ಪ್ರಧಾನಿ ಮೋದಿ ಪ್ರಚಾರದ ಬೆನ್ನಲ್ಲೇ ಬಂಗಾಳಕ್ಕೆ ರಾಕೇಶ್ ಟಿಕಾಯತ್
ಕೋಲ್ಕತ್ತಾ, ಮಾರ್ಚ್.07: ಪಶ್ಚಿಮ ಬಂಗಾಳ ವಿಧಾನಸಭಾ ಚುನಾವಣೆ ಹಿನ್ನೆಲೆ ಪ್ರಧಾನಮಂತ್ರಿ ನರೇಂದ್ರ ಮೋದಿ ಪ್ರಚಾರದ ಬೆನ್ನಲ್ಲೇ ಮಾರ್ಚ್.13ರಂದು ರಾಜ್ಯದ ರೈತರೊಂದಿಗೆ ಭಾರತೀಯ ಕಿಸಾನ್ ಒಕ್ಕೂಟದ ಮುಖ್ಯಸ್ಥ ರಾಕೇಶ್ ಟಿಕಾಯತ್ ಚರ್ಚಿಸಲಿದ್ದಾರೆ.
ಪಶ್ಚಿಮ ಬಂಗಾಳ ವಿಧಾನಸಭಾ ಚುನಾವಣೆಗಳು ನಡೆಯುತ್ತಿರುವ ರಾಜ್ಯಗಳಿಗೆ ಭೇಟಿ ನೀಡಲಾಗುತ್ತದೆ. ಈ ನಿಟ್ಟಿನಲ್ಲಿ ಮಾರ್ಚ್.13ರಂದು ಪಶ್ಚಿಮ ಬಂಗಾಳಕ್ಕೆ ತೆರಳುವುದಾಗಿ ರಾಕೇಶ್ ಟಿಕಾಯತ್ ಘೋಷಿಸಿದ್ದಾರೆ.
ಕೃಷಿ ಕಾಯ್ದೆ: ವಿರೋಧ ಪಕ್ಷಗಳ ವಿರೋಧಕ್ಕೆ ಸಚಿವರ ಹೊಸ ಅರ್ಥ!
ಕೋಲ್ಕತ್ತಾದ ಬ್ರಿಗೇಡ್ ಪರೇಡ್ ಮೈದಾನದಲ್ಲಿ ಪ್ರಧಾನಿ ಮೋದಿ ಪ್ರಚಾರದ ಅಂತ್ಯಗೊಂಡ ಕೆಲವೇ ನಿಮಿಷಗಳಲ್ಲಿ ಈ ಘೋಷಣೆ ಹೊರಡಿಸಿದ್ದಾರೆ. "ಸರ್ಕಾರವು ಈಗ ಕೋಲ್ಕತ್ತಾಗೆ ಹೋಗಿದೆ. ಆದ್ದರಿಂದ ನಾವೂ ಕೂಡಾ ಅಲ್ಲಿಗೆ ತೆರಳಿ ರೈತರೊಂದಿಗೆ ಚರ್ಚೆ ನಡೆಸುತ್ತೇವೆ" ಎಂದು ರಾಕೇಶ್ ಟಿಕಾಯತ್ ಹೇಳಿದ್ದಾರೆ.
