ಕೇರಳದ ಮಾದರಿಯಲ್ಲಿ ರಾಜ್ಯದಲ್ಲೂ ಕುಚಲಕ್ಕಿ ಭತ್ತಕ್ಕೆ ಪ್ರೋತ್ಸಾಹ ಧನ; ಕೋಟ ಶ್ರೀನಿವಾಸ ಪೂಜಾರಿ
ಕಾರವಾರ, ನವೆಂಬರ್, 10: ಕರಾವಳಿ ಜಿಲ್ಲೆಗಳಿಗೆ ಪಡಿತರ ವ್ಯವಸ್ಥೆಯಡಿ ಕುಚಲಕ್ಕಿಯನ್ನು ವಿತರಿಸಲು ಖರೀದಿಸುವ ಪ್ರತಿ ಕ್ವಿಂಟಲ್ ಭತ್ತಕ್ಕೆ 500 ರೂಪಾಯಿ ಪ್ರೋತ್ಸಾಹ ಧನ ನೀಡಲಾಗುವುದು ಎಂದು ಸಚಿವ ಕೋಟ ಶ್ರೀನಿವಾಸ ಪೂಜಾರಿ ಕಾರವಾರದಲ್ಲಿ ತಿಳಿಸಿದ್ದಾರೆ.
ನಗರದಲ್ಲಿ ಮಾತನಾಡಿದ ಅವರು, ಪ್ರತಿ ಕ್ವಿಂಟಲ್ ಭತ್ತಕ್ಕೆ 2,040 ರೂಪಾಯಿ ಬೆಂಬಲ ಬೆಲೆ ನಿಗದಿ ಮಾಡಲಾಗಿದೆ. ಆದರೆ ಕುಚಲಕ್ಕಿಗೆ ಬಳಸುವ ಭತ್ತವನ್ನು ಕೇರಳ ರಾಜ್ಯದ ಪಡಿತರ ವ್ಯವಸ್ಥೆಯಡಿ 2,220 ರೂ.ನಂತೆ ಖರೀದಿಸಲಾಗುತ್ತಿದೆ. ನಮ್ಮ ರಾಜ್ಯದ ಹಲವು ರೈತರು ಕೇರಳ ರಾಜ್ಯಕ್ಕೆ ಭತ್ತ ಮಾರಾಟ ಮಾಡುತ್ತಿದ್ದಾರೆ. ನಮ್ಮ ರಾಜ್ಯದಲ್ಲೂ ಕುಚಲಕ್ಕಿಯ ಭತ್ತಕ್ಕೆ ಸೀಮಿತವಾಗಿ 500 ರೂಪಾಯಿ ಪ್ರೋತ್ಸಾಹ ಧನ ನೀಡಿ ಒಟ್ಟು 2,540 ರೂ.ನಂತೆ ಖರೀದಿಸಲಾಗುವುದು. ಖರೀದಿ ಕೇಂದ್ರಗಳನ್ನು ಶೀಘ್ರವೇ ಆರಂಭಿಸಲಾಗುತ್ತದೆ. ಆದ್ದರಿಂದ ರೈತರು ತರಾತುರಿಯಿಂದ ಭತ್ತವನ್ನು ಮಾರಾಟ ಮಾಡಬಾರದು ಎಂದು ಮನವಿ ಮಾಡಿಕೊಂಡಿದ್ದಾರೆ.
ದಕ್ಷಿಣ ಕನ್ನಡ, ಉಡುಪಿ ಹಾಗೂ ಉತ್ತರ ಕನ್ನಡಕ್ಕೆ ಕುಚಲಕ್ಕಿ ವಿತರಿಸಲು ಮುಖ್ಯಮಂತ್ರಿ ಅವರು ಸೂಚನೆ ನೀಡಿದ್ದಾರೆ. ಇದಕ್ಕೆ ಪ್ರತಿ ತಿಂಗಳಿಗೆ 1 ಲಕ್ಷ ಕ್ವಿಂಟಲ್ ಅಕ್ಕಿ ಬೇಕಾಗುತ್ತದೆ. ರಾಜ್ಯದ ಯಾವುದೇ ಜಿಲ್ಲೆಯಿಂದ ಆದರೂ ಅಕ್ಕಿಯನ್ನು ಖರೀದಿಸಿ ಆಯಾ ಜಿಲ್ಲೆಗಳಲ್ಲೇ ಸಂಸ್ಕರಿಸಿ ವಿತರಿಸುವಂತೆ ಕೇಂದ್ರ ಸರ್ಕಾರವೂ ನಿರ್ದೇಶನ ನೀಡಿದೆ. ಅಲ್ಲದೇ ಕುಚಲಕ್ಕಿ ವಿತರಣೆ ಯೋಜನೆಗೆ 132 ಕೋಟಿ ರೂಪಾಯಿ ಮಂಜೂರು
ಮಾಡುವಂತೆ ಮುಖ್ಯಮಂತ್ರಿಗಳಿಗೆ ಮನವಿ ಮಾಡಲಾಗಿದೆ ಎಂದು ತಿಳಿಸಿದರು.

