ಮತಗಳ ಮರು ಎಣಿಕೆಗಾಗಿ ಹೈಕೋರ್ಟ್ ಮೊರೆ ಹೋದ ಬಿಜೆಪಿ ಅಭ್ಯರ್ಥಿ
ಬೆಂಗಳೂರು, ಮೇ 17: ಮಾಲೂರು ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಮಂಜುನಾಥ ಗೌಡ ಮತ್ತು ಗೆದ್ದಿರುವ ಕಾಂಗ್ರೆಸ್ ಅಭ್ಯರ್ಥಿ ಕೆ ವೈ ನಂಜೇಗೌಡ ಅವರ ನಡುವಿನ ಅಂತರ ಕೇವಲ 248 ಆಗಿರುವುದರಿಂದ ವಿಧಾನಸಭಾ ಚುನಾವಣೆಯಲ್ಲಿ ಚಲಾವಣೆಯಾದ ಮತಗಳನ್ನು ಮರು ಎಣಿಕೆ ಮಾಡುವಂತೆ ಕೋರಿ ಹೈಕೋರ್ಟ್ಗೆ ಅರ್ಜಿ ಸಲ್ಲಿಸಿದ್ದಾರೆ.
ಜಿಲ್ಲೆಯಲ್ಲಿ ಬಿಜೆಪಿ, ಕಾಂಗ್ರೆಸ್ ಮತ್ತು ಜೆಡಿಎಸ್ ಅಭ್ಯರ್ಥಿಗಳ ನಡುವೆ ಪೈಪೋಟಿ ಏರ್ಪಟ್ಟಿದ್ದು, ಮತ ಎಣಿಕೆ ಕುತೂಹಲ ಕೆರಳಿಸಿದೆ. ಎಣಿಕೆ ಅಧಿಕಾರಿಗಳು ನನಗೆ ದೂರವಾಣಿ ಕರೆ ಮಾಡಿ ಚುನಾವಣೆಯಲ್ಲಿ ನಾನು ಗೆದ್ದಿದ್ದೇನೆ ಎಂದು ಹೇಳಿದರು. ಆದರೆ ನಂತರ ಕಾಂಗ್ರೆಸ್ ಅಭ್ಯರ್ಥಿ 248 ಮತಗಳ ಅಂತರದಿಂದ ಗೆದ್ದಿದ್ದಾರೆ ಎಂದು ಘೋಷಿಸಲಾಯಿತು.

ಹೀಗಾಗಿ ಮತಗಳ ಮರು ಎಣಿಕೆ ಕೋರಿ ನ್ಯಾಯಾಲಯದ ಮೊರೆ ಹೋಗಿದ್ದೆ ಎಂದು ಮಂಜುನಾಥ್ ಗೌಡ ಅವರು ತಿಳಿಸಿದ್ದಾರೆ ಎಂದು ಡಿಎಚ್ ವರದಿ ಮಾಡಿದೆ. ಕೋಲಾರ ಜಿಲ್ಲೆಯ 6 ವಿಧಾನಸಭಾ ಕ್ಷೇತ್ರಗಳ ಮತ ಎಣಿಕೆ ಸುಸೂತ್ರವಾಗಿ ನಡೆದರೆ ಮಾಲೂರು ಕ್ಷೇತ್ರದ ಮತಎಣಿಕೆ ಮಾತ್ರ ಇಡೀ ಜಿಲ್ಲೆಯ ಹಾಗೂ ರಾಜ್ಯದ ಜನರಿಗೆ ಕುತೂಹಲಕ್ಕೆ ಕಾರಣವಾಗಿತ್ತು. ಇಲ್ಲಿ ಬಿಜೆಪಿ, ಕಾಂಗ್ರೆಸ್ ಮತ್ತು ಜೆಡಿಎಸ್ ಮೂರು ಪಕ್ಷಗಳ ಮಧ್ಯೆ ತೀವ್ರ ಪೈಪೋಟಿ ಏರ್ಪಟ್ಟಿತ್ತು.
