ಕೋಲಾರ ನವ ವಧು-ವರ ಬಡಿದಾಡಿಕೊಂಡ ಪ್ರಕರಣ: ಮರಣೋತ್ತರ ಪರೀಕ್ಷೆಯಲ್ಲಿ ಬಯಲಾಗಿದ್ದೇನು..?
ಕೋಲಾರ, ಆಗಸ್ಟ್ 09: ಕೋಲಾರ ಜಿಲ್ಲೆಯ ಕೆಜಿಎಫ್ ತಾಲೂಕಿನ ಚಂಬರಸನಹಳ್ಳಿಯಲ್ಲಿ ನಡೆದ ನವ ವಧು ಹಾಗೂ ವರರ ಸಾವು ದಿನಕ್ಕೊಂದು ತಿರುವು ಪಡೆದುಕೊಳ್ಳುತ್ತಿದೆ. ಮೊದಲು ಮದುವೆಯಾದ ಕೆಲವೇ ಗಂಟೆಗಳಲ್ಲಿ ನವ ವಧು ಹಾಗೂ ವರ ಪರಸ್ಪರ ಬಡಿದಾಡಿಕೊಂಡು ಸಾವನ್ನಪ್ಪಿದ್ದರು ಎನ್ನಲಾದ ಈ ಪ್ರಕರಣದಲ್ಲಿ ಬಳಿಕ ಮೂರನೇ ವ್ಯಕ್ತಿಯ ಕೈವಾಡ ಇರುವ ಬಗ್ಗೆ ಅನುಮಾನಗಳು ದಟ್ಟವಾಗಿದೆ. ಈ ಅನುಮಾನಕ್ಕೆ ಪುಷ್ಠಿಕೊಡುವಂತಹ ಮಹತ್ವದ ಸಾಕ್ಷಿಗಳು ಕೂಡ ಲಭ್ಯವಾಗುತ್ತಿದೆ.
ಕೋಲಾರ ಜಿಲ್ಲೆಯ ಕೆಜಿಎಫ್ ತಾಲೂಕಿನ ಚಂಬರಸನಹಳ್ಳಿಯ ನವೀನ್ (29) ಹಾಗೂ ಲಿಖಿತಶ್ರೀ (20) ಸಾವಿನ ಪ್ರಕರಣ ಕೋಲಾರ ಜಿಲ್ಲೆ ಮಾತ್ರವಲ್ಲದೇ ರಾಜ್ಯವನ್ನೇ ಬೆಚ್ಚಿ ಬೀಳಿಸಿತ್ತು. ಯಾಕೆಂದರೆ ಪ್ರೀತಿಸಿ ಮನೆಯವರ ಒಪ್ಪಿಗೆ ಪಡೆದು ಮದುವೆಯಾಗಿ ಖುಷಿಯಾಗಿದ್ದ ಜೋಡಿ ಮದುವೆಯಾದ ದಿನವೇ ರೂಮ್ಗೆ ಹೋಗುತ್ತಿದ್ದಂತೆ ಭೀಕರವಾಗಿ ಗಾಯಗೊಂಡಿದ್ದರು. ಮೊದಲು ವಧು ಹಾಗೂ ವರರೇ ಪರಸ್ಪರ ಬಡಿದಾಡಿಕೊಂಡು ಸಾವನ್ನಪ್ಪಿದ್ದರು ಎನ್ನಲಾಗಿತ್ತು. ಆದರೆ ಈಗ ಈ ಪ್ರಕರಣದಲ್ಲಿ ಮೂರನೇ ವ್ಯಕ್ತಿಯು ಭಾಗಿಯಾಗಿರುವ ಶಂಕೆ ಹೆಚ್ಚಾಗಿದೆ.

ಘಟನೆ ಹಿನ್ನೆಲೆಯಲ್ಲಿ ಕೋಲಾರ ಜಿಲ್ಲೆಯ ಕೆಜಿಎಫ್ ಆ್ಯಂಡರ್ಸನ್ ಪೇಟೆ ಪೊಲೀಸ್ ಠಾಣೆಯಲ್ಲಿ ನವೀನ್ ವಿರುದ್ಧ ಕೊಲೆ ಪ್ರಕರಣ ಹಾಗೂ ಆತ್ಮಹತ್ಯೆ ಪ್ರಕರಣ ದಾಖಲಾಗಿದ್ದು, ಪೊಲೀಸರು ಕೂಡ ತನಿಖೆ ಚುರುಕುಗೊಳಿಸಿದ್ದಾರೆ. ಸದ್ಯ ನವೀನ್ (29) ಹಾಗೂ ಲಿಖಿತಶ್ರೀ (20) ಮರಣೋತ್ತರ ಪರೀಕ್ಷೆ ವರದಿ ಕುಟುಂಬಸ್ಥರ ಹಾಗೂ ಪೊಲೀಸರ ಕೈ ಸೇರಿದ್ದು, ಪ್ರಕರಣದ ಬಗ್ಗೆ ಮತ್ತಷ್ಟು ಅನುಮಾನ ಹೆಚ್ಚಾಗಿದೆ.