BPL ಕಾರ್ಡುದಾರರಿಗೆ ಕುಚಲಕ್ಕಿ ವಿತರಣೆ
ಕುಚಲಕ್ಕಿ ಭತ್ತವನ್ನು ಖರೀದಿಸಿ ಕರಾವಳಿ ಜಿಲ್ಲೆಗಳ ಬಿಪಿಎಲ್ ಕಾರ್ಡುದಾರರಿಗೆ ವಿತರಿಸಲಾಗುವುದು ಎಂದು ಸಿಎಂ ಬಸವರಾಜ ಬೊಮ್ಮಾಯಿ ಇತ್ತೀಚೇಗಷ್ಟೇ ಭರವಸೆ ನೀಡಿದ್ದರು. ಕಾಪುವಿನಲ್ಲಿ ಬಿಜೆಪಿಯ ಜನಸಂಕಲ್ಪ ಯಾತ್ರೆ ಉದ್ಘಾಟಿಸಿ ಮಾತನಾಡಿದ್ದ ಅವರು, ಪಡಿತರದಲ್ಲಿ ಕುಚಲಕ್ಕಿ ಕೊಡಬೇಕು ಎಂಬ ಕರಾವಳಿಗರ ಬಹುದಿನಗಳ ಬೇಡಿಕೆಯನ್ನು ರಾಜ್ಯ ಸರ್ಕಾರ ಈಡೇರಿಸುತ್ತಿದೆ ಎಂದಿದ್ದರು.

100 ಹೈಸ್ಪೀಡ್ ಬೋಟ್ಗಳ ವಿತರಣೆ ಭರವಸೆ
ಅಲ್ಲದೇ ಆಳಸಮುದ್ರ ಮೀನುಗಾರಿಕೆಗೆ ಅನುಕೂಲ ಆಗುವಂತೆ ಮೊದಲ ಹಂತದಲ್ಲಿ 100 ಹೈಸ್ಪೀಡ್ ಬೋಟ್ಗಳನ್ನು ನೀಡಲಾಗುವುದು. ಈಗಾಗಲೇ ಫಲಾನುಭವಿಗಳ ಆಯ್ಕೆ ಪ್ರಕ್ರಿಯೆ ನಡೆದಿದ್ದು, ಸರ್ಕಾರದಿಂದ ಶೇಕಡಾ 40ರಷ್ಟು ಸಬ್ಸಿಡಿ ಸಿಗಲಿದೆ. ಮೀನುಗಾರರು ಶೇಕಡಾ 10ರಷ್ಟು ಬಂಡವಾಳ ಹಾಕಿದರೆ 1.5 ಕೋಟಿ ರೂಪಾಯಿ ಮೌಲ್ಯದ ದೊಡ್ಡ ಪ್ರಮಾಣದ ಹೈಸ್ಪೀಡ್ ಬೋಟ್ ಸಿಗಲಿದೆ ಎಂದಿದ್ದರು.

