ಉತ್ತರ ಕನ್ನಡ: ಎಸ್ಎಸ್ಎಲ್ಸಿ ವಿದ್ಯಾರ್ಥಿಗಳ ಪತ್ತೆ ಕಾರ್ಯವೇ ಸವಾಲು!
ಕಾರವಾರ, ಜೂನ್ 28: ರಾಜ್ಯದಲ್ಲಿ ಎಸ್ಎಸ್ಎಲ್ಸಿ ಪರೀಕ್ಷೆಗೆ ಕೇವಲ 20 ದಿನಗಳಷ್ಟೆ ಬಾಕಿ ಇದೆ. ಆದರೆ ಹಿಂದುಳಿದ ಜಿಲ್ಲೆಯಾದ ಉತ್ತರ ಕನ್ನಡದಲ್ಲಿ ಈವರೆಗೆ ಸಾವಿರಾರು ಮಕ್ಕಳು ಶಿಕ್ಷಕರ ಅಥವಾ ಶಾಲೆಗಳ ಸಂಪರ್ಕಕ್ಕೆ ಸಿಕ್ಕಿಲ್ಲ.
ಈ ಬಾರಿ ಎಸ್ಎಸ್ಎಲ್ಸಿ ಪರೀಕ್ಷೆಯನ್ನು ಎರಡೇ ದಿನಕ್ಕೆ ಸೀಮಿತ ಮಾಡಿರುವುದರಿಂದ ಪರೀಕ್ಷೆ ಬರೆದ ಪ್ರತಿಯೊಬ್ಬರೂ ಉತ್ತೀರ್ಣರಾಗಲಿದ್ದಾರೆಂದು ಶಿಕ್ಷಣ ಇಲಾಖೆಯೇನೋ ತಿಳಿಸಿದೆ. ಆದರೆ, ಮಾದರಿ ಪ್ರಶ್ನೆ ಪತ್ರಿಕೆಗಳನ್ನು ಮಕ್ಕಳಿಗೆ ಕೊಟ್ಟು ಅಭ್ಯಾಸ ಮಾಡಿಸುವಂತೆ ಆಯಾ ಶಾಲೆಗಳಿಗೆ ಸೂಚಿಸಲಾಗಿದ್ದು, ಹೀಗಾಗಿ ಶಿಕ್ಷಕರು ಮಕ್ಕಳ ಸಂಪರ್ಕಕ್ಕಾಗಿ ಹರಸಾಹಸ ಪಡುತ್ತಿದ್ದಾರೆ.
ಕರ್ನಾಟಕ ಎಸ್ಎಸ್ಎಲ್ಸಿ ಪರೀಕ್ಷೆ 2021 ದಿನಾಂಕ ಪ್ರಕಟ
ಗುಡ್ಡಗಾಡು ಪ್ರದೇಶಗಳನ್ನು ಹೊಂದಿರುವ ಉತ್ತರ ಕನ್ನಡದಲ್ಲಿ ಹಲವು ಹಳ್ಳಿಗಳಿಗೆ ಸಾರಿಗೆ ಸಂಪರ್ಕವೇ ಇಲ್ಲ. ಇನ್ನು ನೆಟ್ವರ್ಕ್ ಕೂಡ ಇಲ್ಲದ ಕುಗ್ರಾಮಗಳಿಂದ ಮಕ್ಕಳನ್ನು ಹುಡುಕುವುದೇ ಶಿಕ್ಷಕರಿಗೆ ಕಷ್ಟಸಾಧ್ಯವಾಗಿದೆ. ಶಿಕ್ಷಕರ ಸಭೆಯಲ್ಲಿ ಅಧಿಕಾರಿಗಳು ಮಕ್ಕಳ ಪತ್ತೆಗಾಗಿ ಸೂಚಿಸಿದ್ದು, ಪರೀಕ್ಷೆಗೆ ಇನ್ನೇನು ಕೆಲವೇ ದಿನಗಳಿರುವುದರಿಂದ ಶಿಕ್ಷಕರಿಂದ ವಿದ್ಯಾರ್ಥಿಗಳ ಪತ್ತೆ ಕಾರ್ಯ ಮುಂದುವರಿದಿದೆ.
