ಕೋಲಾರ ಕಾಂಗ್ರೆಸ್ ಅಭ್ಯರ್ಥಿ ಬಗ್ಗೆ ದೇವೇಗೌಡರ ಸಲಹೆ ಏನು?
ಕೋಲಾರ, ಫೆಬ್ರವರಿ 15 : ಈ ಬಾರಿಯ ಲೋಕಸಭಾ ಚುನಾವಣೆಯಲ್ಲಿ ಕೋಲಾರ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಬದಲಾಗಲಿದ್ದಾರಾ?. ಹೌದು, ಕ್ಷೇತ್ರದ ಮೇಲೆ ಜೆಡಿಎಸ್ ಕಣ್ಣಿಟ್ಟಿದೆ, ಆದರೆ ಸೀಟು ಹಂಚಿಕೆ ಬಗ್ಗೆ ಅಂತಿಮ ತೀರ್ಮಾನವಾಗಿಲ್ಲ.
'ಈ ಬಾರಿ ಕೋಲಾರದಲ್ಲಿ ಕೆ.ಎಚ್.ಮುನಿಯಪ್ಪ ಅವರ ಬದಲು ಬೇರೆ ಅಭ್ಯರ್ಥಿ ಹಾಕಬಹುದಾ ನೋಡಿ' ಎಂದು ಜೆಡಿಎಸ್ ವರಿಷ್ಠ ಎಚ್.ಡಿ.ದೇವೇಗೌಡ ಅವರು ಕಾಂಗ್ರೆಸ್ ನಾಯಕರಿಗೆ ಸಲಹೆ ನೀಡಿದ್ದಾರೆ ಎಂಬ ಸುದ್ದಿಗಳು ಹರಿದಾಡುತ್ತಿವೆ.
ಲೋಕಸಭಾ ಚುನಾವಣೆಯಲ್ಲಿ ಕೋಲಾರ ಕ್ಷೇತ್ರದಿಂದ ಮಾಜಿ ಸಚಿವ ಎಚ್.ಸಿ.ಮಹದೇವಪ್ಪ ಅವರು ಕಾಂಗ್ರೆಸ್-ಜೆಡಿಎಸ್ ಒಮ್ಮತದ ಅಭ್ಯರ್ಥಿ ಆಗಬಹುದು ಎಂಬ ಸುದ್ದಿಗಳು ಹಬ್ಬಿದ್ದವು. ಇದಕ್ಕೆ ಪೂರಕ ಎಂಬಂತೆ ದೇವೇಗೌಡರು ಸಲಹೆ ನೀಡಿದ್ದಾರೆ.
ಕೋಲಾರ ಕ್ಷೇತ್ರದ ಹಾಲಿ ಸಂಸದರು ಕೆ.ಎಚ್.ಮುನಿಯಪ್ಪ. ಸತತ 7 ಬಾರಿ ಗೆದ್ದಿರುವ ಅವರಿಗೆ ಈ ಬಾರಿ ಹಿನ್ನಡೆ ಉಂಟಾಗಲಿದೆ ಎಂಬ ಸುದ್ದಿ ಹಬ್ಬಿದೆ. ಮತ್ತೊಂದು ಕಡೆ ಕಾಂಗ್ರೆಸ್-ಜೆಡಿಎಸ್ ಮೈತ್ರಿ ಮಾಡಿಕೊಂಡು ಚುನಾವಣೆ ಎದುರಿಸುತ್ತಿದ್ದು, ಜೆಡಿಎಸ್ ಕ್ಷೇತ್ರವನ್ನು ಬಿಟ್ಟುಕೊಡುವಂತೆ ಬೇಡಿಕೆ ಇಟ್ಟಿದೆ...

ದೇವೇಗೌಡರ ಸಲಹೆಗೆ ಕಾರಣ ಏನು?
'ಕೆ.ಎಚ್.ಮುನಿಯಪ್ಪ ಅವರು ಸ್ಥಳೀಯ ಮಟ್ಟದಲ್ಲಿ ಒಕ್ಕಲಿಗ ಸಮುದಾಯದ ವಿಶ್ವಾಸ ಕಳೆದುಕೊಳ್ಳುತ್ತಿದ್ದಾರೆ. ಆದ್ದರಿಂದ, ಬೇರೆ ಸೂಕ್ತ ಅಭ್ಯರ್ಥಿ ಕಣಕ್ಕಿಳಿಸಿ' ಎಂಬುದು ಜೆಡಿಎಸ್ ವರಿಷ್ಠ ಎಚ್.ಡಿ.ದೇವೇಗೌಡರ ಸಲಹೆ.

