ಅಂತರ್ಜಲ ವೃದ್ಧಿಗೆ ರಾಜ್ಯ ಸರ್ಕಾರದ ಹೊಸ ಪ್ಲ್ಯಾನ್...
ಕೋಲಾರ, ಏಪ್ರಿಲ್ 27: ರಾಜ್ಯದ ಅಂತರ್ಜಲ ಮಟ್ಟವನ್ನು ಹೆಚ್ಚಿಸುವುದಕ್ಕಾಗಿ ಅಂತರ್ಜಲ ಚೇತನ ಎಂಬ ಹೊಸ ಯೋಜನೆಯನ್ನು, ನರೇಗಾ ಯೋಜನೆಯಡಿ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆ ಆರಂಭಿಸಿದೆ.
Recommended Video
ಹೌದು, ಸೋಮವಾರ ಕೋಲಾರದಲ್ಲಿ ಈ ವಿಷಯವನ್ನು ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆ ಸಚಿವರಾದ ಕೆ.ಎಸ್.ಈಶ್ವರಪ್ಪ ಅವರು ತಿಳಿಸಿದರು. ನರೇಗಾ ಹಾಗೂ ಗ್ರಾಮೀಣ ಕುಡಿಯುವ ನೀರು ಕಾರ್ಯಕ್ರಮಗಳ ಪ್ರಗತಿ ಪರಿಶೀಲನಾ ಸಭೆಯಯಲ್ಲಿ ಅವರು ಈ ವಿಷಯ ತಿಳಿಸಿದರು.
ಅಂತರ್ಜಲ ಚೇತನ ಯೋಜನೆಗೆ ಕೋಲಾರ, ಚಿಕ್ಕಬಳ್ಳಾಪುರ ಸೇರಿದಂತೆ 9 ಜಿಲ್ಲೆಗಳನ್ನು ಆಯ್ಕೆ ಮಾಡಿಕೊಳ್ಳಲಾಗಿದೆ ಎಂದು ಈಶ್ವರಪ್ಪ ಹೇಳಿದ್ದಾರೆ.

ಮೇ 5 ರಂದು ಶಿವಮೊಗ್ಗದಲ್ಲಿ ಚಾಲನೆ
ಅಂತರ್ಜಲ ಚೇತನ ಯೋಜನೆಯ ಅನುಷ್ಠಾನಕ್ಕೆ ಆರ್ಟ್ ಆಫ್ ಲಿವಿಂಗ್ ಜೊತೆ ಒಪ್ಪಂದ ಮಾಡಿಕೊಂಡಿದ್ದು, ಮೇ 5 ರಂದು ಶಿವಮೊಗ್ಗದಲ್ಲಿ ಚಾಲನೆ ನೀಡಲಾಗುವುದು. ಅಂತರ್ಜಲವನ್ನು ವೃದ್ಧಿಸುವ ಕಾಮಗಾರಿಗಳನ್ನು ನರೇಗಾ ಯೋಜನೆಯಡಿಯಲ್ಲಿ ಮಾಡಿಸಲಾಗುವುದಂತೆ. ಆಯ್ದ ಜಿಲ್ಲೆಗಳ ಪ್ರತಿ ಗ್ರಾಮ ಪಂಚಾಯಿತಿಗಳಲ್ಲೂ ಇಂಗು ಗುಂಡಿಗಳ ಪ್ರಮಾಣವನ್ನು ಹೆಚ್ಚಿಸಲಾಗುತ್ತದೆ.