ಮತ ಎಣಿಕೆ ವೇಳೆ ಆರಂಭದಲ್ಲಿ ಕಾಂಗ್ರೆಸ್ ಅಭ್ಯರ್ಥಿ, ನಂತರ ಬಿಜೆಪಿ ಅಭ್ಯರ್ಥಿ ಮಂಜುನಾಥಗೌಡ ನಂತರ ಪಕ್ಷೇತರ ಅಭ್ಯರ್ಥಿ ಹೂಡಿ ವಿಜಯ್ ಕುಮಾರ್ ಒಬ್ಬರಾದ ಮೇಲೆ ಒಬ್ಬರು ಮುನ್ನಡೆ ಸಾಧಿಸಿಕೊಂಡು ಬಂದಿದ್ದರು. ಆದರೆ, ಒಂದು ಹಂತದಲ್ಲಿ ಪಕ್ಷೇತರ ಅಭ್ಯರ್ಥಿ ಹೂಡಿ ವಿಜಯ್ ಕುಮಾರ್ 1500 ದಿಂದ 2000 ಮತಗಳ ಅಂತರದಲ್ಲಿ ಸುಮಾರು ಏಳೆಂಟು ಸುತ್ತು ಮುನ್ನಡೆ ಸಾಧಿಸಿದ್ದರು.
ಫಲಿತಾಂಶ ದಿನವಾದ ಮೇ 13ರಂದು ಕೊನೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿ ಕೇವಲ 248 ಮತಗಳ ಅಂತರದಲ್ಲಿ ಜಯಗಳಿಸುವ ಮೂಲಕ ಕುತೂಹಲಕ್ಕೆ ತೆರೆ ಬಿದ್ದಿತ್ತು. ಆದರೆ, ಸ್ಥಳಕ್ಕೆ ಬಂದ ಬಿಜೆಪಿ ಅಭ್ಯರ್ಥಿ ಕೆ.ಎಸ್.ಮಂಜುನಾಥಗೌಡ ಗೆಲುವಿನ ವಿರುದ್ದ ಪ್ರತಿಭಟಿಸಿ ಮರು ಎಣಿಕೆ ಮಾಡುವಂತೆ ಆಗ್ರಹಿಸಿದ್ದರು. ಈ ವೇಳೆ ಮರುಎಣಿಕೆ ಮಾಡಿದರಾದರೂ ಬಿಜೆಪಿ ಅಭ್ಯರ್ಥಿ ಕೋರ್ಟ್ನ ಮೊರೆ ಹೋಗುವುದಾಗಿ ಹೇಳಿದ್ದರು. ಅದರಂತೆಯೇ ಈಗ ಮಂಜುನಾಥಗೌಡ ಪರ ವಕೀಲರು ಹೈಕೋರ್ಟ್ಗೆ ಅರ್ಜಿ ಸಲ್ಲಿಸಿದ್ದಾರೆ.
ಈ ವಿಚಾರವಾಗಿ ಪ್ರತಿಕ್ರಿಯೆ ನೀಡಿರುವ ಕಾಂಗ್ರೆಸ್ ಅಭ್ಯರ್ಥಿ, ಅವರು ಎಲ್ಲಿಗೆ ಬೇಕಾದ್ರು, ಹೋಗಲಿ. ಇದು ಜನರು ಕೊಟ್ಟಿರುವ ತೀರ್ಪು. ಅಲ್ಲದೆ ಈ ಬಾರಿ ಕಾಂಗ್ರೆಸ್ ಸರ್ಕಾರ ಬಂದಿದ್ದು, ನನ್ನ ಕನಸಿನ ಮಾಲೂರು ನಿರ್ಮಾಣ ಮಾಡುವುದಾಗಿ ಹೇಳಿದ್ದರು.












Click it and Unblock the Notifications