ಉತ್ತರ ಕನ್ನಡದಲ್ಲಿ ನೋ ಹೆಲ್ಮೆಟ್ ನೋ ಪೆಟ್ರೋಲ್!
ಕಾರವಾರ, ಡಿಸೆಂಬರ್ 11: ಉತ್ತರ ಕನ್ನಡ ಜಿಲ್ಲೆಯಲ್ಲಿ ರಸ್ತೆ ಅಪಘಾತಗಳ ಸಂಖ್ಯೆ ಹೆಚ್ಚಾಗುತ್ತಿದೆ. ಹೆಲ್ಮೆಟ್ ಧರಿಸದೇ ಇರುವ ಕಾರಣ ಅಪಘಾತಗಳಲ್ಲಿ ಹೆಚ್ಚು ಜನರು ಸಾವನ್ನಪ್ಪುತ್ತಿದ್ದಾರೆ. ಆದ್ದರಿಂದ, ಜಿಲ್ಲಾ ಪೊಲೀಸರು ಹೆಲ್ಮೆಟ್ ಧರಿಸದಿದ್ದರೆ ಪೆಟ್ರೋಲ್ ನೀಡದಂತೆ ಬಂಕ್ ಮಾಲೀಕರಿಗೆ ಸೂಚನೆ ನೀಡಿದ್ದಾರೆ.
ಹೆಲ್ಮೆಟ್ ಧರಿಸುವಿಕೆಯನ್ನು ಕಡ್ಡಾಯಗೊಳಿಸಲು ಮುಂದಾಗಿರುವ ಜಿಲ್ಲಾ ಪೊಲೀಸ್ ಇಲಾಖೆ ನೋ ಹೆಲ್ಮೆಟ್ ನೋ ಪೆಟ್ರೋಲ್ ನಿಯಮವನ್ನು ಜಾರಿಗೊಳಿಸುತ್ತಿದೆ. ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಶಿವಪ್ರಕಾಶ್ ದೇವರಾಜು ಈ ಕುರಿತು ಮಾಹಿತಿಯನ್ನು ನೀಡಿದ್ದಾರೆ.
"ಜಿಲ್ಲೆಯ ಹೆದ್ದಾರಿಗಳಲ್ಲಿ ಹೆಚ್ಚು ರಸ್ತೆ ಅಪಘಾತಗಳು ಸಂಭವಿಸುತ್ತಿವೆ. ರಸ್ತೆಯ ನಿಯಮಗಳನ್ನು ಪಾಲಿಸದೇ, ಅಜಾಗರೂಕತೆಯಿಂದ ವಾಹನಗಳನ್ನು ಚಲಾಯಿಸುವುದೇ ಈ ಅಪಘಾತಗಳಿಗೆ ಕಾರಣವಾಗಿದೆ. ಅಪಘಾತಗಳಲ್ಲಿ ಸಾವನ್ನಪ್ಪುತ್ತಿರುವ ಜನರಲ್ಲಿ ಹೆಚ್ಚಿನವರು ಯುವಕರಾಗಿದ್ದು, ಹೆಲ್ಮೆಟ್ ಧರಿಸದೇ ಬೈಕ್ ಓಡಿಸುತ್ತಿದ್ದಾರೆ" ಎಂದು ಹೇಳಿದ್ದಾರೆ.

"ಬೈಕ್ ಅಪಘಾತಗಳು ನಡೆದಾಗ ತಲೆಗೆ ಹೆಚ್ಚಿನ ಪೆಟ್ಟು ಬಿದ್ದು ಸಾವು ಸಂಭವಿಸುತ್ತಿದೆ. ಈ ಬಗ್ಗೆ ಪೊಲೀಸ್ ಇಲಾಖೆ ಗಂಭೀರವಾಗಿ ಕ್ರಮ ಕೈಗೊಳ್ಳಲು ಮುಂದಾಗಿದೆ. ಇದರ ಭಾಗವಾಗಿ ಹೆಲ್ಮೆಟ್ ಧರಿಸದವರಿಗೆ ಪೆಟ್ರೋಲ್ ನೀಡದಂತೆ ಬಂಕ್ಗಳಿಗೆ ಸೂಚಿಸಲಾಗುತ್ತಿದೆ" ಎಂದು ತಿಳಿಸಿದ್ದಾರೆ.
ಪೊಲೀಸ್ ಇಲಾಖೆಯ ಸೂಚನೆಯನ್ನು ಗಂಭೀರವಾಗಿ ಪರಿಗಣಿಸಿರುವ ಪೆಟ್ರೋಲ್ ಬಂಕ್ಗಳ ಮಾಲೀಕರು ಕೂಡ 'ನೋ ಹೆಲ್ಮೆಟ್ ನೋ ಪೆಟ್ರೋಲ್' ನಿಯಮವನ್ನು ಜಾರಿಗೊಳಿಸಲು ಮುಂದಾಗಿದ್ದಾರೆ.
ಸಾಮಾಜಿಕ ಜಾಲತಾಣದಲ್ಲಿ ಪೆಟ್ರೋಲ್ ಬಂಕ್ಗಳ ಮಾಲೀಕರ ಅಸೋಸಿಯೇಷನ್ ಮಾಹಿತಿ ನೀಡಿದೆ. ಪೊಲೀಸ್ ವರಿಷ್ಠಾಧಿಕಾರಿಗಳ ಸೂಚನೆಯ ಮೇರೆಗೆ ಈ ಕ್ರಮ ಕೈಗೊಳ್ಳುತ್ತಿರುವುದಾಗಿ ಹೇಳಿದೆ.












Click it and Unblock the Notifications