ಎಚ್.ಸಿ.ಮಹದೇವಪ್ಪ ಅಭ್ಯರ್ಥಿ?
ಮಾಜಿ ಸಚಿವ ಸಿದ್ದರಾಮಯ್ಯ ಆಪ್ತರಾಗಿದ್ದ ಎಚ್.ಸಿ.ಮಹದೇವಪ್ಪ ಅವರನ್ನು ಅಭ್ಯರ್ಥಿಯನ್ನಾಗಿ ಮಾಡಬಹುದೇ? ಎಂದು ಚಿಂತಿಸಿ ಎಂದು ದೇವೇಗೌಡರು ಸಲಹೆ ನೀಡಿದ್ದಾರೆ. 2018ರ ವಿಧಾನಸಭೆ ಚುನಾವಣೆಯಲ್ಲಿ ಮಹದೇವಪ್ಪ ಅವರು ತಿ.ನರಸೀಪುರ ಕ್ಷೇತ್ರದಲ್ಲಿ ಜೆಡಿಎಸ್ನ ಎಂ.ಅಶ್ವಿನ್ ಕುಮಾರ್ ವಿರುದ್ಧ ಸೋಲು ಕಂಡಿದ್ದಾರೆ.

ಸಿದ್ದರಾಮಯ್ಯ ಒಪ್ಪುವುದು ಕಷ್ಟ
2018ರ ವಿಧಾನಸಭೆ ಚುನಾವಣೆ ಬಳಿಕ ಎಚ್.ಸಿ.ಮಹದೇವಪ್ಪ ಮತ್ತು ಸಿದ್ದರಾಮಯ್ಯ ನಡುವೆ ಮೊದಲಿನ ಆತ್ಮೀಯತೆ ಉಳಿದಿಲ್ಲ. ಚುನಾವಣೆ ಸೋಲಿನ ಬಳಿಕ ಮಹದೇವಪ್ಪ ಅವರು ರಾಜಕಾರಣದಿಂದ ದೂರವಾಗುತ್ತಿದ್ದಾರೆ. ಆದ್ದರಿಂದ, ಅವರ ಸ್ಪರ್ಧೆಗೆ ಸಿದ್ದರಾಮಯ್ಯ ಒಪ್ಪಿಗೆ ನೀಡುವುದು ಕಷ್ಟ ಎಂಬುದು ಕಾಂಗ್ರೆಸ್ ವಲಯದಲ್ಲಿನ ಮಾತು.

ದೇವೇಗೌಡರಿಗೆ ಆಪ್ತರು
ಮಾಜಿ ಸಚಿವ ಎಚ್.ಸಿ.ಮಹದೇವಪ್ಪ ಅವರು ಜನತಾಪಾರ್ಟಿ ಮೂಲಕ ರಾಜಕಾರಣ ಆರಂಭಿಸಿದವರು. ನಂತರ ಜನತಾ ಪರಿವಾರದ ಜೊತೆಗೂ ಇದ್ದರು. ಜೆಡಿಎಸ್ ಜೊತೆಗಿದ್ದ ಅವರು 2008ರ ಚುನಾವಣೆ ಸಂದರ್ಭದಲ್ಲಿ ಕಾಂಗ್ರೆಸ್ ಸೇರಿದ್ದರು. ಆದ್ದರಿಂದ, ಎಚ್.ಡಿ.ದೇವೇಗೌಡರಿಗೆ ಮಹದೇವಪ್ಪ ಆಪ್ತರಾಗಿದ್ದಾರೆ. ಕಾಂಗ್ರೆಸ್ನಲ್ಲಿ ಅವರು ಇರುವುದರಿಂದ ಕೋಲಾರದಿಂದ ಕಣಕ್ಕಿಳಿಯಲು ಒಪ್ಪಬಹುದು ಎಂಬ ಲೆಕ್ಕಾಚಾರವೂ ಇದೆ.

ಐವರು ಕಾಂಗ್ರೆಸ್ ಶಾಸಕರಿದ್ದಾರೆ
ಕೋಲಾರ ಲೋಕಸಭಾ ಕ್ಷೇತ್ರಕ್ಕೆ ಒಳಪಡುವ 8 ವಿಧಾನಸಭಾ ಕ್ಷೇತ್ರದಲ್ಲಿ ಐದು ಕಡೆ ಕಾಂಗ್ರೆಸ್ ಶಾಸಕರಿದ್ದಾರೆ. ಆದ್ದರಿಂದ, ಕ್ಷೇತ್ರ ಕಾಂಗ್ರೆಸ್ ಹಿಡಿತದಲ್ಲಿದೆ. ಜೆಡಿಎಸ್ ಕ್ಷೇತ್ರಕ್ಕಾಗಿ ಬೇಡಿಕೆ ಇಟ್ಟರೂ ಅದನ್ನು ನೀಡುವುದು ಕಷ್ಟ. ಮತ್ತೊಂದು ಕಡೆ ಕೆ.ಎಚ್.ಮುನಿಯಪ್ಪ ಹೈಕಮಾಂಡ್ ಮಟ್ಟದಲ್ಲಿ ಭಾರಿ ಪ್ರಭಾವ ಹೊಂದಿದ್ದು, ಅವರಿಗೆ ಟಿಕೆಟ್ ತಪ್ಪಿಸುವುದು ಅಷ್ಟು ಸುಲಭದ ಮಾತಲ್ಲ.












Click it and Unblock the Notifications