಟಿ ಸ್ಪೆಷಾಲಿಟಿ ಆಸ್ಪತ್ರೆಗಾಗಿ ಹೋರಾಟ ತೀವ್ರಗೊಂಡಿದೆ. ಜಿಲ್ಲೆಗೆ ಸುಸಜ್ಜಿತ ಆಸ್ಪತ್ರೆ ಮಂಜೂರಾದರೂ ಎಲ್ಲಿ ನಿರ್ಮಾಣವಾಗಬೇಕು ಎನ್ನವುದು ಚರ್ಚೆಗೆ ಗ್ರಾಸವಾಗಿದೆ.
Recommended Video