Get Updates
Get notified of breaking news, exclusive insights, and must-see stories!

ಸರ್ಕಾರದ ನಿರ್ಲಕ್ಷಕ್ಕೆ ಬೇಸತ್ತು ‘ಪದ್ಮಶ್ರೀ’ ವಾಪಸ್ ಕೊಡಲು ಮುಂದಾದ ಸುಕ್ರಜ್ಜಿ

ಕಾರವಾರ, ಸೆಪ್ಟೆಂಬರ್ 30: ಉತ್ತರ ಕನ್ನಡ ಜಿಲ್ಲೆಯ ಕರಾವಳಿ ಭಾಗದಲ್ಲಿ ಹೆಚ್ಚಾಗಿರುವ ಬುಡಕಟ್ಟು ಸಮುದಾಯದ ಹಾಲಕ್ಕಿ ಒಕ್ಕಲಿಗರನ್ನು ಪರಿಶಿಷ್ಟ ಪಂಗಡಕ್ಕೆ ಸೇರಿಸಬೇಕೆಂಬ ಹೋರಾಟ ಇದೀಗ ತೀವ್ರಗೊಂಡಿದೆ. ಈ ಬಗ್ಗೆ ಸರ್ಕಾರ ನಿರ್ಲಕ್ಷ್ಯ ತೋರುತ್ತಿರುವ ಹಿನ್ನೆಲೆಯಲ್ಲಿ ಜಾನಪದ ಕಲಾವಿದೆ, ಪದ್ಮಶ್ರೀ ಪುರಸ್ಕೃತೆ ಸುಕ್ರಿ ಬೊಮ್ಮಗೌಡ ಅವರು ಇದೀಗ ತಮ್ಮ ಪದ್ಮಶ್ರೀ ಪ್ರಶಸ್ತಿಯನ್ನು ವಾಪಸ್ ಮಾಡಲು ಮುಂದಾಗಿದ್ದಾರೆ.

ಹಾಲಕ್ಕಿ ಒಕ್ಕಲಿಗರು ಉತ್ತರ ಕನ್ನಡದಲ್ಲಿನ ವಿಶಿಷ್ಟ ಬುಡಕಟ್ಟು ಜನಾಂಗವಾಗಿದ್ದು, ಕರಾವಳಿ ತಾಲೂಕುಗಳಾದ ಅಂಕೋಲಾ, ಕಾರವಾರ, ಕುಮಟಾ ಹಾಗೂ ಹೊನ್ನಾವರದಲ್ಲಿ ಹೆಚ್ಚಾಗಿ ಕಂಡುಬರುತ್ತಾರೆ. ತಮ್ಮ ವೇಷಭೂಷಣದಲ್ಲಿಯೇ, ಅದರಲ್ಲೂ ಮಗ್ಗದ ಚೌಕುಳಿ ಸೀರೆಯನ್ನು ಮೊಣಕಾಲಿನವರೆಗೆ ನೆರಿಗೆ ಮಾಡಿ ಇಳಿಬಿಟ್ಟು ಎಡ ಬಾಜುವಿಗೆ ಸೆರಗನ್ನು ತಂದು ಗಂಟು ಕಟ್ಟಿ ಉಡುವ, ಕುಪ್ಪಸವಿಲ್ಲದ ಭುಜಗಳ ತುಂಬ ಕರಿಮಣಿ ಸರಗಳನ್ನು ಧರಿಸುವ ಮಹಿಳೆಯರನ್ನು ನೋಡಿಯೇ ಹೇಳಬಹುದು ಇವರು ಬುಡಕಟ್ಟು ಜನಾಂಗಕ್ಕೆ ಸೇರಿದವರು ಎಂದು. ಆದರೆ ಈ ಜನಾಂಗ ಹಲವಾರು ವರ್ಷಗಳಿಂದ ಸರ್ಕಾರದ ನಿರ್ಲಕ್ಷಕ್ಕೆ ತುತ್ತಾಗಿದೆ. ನ್ಯಾಯಕ್ಕಾಗಿ ಹೋರಾಟ ಮಾಡುತ್ತಿದ್ದರೂ ಇಂದಿಗೂ ಅವರಿಗೆ ನ್ಯಾಯ ಸಿಕ್ಕಿಲ್ಲ. ಹೀಗಾಗಿ ಇದೇ ಸಮುದಾಯಕ್ಕೆ ಸೇರಿದ ಅಂಕೋಲಾ ತಾಲೂಕಿನ ಬಡಗೇರಿಯ, ಜಾನಪದ ಕೋಗಿಲೆ ಖ್ಯಾತಿಯ, ನಾಡೋಜ, ಪದ್ಮಶ್ರೀ ಸುಕ್ರಿ ಬೊಮ್ಮುಗೌಡ ಹೋರಾಟಕ್ಕೆ ಕೈಜೋಡಿಸಿದ್ದಾರೆ.