ಮಾರ್ಚ್.12ರಂದು ಎಸ್ ಕೆಯು ಜಾಥಾ:
ಕೋಲ್ಕತ್ತಾದಲ್ಲಿ ಭಾರತೀಯ ಕಿಸಾನ್ ಒಕ್ಕೂಟದ ಮುಖ್ಯಸ್ಥ ರಾಕೇಶ್ ಟಿಕಾಯತ್ ಭೇಟಿಗೂ ಮುನ್ನ ದಿನವೇ ಸಂಯುಕ್ತ ಕಿಸಾನ್ ಮೋರ್ಚಾ ಜಾಥಾ ನಡೆಸಲಿದೆ. ಮಾರ್ಚ್.12ರಂದು ಕೇಂದ್ರ ಸರ್ಕಾರ ಜಾರಿಗೊಳಿಸಿರುವ ಕೃಷಿ ಕಾಯ್ದೆಗಳ ವಿರುದ್ಧ ಜಾಥಾ ನಡೆಸುವುದಾಗಿ ಸಂಘಟನೆ ಮುಖ್ಯಸ್ಥ ಯೋಗೇಂದ್ರ ಯಾದವ್ ತಿಳಿಸಿದ್ದಾರೆ. ಇದಕ್ಕೂ ಮೊದಲು ಮಾತನಾಡಿದ ಎಸ್ ಕೆಯು ಸಂಘಟನೆ ಮುಖಂಡ ಬಲ್ಬೀರ್ ಸಿಂಗ್ ರಾಜೇವಾಲ್, ವಿಧಾನಸಭಾ ಚುನಾವಣೆಗಳು ನಡೆಯಲಿರುವ ಪಶ್ಚಿಮ ಬಂಗಾಳ ಮತ್ತು ಕೇರಳಕ್ಕೆ ತೆರಳಿ ಪ್ರಚಾರ ಮಾಡುವುದಾಗಿ ಹೇಳಿದ್ದರು.
"ನಾವು ಚುನಾವಣೆಗಳು ನಡೆಯುವ ರಾಜ್ಯಗಳಿಗೆ ತೆರಳಿ ಅಲ್ಲಿನ ರೈತರೊಂದಿಗೆ ಸಮಾಲೋಚನೆ ನಡೆಸುತ್ತೇವೆ. ಕೇಂದ್ರ ಸರ್ಕಾರವು ರೈತರ ವಿರುದ್ಧ ಪ್ರದರ್ಶಿಸುತ್ತಿರುವ ನಡೆಯ ಬಗ್ಗೆ ಜಾಗೃತಿ ಮೂಡಿಸಲಾಗುತ್ತದೆಠ ಎಂದು ಹೇಳಿದ್ದರು.
ರೈತರ ಪ್ರತಿಭಟನೆಗೆ ಬರೋಬ್ಬರಿ 101 ದಿನ:
ವಿವಾದಿತ ರೈತರ ಉತ್ಪಾದನೆ ವ್ಯಾಪಾರ ಮತ್ತು ವಾಣಿಜ್ಯ (ಪ್ರಚಾರ ಮತ್ತು ಸೌಲಭ್ಯ) ಕಾಯ್ದೆ, ಬೆಲೆ ಭರವಸೆ ಮತ್ತು ಕೃಷಿ ಸೇವೆಗಳ ಕಾಯ್ದೆ (ಸಬಲೀಕರಣ ಮತ್ತು ಸಂರಕ್ಷಣೆ) ಒಪ್ಪಂದ ಹಾಗೂ ಅಗತ್ಯ ಸರಕುಗಳ (ತಿದ್ದುಪಡಿ) ಕಾಯ್ದೆಗಳ ವಿರುದ್ಧ ನವಂಬರ್.26 ರಿಂದ ಪ್ರತಿಭಟನೆ ನಡೆಸಲಾಗುತ್ತಿದೆ. ನವದೆಹಲಿಯ ಸಿಂಘು ಗಡಿ, ಟಿಕ್ರಿ ಗಡಿ ಮತ್ತು ಘಾಜಿಪುರ್ ಗಡಿ ಪ್ರದೇಶಗಳಲ್ಲಿ ಕೇಂದ್ರ ಸರ್ಕಾರದ ವಿರುದ್ಧ 101 ದಿನಗಳಿಂದಲೂ ರೈತರು ಹೋರಾಟ ನಡೆಸುತ್ತಿದ್ದಾರೆ. ಈ ರೈತ ಹೋರಾಟದಲ್ಲಿ ಪಂಜಾಬ್, ಹರಿಯಾಣ, ಪಶ್ಚಿಮ ಉತ್ತರ ಪ್ರದೇಶದ ರೈತರು ಹೆಚ್ಚಿನ ಸಂಖ್ಯೆಯಲ್ಲಿ ಭಾಗಿಯಾಗಿದ್ದಾರೆ.