ಕೋಲಾರ: ಯರಗೋಳ್ ಜಲಾಶಯ ಲೋಕಾರ್ಪಣೆ & 2,263 ಕೋಟಿ ವೆಚ್ಚದ ಅಭಿವೃದ್ಧಿ ಕಾಮಗಾರಿಗಳಿಗೆ ಶಂಕುಸ್ಥಾಪನೆ ನೆರವೇರಿಸಲಿರುವ ಸಿಎಂ
ಕೋಲಾರ, ನವೆಂಬರ್, 11: ಕೋಲಾರ ನಗರ, ಬಂಗಾರಪೇಟೆ ಹಾಗೂ ಮಾಲೂರು ಪಟ್ಟಣಗಳ ಜನರ ಬಹು ವರ್ಷಗಳ ಕನಸಾದ 'ಯರಗೋಳ್ ಜಲಾಶಯ'ವನ್ನು ಶನಿವಾರ ಮುಖ್ಯಮಂತ್ರಿ ಸಿದ್ದರಾಮಯ್ಯ ಲೋಕಾರ್ಪಣೆ ಮಾಡುವ ಜೊತೆಗೆ ಸುಮಾರು ₹2,263 ಕೋಟಿ ವೆಚ್ಚದ ಕಾಮಗಾರಿಗಳಿಗೆ ಶಂಕುಸ್ಥಾಪನೆ ಹಾಗೂ ಉದ್ಘಾಟನೆ ನೆರವೇರಿಸಲಿದ್ದಾರೆ.
ಕಾರ್ಯಕ್ರಮ ಬೆಳಗ್ಗೆ 11 ಗಂಟೆಗೆ ಬಲಮಂದೆ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಯರಗೋಳ್ ಜಲಾಶಯ ಬಳಿ ನಡೆಯಲಿದ್ದು, ಈ ವೇಳೆ ಉಸ್ತುವಾರಿ ಸಚಿವರು, ಜಿಲ್ಲೆಯ ಜನಪ್ರತಿನಿಧಿಗಳು, ಅಧಿಕಾರಿಗಳು ಹಾಗೂ ಸುಮಾರು 25 ಸಾವಿರ ಜನ ಪಾಲ್ಗೊಳ್ಳಲಿದ್ದಾರೆ. ಇನ್ನು ಬಂಗಾರಪೇಟೆ ನೀರು ಶುದ್ಧೀಕರಣ ಘಟಕಕ್ಕೂ ಇದೇ ಸಂದರ್ಭದಲ್ಲಿ ಚಾಲನೆ ಲಭಿಸಲಿದೆ. ಜಿಲ್ಲೆಯ ಮೂರು ತಾಲ್ಲೂಕು ಕೇಂದ್ರ ಹಾಗೂ ಮಾರ್ಗ ಮಧ್ಯದ 45 ಹಳ್ಳಿಗಳಿಗೆ ಕುಡಿಯುವ ನೀರು ಪೂರೈಸುವ ಯೋಜನೆ ಇದಾಗಿದೆ.

₹1,656 ಕೋಟಿ ವೆಚ್ಚದ 43 ಕಾಮಗಾರಿಗಳಿಗೆ ಶಂಕುಸ್ಥಾಪನೆ ಹಾಗೂ ₹607 ಕೋಟಿ ವೆಚ್ಚದ 21 ಕಾಮಗಾರಿಗಳ ಉದ್ಘಾಟನೆ ನೆರವೇರಿಸಲಾಗುತ್ತಿದೆ. ₹1,368 ಕೋಟಿ ವೆಚ್ಚದಲ್ಲಿ ಜಲಜೀವನ್ ಮಿಷನ್ (ಜೆಜೆಎಂ) ಅಭಿಯಾನ ಯೋಜನೆಯಡಿ ಜಿಲ್ಲೆಯ ಗ್ರಾಮೀಣ ಪ್ರದೇಶಗಳಿಗೆ ಕುಡಿಯುವ ನೀರು ಸರಬರಾಜು ಮಾಡುವ ಕಾಮಗಾರಿಗೆ ಮುಖ್ಯಮಂತ್ರಿ ಚಾಲನೆ ನೀಡಲಿದ್ದಾರೆ.
