ಖಾಸಗಿ ಕಾರ್ಯಕ್ರಮಗಳಿಗೆ ನಿರ್ಬಂಧ ಇಲ್ಲ: ಉತ್ತರ ಕನ್ನಡ ಜಿಲ್ಲಾಧಿಕಾರಿ
ಕಾರವಾರ, ಮಾರ್ಚ್ 28: ವಿಧಾನಸಭೆ ಚುನಾವಣೆ ಹಿನ್ನೆಲೆಯಲ್ಲಿ ನೀತಿಸಂಹಿತೆ ಜಾರಿಯಾಗಿರುವುದರಿಂದ ಖಾಸಗಿ ಕಾರ್ಯಕ್ರಮಗಳಿಗೆ ಯಾವುದೇ ನಿರ್ಬಂಧ ಇರುವುದಿಲ್ಲ ಎಂದು ಜಿಲ್ಲಾಧಿಕಾರಿ ಎಸ್.ಎಸ್.ನಕುಲ್ ತಿಳಿಸಿದ್ದಾರೆ.
ಮಂಗಳವಾರ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು, ಜಾತ್ರೆ, ಮದುವೆ, ಮುಂಜಿ, ಪೂಜೆ ಮುಂತಾದ ಖಾಸಗಿ ಕಾರ್ಯಕ್ರಮಗಳನ್ನು ಆಯೋಜಿಸುವುದಕ್ಕೆ ತಡೆಯಿಲ್ಲ. ಇಂತಹ ಸಮಾರಂಭಗಳ ಆಮಂತ್ರಣ ಪತ್ರಿಕೆಗಳನ್ನು ತಹಶೀಲ್ದಾರ್ ಕಚೇರಿಗೆ ತಲುಪಿಸಬೇಕೆಂದು ಚುನಾವಣಾ ಆಯೋಗ ಸೂಚಿಸಿಲ್ಲ ಎಂದು ಹೇಳಿದರು.
ಮೇ 12ರಂದು ನಿಗದಿಯಾಗಿರುವ ವಿಧಾನಸಭಾ ಚುನಾವಣೆಗೆ ಜಿಲ್ಲಾಡಳಿತ ಸಕಲ ಸಿದ್ಧತೆ ಮಾಡಿಕೊಂಡಿದೆ. ಜಿಲ್ಲೆಯ ಆರೂ ಕ್ಷೇತ್ರಗಳಿಗೆ ಚುನಾವಣಾ ಅಧಿಕಾರಿಗಳು ಹಾಗೂ ಸಹಾಯಕ ಚುನಾವಣಾ ಅಧಿಕಾರಿಗಳನ್ನು ನೇಮಕ ಮಾಡಲಾಗಿದೆ. ಜಿಲ್ಲೆಯಲ್ಲಿ ಈ ಬಾರಿ ಒಟ್ಟು 11 ಲಕ್ಷದ 34 ಸಾವಿರದ 513 ಮತದಾರರಿದ್ದಾರೆ. ಅವರಲ್ಲಿ 5 ಲಕ್ಷದ 73 ಸಾವಿರದ 626 ಪುರುಷರು ಹಾಗೂ 5 ಲಕ್ಷದ 59 ಸಾವಿರದ 974 ಮಹಿಳೆಯರಿದ್ದಾರೆ. 913 ಸೇವಾ ಮತದಾರರು (ಸರ್ವೀಸ್ ವೋಟರ್ಸ್) ಇದ್ದಾರೆ ಎಂದು ಮಾಹಿತಿ ನೀಡಿದರು.

ಜಿಲ್ಲೆಯಲ್ಲಿ 1,434 ಮತಗಟ್ಟೆಗಳನ್ನು ಸ್ಥಾಪಿಸಲಾಗಿದೆ ಎಂದು ಮಾಹಿತಿ ನೀಡಿದ ಅವರು, ಮತದಾರರು ತಮ್ಮ ಹೆಸರು ಮತದಾರರ ಪಟ್ಟಿಯಲ್ಲಿ ದಾಖಲಾಗಿರುವುದನ್ನು www.ceokarnataka.kar.nic.in ಹಾಗೂ www.uttarakannada.nic.in ವೆಬ್ಸೈಟ್ನಲ್ಲಿ ಪರಿಶೀಲಿಸಬಹುದು. ಮೊಬೈಲ್ನಲ್ಲಿ ಮಾಹಿತಿ ಪಡೆಯಲು KAEPIC (SPACE) ಗುರುತಿನ ಚೀಟಿ ಸಂಖ್ಯೆ ಟೈಪ್ ಮಾಡಿ 97319 79899 ಸಂಖ್ಯೆಗೆ ಎಸ್ಎಂಎಸ್ ಮಾಡಬಹುದು. ಮತದಾರರ ಪಟ್ಟಿ ಬಗ್ಗೆ ದೂರು ನೀಡುವುದಿದ್ದರೆ ಶುಲ್ಕ ರಹಿತ ದೂರವಾಣಿ ಸಂಖ್ಯೆ 1950 ಅಥವಾ ಜಿಲ್ಲಾಧಿಕಾರಿ ಕಚೇರಿಯ 1077 ಸಂಖ್ಯೆಗೆ ಕರೆ ಮಾಡಬಹುದು ಎಂದು ಹೇಳಿದರು.
