ಕೋಲಾರದ ಒಂದೇ ಕಾಲೇಜಿನಲ್ಲಿ 32 ವಿದ್ಯಾರ್ಥಿಗಳಿಗೆ ಕೊರೊನಾವೈರಸ್
ಕೋಲಾರ, ಸಪ್ಟೆಂಬರ್ 1: ಕೋಲಾರದ ಖಾಸಗಿ ಕಾಲೇಜಿನ 32 ವಿದ್ಯಾರ್ಥಿಗಳಿಗೆ ಕೊರೊನಾವೈರಸ್ ಸೋಂಕು ತಗುಲಿರುವುದು ವೈದ್ಯಕೀಯ ತಪಾಸಣೆಯಲ್ಲಿ ತಿಳಿದು ಬಂದಿದೆ ಎಂದು ಆರೋಗ್ಯ ಸಚಿವ ಡಾ. ಕೆ ಸುಧಾಕರ್ ತಿಳಿಸಿದ್ದಾರೆ.
ಕೊವಿಡ್-19 ಸೋಂಕು ತಗುಲಿದ ವಿದ್ಯಾರ್ಥಿಗಳೆಲ್ಲ ಕೇರಳದವರು ಎಂದು ಗೊತ್ತಾಗಿದೆ. ಬುಧವಾರ ಕಾಲೇಜಿಗೆ ಭೇಟಿ ನೀಡಿ ಪರಿಶೀಲನೆ ನಡೆಸುತ್ತೇನೆ. ಕಾಲೇಜು ಆಡಳಿತ ಮಂಡಳಿ ವಿರುದ್ಧ ಶಿಸ್ತುಕ್ರಮ ತೆಗೆದುಕೊಳ್ಳಲಾಗುವುದು ಎಂದು ಸಚಿವರು ಹೇಳಿದ್ದಾರೆ.
ಕರ್ನಾಟಕದಲ್ಲಿ ಕೇರಳದ ವೈದ್ಯಕೀಯ, ತಾಂತ್ರಿಕ ವಿದ್ಯಾರ್ಥಿಗಳಿಗೆ ವಿಶೇಷ ವಿನಾಯಿತಿ
ಕೋಲಾರ ಜಿಲ್ಲೆಯಲ್ಲಿ ಕಳೆದ ಒಂದೇ ದಿನದಲ್ಲಿ 55 ಹೊಸ ಕೊವಿಡ್-19 ಸೋಂಕಿತ ಪ್ರಕರಣಗಳು ವರದಿಯಾಗಿದ್ದು, ಒಟ್ಟು ಸೋಂಕಿತ ಪ್ರಕರಣಗಳ ಸಂಖ್ಯೆ 46339ಕ್ಕೆ ಏರಿಕೆಯಾಗಿದೆ. ಇದೇ ಅವಧಿಯಲ್ಲಿ 13 ಸೋಂಕಿತರು ಗುಣಮುಖರಾಗಿದ್ದರೆ, ಒಬ್ಬರು ಮಹಾಮಾರಿಗೆ ಬಲಿಯಾಗಿದ್ದಾರೆ. ಜಿಲ್ಲೆಯಲ್ಲಿ ಈವರೆಗೂ 45510 ಸೋಂಕಿತರು ಗುಣಮುಖರಾಗಿದ್ದು, 206 ಸಕ್ರಿಯ ಪ್ರಕರಣಗಳಿವೆ ಎಂದು ರಾಜ್ಯ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಮಾಹಿತಿ ನೀಡಿದೆ.
