ಒಂದು ವಾರದಲ್ಲಿ ವಿಸ್ಟ್ರಾನ್ ವಿವಾದ ಇತ್ಯರ್ಥ; ಘಟಕ ಆರಂಭ
ಕೋಲಾರ, ಡಿಸೆಂಬರ್ 28; "ವಿಸ್ಟ್ರಾನ್ ಕಂಪನಿಯ ಘಟನೆಯನ್ನು ಒಂದು ವಾರದಲ್ಲಿ ಇತ್ಯರ್ಥ ಪಡಿಸಿ, ಕಂಪನಿಯನ್ನು ಪುನಃ ಪ್ರಾರಂಭಿಸಲು ಕ್ರಮ ಕೈಗೊಳ್ಳಲಾಗುವುದು" ಎಂದು ಕಾರ್ಮಿಕ ಸಚಿವ ಶಿವರಾಂ ಹೆಬ್ಬಾರ್ ಹೇಳಿದರು.
ಕೋಲಾರ ತಾಲೂಕಿನ ನರಸಾಪುರ ಕೈಗಾರಿಕಾ ಪ್ರದೇಶದ ವಿಸ್ಟ್ರಾನ್ ಕಂಪನಿಗೆ ಸಚಿವ ಶಿವರಾಂ ಹೆಬ್ಬಾರ್ ಭಾನುವಾರ ಭೇಟಿ ನೀಡಿದ್ದರು. ಮಾಧ್ಯಮಗಳ ಜೊತೆ ಮಾತನಾಡಿದ ಅವರು, "ಘಟನೆಗೆ ಸಂಬಂಧಿಸಿದಂತೆ ಪೂರ್ಣ ಪ್ರಮಾಣದ ಮಾಹಿತಿ ಲಭ್ಯವಾಗಿಲ್ಲ ಮುಂದಿನ ವಾರ ವಿಕಾಸಸೌಧದಲ್ಲಿ ಕಂಪನಿಯ ಆಡಳಿತ ಮಂಡಳಿಯ ಉನ್ನತ ಮಟ್ಟದ ಅಧಿಕಾರಿಗಳ ಸಭೆ ನಡೆಸಿ ವಿವಾದ ಇತ್ಯರ್ಥ ಪಡಿಸಲಾಗುತ್ತದೆ" ಎಂದರು.
"ರಾಜ್ಯದಲ್ಲಿ ಉದ್ಯೋಗಾವಕಾಶಗಳನ್ನು ನೀಡಲು ಪಕ್ಕದ ರಾಜ್ಯಗಳಿಗಿಂತ ನಮ್ಮ ರಾಜ್ಯಕ್ಕೆ ಕಂಪನಿಗಳು ಪ್ರವೇಶ ಮಾಡಲು ಕೈಗಾರಿಕಾ ನೀತಿ ಸಡಲೀಕರಣ ಮಾಡಲಾಗಿದೆ. ನಿರುದ್ಯೋಗ ಸಮಸ್ಯೆಯನ್ನು ಹೋಗಲಾಡಿಸಲು ಮುಖ್ಯಮಂತ್ರಿ ಯಡಿಯೂರಪ್ಪ ಕ್ರಮ ಕೈಗೊಂಡಿದ್ದಾರೆ" ಎಂದು ತಿಳಿಸಿದರು.

"ಕಂಪನಿಯಲ್ಲಿ ದಾಂಧಲೆ ನಡೆಸಲು ಕಾರಣವೇನು?, ಇಲ್ಲಿನ ಲೋಪಗಳೇನು? ಎಂಬುದನ್ನು ಪರಿಶೀಲಿಸಲಾಗಿದೆ. ಗೊತ್ತಿದ್ದೋ, ಗೊತ್ತಿಲ್ಲದೆಯೋ ತಪ್ಪು ನಡೆದಿದೆ. ಕಾರ್ಮಿಕರಿಗೆ ನ್ಯಾಯ ಕೊಡಿಸುವುದು ಸರಕಾರದ ಉದ್ದೇಶವಾಗಿದೆ ಸಮಸ್ಯೆಗೆ ಶಾಶ್ವತವಾಗಿ ಪರಿಹಾರ ನೀಡಲಾಗುವುದು" ಎಂದು ಸಚಿವರು ಭರವಸೆ ನೀಡಿದರು.
"ಕಾರ್ಮಿಕರ ಸಮಸ್ಯೆಗಳನ್ನು ಜಿಲ್ಲಾ ಉಸ್ತುವಾರಿ ಸಚಿವ, ಸಂಸದ, ಶಾಸಕರಿಗೆ ಜಿಲ್ಲಾಡಳಿತಕ್ಕೆ ತಿಳಿಸದೇ ಇರುವುದಕ್ಕಾಗಿ ಈ ಘಟನೆ ನಡೆದಿದೆ ಎಂದು ಮೇಲ್ನೋಟಕ್ಕೆ ತಿಳಿದಿದೆ. ಕಂಪನಿಯಲ್ಲಿ ಕಾರ್ಮಿಕರ ಯೂನಿಯನ್ ಸಹ ಮಾಡಿಕೊಂಡಿಲ್ಲ. ಕಂಪನಿಯಲ್ಲಿ ಗುತ್ತಿಗೆ ಆಧಾರದಲ್ಲಿ ಕಾರ್ಮಿಕರನ್ನು ನೇಮಕ ಮಾಡಿಕೊಳ್ಳಲು ಅವಕಾಶ ಇದೆ. ಅವರಿಗೆ ಕನಿಷ್ಠ ವೇತನ ನೀಡಬೇಕು" ಎಂದು ಸಚಿವರು ಹೇಳಿದರು.

ಜಿಲ್ಲಾ ಉಸ್ತುವಾರಿ ಸಚಿವ ಎಚ್. ನಾಗೇಶ್, ಸಂಸದ ಎಸ್. ಮುನಿಸ್ವಾಮಿ, ಶಾಸಕ ಕೆ. ಶ್ರೀನಿವಾಸ ಗೌಡ, ಜಿಲ್ಲಾಧಿಕಾರಿ ಸಿ.ಸತ್ಯಭಾಮ ಮುಂತಾದವರು ಸಚಿವ ಜೊತೆ ಘಟಕಕ್ಕೆ ಭೇಟಿ ನೀಡಿದ್ದರು.












Click it and Unblock the Notifications