ಸುಮಾರು 1.5 ಲಕ್ಷ ಜನಸಂಖ್ಯೆ ಇರುವ ಹಾಲಕ್ಕಿ ಒಕ್ಕಲಿಗ ಜನಾಂಗವನ್ನು ಪರಿಶಿಷ್ಟ ಪಂಗಡಕ್ಕೆ ಸೇರಿಸಬೇಕೆನ್ನುವುದು ಜಿಲ್ಲೆಯ ಜನಾಂಗದ ಬಹುದೊಡ್ಡ ಬೇಡಿಕೆ. ಈ ನಿಟ್ಟಿನಲ್ಲಿ 2000ನೇ ಇಸವಿಯಿಂದಲೂ ಹೋರಾಟ ನಡೆಸುತ್ತಲೇ ಬಂದಿದ್ದು ಇಂದಿಗೂ ಜನಾಂಗವನ್ನು ಪರಿಶಿಷ್ಟ ಪಂಗಡಕ್ಕೆ ಮಾತ್ರ ಸೇರಿಸಿಲ್ಲ. ಈ ನಿಟ್ಟಿನಲ್ಲಿ ತಮ್ಮ ಸಮುದಾಯದ ಒಳಿತಿಗಾಗಿ ಮುಂದಾಗಿರುವ ಜಾನಪದ ಕೋಗಿಲೆ ಸುಕ್ರಿ ಬೊಮ್ಮುಗೌಡ ತಮ್ಮ ಜನಾಂಗವನ್ನು ಪರಿಶಿಷ್ಟ ಪಂಗಡಕ್ಕೆ ಸೇರಿಸುವಂತೆ ಸರ್ಕಾರವನ್ನು ಒತ್ತಾಯಿಸಿದ್ದಾರೆ.

Sukri Bommagowda Decides To Return Padmashree Award Due To Negligence By Government

ಸರ್ಕಾರದ ಸೌಲಭ್ಯದಿಂದ ಜನಾಂಗ ವಂಚಿತವಾಗಿದ್ದು ಪರಿಶಿಷ್ಟ ಪಂಗಡಕ್ಕೆ ಸೇರಿಸಿದರೆ ಒಂದಿಷ್ಟು ಸಹಾಯವಾಗಲಿದೆ. ಈ ಉದ್ದೇಶದೊಂದಿಗೆ ಸರ್ಕಾರಕ್ಕೆ ಎಚ್ಚರಿಕೆ ನೀಡಿರುವ ಸುಕ್ರಜ್ಜಿ, ತಮ್ಮ ಸಮುದಾಯವನ್ನು ಪರಿಶಿಷ್ಟ ಪಂಗಡಕ್ಕೆ ಸೇರಿಸದಿದ್ದರೆ ತನ್ನ ಕಲೆಯನ್ನ ಗುರುತಿಸಿ ಕೇಂದ್ರ ಸರ್ಕಾರ ನೀಡಿರುವ ಪದ್ಮಶ್ರೀ ಪ್ರಶಸ್ತಿಯನ್ನ ವಾಪಸ್ ಮಾಡುವುದಾಗಿ ತಿಳಿಸಿದ್ದಾರೆ.

ಹಾಲಕ್ಕಿ ಜನಾಂಗವನ್ನು ಈ ಹಿಂದೆ ಪರಿಶಿಷ್ಟ ಪಂಗಡಕ್ಕೆ ಸೇರಿಸಬೇಕೆಂದು ದೊಡ್ಡ ಹೋರಾಟ ನಡೆದ ಪರಿಣಾಮ ರಾಜ್ಯ ಸರ್ಕಾರ ಜನಾಂಗವನ್ನು ಪರಿಶಿಷ್ಟ ಪಂಗಡಕ್ಕೆ ಸೇರಿಸಿ ಎಂದು ಕೇಂದ್ರ ಸರ್ಕಾರಕ್ಕೆ ಶಿಫಾರಸ್ಸು ಮಾಡಿತ್ತು. ಈ ಬಗ್ಗೆ ಹಲವು ಮುಖಂಡರು ದೆಹಲಿಗೆ ಸಹ ತೆರಳಿ ಐದಾರು ವರ್ಷದಿಂದ ಒತ್ತಡ ಹೇರಿದ್ದರು. ಇದಾಗ್ಯೂ ಇಂದಿಗೂ ಪರಿಶಿಷ್ಟ ಪಂಗಡಕ್ಕೆ ಸೇರ್ಪಡೆಯಾಗಿಲ್ಲ. ಕಳೆದ 20 ವರ್ಷದಿಂದ ಹೋರಾಟ ಮಾಡುತ್ತಿದ್ದರೂ ಪರಿಶಿಷ್ಟ ಪಂಗಡಕ್ಕೆ ಸೇರಿಸದೇ ನಿರ್ಲಕ್ಷ ಮಾಡಲಾಗುತ್ತಿದೆ ಎಂದು ಸುಕ್ರಜ್ಜಿ ಬೇಸರ ವ್ಯಕ್ತಪಡಿಸಿದ್ದಾರೆ.