ಕೇರಳ ವಿದ್ಯಾರ್ಥಿಗಳಿಗೆ ವಿನಾಯಿತಿ ನೀಡಿದ್ದ ಸರ್ಕಾರ:
ಕೇರಳದಿಂದ ರಾಜ್ಯಕ್ಕೆ ಆಗಮಿಸುವ ಪ್ರತಿಯೊಬ್ಬರಿಗೂ 7 ದಿನ ಕಡ್ಡಾಯ ಸಾಂಸ್ಥಿಕ ದಿಗ್ಬಂಧನ ವಿಧಿಸುವ ನಿಯಮದಿಂದ ವಿದ್ಯಾರ್ಥಿಗಳಿಗೆ ವಿನಾಯಿತಿ ನೀಡಲಾಗಿತ್ತು. ಕೇರಳದಿಂದ ಆಗಮಿಸುವ ವೈದ್ಯಕೀಯ, ನರ್ಸಿಂಗ್ ಮತ್ತು ಇಂಜಿನಿಯರಿಂಗ್ ವಿದ್ಯಾರ್ಥಿಗಳಿಗೆ ವಿನಾಯಿತಿ ನೀಡಲಾಗಿದ್ದು, ರಾಜ್ಯಕ್ಕೆ ಆಗಮಿಸುವ ಪ್ರತಿಯೊಬ್ಬ ವಿದ್ಯಾರ್ಥಿ 7 ದಿನಗಳ ಸಾಂಸ್ಥಿಕ ದಿಗ್ಬಂಧನಕ್ಕೊಳಗಾಗುವುದು ಕಡ್ಡಾಯವಲ್ಲ ಎಂದು ಸರ್ಕಾರ ಸ್ಪಷ್ಟಪಡಿಸಿತ್ತು.
ನರ್ಸಿಂಗ್, ವೈದ್ಯಕೀಯ ಮತ್ತು ಇಂಜಿನಿಯರಿಂಗ್ ವಿದ್ಯಾರ್ಥಿಗಳು 72 ಗಂಟೆಗಳ ಹಿಂದೆ ಪರೀಕ್ಷಿಸಿದ RT-PCR ನೆಗೆಟಿವ್ ವರದಿ ಸಾಕಾಗುತ್ತದೆ. ವಿದ್ಯಾರ್ಥಿಗಳ ಹೊರತಾಗಿ ಕೇರಳದಿಂದ ಆಗಮಿಸುವ ಪ್ರತಿಯೊಬ್ಬರಿಗೂ 7 ದಿನ ಸಾಂಸ್ಥಿಕ ದಿಗ್ಬಂಧನ ಹಾಗೂ RT-PCR ಪರೀಕ್ಷೆಯನ್ನು ಕಡ್ಡಾಯಗೊಳಿಸಲಾಗಿದೆ. ಕರ್ನಾಟಕದಲ್ಲಿ ಉದ್ಯೋಗ ಮಾಡುತ್ತಿರುವ ಕೇರಳ ಉದ್ಯೋಗಿಗಳಿಗೂ ಅಥವಾ ಇತ್ತೀಚಿಗೆ ಕೇರಳಕ್ಕೆ ಭೇಟಿ ನೀಡಿ ರಾಜ್ಯಕ್ಕೆ ವಾಪಸ್ಸಾದ ಪ್ರತಿಯೊಬ್ಬರಿಗೂ ಸಾಂಸ್ಥಿಕ ದಿಗ್ಬಂಧನದ ಕ್ರಮ ಕಡ್ಡಾಯವಾಗಿರುತ್ತದೆ.
ವಿದ್ಯಾರ್ಥಿಗಳ ಪರೀಕ್ಷೆಗೆ ಅನುಕೂಲ:
ಕೊರೊನಾವೈರಸ್ ಮಾರ್ಗಸೂಚಿಗಳು ಜಾರಿಯಲ್ಲಿರುವ ವೇಳೆ ವಾರಾಂತ್ಯದಲ್ಲಿ ವಿದ್ಯಾರ್ಥಿಗಳು ಪರೀಕ್ಷೆಗಳಿಗೆ ಹಾಜರಾಗಲು ಅನುಮತಿ ನೀಡಲಾಗಿದೆ. ಪರೀಕ್ಷೆಗಾಗಿ ಪ್ರಯಾಣಿಸುವ ವಿದ್ಯಾರ್ಥಿಗಳು ತಮ್ಮ ಪರೀಕ್ಷೆಗೆ ಸಂಬಂಧಿಸಿದ ಪ್ರವೇಶ ಪತ್ರವನ್ನು ತೆಗೆದುಕೊಂಡು ಹೋಗುವುದು ಕಡ್ಡಾಯವಾಗಿರುತ್ತದೆ. ರಾಜ್ಯದಲ್ಲಿ ಶಾಲಾ-ಕಾಲೇಜುಗಳನ್ನು ಪುನಾರಂಭಿಸುವುದರ ಸಂಬಂಧ ತೆಗೆದುಕೊಂಡ ಕ್ರಮದ ಬೆನ್ನಲ್ಲೇ ಸರ್ಕಾರವು ಈ ನಿರ್ಧಾರವನ್ನು ತೆಗೆದುಕೊಂಡಿದೆ.
Recommended Video