ಮೀನುಗಾರರಿಗೆ ನಿರ್ಮಾಣವಾಗುವ ಮನೆಗಳು
ಡಬಲ್ ಎಂಜಿನ್ ಸರ್ಕಾರ ಎಂದರೆ ಕೇಂದ್ರದ ಯೋಜನೆಗಳಿಗೆ ರಾಜ್ಯ ಸರ್ಕಾರ ಬೆಂಬಲ ನೀಡುವುದು. ರಾಜ್ಯದ ಯೋಜನೆಗಳಿಗೆ ಕೇಂದ್ರ ಸರ್ಕಾರದ ಬೆಂಬಲ ಪಡೆಯುವುದು. ರಾಜ್ಯದ ಜನರ ಡಬಲ್ ಎಂಜಿನ್ ಸರ್ಕಾರಕ್ಕೆ ಬೆಂಬಲ ನೀಡಬೇಕು. 2 ಲಕ್ಷ ಮೀನುಗಾರರ ಮಕ್ಕಳಿಗೆ ವಿದ್ಯಾನಿಧಿ ಯೋಜನೆಯಡಿ ವಿದ್ಯಾರ್ಥಿ ವೇತನ, ಮೀನುಗಾರರಿಗೆ 5,000 ಮನೆಗಳನ್ನು ನಿರ್ಮಿಸಿಕೊಡುವ ಯೋಜನೆಗೆ ಅನುಮೋದನೆ ನೀಡಲಾಗಿದೆ. ಸೀಮೆಎಣ್ಣೆ ಪ್ರಮಾಣ ಹೆಚ್ಚಿಸಲು ಕೇಂದ್ರ ಸರ್ಕಾರದೊಂದಿಗೆ ಚರ್ಚಿಸಲಾಗುವುದು ಎಂದು ಭರವಸೆ ನೀಡಿದ್ದರು.

ಕಾಂಗ್ರೆಸ್ ವಿರುದ್ಧ ಬಸವರಾಜ ಬೊಮ್ಮಾಯಿ ಕಿಡಿ
2023ರ ವಿಧಾನಸಭಾ ಚುನಾವಣೆಯಲ್ಲಿ ಬಿಜೆಪಿ ಅಧಿಕಾರಕ್ಕೆ ಬಂದೇ ಬರುತ್ತದೆ. ಮುಂದಿನ ಚುನಾವಣೆಯಲ್ಲಿ ಕಾಂಗ್ರೆಸ್ ಅಧಿಕಾರಕ್ಕೆ ಬರುವುದು ದೂರದ ಮಾತಾಗಿದೆ. ಕಾಂಗ್ರೆಸ್ ನಾಯಕರು ಮೊದಲು ತಮ್ಮ ಕ್ಷೇತ್ರಗಳನ್ನು ಉಳಿಸಿಕೊಳ್ಳಲಿ. ಸಾಮಾಜಿಕ ನ್ಯಾಯ ಕಾಂಗ್ರೆಸ್ನ ಭಾಷಣದ ಸರಕಾಗಿದೆ. ಹಿಂದುಳಿದ ವರ್ಗಗಳ ಹೊಟ್ಟೆ ತುಂಬಿಸಲು ಅಹಿಂದ ಹೆಸರಿನಲ್ಲಿ ಸಿದ್ದರಾಮಯ್ಯ ಅವರು ಮುಂದೆ ಹೋದರೆ ಹೊರತು, ಆದರೆ ಅಹಿಂದವನ್ನು ಹಿಂದೆ ತಳ್ಳಿದ್ದಾರೆ. ಹಿಂದುಳಿದ ವರ್ಗ ಕಾಂಗ್ರೆಸ್ ಮೇಲಿನ ವಿಶ್ವಾಸವನ್ನು ಕಳೆದುಕೊಂಡಿದೆ ಎಂದು ಆಕ್ರೋಶ ವ್ಯಕ್ತಪಡಿಸಿದ್ದರು.












Click it and Unblock the Notifications