ಮಳೆಗಾಲದಲ್ಲಿ ಸಂಪರ್ಕ ಕಡಿತ
ಉತ್ತರ ಕನ್ನಡದಲ್ಲಿ ಶಿರಸಿ ಹಾಗೂ ಕಾರವಾರ ಎರಡು ಶೈಕ್ಷಣಿಕ ಜಿಲ್ಲೆಯಿದೆ. ಕಾರವಾರ ಶೈಕ್ಷಣಿಕ ಜಿಲ್ಲೆಯಲ್ಲಿ 10,033 ವಿದ್ಯಾರ್ಥಿಗಳು, ಶಿರಸಿ ಶೈಕ್ಷಣಿಕ ಜಿಲ್ಲೆಯಲ್ಲಿ 10,252 ವಿದ್ಯಾರ್ಥಿಗಳಿದ್ದಾರೆ. ಕಾರವಾರ ಶೈಕ್ಷಣಿಕ ಜಿಲ್ಲೆಯಲ್ಲಿ ಕಾರವಾರ ತಾಲೂಕು ಹೊರತುಪಡಿಸಿದರೆ ಮಕ್ಕಳನ್ನು ಸಂಪರ್ಕಿಸಲು ಕಷ್ಟವಾಗದು. ಆದರೆ ಶಿರಸಿ ಶೈಕ್ಷಣಿಕ ಜಿಲ್ಲೆಯಲ್ಲಿ ಅತೀ ಹೆಚ್ಚು ಅರಣ್ಯ ಪ್ರದೇಶಗಳಿದ್ದು, ಇಡೀ ಜಿಲ್ಲೆಯಲ್ಲಿ ಮಳೆಗಾಲದ ಸಂದರ್ಭದಲ್ಲಿ ಹಳ್ಳಿಗಳನ್ನು ಸಂಪರ್ಕಿಸುವುದೇ ದೊಡ್ಡ ಸವಾಲಾಗಿದೆ. ಹಲವು ಹಳ್ಳಿಗಳಿಗೆ ಮಳೆಗಾಲದ ಆರು ತಿಂಗಳುಗಳ ಕಾಲ ಬಾಹ್ಯ ಸಂಪರ್ಕ ಸಹ ಕಡಿತವಾಗುತ್ತದೆ.
ವಿದ್ಯಾರ್ಥಿಗಳನ್ನು ಹುಡುಕಿ ತರುವ ಜವಾಬ್ದಾರಿ ಶಿಕ್ಷಕರಿಗೆ
ಈ ಹಿಂದೆ ಶಿಕ್ಷಣಾಧಿಕಾರಿಗಳು ಪ್ರೌಢಶಾಲಾ ಮುಖ್ಯ ಶಿಕ್ಷಕರ ಸಭೆ ನಡೆಸಿದ್ದರು. ಅಂದಿನ ಮಾಹಿತಿಯ ಪ್ರಕಾರ ಕಾರವಾರ ಶೈಕ್ಷಣಿಕ ಜಿಲ್ಲೆಯಲ್ಲಿ ನೂರಾರು ವಿದ್ಯಾರ್ಥಿಗಳ ಸುಳಿವು ಸಿಕ್ಕಿರಲಿಲ್ಲ. ಇದೀಗ ಕಾರವಾರ ಶೈಕ್ಷಣಿಕ ಜಿಲ್ಲೆಯ 83 ಹಾಗೂ ಶಿರಸಿ ಶೈಕ್ಷಣಿಕ ಜಿಲ್ಲೆಯ ಸುಮಾರು 2 ಸಾವಿರದಷ್ಟು ವಿದ್ಯಾರ್ಥಿಗಳು ಇದುವರೆಗೂ ಶಾಲೆಗಳ ಅಥವಾ ಶಿಕ್ಷಕರ ಸಂಪರ್ಕಕ್ಕೆ ಸಿಕ್ಕಿಲ್ಲ. ಇದರಿಂದ ಅಧಿಕಾರಿಗಳು ಕೂಡ ತಲೆಕೆಡಿಸಿಕೊಂಡಿದ್ದಾರೆ. ವಿದ್ಯಾರ್ಥಿಗಳನ್ನು ಹುಡುಕಿ ತರುವ ಜವಾಬ್ದಾರಿಯನ್ನು ಪ್ರೌಢಶಾಲಾ ಶಿಕ್ಷಕರಿಗೆ ನೀಡಲಾಗಿದ್ದು, ಬೈಕ್ಗಳ ಮೂಲಕ ವಿಳಾಸ ಹಿಡಿದು ವಿದ್ಯಾರ್ಥಿಗಳ ಮನೆಗಳನ್ನು ಹುಡುಕುತ್ತಿದ್ದಾರೆ.
SSLC ಪರೀಕ್ಷೆ 2021: ಮಾರ್ಗಸೂಚಿ ಬಿಡುಗಡೆ ಮಾಡಿದ ರಾಜ್ಯ ಸರ್ಕಾರ
ಮೊಬೈಲ್ ಇಲ್ಲದ ಮಕ್ಕಳು ಸಂಪರ್ಕಕ್ಕೆ ಸಿಗುತ್ತಿಲ್ಲ
ನಗರ ಪ್ರದೇಶದ ಮಕ್ಕಳು ಈಗಾಗಲೇ ಶಿಕ್ಷಕರ ಸಂಪರ್ಕದಲ್ಲಿದ್ದು, ವಾಟ್ಸಪ್ ಗ್ರೂಪ್ ಮಾಡಿಕೊಂಡು ಆನ್ಲೈನ್ ತರಗತಿ ಪಡೆಯುತ್ತಿದ್ದಾರೆ. ಗ್ರಾಮೀಣ ಭಾಗದಲ್ಲಿ, ಮೊಬೈಲ್ ನೆಟ್ವರ್ಕ್ ಇಲ್ಲದ ಪ್ರದೇಶದಲ್ಲಿರುವ ಹಾಗೂ ಮೊಬೈಲ್ ಇಲ್ಲದ ಮಕ್ಕಳು ಸಂಪರ್ಕಕ್ಕೆ ಸಿಗುತ್ತಿಲ್ಲ. ಅವರ ವಿಳಾಸ ಹುಡುಕಿ ಮನೆಗಳಿಗೆ ತೆರಳಿ ಅವರನ್ನು ಪತ್ತೆ ಮಾಡುವುದೇ ದೊಡ್ಡ ಸವಾಲಾಗಿದ್ದು, ಪರೀಕ್ಷೆಗೆ ಗೈರಾಗುವ ಭೀತಿ ಎದುರಾಗಿದೆ.
