ಬರದನಾಡು ಕೋಲಾರದಲ್ಲಿ ಅಪರೂಪದ ಮಳೆ; ಕೋಡಿ ಹರಿದ ದೊಡ್ಡ ಕೆರೆ
ಕೋಲಾರ, ಸೆಪ್ಟೆಂಬರ್ 14: ಬರಗಾಲದ ಜಿಲ್ಲೆ ಎನಿಸಿಕೊಂಡಿರುವ ಕೋಲಾರದಲ್ಲಿ ಕೆಲವು ದಿನಗಳಿಂದೀಚೆ ಮಳೆಯಾಗುತ್ತಿದ್ದು, ಜಿಲ್ಲೆಯ ಚಿತ್ರಣವೇ ಬದಲಾದಂತಿದೆ. ನಾಲ್ಕು ದಿನಗಳಿಂದ ಸುರಿಯುತ್ತಿರುವ ಮಳೆಗೆ, ಹಲವು ವರ್ಷಗಳಿಂದ ಒಣಗಿದ್ದ ಕೆರೆಗಳು ಮರುಜೀವ ಪಡೆದುಕೊಂಡಿವೆ.
ನದಿ ನಾಲೆಗಳಿಲ್ಲದ ಕೋಲಾರ ಜಿಲ್ಲೆಗೆ ಬೃಹತ್ ಕೆರೆಗಳೇ ಜೀವಾಳ. ಹೀಗಿರುವಾಗ ಕಳೆದ ಹದಿನೈದು ವರ್ಷಗಳಿಂದ ಸರಿಯಾದ ಮಳೆ ಇಲ್ಲದೆ ಒಣಗಿ ಹೋಗಿದ್ದ ಕೋಲಾರ ತಾಲ್ಲೂಕು ಎಸ್.ಅಗ್ರಹಾರ ಕೆರೆಯು ತುಂಬಿಕೊಂಡು ಕೋಡಿ ಹರಿದಿದೆ. ಕೆರೆಗೆ ಸದ್ಯ ಕೆ.ಸಿ.ವ್ಯಾಲಿ ಯೋಜನೆಯ ಮೂಲಕ ನೀರು ಹರಿಸಲಾಗುತ್ತಿದೆ. ಇದರ ಜೊತೆಗೆ ಇತ್ತೀಚೆಗೆ ಜಿಲ್ಲೆಯಲ್ಲಿ ಒಳ್ಳೆಯ ಮಳೆಯಾದ ಪರಿಣಾಮ ಸುಮಾರು1200 ಎರಕೆಯಷ್ಟು ವಿಸ್ತೀರ್ಣ ಹೊಂದಿರುವ ಅಗ್ರಹಾರ ಕೆರೆ ತುಂಬಿ ಸುಂದರವಾಗಿ ಕಾಣುತ್ತಿದೆ.

ಕೋಡಿ ಹರಿದ ಕೆರೆ ನೋಡಲು ಸೇರಿದ ಜನ
ಕೆರೆ ತುಂಬಿ ಕೋಡಿ ಹರಿದ ವಿಷಯ ತಿಳಿಯುತ್ತಿದ್ದಂತೆ ಜಿಲ್ಲೆಯ ಜನರು, ಈ ದೃಶ್ಯಗಳನ್ನು ಕಣ್ತುಂಬಿಕೊಳ್ಳಲು ಸಾವಿರಾರು ಸಂಖ್ಯೆಯಲ್ಲಿ ತಂಡೋಪ ತಂಡವಾಗಿ ಹರಿದುಬರುತ್ತಿದ್ದಾರೆ. ಬರದ ನಾಡಲ್ಲಿನ ಈ ಅಪರೂಪದ ದೃಶ್ಯವನ್ನು ನೋಡಿ ಖುಷಿ ಪಡುತ್ತಿದ್ದಾರೆ.