ಇಂದಿಗೂ ಬಹುತೇಕ ಹಾಲಕ್ಕಿಗರು ಕೂಲಿ ಕೆಲಸ, ಪುಟ್ಟ ಜಮೀನಿನಲ್ಲಿ ಕೃಷಿ ಕೆಲಸ ಮಾಡಿಕೊಂಡೇ ಜೀವನ ಸಾಗಿಸುತ್ತಿದ್ದಾರೆ. ಶಿಕ್ಷಿತರ ಸಂಖ್ಯೆ ಸಹ ಬಹಳ ಕಡಿಮೆ ಇದೆ. ಈ ನಿಟ್ಟಿನಲ್ಲಿ ಹಿಂದುಳಿದಿರುವ ಬುಡಕಟ್ಟು ಸಮುದಾಯವನ್ನು ಪರಿಶಿಷ್ಟ ಪಂಗಡಕ್ಕೆ ಸೇರಿಸಬೇಕು ಎನ್ನುವುದು ನ್ಯಾಯಯುತ ಬೇಡಿಕೆಯಾಗಿದ್ದು ಸರ್ಕಾರ ಇದನ್ನು ಈಡೇರಿಸದಿದ್ದಲ್ಲಿ ಮುಂದಿನ ದಿನಗಳಲ್ಲಿ ವಿಧಾನಸೌಧದ ಎದುರು ಪ್ರತಿಭಟನೆ ನಡೆಸಲು ಸಹ ಸಿದ್ಧರಾಗಿದ್ದೇವೆ ಎನ್ನುತ್ತಾರೆ ಹಾಲಕ್ಕಿ ಜನಾಂಗದ ನಾಟಿ ವೈದ್ಯ ಹನುಮಂತ ಗೌಡ.

ಈ ಬಗ್ಗೆ ಜಿಲ್ಲಾಧಿಕಾರಿಗೆ ಮನವಿ ಸಲ್ಲಿಸಿರುವ ಉತ್ತರ ಕನ್ನಡ ಜಿಲ್ಲಾ ಹಾಲಕ್ಕಿ ಒಕ್ಕಲಿಗರ ಸಂಘ, ಹಾಲಕ್ಕಿ ಸಮಾಜವನ್ನು ಪರಿಶಿಷ್ಟ ಪಂಗಡಕ್ಕೆ ಸೇರಿಸುವುದಕ್ಕಾಗಿ ಹಳ್ಳಿಯಿಂದ ದಿಲ್ಲಿಯವರೆಗೆ ಹೋರಾಟ ಮಾಡುತ್ತಲೇ ಬಂದಿದ್ದಾರೆ. 'ಆಯಾ ಸಂದರ್ಭದಲ್ಲಿ ಅಧಿಕಾರದಲ್ಲಿರುವ ಅಧಿಕಾರಿಗಳಿಗೆ ಮತ್ತು ಜನಪ್ರತಿನಿಧಿಗಳಿಗೆ ಮನವಿ ಸಲ್ಲಿಸುತ್ತಲೇ ಬಂದಿದ್ದೇವೆ. ರಾಜ್ಯದಿಂದ ಕೇಂದ್ರಕ್ಕೆ ಪರಿಶಿಷ್ಟ ಪಂಗಡಕ್ಕೆ ಸೇರಿಸಲು ಶಿಫಾರಸ್ಸು ಮಾಡಲಾಗಿತ್ತು. ಆದರೆ ಇದುವರೆಗೂ ಸೇರಿಸದೇ ಇರುವುದು ದುರದೃಷ್ಟಕರ' ಎಂದು ಅಳಲು ತೋಡಿಕೊಂಡಿದ್ದಾರೆ.

ಮನವಿ ಸ್ವೀಕರಿಸಿರುವ ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್, ಹಾಲಕ್ಕಿ ಜನಾಂಗಕ್ಕೆ ನ್ಯಾಯ ಒದಗಿಸಲು ಅಧಿಕಾರಿಗಳ ಮಟ್ಟದಿಂದ ಆಗುವ ಎಲ್ಲಾ ರೀತಿಯ ಸಹಕಾರ ನೀಡಲಿದ್ದೇವೆ. ಈ ಹಿಂದೆ ನಾನು ಶಿವಮೊಗ್ಗದಲ್ಲಿ ಇದ್ದಾಗಲೂ ಈ ಜನಾಂಗದ ಕುರಿತು ತಿಳಿದುಕೊಂಡಿದ್ದೇನೆ. ರಾಜಕೀಯವಾಗಿ ಜಿಲ್ಲಾ ಹಾಲಕ್ಕಿ ಸಂಘದವರು ಪ್ರಯತ್ನಿಸಿ ಎಂದು ಸಲಹೆಯನ್ನು ಕೂಡ ನೀಡಿದ್ದಾರೆ.

More From
Prev
Next
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+