ಮರಣೋತ್ತರ ಪರೀಕ್ಷೆಯಲ್ಲಿ ಲಿಖಿತಾಶ್ರೀ ಬಲ ಅಂಗೈ ಹಾಗೂ ಕುತ್ತಿಗೆ ಭಾಗಕ್ಕೆ ಬಲವಾದ ಪೆಟ್ಟು ಬಿದ್ದಿದೆ. ವರ ನವೀನ್ ತಲೆಯ ನೆತ್ತಿಯ ಭಾಗ ಹಾಗೂ ತಲೆಯ ಹಿಂಭಾಗಕ್ಕೆ ಮಚ್ಚಿನಿಂದ ಹೊಡೆದ ಗಾಯಗಳಾಗಿವೆ. ಇಬ್ಬರಿಗೂ ತಲೆಯ ಭಾಗಕ್ಕೆ ಬಲವಾದ ಪೆಟ್ಟು ಬಿದ್ದ ಹಿನ್ನೆಲೆಯಲ್ಲಿ ಒಬ್ಬರೂ ಪ್ರಜ್ಞಾಹೀನ ಸ್ಥಿತಿ ತಲುಪಿದ್ದರು ಎನ್ನುವುದು ತಿಳಿದು ಬಂದಿದೆ.
ಪ್ರಕರಣದ ಹಿನ್ನೆಲೆ ಏನು..?
ಕೆಜಿಎಫ್ ತಾಲೂಕಿನ ಚಂಬರಸನಹಳ್ಳಿ ಗ್ರಾಮದ ನವೀನ್ ಹಾಗೂ ಲಿಖಿತಶ್ರೀ ಕೆಲವು ಸಮಯದಿಂದ ಪ್ರೀತಿಸುತ್ತಿದ್ದರು. ಇವರ ಪ್ರೀತಿಗೆ ಕುಟುಂಬಸ್ಥರು ಕೂಡ ಒಪ್ಪಿಗೆ ಸೂಚಿಸಿದ್ದು, ಎರಡು ಕುಟುಂಬದವರನ್ನು ಒಪ್ಪಿಸಿ ಆಗಸ್ಟ್ 07 ಬುಧವಾರ ಸ್ಥಳೀಯ ದೇವಾಲಯದಲ್ಲಿ ಮದುವೆಯಾಗಿದ್ದರು. ಪ್ರೀತಿಸಿ ಮದುವೆಯಾದ ಖುಷಿಯಲ್ಲಿದ್ದ ನವೀನ್-ಲಿಖಿತಶ್ರೀ ಮದುವೆ ಮುಗಿದ ಬಳಿಕ ಇಬ್ಬರೂ ರೂಮಿಗೆ ಹೋಗಿದ್ದಾರೆ. ಬಳಿಕ ಇಬ್ಬರು ಗಂಭೀರವಾಗಿ ಗಾಯಗೊಂಡ ಸ್ಥಿತಿಯಲ್ಲಿ ಕುಟುಂಬಸ್ಥರಿಗೆ ಕಂಡು ಬಂದಿದ್ದರು. ಕುಟುಂಬಸ್ಥರು ಆಸ್ಪತ್ರೆಗೆ ದಾಖಲಿಸಿದರೂ ಕೂಡ ಇಬ್ಬರು ಚಿಕಿತ್ಸೆ ಫಲಿಸದೇ ಸಾವನ್ನಪ್ಪಿದ್ದಾರೆ.
ಕುಟುಂಬಸ್ಥರ ಆರೋಪವೇನು..?
ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಮೂರನೇ ವ್ಯಕ್ತಿಯ ಕೈವಾಡ ಇರುವ ಬಗ್ಗೆ ವಧು ಲಿಖಿತಶ್ರೀ ಕುಟುಂಬದವರು ಅನುಮಾನ ವ್ಯಕ್ತಪಡಿಸಿದ್ದಾರೆ. ಇಬ್ಬರೂ ಬಹಳಷ್ಟು ಅನ್ಯೋನ್ಯವಾಗಿದ್ದವರು, ಪ್ರೀತಿಸಿ ಮದುವೆಯಾಗಿದ್ದವರು. ಇಬ್ಬರು ಹೊಡೆದಾಡಿಕೊಂಡಿರುವುದು ಅನುಮಾನ. ಯಾರೋ ಮೂರನೇ ವ್ಯಕ್ತಿ ಇದರ ಹಿಂದೆ ಇದ್ದಾರೆ. ನಾವು ಮದುವೆಗೆ ಹೋಗಿದ್ದೆವು. ಇಬ್ಬರೂ ತುಂಬಾ ಖುಷಿಯಾಗಿ ಇದ್ದರು. ಅವರು ಹೊಡೆದಾಡಿಕೊಂಡಿರುವುದು ಸುಳ್ಳು. ಇಬ್ಬರನ್ನು ಯಾರೋ ಹೊಡೆದಿರುವ ಅನುಮಾನ ಇದೆ ಎಂದು ಹೇಳಿದ್ದಾರೆ.












Click it and Unblock the Notifications