ಹಲವು ವದಂತಿಗಳಿಗೆ ತೆರೆ ಎಳೆದ ದೇವೇಗೌಡರು!
Recommended Video

ಕೋಲಾರ, ನವೆಂಬರ್ 30 : 'ಕಾಂಗ್ರೆಸ್ ಜೊತೆ ಹೊಂದಾಣಿಕೆ ಮಾಡಿಕೊಳ್ಳಲು ಜೆಡಿಎಸ್ ಪ್ರಯತ್ನ ನಡೆಸುತ್ತಿದೆ ಎಂಬ ಅನುಮಾನ ಹಲವರಿಗೆ ಕಾಡುತ್ತಿದೆ. ಆದರೆ, ಕಾಂಗ್ರೆಸ್ನೊಂದಿಗೆ ಹೊಂದಾಣಿಕೆ ಮಾಡಿಕೊಳ್ಳುವುದಿಲ್ಲ' ಎಂದು ಜೆಡಿಎಸ್ ವರಿಷ್ಠ ಎಚ್.ಡಿ.ದೇವೇಗೌಡ ಹೇಳಿದ್ದಾರೆ.
ಕೋಲಾರ ಜಿಲ್ಲೆಯ ಶ್ರೀನಿವಾಸಪುರದಲ್ಲಿ ಮಾತನಾಡಿದ ದೇವೇಗೌಡರು, 'ಜೆಡಿಎಸ್ ಕಾಂಗ್ರೆಸ್ನೊಂದಿಗೆ ಯಾವುದೇ ಹೊಂದಾಣಿಕೆ ಮಾಡಿಕೊಳ್ಳುವುದಿಲ್ಲ. 224 ಕ್ಷೇತ್ರಗಳಲ್ಲಿಯೂ ಹೊಂದಾಣಿಕೆ ಮಾಡಿಕೊಂಡು ಚುನಾವಣೆ ಎದುರಿಸುವುದಿಲ್ಲ' ಎಂದು ದೇವೇಗೌಡರು ಸ್ಪಷ್ಟಪಡಿಸಿದರು.
ಶ್ರೀನಿವಾಸಪುರದಲ್ಲಿ ಪಕ್ಷದ ಕಚೇರಿ ಉದ್ಘಾಟನೆ ಮಾಡಿದ ಬಳಿಕ ಮಾತನಾಡಿದ ದೇವೇಗೌಡರು, 'ಮುಂದಿನ ವಿಧಾನಸಭೆ ಚುನಾವಣೆಯಲ್ಲಿ ಕೋಲಾರ, ಚಿಕ್ಕಬಳ್ಳಾಪುರ ಜಿಲ್ಲೆಯ ಭಾಗದಲ್ಲಿ 9 ಜೆಡಿಎಸ್ ಅಭ್ಯರ್ಥಿಗಳು ಜಯಗಳಿಸಲಿದ್ದಾರೆ' ಎಂದು ವಿಶ್ವಾಸ ವ್ಯಕ್ತಪಡಿಸಿದರು.
ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ ಮೇಯರ್, ಉಪ ಮೇಯರ್ ಚುನಾವಣೆಯಲ್ಲಿ ಜೆಡಿಎಸ್ ಕಾಂಗ್ರೆಸ್ ಜೊತೆ ಮೈತ್ರಿ ಮಾಡಿಕೊಂಡಿದೆ. ಇದೇ ಮೈತ್ರಿ ವಿಧಾನಸಭೆ ಚುನಾವಣೆಯಲ್ಲೂ ಮುಂದುವರೆಯಲಿದೆ ಎಂಬುದು ಲೆಕ್ಕಾಚಾರವಾಗಿದೆ. ಆದ್ದರಿಂದ, ಎರಡೂ ಪಕ್ಷಗಳ ಮೈತ್ರಿ ಬಗ್ಗೆ ಸುದ್ದಿಗಳು ಹರಿದಾಡುತ್ತಿವೆ.

ದೇವೇಗೌಡರ ಸ್ಪಷ್ಟನೆ
'ಮುಖ್ಯಮಂತ್ರಿ ಸಿದ್ದರಾಮಯ್ಯ ಸ್ಪರ್ಧಿಸುವ ಕ್ಷೇತ್ರ ಸೇರಿದಂತೆ ರಾಜ್ಯದ ಯಾವುದೇ ಕ್ಷೇತ್ರದಲ್ಲಿ ಕಾಂಗ್ರೆಸ್ ಜೊತೆ ಹೊಂದಾಣಿಕೆ ಮಾಡಿಕೊಂಡು ಚುನಾವಣೆ ಎದುರಿಸುವುದಿಲ್ಲ' ಎಂದು ದೇವೇಗೌಡರು ಸ್ಪಷ್ಟಪಡಿಸಿದರು.

