ಪಶ್ಚಿಮ ಬಂಗಾಳದಲ್ಲಿ 7ನೇ ಹಂತದಲ್ಲಿ 34 ಕ್ಷೇತ್ರಗಳಿಗೆ ಚುನಾವಣೆ
ಕೋಲ್ಕತ್ತಾ, ಏಪ್ರಿಲ್ 26: ಪಶ್ಚಿಮ ಬಂಗಾಳದಲ್ಲಿ ಕೊರೊನಾವೈರಸ್ ಸಾಂಕ್ರಾಮಿಕ ಪಿಡುಗಿನ ಆತಂಕದ ನಡುವೆ ಸೋಮವಾರ 7ನೇ ಹಂತದ ವಿಧಾನಸಭಾ ಚುನಾವಣಾ ಮತದಾನ ಪ್ರಕ್ರಿಯೆ ನಡೆಯಲಿದೆ.
ಸೋಮವಾರ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರ ತವರು ಕ್ಷೇತ್ರ ಬಾಬನಿಪುರ್ ಸೇರಿದಂತೆ 34 ವಿಧಾನಸಭಾ ಕ್ಷೇತ್ರಗಳಿಗೆ ಚುನಾವಣೆ ನಡೆಯಲಿದೆ. 284 ಅಭ್ಯರ್ಥಿಗಳ ಭವಿಷ್ಯವನ್ನು ರಾಜ್ಯದ 86 ಲಕ್ಷ ಜನ ಮತದಾರರು ನಿರ್ಧರಿಸಲಿದ್ದಾರೆ.
ಪಶ್ಚಿಮ ಬಂಗಾಳದಲ್ಲಿ ರೋಡ್ಶೋ, ಬೈಕ್ ಜಾಥಾಗೆ ಬ್ರೇಕ್ ಹಾಕಿದ ಚುನಾವಣಾ ಆಯೋಗ
ಪಶ್ಚಿಮ ಬಂಗಾಳದಲ್ಲಿ 7ನೇ ಹಂತದ ಚುನಾವಣೆ ಹಿನ್ನೆಲೆ ಬಿಗಿ ಭದ್ರತೆಯನ್ನು ಕೈಗೊಳ್ಳಲಾಗಿದೆ. ಕಳೆದ ಏಪ್ರಿಲ್ 10ರಂದು ನಡೆದ 4ನೇ ಹಂತದ ಚುನಾವಣೆ ಸಂದರ್ಭದಲ್ಲಿ ಕೂಚ್ ಬೆಹರ್ ಪ್ರದೇಶದಲ್ಲಿ ಘರ್ಷಣೆ ನಡೆದಿದ್ದು, ಐವರು ಮೃತಪಟ್ಟಿದ್ದರು. ಈ ಘಟನೆ ಹಿನ್ನೆಲೆ ಯಾವುದೇ ಅಹಿತಕರ ಘಟನೆ ನಡೆಯದಂತೆ ಮುನ್ನೆಚ್ಚರಿಕೆ ಕ್ರಮ ತೆಗೆದುಕೊಳ್ಳಲಾಗಿದೆ. ಕೇಂದ್ರದ 796 ಕಂಪನಿಯ ಭದ್ರತಾ ಸಿಬ್ಬಂದಿಯನ್ನು ಚುನಾವಣಾ ಕಾರ್ಯಕ್ಕಾಗಿ ನಿಯೋಜಿಸಲಾಗಿದೆ ಎಂದು ಅಧಿಕಾರಿಯೊಬ್ಬರು ಮಾಹಿತಿ ನೀಡಿದ್ದಾರೆ.

ಕೊರೊನಾ ಶಿಷ್ಟಾಚಾರ ಪಾಲನೆ ಬಗ್ಗೆ ಲಕ್ಷ್ಯ:
ಪಶ್ಚಿಮ ಬಂಗಾಳ ವಿಧಾನಸಭೆ ಚುನಾವಣೆ ಸಂದರ್ಭದಲ್ಲಿ ಕೊರೊನಾವೈರಸ್ ಸೋಂಕು ಹರಡದಂತೆ ಜಾಗೃತಿ ವಹಿಸಲಾಗಿದೆ. ಮತಗಟ್ಟೆಗಳಲ್ಲಿ ಕೊವಿಡ್-19 ಶಿಷ್ಟಾಚಾರಗಳನ್ನು ಕಡ್ಡಾಯವಾಗಿ ಪಾಲಿಸುವುದಕ್ಕೆ ಸೂಚನೆ ನೀಡಲಾಗಿದೆ. ಏಕೆಂದರೆ ರಾಜ್ಯದಲ್ಲಿ ಭಾನುವಾರ ಒಂದೇ ದಿನ 15,889 ಕೊರೊನಾವೈರಸ್ ಸೋಂಕಿತ ಪ್ರಕರಣಗಳು ಪತ್ತೆಯಾಗಿದ್ದು, 57 ಮಂದಿ ಮಹಾಮಾರಿಗೆ ಬಲಿಯಾಗಿದ್ದಾರೆ. ಇದರ ಹೊರತಾಗಿ 88,800 ಕೊರೊನಾ ಸಕ್ರಿಯ ಪ್ರಕರಣಗಳಿವೆ ಎಂದು ರಾಜ್ಯ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಮಾಹಿತಿ ನೀಡಿದೆ.
