"ಜನತಾ ಕರ್ಫ್ಯೂ; ನಿಯಮ ಉಲ್ಲಂಘಿಸಿದವರ ಮೇಲೆ ಕಾನೂನು ಕ್ರಮ"
ಕಾರವಾರ, ಮಾರ್ಚ್ 21: ಕೊರೊನಾ ವೈರಸ್ ತಡೆಗಟ್ಟುವ ನಿಟ್ಟಿನಲ್ಲಿ ಪ್ರಧಾನಿ ಮೋದಿಯವರು ಭಾನುವಾರ, ಮಾರ್ಚ್ 22ಕ್ಕೆ ಜನತಾ ಕರ್ಫ್ಯೂಗೆ ಕರೆ ನೀಡಿದ್ದು, ಉತ್ತರ ಕನ್ನಡ ಜಿಲ್ಲೆಯ ಜನತೆಯು ಭಾಗಿಯಾಗಲು ಜಿಲ್ಲಾಧಿಕಾರಿ ಡಾ. ಕೆ ಹರೀಶ್ಕುಮಾರ್ ಕರೆ ನೀಡಿದ್ದಾರೆ.
ಜೊತೆಗೆ ಜನತಾ ಕರ್ಫ್ಯೂ ಕರೆ ನೀಡಿರುವ ಹಿನ್ನೆಲೆಯಲ್ಲಿ ಸರ್ಕಾರಿ ಆದೇಶ ಉಲ್ಲಂಘನೆ ಮಾಡಿದ ವ್ಯಕ್ತಿಗಳ ವಿರುದ್ಧ ಐಪಿಸಿ ಸೆಕ್ಷನ್ 188ರ ಅಡಿ ಎಫ್ಐಆರ್ ದಾಖಲಿಸಲಾಗುವುದು ಎಂದು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಶಿವಪ್ರಕಾಶ ದೇವರಾಜು ತಿಳಿಸಿದ್ದಾರೆ.
ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಹಮ್ಮಿಕೊಂಡಿದ್ದ ಪತ್ರಿಕಾ ಗೋಷ್ಠಿಯಲ್ಲಿ ಮಾತನಾಡಿದ ಜಿಲ್ಲಾಧಿಕಾರಿ ಹರೀಶ್ ಕುಮಾರ್, "ಮಾರ್ಚ್ 22ರಂದು ಜಿಲ್ಲೆಗೆ ತುರ್ತು ಅಗತ್ಯತೆಗಾಗಿ ಮಾತ್ರ ಬರಲು ಅವಕಾಶವಿದ್ದು, ರೈಲ್ವೆ, ಬಸ್ ಸೇರಿದಂತೆ ಎಲ್ಲಾ ಬಗೆಯ ಸಾರಿಗೆ ವ್ಯವಸ್ಥೆಯನ್ನು ಸ್ಥಗಿತಗೊಳಿಸಲಾಗಿದೆ. ಜಿಲ್ಲೆಯ ಗಡಿಯಲ್ಲಿ ಕಾರ್ಯನಿರ್ವಹಿಸುತ್ತಿರುವ ಚೆಕ್ಪೋಸ್ಟ್ ಗಳಲ್ಲಿ ಮುನ್ನೆಚ್ಚರಿಕಾ ಕ್ರಮವಾಗಿ ಬಿಗಿ ಭದ್ರತೆ ಕೈಗೊಳ್ಳಲಾಗುತ್ತಿದೆ" ಎಂದು ಮಾಹಿತಿ ನೀಡಿದರು.

ಜನತಾ ಕರ್ಫ್ಯೂನಿಂದಾಗಿ ಸಂತೆ, ಮೆಡಿಕಲ್ ಇನ್ನಿತರ ಸೇವೆಗಳಿಗೆ ತಾತ್ಕಾಲಿವಾಗಿ ಬಂದ್ ಘೋಷಿಸಲಾಗಿದೆ. ಜನತೆ ದಿನ ನಿತ್ಯದ ಅವಶ್ಯಕ ಸಾಮಗ್ರಿಗಳಿಗಾಗಿ ಪರದಾಡಬೇಕಿಲ್ಲ. ಸಾಧ್ಯವಾದ ಮಟ್ಟಿಗೆ ಮನೆ ಬಾಗಿಲಿಗೆ ಪೂರೈಸುವ ವ್ಯವಸ್ಥೆ ಮಾಡಲಿದ್ದೇವೆ. ಇದಕ್ಕೆ ಸಾರ್ವಜನಿಕರ ಸಹಕಾರ ಅತ್ಯವಶ್ಯಕ ಎಂದು ತಿಳಿಸಿದರು.
ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಎಂ ರೋಶನ್ ಮಾತನಾಡಿ, "ಜನತೆಯಲ್ಲಿ ಜಾಗೃತಿ ಮೂಡಿಸುವ ಸಲುವಾಗಿ ದೇವಸ್ಥಾನ, ಮಸೀದಿ, ಚರ್ಚ್ ಗಳಲ್ಲಿ ಸೈರನ್ ವ್ಯವಸ್ಥೆ ಮಾಡಲಾಗಿದೆ. ಜನತಾ ಕರ್ಫ್ಯೂ ಆರಂಭದ ಸೈರನ್ ಮುಂಜಾನೆ 6.30ಕ್ಕೆ, ವೈದ್ಯರು, ಆಸ್ಪತ್ರೆ ಸಿಬ್ಬಂದಿ, ಪೊಲೀಸ್ ಸಿಬ್ಬಂದಿಗಳ ಅವಿರತ ಪ್ರಯತ್ನಕ್ಕಾಗಿ ಚಪ್ಪಾಳೆಯ ಮೂಲಕ ಅಭಿನಂದನೆ ಸಲ್ಲಿಸುವ ಸಲುವಾಗಿ ಸಂಜೆ 5 ಗಂಟೆಗೆ ಅರ್ಧ ನಿಮಿಷದ ಸೈರನ್, ರಾತ್ರಿ 9 ಗಂಟೆಗೆ ಜನತಾ ಕರ್ಫ್ಯೂ ಮುಕ್ತಾಯದ ಸೈರನ್ ಹಾಕಲಾಗುವುದು. ಭಾನುವಾರ ಎಲ್ಲಾ ಕಚೇರಿಗಳನ್ನು ಬಂದ್ ಮಾಡಲಾಗುತ್ತಿದ್ದು, ಕಚೇರಿ ಕೆಲಸದ ನಿಮಿತ್ತ ಯಾರೂ ಹೊರಬರಬಾರದು" ಎಂದರು.
ಜನತಾ ಕರ್ಫ್ಯೂ ಕಟ್ಟುನಿಟ್ಟಾಗಿ ನಡೆಯುವಂತೆ ತಹಶೀಲ್ದಾರ್, ಪಿಡಿಒ ಹಾಗೂ ಗ್ರಾಮಲೆಕ್ಕಿಗರ ನೇತೃತ್ವದಲ್ಲಿ ತಂಡಗಳನ್ನು ರಚಿಸಿ ಜನರಲ್ಲಿ ಜಾಗೃತಿ ಮೂಡಿಸಲಾಗುತ್ತಿದೆ ಎಂದು ತಿಳಿಸಿದರು.
ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಅಧಿಕಾರಿ ಡಾ. ಜಿ. ಎನ್. ಅಶೋಕ್ಕುಮಾರ್, ವೈದ್ಯಾಧಿಕಾರಿಗಳು, ಆರೋಗ್ಯ ಇಲಾಖೆಯ ಸಿಬ್ಬಂದಿ ಹಾಜರಿದ್ದರು.












Click it and Unblock the Notifications