ವಿಧಾನಸಭೆ ಚುನಾವಣೆ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ | ಯಾವ ಪಕ್ಷಕ್ಕೆಷ್ಟು ಸೀಟು? ನೀವೇ ಊಹಿಸಿ
ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ವಿನಾಯಕ ವಿ. ಪಾಟೀಲ ಮಾತನಾಡಿ, ಭಯಮುಕ್ತ ಚುನಾವಣೆಗೆ ಪೊಲೀಸ್ ಇಲಾಖೆ ಹಲವು ಕ್ರಮಗಳನ್ನು ತೆಗೆದುಗೊಂಡಿದೆ. 145 ಸೆಕ್ಟರ್ ಅಧಿಕಾರಿಗಳನ್ನು ನೇಮಕ ಮಾಡಲಾಗಿದೆ. ಎಲ್ಲ ವಿಧಾನಸಭೆ ಕ್ಷೇತ್ರಗಳಲ್ಲೂ ಪೊಲೀಸ್ ಸಬ್ ಇನ್ಸ್ಪೆಕ್ಟರ್, ಹೆಡ್ ಕಾನ್ಸ್ಟೆಬಲ್ ಗಳು, 39 ತುರ್ತು ಕಾರ್ಯಪಡೆಗಳನ್ನು ನಿಯೋಜಿಸಲಾಗಿದೆ. ಕೆಲವೇ ದಿನಗಳಲ್ಲಿ ಜಿಲ್ಲೆಗೆ ಅರೆ ಸೈನಿಕ ದಳವೂ ಬರಲಿದ್ದು, ಸಿಬ್ಬಂದಿಯ ನಿಯೋಜನೆ ಕುರಿತು ಯೋಜನೆ ರೂಪಿಸಲಾಗುವುದು ಎಂದು ತಿಳಿಸಿದರು.
ಜಿಲ್ಲೆಯಲ್ಲಿ ಶಾಂತಿಗೆ ಭಂಗ ಉಂಟಾಗದಂತೆ ಮುನ್ನೆಚ್ಚರಿಕಾ ಕ್ರಮವಾಗಿ ಜನವರಿ ಒಂದನೇ ತಾರೀಕಿನಿಂದ ಇಲ್ಲಿಯವರೆಗೆ 227 ಆರೋಪಿಗಳ ವಿರುದ್ಧ ಪ್ರಕರಣ ದಾಖಲಿಸಲಾಗಿದೆ. 300 ಜನರಿಂದ ಮುಚ್ಚಳಿಕೆ ಬರೆಸಿಕೊಳ್ಳಲಾಗಿದೆ. ಅಪರಾಧ ಚಟುವಟಿಕೆಗಳಲ್ಲಿ ಭಾಗಿಯಾದ ಕೆಲವರಿಂದ ದಂಡ ವಸೂಲಿ ಮಾಡಲಾಗಿದೆ. ಭಟ್ಕಳದಲ್ಲಿ ಒಬ್ಬ ರೌಡಿ ಶೀಟರ್ ನ ಆಸ್ತಿ ಮುಟ್ಟುಗೋಲು ಹಾಕಿಕೊಳ್ಳುವ ಪ್ರಕ್ರಿಯೆ ನಡೆಯುತ್ತಿದೆ ಎಂದು ಹೇಳಿದರು.
ರಾಜ್ಯಕ್ಕೆ ಗೋವಾದಿಂದ ಅಕ್ರಮವಾಗಿ ಮದ್ಯ ಸಾಗಣೆಯಾಗುತ್ತಿರುವುದರ ಮೇಲೂ ಕಣ್ಣಿಡಲಾಗಿದೆ. ಈ ವರ್ಷದ ಆರಂಭದಿಂದ ಇಲ್ಲಿಯವರೆಗೆ 44 ಪ್ರಕರಣಗಳಲ್ಲಿ 1,886 ಲೀಟರ್ ಅಕ್ರಮ ಮದ್ಯ ಜಪ್ತಿ ಮಾಡಲಾಗಿದ್ದು, ಆರೋಪಿಗಳನ್ನು ಬಂಧಿಸಲಾಗಿದೆ ಎಂದರು.
ಜಿಲ್ಲಾ ಪಂಚಾಯ್ತಿ ಮುಖ್ಯ ಕಾರ್ಯ ನಿರ್ವಹಣಾಧಿಕಾರಿ ಎಲ್.ಚಂದ್ರಶೇಖರ ನಾಯಕ ಮಾತನಾಡಿ, ಸೂಕ್ಷ್ಮ ಮತಗಟ್ಟೆಗಳಲ್ಲಿ ಚೆಕ್ ಪೋಸ್ಟ್ಗಳನ್ನು ಸ್ಥಾಪಿಸಲಾಗಿದ್ದು, ಮಾರ್ಚ್ 28ರಿಂದ ಕಾರ್ಯಾರಂಭ ಮಾಡಲಿವೆ ಎಂದರು. ಹೆಚ್ಚುವರಿ ಜಿಲ್ಲಾಧಿಕಾರಿ ಡಾ.ಸುರೇಶ್ ಇಟ್ನಾಳ್ ಈ ವೇಳೆ ಉಪಸ್ಥಿತರಿದ್ದರು.












Click it and Unblock the Notifications