ಪ್ರಜ್ವಲ್ಗೆ ಜವಾಬ್ದಾರಿ
'ಪ್ರಜ್ವಲ್ ರೇವಣ್ಣಗೆ ಪಕ್ಷ ಸಂಘಟನೆ ಮತ್ತು ಮುಂದಿನ ಚುನಾವಣೆಯಲ್ಲಿ ಪಕ್ಷದ ಅಭ್ಯರ್ಥಿಗಳನ್ನು ಗೆಲ್ಲಿಸುವ ಜವಾಬ್ದಾರಿಯನ್ನು ನೀಡಿದ್ದೇವೆ' ಎಂದು ದೇವೇಗೌಡರು ಹೇಳಿದರು.

ಮುಂದಿನ ದಿನಗಳಲ್ಲಿ ತೀರ್ಮಾನ
'ಚನ್ನಪಟ್ಟಣ ಕ್ಷೇತ್ರದಲ್ಲಿ ಅನಿತಾ ಕುಮಾರಸ್ವಾಮಿ ಅವರಿಗೆ ಟಿಕೆಟ್ ನೀಡಬೇಕು ಎಂದು ಕಾರ್ಯಕರ್ತರು ಒತ್ತಡ ಹೇರುತ್ತಿದ್ದಾರೆ. ಆದರೆ, ಈ ಬಗ್ಗೆ ಯಾವುದೇ ನಿರ್ಧಾರಗಳನ್ನು ಕೈಗೊಂಡಿಲ್ಲ. ಸೂಕ್ತ ಸಮಯದಲ್ಲಿ ತೀರ್ಮಾನ ತೆಗೆದುಕೊಳ್ಳುತ್ತೇವೆ' ಎಂದರು.

ಹಲವರಿಗೆ ಅನುಮಾನ ಕಾಡುತ್ತಿದೆ
'ಅನಿತಾ ಕುಮಾರಸ್ವಾಮಿ ಅವರು ಡಿ.ಕೆ.ಶಿವಕುಮಾರ್ ಜೊತೆ ವೇದಿಕೆ ಹಂಚಿಕೊಂಡಿದ್ದು, ಡಿ.ಕೆ.ಶಿವಕುಮಾರ್ ನನ್ನ ಕಾಲಿಗೆ ನಮಸ್ಕಾರ ಮಾಡಿದ್ದು ಈ ಎಲ್ಲಾ ಬೆಳವಣಿಗೆಗಳಿಂದ ರಾಜಕೀಯ ಹೊಂದಾಣಿಕೆ ನಡೆಯುತ್ತಿದೆ ಎಂಬ ಸುದ್ದಿಗಳು ಹಬ್ಬುತ್ತಿವೆ. ಆದರೆ, ಮೈತ್ರಿಯ ಪ್ರಸ್ತಾಪವಿಲ್ಲ' ಎಂದರು.

ಡಿ.ಕೆ.ಶಿವಕುಮಾರ್ ಏನು ಹೇಳಿದ್ದರು?
ಅನಿತಾ ಕುಮಾರಸ್ವಾಮಿ ಅವರ ಜೊತೆ ವೇದಿಕೆ ಹಂಚಿಕೊಂಡ ಬಗ್ಗೆ ಡಿ.ಕೆ.ಶಿವಕುಮಾರ್ ಸಹ ಸ್ಪಷ್ಟನೆ ನೀಡಿದ್ದರು. 'ರಾಜಕೀಯ ಸಿದ್ಧಾಂತವೇ ಬೇರೆ, ವೈಯಕ್ತಿಕ ವಿಚಾರಗಳೇ ಬೇರೆ. ದೇವೇಗೌಡರ ಕುಟುಂಬವನ್ನು ನಾನು ಸದಾ ಗೌರವಿಸುತ್ತೇನೆ. ಎದುರಿಗೆ ಸಿಕ್ಕಾಗ ಕುಮಾರಸ್ವಾಮಿ ಜೊತೆಯೂ ಮಾತನಾಡುತ್ತೇನೆ. ಅನಿತಾ ಕುಮಾರಸ್ವಾಮಿ ನನ್ನನ್ನು ಅಣ್ಣ ಅಂತ ತಿಳಿದುಕೊಂಡಿದ್ದಾರೆ. ಹೆಣ್ಣು ಮಗಳಿಗೆ ಗೌರವ ಕೊಡಬೇಕು, ಅದನ್ನು ಕೊಡುತ್ತೇವೆ. ಆದ್ದರಿಂದ, ದೋಸ್ತಿ ರಾಜಕಾರಣ ಮಾಡುತ್ತಿದ್ದೇವೆ ಅನ್ನೋ ಪ್ರಶ್ನೆ ಇಲ್ಲ' ಎಂದು ಹೇಳಿದ್ದರು.












Click it and Unblock the Notifications