"ಬಂಗಾಳದಲ್ಲಿ ಮಮತಾ ಬ್ಯಾನರ್ಜಿ ಪ್ರಚಾರಕ್ಕೆ ಅವಕಾಶ ನೀಡಿದರೆ ರಕ್ತಪಾತ"
ಕೋಲ್ಕತ್ತಾ, ಏಪ್ರಿಲ್ 07: ಪಶ್ಚಿಮ ಬಂಗಾಳದಲ್ಲಿ ಭಾರತೀಯ ಜನತಾ ಪಕ್ಷದ ರಾಜ್ಯಾಧ್ಯಕ್ಷ ದಿಲೀಪ್ ಘೋಷ್ ಮತ್ತು ಬೆಂಗಾವಲು ಸಿಬ್ಬಂದಿ ಮೇಲೆ ನಡೆದ ದಾಳಿಯನ್ನು ಖಂಡಿಸಿ ಬೆಂಬಲಿಗರು ಹಾಗೂ ಪಕ್ಷದ ಕಾರ್ಯಕರ್ತರು ಪ್ರತಿಭಟನೆ ನಡೆಸುತ್ತಿದ್ದಾರೆ.
ಕೋಲ್ಕತ್ತಾದಲ್ಲಿ ಇರುವ ಚುನಾವಣಾ ಆಯೋಗದ ಕಚೇರಿ ಎದುರು ಬಿಜೆಪಿ ಮುಖಂಡ ಸೌಮಿತ್ರಾ ಖಾನ್ ನೇತೃತ್ವದಲ್ಲಿ ಟಿಎಂಸಿ ವಿರುದ್ಧ ಪ್ರತಿಭಟನೆ ನಡೆಸಿದರು. ರಾಜ್ಯದಲ್ಲಿ ಯಾವುದೇ ಕಾರಣಕ್ಕೂ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರ ಪ್ರಚಾರಕ್ಕೆ ಅವಕಾಶ ನೀಡದಂತೆ ಆಕ್ರೋಶ ವ್ಯಕ್ತಪಡಿಸಿದರು.
ಬಂಗಾಳ: ಬಿಜೆಪಿ ರಾಜ್ಯಾಧ್ಯಕ್ಷರ ಬೆಂಗಾವಲು ಸಿಬ್ಬಂದಿ ಮೇಲೆ ಹಲ್ಲೆ!?
ಪಶ್ಚಿಮ ಬಂಗಾಳದ ಬಿಜೆಪಿ ರಾಜ್ಯಾಧ್ಯಕ್ಷ ದಿಲೀಪ್ ಘೋಷ್ ಮತ್ತು ಅವರ ಬೆಂಗಾವಲು ಸಿಬ್ಬಂದಿ ಮೇಲೆ ಟಿಎಂಸಿ ಕಾರ್ಯಕರ್ತರು ಹಲ್ಲೆ ನಡೆಸಿದ್ದಾರೆ. ಬಡಿಗೆ, ಇಟ್ಟಿಗೆಗಳಿಂದ ಕಾರಿನ ಗಾಜುಗಳನ್ನು ಒಡೆದಿದ್ದಾರೆ ಎಂದು ಆರೋಪಿಸಲಾಗಿದೆ. ಟಿಎಂಸಿ ಕಾರ್ಯಕರ್ತರು ನಡೆಸಿದ ಹಲ್ಲೆಯ ಘಟನೆ ಮತ್ತು ಬಿಜೆಪಿ ರಾಜ್ಯಾಧ್ಯಕ್ಷರು ಮಾಡುತ್ತಿರುವ ಆರೋಪಗಳ ಕುರಿತು ಒಂದು ವರದಿ ಇಲ್ಲಿದೆ ನೋಡಿ.
