ಕೋಲಾರ ಜಿಲ್ಲೆಗೆ ಕುಡಿಯುವ ನೀರಿನ ಆಸರೆ: ಏನಿದು ಯರಗೋಳ್ ಯೋಜನೆ
ಕೋಲಾರ, ಏಪ್ರಿಲ್ 25: ಕೋಲಾರ ಜಿಲ್ಲಾ ವ್ಯಾಪ್ತಿಯ ಹಲವು ಗ್ರಾಮಗಳಿಗೆ ಶುದ್ದ ಕುಡಿಯುವ ನೀರಿನ ಯರಗೋಳ್ ಯೋಜನೆ ಸದ್ಯದಲ್ಲೇ ಪೂರ್ಣಗೊಳ್ಳುವುದಾಗಿ ಮಾಜಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಹೇಳಿದ್ದಾರೆ.
ಜನತಾ ಜಲಧಾರೆ ಕಾರ್ಯಕ್ರಮದ ಪ್ರಯುಕ್ತ ಕೋಲಾರ ಜಿಲ್ಲೆಯ ಬಂಗಾರಪೇಟೆ ತಾಲ್ಲೂಕಿನ ಯರಗೋಳ್ ಜಲಾಶಯದಿಂದ ಪವಿತ್ರ ಜಲಸಂಗ್ರಹ ಮಾಡಿ ಮಾತನಾಡುತ್ತಿದ್ದ ಕುಮಾರಸ್ವಾಮಿ, ಮುಖ್ಯಮಂತ್ರಿಗಳ ಜೊತೆ ಈ ಸಂಬಂಧ ಮಾತುಕತೆ ನಡೆಸುವುದಾಗಿ ಹೇಳಿದ್ದಾರೆ.
"ಬರಪೀಡಿತ ಜಿಲ್ಲೆಯ ಕೋಲಾರ, ಬಂಗಾರಪೇಟೆ ಹಾಗೂ ಮಾಲೂರು ತಾಲೂಕಿನ 45ಕ್ಕೂ ಹೆಚ್ಚು ಗ್ರಾಮಗಳಿಗೆ ಶುದ್ಧ ಕುಡಿಯುವ ನೀರು ಒದಗಿಸುವ ಯರಗೋಳ್ ಯೋಜನೆ ಮೂರ್ನಾಲ್ಕು ತಿಂಗಳಲ್ಲಿ ಪೂರ್ಣಗೊಳಿಸುವ ಬಗ್ಗೆ ಮುಖ್ಯಮಂತ್ರಿಗಳ ಜತೆ ಕೂಡಲೇ ಚರ್ಚೆ ನಡೆಸುವುದಾಗಿ" ಎಚ್.ಡಿ.ಕುಮಾರಸ್ವಾಮಿ ಅವರು ಭರವಸೆ ನೀಡಿದ್ದಾರೆ.
"ಯರಗೋಳ್ ಬಹಳ ಉಪಯುಕ್ತವಾದ ಯೋಜನೆ. ಹಲವಾರು ವರ್ಷಗಳಿಂದ ಈ ಭಾಗದ ರಾಜಕೀಯ ನಾಯಕರ ಇಚ್ಛಾಶಕ್ತಿಯ ಕೊರತೆಯಿಂದ ನೆನೆಗುದಿಗೆ ಬಿದ್ದಿತ್ತು. 2006ರಲ್ಲಿ ನಾನು ಮುಖ್ಯಮಂತ್ರಿ ಆಗಿದ್ದಾಗ ಚಿಕ್ಕಬಳ್ಳಾಪುರ ಜಿಲ್ಲೆಯ ಚಿತ್ರಾವತಿ ಜಲಾಶಯವನ್ನು ಉದ್ಘಾಟನೆ ಮಾಡಲು ಬಾಗೇಪಲ್ಲಿಗೆ ಹೋಗಿದ್ದೆ. ಆ ಸಂದರ್ಭದಲ್ಲಿ ಮಾಧ್ಯಮ ಪ್ರತಿನಿಧಿಯೊಬ್ಬರು ಯರಗೋಳ್ ಯೋಜನೆಯ ದುಃಸ್ಥಿತಿಯನ್ನು ನನ್ನ ಗಮನಕ್ಕೆ ತಂದಿದ್ದರು" ಎಂದು ಕುಮಾರಸ್ವಾಮಿ ನೆನಪು ಮಾಡಿಕೊಂಡರು. ಏನಿದು ಯರಗೋಳ್ ಯೋಜನೆ? ವಿವರ ಮುಂದಿದೆ...

