ಇನ್ನೂ ಸಲ್ಲಿಕೆಯಾಗದ ಉ.ಕನ್ನಡ ಸೂಪರ್ ಸ್ಪೆಷಾಲಿಟಿ ಆಸ್ಪತ್ರೆ ಪ್ರಸ್ತಾವನೆ: ಸತ್ಯ ಬಯಲು
ಕಾರವಾರ, ನವೆಂಬರ್ 21: ಉತ್ತರ ಕನ್ನಡ ಜಿಲ್ಲೆಯಲ್ಲಿ ಸೂಪರ್ ಸ್ಪೆಷಾಲಿಟಿ ಆಸ್ಪತ್ರೆ ಆಗಬೇಕು ಎಂದು ಜನ ಬೀದಿಗೆ ಇಳಿದು ಹೋರಾಟ ನಡೆಸಿದ್ದರು. ಹೋರಾಟಕ್ಕೆ ಮಣಿದ ಸರ್ಕಾರ ಕ್ರಮ ಕೈಗೊಳ್ಳುವುದಾಗಿ ಭರವಸೆ ನೀಡಿದ್ದರು. ಆದರೆ ಇದೀಗ ಜಿಲ್ಲೆಗೆ ಅಗತ್ಯವಿರುವ ಆಸ್ಪತ್ರೆಯ ಬಗ್ಗೆ ಆರೋಗ್ಯ ಅಧಿಕಾರಿಗಳಿಂದ ಸರ್ಕಾರಕ್ಕೆ ಯಾವುದೇ ಪ್ರಸ್ತಾವನೆಯೇ ಸಲ್ಲಿಕೆಯಾಗಿಲ್ಲ ಎನ್ನುವುದು ಮಾಹಿತಿ ಹಕ್ಕು ಕಾಯ್ದೆ ಅಡಿ ಕೇಳಲಾದ ಪ್ರಶ್ನೆಯಿಂದ ತಿಳಿದುಬಂದಿದೆ.
ಉತ್ತರ ಕನ್ನಡ ಜಿಲ್ಲೆಯ ಜನ ಸುಸಜ್ಜಿತ ಆಸ್ಪತ್ರೆಗಾಗಿ ಮೊದಲ ಬಾರಿಗೆ 8 ಜೂನ್ 2019ರಂದು ಟ್ವಿಟ್ಟರ್ ಮೂಲಕ ದೊಡ್ಡ ಅಭಿಯಾನ ನಡೆಸಿದ್ದರು. ಆಸ್ಪತ್ರೆಗೆ ಆಗ್ರಹಿಸಿ ಲಕ್ಷಾಂತರ ಟ್ವೀಟ್ ಮಾಡಲಾಗಿತ್ತು. ಮುಖ್ಯಮಂತ್ರಿ, ಆರೋಗ್ಯ ಸಚಿವರು ಸೇರಿದಂತೆ ವಿವಿಧ ಅಧಿಕಾರಿಗಳಿಗೆ ಟ್ಯಾಗ್ ಮಾಡಿ ಜನ ಟ್ವೀಟ್ ಅಭಿಯಾನ ನಡೆಸಿದ್ದರು.
ಈ ವೇಳೆ ಟ್ವೀಟ್ ಮೂಲಕವೇ ಪ್ರತಿಕ್ರಿಯಿಸಿದ್ದ ಮುಖ್ಯಮಂತ್ರಿಗಳು ಉತ್ತರ ಕನ್ನಡ ಜಿಲ್ಲೆಯ ಜನ ಒಂದು ಸುಸಜ್ಜಿತ ಆಸ್ಪತ್ರೆಯ ಅಗತ್ಯಕ್ಕಾಗಿ ಅಭಿಯಾನ ನಡೆಸುತ್ತಿರುವುದು ನನ್ನ ಗಮನಕ್ಕೆ ಬಂದಿದೆ. ಈ ನಿಟ್ಟಿನಲ್ಲಿ ಆರೋಗ್ಯ ಇಲಾಖೆಯ ಅಧಿಕಾರಿಗಳಿಂದ ವರದಿ ತರಿಸಿ ಅಗತ್ಯ ಕ್ರಮ ಕೈಗೊಳ್ಳಲಾಗುವುದು ಎಂದು ಅದೇ ದಿನ ಸಂಜೆ ಪ್ರಕಟಿಸಿದ್ದರು. ಆದರೆ, ಇದಾಗಿ ಮೂರುವರೆ ವರ್ಷ ಕಳೆದರೂ ಆರೋಗ್ಯ ಅಧಿಕಾರಿಗಳ ವರದಿ ಮುಖ್ಯಮಂತ್ರಿ ಸಚಿವಾಲಯವನ್ನು ತಲುಪಿಲ್ಲ ಎನ್ನಲಾಗಿದೆ.