ಕೆ.ಸಿ.ವ್ಯಾಲಿ ಯೋಜನೆಯಿಂದ 75 ಕೆರೆಗಳು ಭರ್ತಿ
ಬೆಂಗಳೂರು ತ್ಯಾಜ್ಯ ನೀರನ್ನು ಸಂಸ್ಕರಿಸಿ ಕೋಲಾರ ಜಿಲ್ಲೆಯ ಅಂತರ್ಜಲ ವೃದ್ಧಿಸುವ ಕೆ.ಸಿ.ವ್ಯಾಲಿ ಯೋಜನೆಯಿಂದ ಈಗಾಗಲೇ ಜಿಲ್ಲೆಯಲ್ಲಿ 75 ಕೆರೆಗಳು ತುಂಬಿವೆ. ಆದರೆ ಜಿಲ್ಲೆಯ ಅತಿ ದೊಡ್ಡ ಕೆರೆ ಎಸ್.ಆಗ್ರಹಾರ ಕೆರೆ ತುಂಬಿದ್ದುವಿಶೇಷವೆನಿಸಿತ್ತು. ತುಂಬಿ ಹರಿಯುತ್ತಿದ್ದ ಕೆರೆಗೆ ಪೂಜೆ ಸಲ್ಲಿಸಿ ಬಾಗಿನ ಅರ್ಪಿಸಲು ಪಕ್ಷಾತೀತವಾಗಿ ರಾಜಕಾರಣಿಗಳ ದಂಡು ಡೋಲು ವಾದ್ಯ ಸಮೇತ ಆಗಮಿಸಿತ್ತು.

ಬಾಗಿನ ಅರ್ಪಿಸಿದ ರಾಜಕೀಯ ಮುಖಂಡರು
ಮಾಜಿ ಸ್ಪೀಕರ್ ರಮೇಶ್ಕುಮಾರ್, ಶಾಸಕ ಶ್ರೀನಿವಾಸಗೌಡ, ಮಾಜಿ ಸಚಿವ ಕೃಷ್ಣಬೈರೇಗೌಡ, ಸಂಸದ ಮುನಿಸ್ವಾಮಿ ಹೀಗೆ ಮೂರು ಪಕ್ಷಗಳ ಮುಖಂಡರು ಒಟ್ಟಾಗಿ ಆಗಮಿಸಿ ಅಗ್ರಹಾರ ಕೆರೆಗೆ ಪೂಜೆ ಸಲ್ಲಿಸಿ ಬಾಗಿನ ಅರ್ಪಿಸಿದರು. ಈ ವೇಳೆ ಮಾತನಾಡಿದ ಮುಖಂಡರು, ಇದನ್ನು ಸುಂದರ ಪ್ರವಾಸಿ ತಾಣವಾಗಿಸಿ ಅಭಿವೃದ್ಧಿಪಡಿಸಬೇಕೆಂದು ಅಭಿಪ್ರಾಯ ಪಟ್ಟರು. ಜೊತೆಗೆ ತ್ಯಾಜ್ಯ ನೀರನ್ನು ಸಂಸ್ಕರಿಸಿ ಮರು ಬಳಕೆ ಮಾಡುತ್ತಿರುವ ಯೋಜನೆ ದೇಶಕ್ಕೆ ಹಾಗೂ ವಿಶ್ವಕ್ಕೆ ಮಾದರಿ ಎನ್ನುತ್ತಾ ಯೋಜನೆಗೆ ಶ್ರಮಿಸಿದವರನ್ನು ಸ್ಮರಿಸಿದರು.
Recommended Video

ಈ ಬಾರಿ ಉತ್ತಮ ಮಳೆಯೂ ಆಗಿದೆ
ಒಟ್ಟಿನಲ್ಲಿ ಬರದ ನಾಡು ಕೋಲಾರಕ್ಕೆ ಕೆ.ಸಿ.ವ್ಯಾಲಿ ನೀರು ವರವಾಗಿ ಪರಿಣಮಿಸಿದ್ದು, ಯೋಜನೆಯಿಂದ ಜಿಲ್ಲೆಯ ಚಿತ್ರಣವೇ ಬದಲಾಗುತ್ತಿದೆ. ಜನರು ಕೂಡ ಯೋಜನೆಯಿಂದಾಗುತ್ತಿರುವ ಬದಲಾವಣೆಯನ್ನು ಸಂತೋಷವಾಗಿ ಅನುಭವಿಸುತ್ತಿದ್ದು, ಮುಂದಿನ ದಿನಗಳಲ್ಲಿ ಬರಗಾಲದ ಹಣೆ ಪಟ್ಟಿ ಕಳಚಲಿ ಅನ್ನುವುದ ಜನರ ಆಶಯ. ಹೀಗೆ ಉತ್ತಮ ಮಳೆಯಾದರೆ ಎಂದೂ ಆಶಿಸುತ್ತಿದ್ದಾರೆ.












Click it and Unblock the Notifications