ಕೋಲಾರ ತಲುಪಿದ ಡಿವೈಎಸ್ಪಿ ಲಕ್ಷ್ಮೀ ಮೃತದೇಹ
ಕೋಲಾರ, ಡಿಸೆಂಬರ್ 17: ಬೆಂಗಳೂರಿನಲ್ಲಿ ಆತ್ಮಹತ್ಯೆ ಮಾಡಿಕೊಂಡ ಸಿಐಡಿ ಡಿವೈಎಸ್ಪಿ ಲಕ್ಷ್ಮೀ ಮೃತದೇಹವನ್ನು ಅಂತ್ಯಕ್ರಿಯೆಗಾಗಿ ಕೋಲಾರಕ್ಕೆ ತರಲಾಗಿದೆ. ತುರುವಾಲಹಟ್ಟಿ ಗ್ರಾಮದಲ್ಲಿ ನೂರಾರು ಜನರು ಸೇರಿದ್ದಾರೆ.
ಗುರುವಾರ ರಾತ್ರಿ ಲಕ್ಷ್ಮೀ ಮೃತದೇಹವನ್ನು ಹುಟ್ಟೂರಾದ ಕೋಲಾರ ಜಿಲ್ಲೆಯ ಮಾಲೂರು ತಾಲೂಕಿನ ಮಾಸ್ತಿ ಹೋಬಳಿಯ ತುರುವಾಲಹಟ್ಟಿ ಗ್ರಾಮಕ್ಕೆ ತರಲಾಗಿದೆ. ಅಂತ್ಯಕ್ರಿಯೆಗೆ ಸಕಲ ಸಿದ್ಧತೆ ಮಾಡಿಕೊಳ್ಳಲಾಗಿದೆ.

ತುರುವಾಲಹಟ್ಟಿ ಗ್ರಾಮಕ್ಕೆ ಮಾಸ್ತಿ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದರು. ಗ್ರಾಮದ ಹೊರಹೊಲಯದ ಸ್ಮಶಾನದಲ್ಲಿ ಅಂತ್ಯಕ್ರಿಯೆಗೆ ಸಿದ್ಧತೆ ಮಾಡಿಕೊಳ್ಳಲಾಗಿದ್ದು, ಸರ್ಕಾರಿ ಗೌರವದೊಂದಿಗೆ ಅಂತ್ಯಕ್ರಿಯೆ ನಡೆಯಲಿದೆ.
ಗ್ರಾಮಕ್ಕೆ ಮೃತದೇಹ ಆಗಮಿಸುತ್ತಿದ್ದಂತೆ ಗ್ರಾಮಸ್ಥರು ಪಟಾಕಿ ಸಿಡಿಸಿದರು. ಲಕ್ಷ್ಮೀ ಮೃತದೇಹ ನೋಡಲು ನೂರಾರು ಸಂಖ್ಯೆಯಲ್ಲಿ ಸಂಬಂಧಿಕರು, ಗ್ರಾಮಸ್ಥರು ಆಗಮಿಸಿದ್ದು, ಪೊಲೀಸರು ಸಹ ಭದ್ರತೆ ಕೈಗೊಂಡಿದ್ದಾರೆ.
ಗುರುವಾರ ಬೆಳಗ್ಗೆ ಸಿಐಡಿ ಡಿವೈಎಸ್ಪಿ ಲಕ್ಷ್ಮೀ ಆತ್ಮಹತ್ಯೆ ಮಾಡಿಕೊಂಡಿರುವ ಸುದ್ದಿ ಕೇಳಿದ ಬಳಿಕ ಗ್ರಾಮದಲ್ಲಿ ನೀರವ ಮೌನ ಆವರಿಸಿದೆ. ಮೃತದೇಹವನ್ನು ನೋಡಿ ಸಂಬಂಧಿಕರು ಕಣ್ಣೀರು ಹಾಕಿದರು.
ಭೋವಿ ಸಮುದಾಯದ ವಿಧಿವಿಧಾನದಂತೆ ಅಂತ್ಯಕ್ರಿಯೆಯನ್ನು ನಡೆಸಲಾಗುತ್ತದೆ ಎಂದು ಕುಟುಂಬದವರು ಮಾಹಿತಿ ನೀಡಿದ್ದಾರೆ. ಸಕಲ ಸರ್ಕಾರಿ ಗೌರವ ಸಲ್ಲಿಸಿದ ಬಳಿಕ ಕುಟುಂಬದವರು ಧಾರ್ಮಿಕ ವಿಧಿವಿಧಾನ ಪೂರೈಸಿ ಅಂತ್ಯಕ್ರಿಯೆ ನಡೆಸಲಾಗುತ್ತದೆ.












Click it and Unblock the Notifications