ಚಿಕ್ಕಬಳ್ಳಾಪುರದಿಂದ ಕಾಂಗ್ರೆಸ್ ಪ್ರಚಾರಾಂದೋಲನ ಆರಂಭ
ಚಿಕ್ಕಬಳ್ಳಾಪುರ, ಸೆಪ್ಟೆಂಬರ್ 19 : ಕರ್ನಾಟಕ ಪ್ರದೇಶ ಕಾ೦ಗ್ರೆಸ್ ಸಮಿತಿ ಸರ್ಕಾರದ ಸಾಧನೆಗಳ ಬಗ್ಗೆ ಪ್ರಚಾರ ನಡೆಸಲು ಮುಂದಾಗಿದೆ. ಅಕ್ಟೋಬರ್ ತಿಂಗಳಿನಲ್ಲಿ ಗೌರಿಬಿದನೂರಿನ ವಿದುರಾಶ್ವಥದಿಂದ ಪ್ರಚಾರಾಂದೋಲನ ಆರಂಭವಾಗಲಿದೆ.
ಸೋಮವಾರ ವಿದುರಾಶ್ವಥದಲ್ಲಿ ಮಾಧ್ಯಮಗಳ ಜೊತೆ ಮಾತನಾಡಿದ ಕೆಪಿಸಿಸಿ ಕಾರ್ಯಾಧ್ಯಕ್ಷ ದಿನೇಶ್ ಗುಂಡೂರಾವ್ ಈ ಕುರಿತು ಮಾಹಿತಿ ನೀಡಿದರು. 'ಕರ್ನಾಟಕದ ಕಾಂಗ್ರೆಸ್ ಸರ್ಕಾರದ ಸಾಧನೆಗಳನ್ನು ಜನರಿಗೆ ತಲುಪಿಸುವ ಈ ಪ್ರಚಾರಾಂದೋಲನ ಎಲ್ಲಾ ವಿಧಾನಸಭಾ ಕ್ಷೇತ್ರಗಳಲ್ಲಿ ನಡೆಯಲಿದೆ'.[ಸಿದ್ದರಾಮಯ್ಯ ಸರಕಾರದ 10 ಜನಪ್ರಿಯ ಯೋಜನೆಗಳು]
ಅಕ್ಟೋಬರ್ 2ರ ಗಾಂಧಿ ಜಯಂತಿ ದಿನದಂದು ಈ ಪ್ರಚಾರಾಂದೋಲನಕ್ಕೆ ಚಾಲನೆ ನೀಡಲಾಗುತ್ತದೆ. ಒಂದು ತಿಂಗಳ ಅವಧಿಯಲ್ಲಿ ರಾಜ್ಯಾದ್ಯಂತ ಸರ್ಕಾರದ ಸಾಧನೆಗಳನ್ನು ಜನರಿಗೆ ತಲುಪಿಸುವ ಕೆಲಸ ಮಾಡಲಾಗುತ್ತದೆ. ಈ ಆಂದೋಲನದ ಭಾಗವಾಗಿ ಪ್ರತಿ ಕ್ಷೇತ್ರದಲ್ಲಿಯೂ ಪಾದಯಾತ್ರೆ, ಕಾರ್ಯಕರ್ತರ ಸಮಾವೇಶ ಆಯೋಜಿಸಲಾಗುತ್ತದೆ.[ಸಿದ್ದರಾಮಯ್ಯ ಸರ್ಕಾರವನ್ನು ಕಾಡಿದ 10 ವಿವಾದಗಳು]
'ಕೇಂದ್ರದಲ್ಲಿ ಬಿಜೆಪಿ ಸರ್ಕಾರ ಅಸ್ತಿತ್ವಕ್ಕೆ ಬಂದ ಬಳಿಕ ಅಲ್ಪಸಂಖ್ಯಾತರು, ದಲಿತರ ಮೇಲೆ ದೌರ್ಜನ್ಯ ಹೆಚ್ಚಾಗಿದೆ. ದೇಶದಲ್ಲಿ ಅಸಹಿಷ್ಣುತೆ ವಾತಾವರಣ ಇದೆ. ಕೇಂದ್ರ ಸರ್ಕಾರದ ವೈಫಲ್ಯಗಳ ಬಗ್ಗೆ ಜನರಿಗೆ ಮನವರಿಕೆ ಮಾಡಿಕೊಡಲಾಗುತ್ತದೆ' ಎಂದು ದಿನೇಶ್ ಗುಂಡೂರಾವ್ ಹೇಳಿದರು.