ಕುಡಿಯುವ ನೀರಿನ ಉದ್ದೇಶದ ಯರಗೋಳ್ ಜಲಾಶಯ
ಕುಡಿಯುವ ನೀರಿನ ಉದ್ದೇಶದ ಯರಗೋಳ್ ಜಲಾಶಯದಲ್ಲಿ 500 ಎಂಸಿಎಫ್ಟಿ ಸಾಮರ್ಥ್ಯದ ನೀರು ಸಂಗ್ರಹಣೆಯಾಗಲಿದೆ. ಡ್ಯಾಂ ತುಂಬಿ ಹರಿದರೆ 375 ಎಕರೆ ಭೂ ಪ್ರದೇಶವು ಮುಳುಗಡೆಯಾಗಲಿದೆ. ಒಮ್ಮೆ ತುಂಬಿದರೆ ಕನಿಷ್ಠ ಎರಡು ವರ್ಷ ಕುಡಿಯುವ ನೀರು ಪೂರೈಕೆ ಮಾಡಬಹುದಾಗಿದೆ. ಯರಗೋಳ್ ಡ್ಯಾಂ ನಿರ್ಮಾಣಕ್ಕೆ 375 ಎಕರೆ ಭೂ ಪ್ರದೇಶ ವಶಪಡಿಸಿಕೊಳ್ಳಲಾಗಿದೆ. ರೈತರಿಂದ 95 ಎಕರೆ, ಅರಣ್ಯ ಇಲಾಖೆಯಿಂದ 154 ಎಕರೆ ಮತ್ತು 126 ಎಕರೆ ಸರ್ಕಾರಿ ಭೂ ಪ್ರದೇಶವನ್ನು ವಶಪಡಿಸಿಕೊಳ್ಳಲಾಗಿದೆ.

ರೈತರಿಗೆ ಪರಿಹಾರವಾಗಿ ಒಟ್ಟು 5.19 ಕೋಟಿ ರೂ. ಬಿಡುಗಡೆ
ರೈತರಿಗೆ ಪರಿಹಾರವಾಗಿ ಒಟ್ಟು 5.19 ಕೋಟಿ ರೂ. ಬಿಡುಗಡೆ ಮಾಡಿ ವಿತರಣೆಗೆ ಕೋಲಾರ ಉಪ ಭಾಗಾಧಿಕಾರಿಗಳಿಗೆ ಬಿಡುಗಡೆ ಮಾಡಿ ಸಮಸ್ಯೆ ಬಗೆಹರಿಸಲಾಗಿದೆ. ಯರಗೋಳ್ ಅಣೆಕಟ್ಟೆಯನ್ನು ಎರಡು ಬೆಟ್ಟಗಳ ಮಧ್ಯೆ ಅಡ್ಡಲಾಗಿ ನಿರ್ಮಾಣ ಮಾಡಲಾಗುತ್ತಿದ್ದು, 414 ಮೀಟರ್ ಉದ್ದ, 30 ಮೀಟರ್ ಎತ್ತರ ಅಣೆಕಟ್ಟು ನಿರ್ಮಾಣ ಮಾಡಲಾಗುತ್ತಿದೆ. ಡ್ಯಾಂ ನಿರ್ಮಾಣ ವೇಳೆಗೆ ನೀರು ಪೂರೈಕೆಗೆ ಅಗತ್ಯ ತಾಂತ್ರಿಕತೆಗಳನ್ನು ಅಳವಡಿಸಲಾಗುವುದೆಂದು ಅಧಿಕಾರಿಗಳು ತಿಳಿಸಿದ್ದಾರೆ.