ಉತ್ತರ ಕನ್ನಡ ಜಿಲ್ಲೆಯಲ್ಲಿ ಸುಸಜ್ಜಿತ ಆಸ್ಪತ್ರೆ ನಿರ್ಮಾಣಕ್ಕೆ ಸಂಬಂಧಿಸಿ ಸಲ್ಲಿಕೆಯಾದ ವರದಿಯ ಪ್ರತಿ ಕೋರಿ ಮಾಹಿತಿ ಹಕ್ಕು ಕಾಯ್ದೆ ಅಡಿ ಅಚ್ಯುತ ಕುಮಾರ್ ಯಲ್ಲಾಪುರ ಅವರು ಸಲ್ಲಿಸಿದ ಅರ್ಜಿಗೆ ಉತ್ತರಿಸಿದ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ಅಧೀನ ಕಾರ್ಯದರ್ಶಿ ಪದ್ಮಾ, ಮುಖ್ಯಮಂತ್ರಿ ಸಚಿವಾಲಯಕ್ಕೆ ಆರೋಗ್ಯಾಧಿಕಾರಿಗಳಿಂದ ಯಾವುದೇ ವರದಿ ಸಲ್ಲಿಕೆಯಾಗಿಲ್ಲ ಎಂದು ಉತ್ತರಿಸಿದ್ದಾರೆ.
ಇದಕ್ಕೂ ಮುನ್ನ ಮಾಹಿತಿ ಹಕ್ಕು ಕಾಯ್ದೆ ಅಡಿ ಸಲ್ಲಿಸಿದ ಅರ್ಜಿ ಹಿಂಪಡೆಯುವಂತೆ ಅರ್ಜಿದಾರರಿಗೆ ಒತ್ತಡ ಹೇರಲಾಗಿದ್ದು, ಅವಧಿ ಮುಗಿದರೂ ಮಾಹಿತಿ ನೀಡಿರಲಿಲ್ಲ ಎನ್ನಲಾಗಿದೆ. ಮೇಲ್ಮನವಿ ಸಲ್ಲಿಕೆ ನಂತರ ಅಂದರೆ, ಅರ್ಜಿ ಸಲ್ಲಿಸಿ ನಾಲ್ಕು ತಿಂಗಳು ಸಮೀಪಿಸಿದಾಗ ಹಳೆಯ ದಿನಾಂಕದೊಂದಿಗೆ ಶನಿವಾರ ಇ-ಮೇಲ್ ಮೂಲಕ 'ವರದಿ ಸಲ್ಲಿಕೆಯಾಗಿಲ್ಲ' ಎಂಬ ಉತ್ತರ ನೀಡಲಾಗಿದೆ.
ಈ ಬಗ್ಗೆ ಶನಿವಾರ ಇ-ಮೇಲ್ ಮಾಡಲಾಗಿದೆಯಾದರೂ ಕೂಡ, 6 ಸೆಪ್ಟೆಂಬರ್ 2022ರ ನಂತರ ಏನಾದರೂ ಪ್ರಸ್ತಾವನೆ ಸಲ್ಲಿಕೆಯಾಗಿದೆಯೋ ಇಲ್ಲವೋ ಎಂಬುದನ್ನು ಸ್ಪಷ್ಟವಾಗಿ ತಿಳಿಸಿಲ್ಲ ಇದರಿಂದ ಜನರ ಹೋರಾಟದ ದಿಕ್ಕು ತಪ್ಪಿಸುವ ಹುನ್ನಾರ ನಡೆದಿದೆ ಎಂದು ಅರ್ಜಿದಾರ ಅಚ್ಯುತ ಕುಮಾರ್ ಯಲ್ಲಾಪುರ ಆರೋಪಿಸಿದ್ದಾರೆ.












Click it and Unblock the Notifications