ರಾಜಕೀಯ ನಿವೃತ್ತಿ ಪಡೆಯಲಿದ್ದಾರಾ ಸಂಸದ ಅನಂತಕುಮಾರ ಹೆಗಡೆ?
ಕಾರವಾರ, ಮಾರ್ಚ್ 06; ಉತ್ತರ ಕನ್ನಡ ಕ್ಷೇತ್ರದ ಸಂಸದ, ಕೇಂದ್ರದ ಮಾಜಿ ಸಚಿವ ಅನಂತಕುಮಾರ ಹೆಗಡೆ ರಾಜಕೀಯ ನಿವೃತ್ತಿ ಪಡೆಯಲಿದ್ದಾರೆಯೇ?. ಹೀಗೊಂದು ಪ್ರಶ್ನೆ ಈಗ ಮುನ್ನೆಲೆಗೆ ಬಂದಿದೆ. ಹಲವು ವರ್ಷಗಳಿಂದ ತೀವ್ರವಾದ ಬೆನ್ನು ನೋವು ಮತ್ತು ಕಾಲು ನೋವಿನಿಂದ ಬಳಲುತ್ತಿರುವ ಸಂಸದರು ಶಸ್ತ್ರ ಚಿಕಿತ್ಸೆಗೆ ಒಳಗಾಗಿದ್ದು, ಚೇತರಿಸಿಕೊಳ್ಳುತ್ತಿದ್ದಾರೆ.
ಅನಂತಕುಮಾರ್ ಹೆಗಡೆ ಅವರ ಆರೋಗ್ಯದ ಬಗ್ಗೆ ಆಪ್ತ ಸಹಾಯಕರು ಪ್ರಕಟಣೆ ಬಿಡುಗಡೆ ಮಾಡಿದ್ದಾರೆ. ಇತ್ತೀಚೆಗೆ ಕೆಲವು ತಿಂಗಳುಗಳಿಂದ ಬೆನ್ನು ನೋವು ಮತ್ತು ಕಾಲು ನೋವು ಉಲ್ಬಣಗೊಂಡಿರುವ ಹಿನ್ನೆಲೆಯಲ್ಲಿ ತಜ್ಞರು ತಕ್ಷಣವೇ ಕಾಲಿನ ಶಸ್ತ್ರ ಚಿಕಿತ್ಸೆಯನ್ನು ನಡೆಸುವ ಅವಶ್ಯಕತೆ ಇದೆ ಎಂದು ಹೇಳಿದ್ದರು.
ಇದೀಗ ಕೆಲವು ದಿನಗಳ ಹಿಂದೆ ನಡೆಸಿದ ಗಂಭೀರ ಶಸ್ತ್ರ ಚಿಕಿತ್ಸೆಯ ನಂತರ ಸಂಸದರು ಚೇತರಿಸಿಕೊಳ್ಳುತ್ತಿದ್ದಾರೆ. ವೈದ್ಯರು ದೀರ್ಘಾವಧಿ ವಿಶ್ರಾಂತಿ ಪಡೆಯುಲು ಸೂಚಿಸಿರುವ ಹಿನ್ನಲೆಯಲ್ಲಿ ಪೂರ್ಣವಾಗಿ ಗುಣಮುಖರಾಗುವ ತನಕ ಸಂಸದರು ಸಾರ್ವಜನಿಕ ಕಾರ್ಯಕ್ರಮ ಹಾಗೂ ಭೇಟಿಗೆ ಲಭ್ಯವಿರುವುದಿಲ್ಲ ಎಂದು ತಿಳಿಸಿದ್ದಾರೆ.
ಅನಂತಕುಮಾರ ಹೆಗಡೆ ಕಳೆದ ಹಲವು ವರ್ಷಗಳಿಂದ ಬೆನ್ನು ನೋವು ಮತ್ತು ಕಾಲು ನೋವಿನಿಂದ ಬಳಲುತ್ತಿದ್ದು, ಇದೇ ಕಾರಣದಿಂದಾಗಿ ಕಳೆದ ಲೋಕಸಭಾ ಚುನಾವಣೆಯ ಸಂದರ್ಭದಲ್ಲಿ ರಾಜಕೀಯ ನಿವೃತ್ತಿ ಬಗ್ಗೆ ತಮ್ಮ ನಿರ್ಧಾರ ವ್ಯಕ್ತಪಡಿಸಿದ್ದರು.
ಲೋಕಸಭಾ ಚುನಾವಣೆಯ ನಂತರದಿಂದ ಹೆಚ್ಚಿನ ಸಾರ್ವಜನಿಕ ಕಾರ್ಯಕ್ರಮಗಳು ಹಾಗೂ ಸಾರ್ವಜನಿಕ ಸಂಪರ್ಕದಿಂದ ದೂರವಿರುತ್ತಿದ್ದರು ಎಂದು ಕೂಡ ಪ್ರಕಟಣೆಯಲ್ಲಿ ಉಲ್ಲೇಖಿಸಲಾಗಿದೆ. ಇದರಿಂದಾಗಿ ರಾಜಕೀಯ ನಿವೃತ್ತಿ ಪಡೆಯಲಿದ್ದಾರಾ? ಎಂಬ ಪ್ರಶ್ನೆ ಮೂಡಿದೆ.