ಅಲ್ಲದೇ, ಇಂಧನ ಇಲಾಖೆ, ಸಮಾಜ ಕಲ್ಯಾಣ ಇಲಾಖೆ, ನಗರಾಭಿವೃದ್ಧಿ ಇಲಾಖೆ, ಉನ್ನತ ಶಿಕ್ಷಣ ಇಲಾಖೆ, ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ, ಅಲ್ಪ ಸಂಖ್ಯಾತರ ಇಲಾಖೆ, ಕಂದಾಯ ಇಲಾಖೆ, ಸಹಕಾರ ಇಲಾಖೆ, ಶಾಲಾ ಶಿಕ್ಷಣ ಇಲಾಖೆ, ಜಿಲ್ಲಾ ಪಂಚಾಯಿತಿಯ ವಿವಿಧ ಕಾಮಗಾರಿ ಉದ್ಘಾಟನೆ ಹಾಗೂ ಶಂಕುಸ್ಥಾಪನೆ ಇದರಲ್ಲಿ ಸೇರಿವೆ.
₹308 ಕೋಟಿ ವೆಚ್ಚದ ಯೋಜನೆ
ಜಿಲ್ಲೆಯ ಬಂಗಾರಪೇಟೆ ತಾಲ್ಲೂಕಿನ ಯರಗೋಳ್ ಗ್ರಾಮದ ಬಳಿ ಮಾರ್ಕಂಡೇಯ ನದಿಗೆ ಅಡ್ಡಲಾಗಿ 500 ಎಂಸಿಎಫ್ಟಿ ಸಾಮರ್ಥ್ಯದ ಅಣೆಕಟ್ಟು ನಿರ್ಮಿಸಲಾಗಿದೆ. ಮಾರ್ಕಂಡೇಯ ಜಲಾಶಯದಿಂದ ತಮಿಳುನಾಡಿಗೆ ವ್ಯರ್ಥವಾಗಿ ಹೋಗುತ್ತಿದ್ದ ನೀರು ತಡೆಗಟ್ಟಲು ಎರಡು ಬೆಟ್ಟಗಳಿಗೆ ಅಡ್ಡಲಾಗಿ ಈ ಅಣೆಕಟ್ಟು ಕಟ್ಟಲಾಗಿದೆ. ಸುಮಾರು ₹308 ಕೋಟಿ ವೆಚ್ಚದ ಯೋಜನೆ ಇದಾಗಿದೆ.
ಕಾರ್ಯಕ್ರಮದಲ್ಲಿ ನಗರಾಭಿವೃದ್ಧಿ ಸಚಿವರೂ ಆಗಿರುವ ಜಿಲ್ಲಾ ಉಸ್ತುವಾರಿ ಸಚಿವ ಬೈರತಿ ಸುರೇಶ್, ಆಹಾರ ಸಚಿವ ಕೆ.ಎಚ್.ಮುನಿಯಪ್ಪ, ಉನ್ನತ ಶಿಕ್ಷಣ ಸಚಿವ ಎಂ.ಸಿ.ಸುಧಾಕರ್, ಮುಖ್ಯಮಂತ್ರಿಗಳ ರಾಜಕೀಯ ಕಾರ್ಯದರ್ಶಿ ನಸೀರ್ ಅಹ್ಮದ್, ಸಂಸದ ಎಸ್.ಮುನಿಸ್ವಾಮಿ, ಶಾಸಕರಾದ ಎಸ್.ಎನ್.ನಾರಾಯಣಸ್ವಾಮಿ, ಕೊತ್ತೂರು ಮಂಜುನಾಥ್, ಕೆ.ವೈ.ನಂಜೇಗೌಡ, ರೂಪಕಲಾ ಶಶಿಧರ್, ಜಿ.ಕೆ.ವೆಂಕಟಶಿವಾರೆಡ್ಡಿ, ನಗರಾಭಿವೃದ್ಧಿ ಇಲಾಖೆ ಕಾರ್ಯದರ್ಶಿ ಅಜಯ್ ನಾಗಭೂಷಣ್, ಕರ್ನಾಟಕ ನಗರ ನೀರು ಸರಬರಾಜು ಮತ್ತು ಒಳಚರಂಡಿ ಮಂಡಳಿ ವ್ಯವಸ್ಥಾಪಕ ನಿರ್ದೇಶಕ ಬಿ.ಶರತ್, ಜಿಲ್ಲಾಧಿಕಾರಿ ಅಕ್ರಂ ಪಾಷ ಪಾಲ್ಗೊಳ್ಳಲಿದ್ದಾರೆ.












Click it and Unblock the Notifications