ಪಶ್ಚಿಮ ಬಂಗಾಳ ಚುನಾವಣೆ ನಂತರದ ಭವಿಷ್ಯ ನುಡಿದ ನಿತಿನ್ ಗಡ್ಕರಿ!
ಕೋಲ್ಕತ್ತಾ, ಮಾರ್ಚ್.03: ಪಶ್ಚಿಮ ಬಂಗಾಳ ವಿಧಾನಸಭಾ ಚುನಾವಣೆಯಲ್ಲಿ ಮತದಾರರು ಪರಿವರ್ತನೆಗೆ ನಾಂದಿ ಹಾಡಲಿದ್ದಾರೆ ಎಂದು ಕೇಂದ್ರದ ಸೂಕ್ಷ್ಮ, ಸಣ್ಣ ಮತ್ತು ಮಧ್ಯಮ ಉದ್ಯಮಗಳ ಖಾತೆ ಸಚಿವ ನಿತಿನ್ ಗಡ್ಕರಿ ವಿಶ್ವಾಸ ವ್ಯಕ್ತಪಡಿಸಿದ್ದಾರೆ.
ಪಶ್ಚಿಮ ಬಂಗಾಳದ ಜೋಯ್ ಪುರ್ ನಲ್ಲಿ ಬಿಜೆಪಿ ಚುನಾವಣಾ ಪ್ರಚಾರದ ಸಭೆಯನ್ನು ಉದ್ದೇಶಿಸಿ ಅವರು ಮಾತನಾಡಿದರು. ಚುನಾವಣೆ ಬಳಿಕ ಮೇ.2ರಂದು ರಾಜ್ಯದಲ್ಲಿ ಪರಿವರ್ತನೆಯ ಗಾಳಿ ಬೀಸಲಿದೆ. ಕಮಲವು ಗೆಲುವಿನ ನಗೆ ಬೀರಲಿದೆ. ಭಾರತೀಯ ಜನತಾ ಪಕ್ಷವು ಸಂಪೂರ್ಣ ಬಹುಮತವನ್ನು ಪಡೆದುಕೊಳ್ಳಲಿದೆ ಎಂದರು.
ರಾಮನನ್ನು ವಿರೋಧಿಸಿದ್ದ ಸರ್ಕಾರದ ಸ್ಥಿತಿ ಈಗೇನಾಗಿದೆ ನೋಡಿ; ಯೋಗಿ ಆದಿತ್ಯಾನಾಥ್
ಮೇ.03ರಂದು ನಮ್ಮ ನಾಯಕರನ್ನು ಆಯ್ಕೆ ಮಾಡಲಾಗುತ್ತದೆ. ಮೇ.04ರಂದು ಪಶ್ಚಿಮ ಬಂಗಾಳದಲ್ಲಿ ಬಿಜೆಪಿಯ ಮುಖ್ಯಮಂತ್ರಿಯು ಪ್ರಮಾಣವಚನ ಸ್ವೀಕರಿಸಲಿದ್ದಾರೆ. ಈ ಬೆಳವಣಿಗೆಗಳನ್ನು ಯಾರೊಬ್ಬರಿಂದಲೂ ತಡೆಯುವುದಕ್ಕೆ ಸಾಧ್ಯವಿಲ್ಲ ಎಂದು ಕೇಂದ್ರ ಸಚಿವ ನಿತಿನ್ ಗಡ್ಕರಿ ಭವಿಷ್ಯ ನುಡಿದಿದ್ದಾರೆ.
ಪಶ್ಚಿಮ ಬಂಗಾಳದಲ್ಲಿ ವಿಧಾನಸಭಾ ಚುನಾವಣೆ:
ಫೆಬ್ರವರಿ.26ರಂದು ನಾಲ್ಕು ರಾಜ್ಯ ಮತ್ತು ಪುದುಚೇರಿ ಕೇಂದ್ರಾಡಳಿತ ಪ್ರದೇಶಗಳಲ್ಲಿ ವಿಧಾನಸಭಾ ಚುನಾವಣೆ ನಡೆಸುವುದಕ್ಕೆ ಕೇಂದ್ರ ಚುನಾವಣಾ ಆಯೋಗವು ದಿನಾಂಕ ಘೋಷಿಸಿತು. ಈ ಪೈಕಿ ಪಶ್ಚಿಮ ಬಂಗಾಳದ 294 ವಿಧಾನಸಭಾ ಕ್ಷೇತ್ರಗಳಿಗೆ ಎಂಟು ಹಂತಗಳಲ್ಲಿ ಮತದಾನ ಪ್ರಕ್ರಿಯೆ ನಡೆಯಲಿದೆ. ಮಾರ್ಚ್.27ರಿಂದ ಆರಂಭವಾಗಲಿರುವ ಚುನಾವಣೆಯು ಏಪ್ರಿಲ್.29ರಂದು ಮುಕ್ತಾಯಗೊಳ್ಳಲಿದ್ದು, ಮೇ.02ರಂದು ಫಲಿತಾಂಶ ಹೊರ ಬೀಳಲಿದೆ.