ವಿವಾದಾತ್ಮಕ ಹೇಳಿಕೆಗಳು
ಉತ್ತರ ಕನ್ನಡ ಕ್ಷೇತ್ರದಿಂದ 6 ಬಾರಿ ಸಂಸದರಾಗಿ ಆಯ್ಕೆಯಾಗಿರುವ ಅನಂತಕುಮಾರ ಹೆಗಡೆ ನರೇಂದ್ರ ಮೋದಿ ಸರ್ಕಾರದಲ್ಲಿ ಕೌಶಲ್ಯಾಭಿವೃದ್ದಿ ಸಚಿವರಾಗಿದ್ದರು. ಆದರೆ, ಸಚಿವರಾದ ವೇಳೆಯಲ್ಲಿಯೇ ಹಲವು ವಿವಾದಾತ್ಮಕ ಹೇಳಿಕೆ ಕೊಟ್ಟು, ಪಕ್ಷಕ್ಕೆ ಸಾಕಷ್ಟು ಮುಜುಗರ ಉಂಟು ಮಾಡಿದ್ದರು.

ಸಚಿವ ಸ್ಥಾನ ನೀಡಲು ಶಿಫಾರಸು
ಬಳಿಕ ಸಚಿವ ಸಂಪುಟ ವಿಸ್ತರಣೆ ವೇಳೆ ಅವರಿಗೆ ಅವಕಾಶ ಕೊಟ್ಟಿರಲಿಲ್ಲ. ಆದರೆ, ರಾಜ್ಯದ 'ಫೈರ್ ಬ್ರಾಂಡ್' ರಾಜಕಾರಣಿ ಎಂದೇ ಪ್ರಸಿದ್ಧಿಯಾಗಿರುವ ಹೆಗಡೆಗೆ ಮತ್ತೆ ಸಚಿವ ಸ್ಥಾನ ಕೊಡುವ ಮೂಲಕ ರಾಜ್ಯದಲ್ಲಿ ಪಕ್ಷವನ್ನು ಗಟ್ಟಿಗೊಳಿಸಲು ಚಿಂತನೆ ನಡೆಸಿರುವ ಆರ್ಎಸ್ಎಸ್, ಸಚಿವ ಸ್ಥಾನ ನೀಡುವಂತೆ ಕೇಂದ್ರಕ್ಕೆ ಶಿಫಾರಸು ಮಾಡಿದೆ ಎಂಬ ಸುದ್ದಿ ಇತ್ತೀಚೆಗೆ ಹರಿದಾಡಿತ್ತು.

ಹಿಂದುತ್ವದ ವಿಚಾರ
ಅನಂತಕುಮಾರ ಹೆಗಡೆ ಹಿಂದುತ್ವದ ವಿಚಾರದಲ್ಲಿ ರಾಜಿ ಮಾಡಿಕೊಳ್ಳದ ನಾಯಕ. ಕೇಂದ್ರ ಸಚಿವರಾದ ವೇಳೆಯಲ್ಲಿ ರಾಜ್ಯದಲ್ಲಿ ಸಾಕಷ್ಟು ಓಡಾಟ ನಡೆಸಿದ್ದ ಅವರು, ವಿವಾದಾತ್ಮಕ ಹೇಳಿಕೆ ನೀಡಿದ್ದರೂ ತನ್ನದೇ ಆದ ವರ್ಚಸ್ಸನ್ನು ವೃದ್ಧಿ ಮಾಡಿಕೊಂಡಿದ್ದರು.

ಸಂವಿಧಾನದ ಹೇಳಿಕೆ
"ಬಿಜೆಪಿ ಆಡಳಿತಕ್ಕೆ ಬಂದಿರುವುದು ಸಂವಿಧಾನದ ಬದಲಾವಣೆ ಮಾಡಲು" ಎನ್ನುವ ಅನಂತಕುಮಾರ ಹೆಗಡೆ ಹೇಳಿಕೆಗೆ ಭಾರೀ ವಿರೋಧ ವ್ಯಕ್ತವಾಗಿತ್ತು. ಸಂಸದರು ಈ ಕುರಿತು ಸಂಸತ್ ಕಲಾಪದಲ್ಲಿಯೂ ಸ್ಪಷ್ಟನೆ ನೀಡಬೇಕಾಗಿ ಬಂತು.












Click it and Unblock the Notifications