2 ಲಕ್ಷ ಜನರಿಂದ ನರೇಗಾ ಕಾರ್ಯಕ್ರಮ
ರಾಜ್ಯದ 5400 ಗ್ರಾಮ ಪಂಚಾಯಿತಿಗಳಲ್ಲಿ 2 ಲಕ್ಷ ಜನರಿಂದ ನರೇಗಾ ಕಾರ್ಯಕ್ರಮಗಳನ್ನು ಪ್ರಾರಂಭಿಸಲಾಗಿದೆ. ಮುಂದಿನ ವಾರದಲ್ಲಿ ಎಲ್ಲಾ ಪಂಚಾಯಿತಿಗಳಲ್ಲೂ ಪ್ರಾರಂಭಿಸಲಾಗುವುದು. ಈ ಹಿಂದೆ 249 ರೂ.ಗಳಿಂದ ನರೇಗಾ ಕೂಲಿಯನ್ನು ಕೇಂದ್ರ ಸರ್ಕಾರವು ಕರ್ನಾಟಕ ರಾಜ್ಯಕ್ಕೆ 275 ರೂ.ಗಳಿಗೆ ಹೆಚ್ಚಿಸಿದೆ. ಕೇಂದ್ರ ಸರ್ಕಾರವು 1800 ಕೋಟಿ ರೂ.ಗಳ ನರೇಗಾ ಹಣ ಬಿಡುಗಡೆ ಮಾಡಿದ್ದು, ಎಲ್ಲಾ ನರೇಗಾ ಬಾಕಿಯನ್ನು ಪೂರ್ಣವಾಗಿ ಫಲಾನುಭವಿಗಳಿಗೆ ನೀಡಲಾಗಿದೆ ಎಂದು ತಿಳಿಸಿದರು.

46 ಕೋಟಿ ರೂ. ವೆಚ್ಚದಲ್ಲಿ ಬೋರ್ವೆಲ್
ಕೋಲಾರ ಜಿಲ್ಲೆಯಲ್ಲಿ ಕ್ರಿಯಾ ಯೋಜನೆಯಿಂದ ಹೊರತು ಪಡಿಸಿ 46 ಕೋಟಿ ರೂ. ವೆಚ್ಚದಲ್ಲಿ ಬೋರ್ವೆಲ್ ಗಳನ್ನು ಕೊರೆಸಿದ್ದು, ಈ ಬಾಕಿ ಹಣ ಬಿಡುಗಡೆ ಮಾಡಿಸಲು ಮಾನ್ಯ ಮುಖ್ಯಮಂತ್ರಿಗಳೊಂದಿಗೆ ಚರ್ಚಿಸಲಾಗುವುದು. ಇನ್ನು ಮುಂದೆ ಕೊರೆಯುವ ಎಲ್ಲಾ ಬೋರ್ವೆಲ್ಗಳನ್ನು ಕ್ರಿಯಾ ಯೋಜನೆಯಲ್ಲಿ ಅಳವಡಿಸಿ ಅನುಮೋದನೆ ಪಡೆದುಕೊಂಡು ಕೊರೆಸುವಂತೆ ಗ್ರಾಮೀಣ ಕುಡಿಯುವ ನೀರಿನ ಇಲಾಖೆಯ ಅಧಿಕಾರಿಗಳಿಗೆ ಈಶ್ವರಪ್ಪ ಸೂಚಿಸಿದ್ದಾರೆ

ಕುಡಿಯುವ ನೀರಿನ ಪೂರೈಕೆಗೆ ಪ್ರಥಮ ಆದ್ಯತೆ
ಈ ಬೇಸಿಗೆಯಲ್ಲಿ ಕುಡಿಯುವ ನೀರಿನ ಸಮಸ್ಯೆ ತಲೆದೋರಿದ್ದು, ಅಧಿಕಾರಿಗಳು ಕುಡಿಯುವ ನೀರಿನ ಪೂರೈಕೆಗೆ ಪ್ರಥಮ ಆದ್ಯತೆ ನೀಡಬೇಕು ಎಂದು ಈಶ್ವರಪ್ಪ ಸೂಚನೆ ನೀಡಿದ್ದಾರೆ. ಸೋಮವಾರ ಜಿಲ್ಲಾ ಪಂಚಾಯತ್ ಸಭಾಂಗಣದಲ್ಲಿ ನರೇಗಾ ಹಾಗೂ ಗ್ರಾಮೀಣ ಕುಡಿಯುವ ನೀರು ಕಾರ್ಯಕ್ರಮಗಳ ಪ್ರಗತಿ ಪರಿಶೀಲನಾ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.












Click it and Unblock the Notifications