ಆಹ್ವಾನ ಪತ್ರಿಕೆಯಲ್ಲಿ ಸಂಸದರ ಹೆಸರು ನಾಪತ್ತೆ: ಕಾರ್ಯಕರ್ತರು ಹಾಗೂ ಆಯೋಜಕರ ನಡುವೆ ವಾಗ್ವಾದ
ಕೋಲಾರ, ಕೋಲಾರ 18: ಹಾಲು ಉತ್ಪಾದಕರ ಸಹಕಾರ ಸಂಘದ ಕಟ್ಟಡ ಹಾಗೂ ಬಿಎಂಸಿ ಕೇಂದ್ರ ಉದ್ಘಾಟನೆ ಕಾರ್ಯಕ್ರಮದ ಆಹ್ವಾನ ಪತ್ರಿಕೆಯಲ್ಲಿ ಕೋಲಾರ ಸಂಸದ ಮುನಿಸ್ವಾಮಿ ಅವರ ಹೆಸರು ಹಾಕಿಲ್ಲವೆಂಬ ಕಾರಣಕ್ಕೆ ವಾಗ್ವಾದ ನಡೆದಿದೆ.
ಕೋಲಾರ ತಾಲೂಕಿನ ಚೆಲುವನಹಳ್ಳಿ ಗ್ರಾಮದಲ್ಲಿ ನೂತನವಾಗಿ ನಿರ್ಮಿಸಿರುವ ಹಾಲು ಉತ್ಪಾದಕರ ಸಹಕಾರ ಸಂಘದ ಕಟ್ಟಡ ಹಾಗೂ ಬಿಎಂಸಿ ಕೇಂದ್ರ ಉದ್ಘಾಟನೆ ಕಾರ್ಯಕ್ರಮದ ಆಹ್ವಾನ ಪತ್ರಿಕೆಯಲ್ಲಿ ಸಂಸದರ ಹೆಸರು ನಾಪತ್ತೆ ಹಿನ್ನೆಲೆ ಬಿಜೆಪಿ ಕಾರ್ಯಕರ್ತರು ಹಾಗೂ ಕಾರ್ಯಕ್ರಮ ಆಯೋಜಕರ ನಡುವೆ ವಾಗ್ವಾದ ಉಂಟಾಗಿದೆ.
ಉದ್ದೇಶಪೂರ್ವಕವಾಗಿ ಕೋಲಾರ ಸಂಸದ ಎಸ್.ಮುನಿಸ್ವಾಮಿ ಅವರನ್ನು ಕಾರ್ಯಕ್ರಮಕ್ಕೆ ಕರೆಯದಿರುವ ಕಾರಣಕ್ಕೆ, ಆಹ್ವಾನ ಪತ್ರಿಕೆಯಲ್ಲಿ ಸಂಸದರ ಹೆಸರು ಹಾಕದೆ ಶಿಷ್ಟಾಚಾರ ಉಲ್ಲಂಘನೆ ಮಾಡಿದ ಆರೋಪ ಎದುರಾಗಿದೆ.

ಕೋಚಿಮುಲ್ ಆಧ್ಯಕ್ಷ ಹಾಗೂ ಕಾಂಗ್ರೆಸ್ ಶಾಸಕ ಕೆ.ವೈ ನಂಜೇಗೌಡ ಒತ್ತಡಕ್ಕೆ ಮಣಿದು ಕಾರ್ಯಕ್ರಮದಿಂದ ಸಂಸದರನ್ನು ದೂರ ಇಡಲಾಗಿದೆ ಎಂದು ಬಿಜೆಪಿ ಕಾರ್ಯಕರ್ತರು ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಅಭಿವೃದ್ಧಿ ಕಾರ್ಯದಲ್ಲಿ ಶಾಸಕ ಕೆ.ವೈ ನಂಜೇಗೌಡ ರಾಜಕೀಯ ಬೆರೆಸಿ ಗ್ರಾಮಸ್ಥರ ನಡುವೆ ಗಲಾಟೆ ತಂದಿಟ್ಟಿದ್ದಾರೆ ಎಂದು ಬಿಜೆಪಿ ಕಾರ್ಯಕರ್ತರಿಂದ ಕಾರ್ಯಕ್ರಮಕ್ಕೆ ಅಡ್ಡಿಪಡಿಸಲಾಯಿತು.
ಈ ವೇಳೆ ಸಂಸದರ ಬೆಂಬಲಿಗರು ಹಾಗೂ ಗ್ರಾಮಸ್ಥರ ನಡುವೆ ವಾಗ್ವಾದ, ಗಲಾಟೆ ಉಂಟಾದಾಗ, ಪೋಲಿಸರು ಮಧ್ಯೆ ಪ್ರವೇಶಿಸಿ ಬಿಜೆಪಿ ಕಾರ್ಯಕರ್ತರು ಹಾಗೂ ಗ್ರಾಮಸ್ಥರನ್ನು ಸಮಾಧಾನಪಡಿಸಿದ ನಂತರ ಕಾರ್ಯಕ್ರಮ ಮುಂದುವರೆಯಿತು. ಕೋಲಾರ ಗ್ರಾಮಾಂತರ ಪೋಲಿಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

ಇತ್ತೀಚಿಗೆ ಕೋಲಾರಕ್ಕೆ ಭೇಟಿ ನೀಡಿದ್ದ ಸಚಿವ ಸಿ.ಸಿ ಪಾಟೀಲ್ ಅವರೊಂದಿಗೆ ಬಂದಿದ್ದ ಸಂಸದ ಮುನಿಸ್ವಾಮಿ ಅವರು, ಶಾಸಕ ನಂಜೇಗೌಡ ವಿರುದ್ಧ ಆರೋಪಿಸಿದ್ದರು. ಇದರಿಂದಾಗಿ ಕೋಲಾರ ಸಂಸದ ಎಸ್.ಮುನಿಸ್ವಾಮಿ ಹಾಗೂ ಶಾಸಕ ಕೆ.ವೈ ನಂಜೇಗೌಡ ನಡುವೆ ರಾಜಕೀಯ ದ್ವೇಷ ಮುಂದುವರೆದಿದೆ ಎನ್ನಲಾಗಿದೆ.

ಹಾಲು ಉತ್ಪಾದಕರ ಸಹಕಾರ ಸಂಘದ ಕಟ್ಟಡ ಹಾಗೂ ಬಿಎಂಸಿ ಕೇಂದ್ರ ಉದ್ಘಾಟನೆ ಕಾರ್ಯಕ್ರಮದಲ್ಲಿ ಕೋಚಿಮುಲ್ ಆಧ್ಯಕ್ಷ ಹಾಗೂ ಶಾಸಕ ಕೆವೈ ನಂಜೇಗೌಡ, ಕೋಲಾರ ಶಾಸಕ ಕೆ.ಶ್ರೀನಿವಾಸ್ ಗೌಡ ಭಾಗಿಯಾಗಿದ್ದರು.












Click it and Unblock the Notifications