ಉತ್ತರ ಕರ್ನಾಟಕದ ಮಕ್ಕಳು ಊರಿಗೆ
ಕೇವಲ ನೆಟ್ವರ್ಕ್ ಸಮಸ್ಯೆಯಿಂದ ಮಾತ್ರ ಮಕ್ಕಳು ಸಂಪರ್ಕಕ್ಕೆ ಸಿಗದಿರಲು ಕಾರಣವಾಗಿಲ್ಲ. ಉತ್ತರ ಕರ್ನಾಟಕ ಭಾಗದಿಂದ ಇಲ್ಲಿ ನೆಲೆಸಿದ್ದ ಸಾಕಷ್ಟು ಕುಟುಂಬಗಳು ಕೋವಿಡ್ ಲಾಕ್ಡೌನ್ ಹಾಗೂ ಆರ್ಥಿಕ ಸಂಕಷ್ಟದಿಂದ ತಮ್ಮ ಸ್ವಂತ ಊರು ತಲುಪಿದ್ದಾರೆ. ಇಂತಹ ಹಲವು ಪಾಲಕರ ಬಳಿ ಮೊಬೈಲ್ ಸಹ ಇಲ್ಲ. ಹಲವು ಮಕ್ಕಳು ದಟ್ಟ ಅಡವಿ ಭಾಗದಲ್ಲಿ ವಾಸವಿರುವುದರಿಂದ ಮಳೆಗಾಲದಲ್ಲಿ ಸಂಪರ್ಕ ಕಡಿತವಾಗುವ ಸಾಕಷ್ಟು ಹಳ್ಳಿಗಳಿವೆ; ಹೀಗಾಗಿ ಈ ಮಕ್ಕಳು ನಿಗದಿತ ದಿನದಲ್ಲಿ ಸಿಗದಿದ್ದರೆ ಶಿಕ್ಷಣದಿಂದ ವಂಚಿತರಾಗಿವ ಆತಂಕ ಎದುರಾಗಿದೆ.
Recommended Video
ಅದೆಷ್ಟರ ಮಟ್ಟಿಗೆ ಪರೀಕ್ಷೆಗೆ ಸಜ್ಜುಗೊಳಿಸುತ್ತಾರೆ
"ಉತ್ತರ ಕನ್ನಡ ಜಿಲ್ಲೆಯಲ್ಲಿ ಎಷ್ಟು ವಿದ್ಯಾರ್ಥಿಗಳು ಹಾಗೂ ಪಾಲಕರ ಬಳಿ ಸ್ಮಾರ್ಟ್ ಫೋನ್ಗಳಿವೆ ಎಂಬ ಸಮೀಕ್ಷೆ ಮಾಡಲಾಗುತ್ತಿದ್ದು, ಒಂದು ವಾರದಲ್ಲಿ ಪೂರ್ಣಗೊಳ್ಳಬಹುದು. ಈ ಮಾಹಿತಿಯನ್ನು ಆಧರಿಸಿ ಆನ್ಲೈನ್ ತರಗತಿಗಳಿಗೆ ಎಷ್ಟು ಮಂದಿ ಭಾಗವಹಿಸಲು ಸಾಧ್ಯವಾಗುತ್ತದೆ ಎಂಬುದನ್ನು ಲೆಕ್ಕಾಚಾರ ಹಾಕಲು ಸಾಧ್ಯವಾಗುತ್ತದೆ. ಜೊತೆಗೆ ಹಳ್ಳಿಗಳ ಮಕ್ಕಳ ಸಂಪರ್ಕಕ್ಕೂ ಸಫಲವಾಗಲಿದೆ,'' ಎನ್ನುತ್ತಾರೆ ಕಾರವಾರ ಶೈಕ್ಷಣಿಕ ಜಿಲ್ಲೆಯ ಡಿಡಿಪಿಐ ಹರೀಶ ಗಾಂವ್ಕರ್. ಆದರೆ ಈಗಿರುವ ಕೆಲವೇ ದಿನಗಳಲ್ಲಿ ಮಕ್ಕಳನ್ನು ಹುಡುಕಿ, ಅದೆಷ್ಟರ ಮಟ್ಟಿಗೆ ಪರೀಕ್ಷೆಗೆ ಅವರನ್ನು ಸಜ್ಜುಗೊಳಿಸುತ್ತಾರೆ ಅಥವಾ ಸಜ್ಜುಗೊಳ್ಳುತ್ತಾರೆ ಎನ್ನುವುದೇ ಪ್ರಶ್ನಾರ್ಥಕವಾಗಿದೆ.