ಕರಾವಳಿ ಭಾಗದ ಜನರಿಗೆ ಎಚ್ಚರಿಕೆ ನೀಡಿದ ಹವಾಮಾನ ಇಲಾಖೆ
ಕಾರವಾರ, ಜೂನ್.28:ಮಂಗಳೂರು-ಕಾರವಾರ ಭಾಗದಲ್ಲಿ ಸಮುದ್ರದ ಅಲೆಗಳ ಎತ್ತರ ಹೆಚ್ಚಾಗಲಿದ್ದು, ಜೂ. 29, 11.30 ರವರೆಗೆ ಈ ಭಾಗದ ಜನತೆ ಎಚ್ಚರಿಕೆಯಿಂದ ಇರಬೇಕು ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ಕರಾವಳಿ ಭಾಗದಲ್ಲಿ ಮುಂದಿನ ಇಪ್ಪತ್ನಾಲ್ಕು ಗಂಟೆಗಳಲ್ಲಿ ಭಾರೀ ಮಳೆಯಾಗಲಿದೆ. ಜತೆಗೆ, ಸಮುದ್ರದ ಅಲೆಗಳು 10ರಿಂದ 11 ಅಡಿಗಳವರೆಗೆ ಹೆಚ್ಚಾಗುವ ಸಾಧ್ಯತೆ ಇದೆ. ಅದರ ವೇಗವು ಪ್ರತಿ ಸೆಕೆಂಡಿಗೆ 29- 41 ಸೆಂ.ಮೀ.ಇರಲಿದೆ ಎಂದು ಇಲಾಖೆ ತಿಳಿಸಿದೆ.
ಕರ್ನಾಟಕ ಕರಾವಳಿಯಲ್ಲಿ ಇಂದೂ ಧಾರಾಕಾರ ಮಳೆ
ಸಿದ್ದಾಪುರದಲ್ಲಿ 106.8 ಮಿ.ಮೀ. ಮಳೆಯಾಗಿದ್ದು, ಸರ್ಕಾರಿ ಶಾಲೆಗಳಿಗೆ ಇಂದು ರಜೆ ಘೋಷಿಸಲಾಗಿದೆ.
ಹೀಗಾಗಿ ಮೀನುಗಾರರು ಕೇರಳ, ಕರ್ನಾಟಕ ಹಾಗೂ ಲಕ್ಷದ್ವೀಪ ಭಾಗದ ಅರಬ್ಬಿ ಸಮುದ್ರಕ್ಕೆ ಮೀನುಗಾರಿಕೆಗೆ ತೆರಳಬಾರದು. ತೆರಳುವ ಮುನ್ನ ಜಾಗೃತರಾಗಿರಬೇಕು ಎಂದು ಇಲಾಖೆ ಸೂಚಿಸಿದೆ.
ನೈರುತ್ಯ ಮಾನ್ಸೂನ್ ಮಾರುತಗಳು ಬಲ ಪಡೆದುಕೊಂಡಿದ್ದು, ಮುಂದಿನ 24 ಗಂಟೆಯಲ್ಲಿ ರಾಜ್ಯದ ಕರವಾಳಿಯಲ್ಲಿ ಭಾರೀ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.
ಕರಾವಳಿಯನ್ನು ಹಾದು ಬರುವ ಮಾರುತಗಳು ಪಶ್ಚಿಮ ಘಟ್ಟ ಮತ್ತು ಮಲೆನಾಡು ಭಾಗದಲ್ಲಿ ಭಾರೀ ಮಳೆ ಸುರಿಸಲಿವೆ. ದಕ್ಷಿಣ ಮತ್ತು ಉತ್ತರ ಒಳನಾಡಿನಲ್ಲಿ ಸಾಧಾರಣ ಮಳೆಯಾಗಲಿದೆ. ಬೆಂಗಳೂರಿನಲ್ಲೂ ರಾತ್ರಿ ಸಾಧಾರಣ ಮಳೆ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.