ಸಾರ್ವಜನಿಕ ಪ್ರಚಾರಕ್ಕೆ ನಿರ್ಬಂಧ:
ಪಶ್ಚಿಮ ಬಂಗಾಳದಲ್ಲಿ ಚುನಾವಣಾ ಪ್ರಚಾರ ಸಂದರ್ಭ ಕೊವಿಡ್ ಮಾರ್ಗಸೂಚಿಗಳ ಉಲ್ಲಂಘನೆ ಹಿನ್ನೆಲೆ ಚುನಾವಣಾ ಆಯೋಗ ಈಗಾಗಲೇ ರಾಜ್ಯದಲ್ಲಿ ರೋಡ್ಶೋ ಹಾಗೂ ಬೈಕ್ ಜಾಥಾ ರದ್ದುಗೊಳಿಸಿದೆ. ಐನೂರಕ್ಕೂ ಹೆಚ್ಚು ಜನ ಸಾರ್ವಜನಿಕ ಸಭೆಗಳಲ್ಲಿ ಭಾಗವಹಿಸುವಂತಿಲ್ಲ ಎಂದು ಆದೇಶಿಸಿದೆ.
ಪಶ್ಚಿಮ ಬಂಗಾಳದಲ್ಲಿ ಮತಗಟ್ಟೆಗಳ ಸಂಖ್ಯೆ:
ರಾಜ್ಯದ ಮುರ್ಷಿದಾಬಾದ್ ಮತ್ತು ಪಶ್ಚಿಮ ಬರ್ಧಮಾನ್ ಜಿಲ್ಲೆಗಳಲ 9 ವಿಧಾನಸಭಾ ಕ್ಷೇತ್ರಗಳಲ್ಲಿ 12,068 ಮತಗಟ್ಟೆಗಳನ್ನು ತೆರೆಯಲಾಗಿದೆ. ದಕ್ಷಿಣ ದಿನಾಜ್ ಪುರ್ ಮತ್ತು ಮಾಲ್ದಾದಲ್ಲಿ 6 ಮತ್ತು ಕೋಲ್ಕತ್ತಾದಲ್ಲಿ ನಾಲ್ಕು ಮತಗಟ್ಟೆಗಳನ್ನು ತೆರೆಯಲಾಗಿದೆ.
ಮುಖ್ಯಮಂತ್ರಿ ಹಾಗೂ ತೃಣಮೂಲ ಕಾಂಗ್ರೆಸ್ಸಿನ ಮುಖ್ಯಸ್ಥೆ ಮಮತಾ ಬ್ಯಾನರ್ಜಿ ಅವರ ತವರು ಕ್ಷೇತ್ರ ಬಾಬನಿಪುರ್ ಮೇಲೆ ಎಲ್ಲರ ಲಕ್ಷ್ಯ ನೆಟ್ಟಿದೆ. ಈ ಬಾರಿ ನಂದಿಗ್ರಾಮ್ ಕ್ಷೇತ್ರವನ್ನು ಆಯ್ಕೆ ಮಾಡಿಕೊಂಡಿರುವ ದೀದಿ, ತಮ್ಮ ಕ್ಷೇತ್ರದಲ್ಲಿ ಹ್ಯಾಟ್ರಿಕ್ ಗೆಲುವು ಸಾಧಿಸುವುದಕ್ಕಾಗಿ ರಾಜ್ಯದ ಇಂಧನ ಸಚಿವ ಸೊಭಾಂದೇಬ್ ಚಟ್ಟೋಪಾಧ್ಯಾಯ ಅವರಿಗೆ ಟಿಕೆಟ್ ನೀಡಿದ್ದಾರೆ. ಬಾಬಿನಿಪುರ್ ಕ್ಷೇತ್ರದಲ್ಲಿ ಬಿಜೆಪಿ ಅಭ್ಯರ್ಥಿಯಾಗಿ ರುದ್ರನೀಲ್ ಘೋಷ್ ಸ್ಪರ್ಧಿಸಿದ್ದು, ಕಳೆದ ಕೆಲವು ತಿಂಗಳ ಹಿಂದೆಯಷ್ಟೇ ಇವರು ಟಿಎಂಸಿ ತೊರೆದು ಬಿಜೆಪಿಗೆ ಸೇರ್ಪಡೆಯಾಗಿದ್ದರು.












Click it and Unblock the Notifications