ರಾಷ್ಟ್ರೀಯ ಪಕ್ಷಗಳು ಯೋಜನೆಯನ್ನು ಪೂರ್ಣ ಮಾಡಲೇ ಇಲ್ಲ
"ಯರಗೋಳ್ ಯೋಜನೆಗೆ ಯಾವುದೇ ಕಾನೂನಿನ ತೊಡಕು ಇರಲಿಲ್ಲ. ಆದರೂ ರಾಷ್ಟ್ರೀಯ ಪಕ್ಷಗಳು ಯೋಜನೆಯನ್ನು ಪೂರ್ಣ ಮಾಡಲೇ ಇಲ್ಲ. ಈ ಜಲಾಶಯಕ್ಕೆ ಸಾಕಷ್ಟು ನೀರು ಹರಿದುಬರುತ್ತದೆ. ಅದನ್ನು ಸದ್ಬಳಕೆ ಮಾಡಿಕೊಳ್ಳಬೇಕಷ್ಟೇ. ಈ ಬಗ್ಗೆ ನಾನು ಮುಖ್ಯ ಎಂಜಿನಿಯರ್ ಸೇರಿ ಸಂಬಂಧಪಟ್ಟ ಇಲಾಖೆಯ ವ್ಯವಸ್ಥಾಪಕ ನಿರ್ದೇಶಕರ ಜತೆಯೂ ಮಾತನಾಡಿದ್ದೇನೆ" ಎಂದು ಕುಮಾರಸ್ವಾಮಿ ಕೋಲಾರದಲ್ಲಿ ಹೇಳಿದ್ದಾರೆ.

160 ರಿಂದ 180 ಕೋಟಿ ರೂ. ವೆಚ್ಚದ ಪರಿಷ್ಕೃತ ಅಂದಾಜು ಪ್ರಸ್ತಾವನೆ
"ಹಣ ಬಿಡುಗಡೆ ಆಗಬೇಕು ಎಂದು ಅಧಿಕಾರಿಗಳು ಹೇಳುತ್ತಿದ್ದಾರೆ. 160 ರಿಂದ 180 ಕೋಟಿ ರೂ. ವೆಚ್ಚದ ಪರಿಷ್ಕೃತ ಅಂದಾಜು ಪ್ರಸ್ತಾವನೆಯನ್ನು ಸರಕಾರಕ್ಕೆ ಕಳಿಸಿದ್ದಾರೆಂಬ ಮಾಹಿತಿಯನ್ನು ಅಧಿಕಾರಿಗಳು ನೀಡಿದ್ದಾರೆ . ಆ ಬಗ್ಗೆ ಮುಖ್ಯಮಂತ್ರಿಗಳ ಜತೆಯೂ ಮಾತನಾಡುತ್ತೇನೆ. ಅಲ್ಲದೆ, ಈ ಯೋಜನೆ ಕುರಿತ ಎಲ್ಲ ಮಾಹಿತಿ ತೆಗೆದುಕೊಂಡು ಮುಂದಿನ ವಾರ ನನ್ನ ಭೇಟಿಯಾಗುವಂತೆ ಮುಖ್ಯ ಎಂಜಿನಿಯರ್ ಅವರಿಗೆ ಹೇಳಿದ್ದೇನೆ. ಮೂರು ನಾಲ್ಕು ತಿಂಗಳಲ್ಲಿ ಇಡೀ ಯೋಜನೆ ಮುಗಿಯುವುದರ ಬಗ್ಗೆ ಸರಕಾರದ ಗಮನ ಸೆಳೆಯುತ್ತೇನೆ" ಎಂದು ಕುಮಾರಸ್ವಾಮಿ ತಿಳಿಸಿದರು.












Click it and Unblock the Notifications