|
ಪೊಲೀಸರಿಂದಲೇ ಬಿಜೆಪಿ ಕಾರ್ಯಕರ್ತರ ಮೇಲೆ ಹಲ್ಲೆ
"ಭಾರತೀಯ ಜನತಾ ಪಕ್ಷದ ಪರವಾಗಿ ಕೂಚ್ ಬೆಹರ್ ಜಿಲ್ಲೆಯ ಸಿಟಾಲ್ ಕುಚಿ ಎಂಬಲ್ಲಿ ಪ್ರಚಾರ ನಡೆಸಲಾಗುತ್ತಿತ್ತು. ಇನ್ನೊಂದು ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಚುನಾವಣಾ ಪ್ರಚಾರದ ಮೆರವಣಿಗೆ ಮುಗಿಸಿಕೊಂಡು ವಾಪಸ್ಸಾಗುತ್ತಿದ್ದ ಕೆಲವರು ನಮ್ಮ ಕಾರ್ಯಕರ್ತರು ಮತ್ತು ಬೆಂಗಾವಲು ಸಿಬ್ಬಂದಿಯನ್ನು ಬೆದರಿಸುವುದಕ್ಕೆ ಮುಂದಾದರು. ಮಾರಕಾಸ್ತ್ರಗಳನ್ನು ಹಿಡಿದು ಬೆದರಿಕೆಯೊಡ್ಡಲು ಮುಂದಾದಾಗ ಸ್ಥಳದಲ್ಲಿ ಉದ್ವಿಗ್ನತೆ ಸೃಷ್ಟಿಯಾಯಿತು. ಇದರ ಮಧ್ಯೆ ಪೊಲೀಸರು ನಮ್ಮ ಕಾರ್ಯಕರ್ತರ ಮೇಲೆಯೇ ಹಲ್ಲೆ ನಡೆಸಿದರು" ಎಂದು ದಿಲೀಪ್ ಘೋಷ್ ಆರೋಪಿಸಿದ್ದಾರೆ.
"ಬಡಿಗೆ ಮತ್ತು ಇಟ್ಟಿಗೆಗಳನ್ನು ಹಿಡಿದು ಬಂದಿದ್ದರು"
ಪೊಲೀಸರು ನೀಡಿದ ಸೂಚನೆ ಮೇರೆಗೆ ಕೆಲ ಹೊತ್ತಿನ ಬಳಿಕ ಬಿಜೆಪಿ ಕಾರ್ಯಕರ್ತರು ಅಲ್ಲಿಂದ ವಾಪಸ್ಸಾದರು. ಇದೇ ಸಮಯವನ್ನು ಎದುರು ನೋಡುತ್ತಿದ್ದ ಟಿಎಂಸಿ ಕಾರ್ಯಕರ್ತರು ನಮ್ಮ ಮೇಲೆ ಇಟ್ಟಿಗೆ, ಬಡಿಗೆ ಹಿಡಿದು ಹಲ್ಲೆಗೆ ಮುಂದಾದರು. ಘಟನೆಯಲ್ಲಿ ನನಗೆ ಸಣ್ಣ-ಪುಟ್ಟ ಗಾಯಗಳಾಗಿದ್ದು, ಹಲವು ವಾಹನಗಳಿಗೆ ಹಾನಿಯಾಗಿದೆ ಎಂದು ದಿಲೀಪ್ ಘೋಷಿ ತಿಳಿಸಿದ್ದಾರೆ.
"ದೀದಿ ಪ್ರಚಾರಕ್ಕೆ ಅನುಮತಿ ನೀಡಿದರೆ ರಾಜ್ಯದಲ್ಲಿ ರಕ್ತಪಾತ"
ಪಶ್ಚಿಮ ಬಂಗಾಳದಲ್ಲಿ ವಿಧಾನಸಭಾ ಚುನಾವಣೆ ಹೊಸ್ತಿಲಿನಲ್ಲಿ ತೃಣಮೂಲ ಕಾಂಗ್ರೆಸ್ ಪಕ್ಷದ ಮುಖ್ಯಸ್ಥೆ ಮಮತಾ ಬ್ಯಾನರ್ಜಿ ಅವರು ನಿರ್ದಿಷ್ಟ ಸಮುದಾಯದ ಜನರಿಗೆ ಪ್ರಚೋದನೆ ನೀಡುತ್ತಿದ್ದಾರೆ. ಇಂದು ನಡೆದ ಘಟನೆಯನ್ನು ಚುನಾವಣಾ ಆಯೋಗ ಗಂಭೀರವಾಗಿ ಪರಿಗಣಿಸಬೇಕು. ರಾಜ್ಯದಲ್ಲಿ ಬಿಗಿ ಭದ್ರತೆಯನ್ನು ನಿಯೋಜಿಸಬೇಕು. ಮಮತಾ ಬ್ಯಾನರ್ಜಿ ಅವರ ಚುನಾವಣಾ ರ್ಯಾಲಿಗಳನ್ನು ತಡೆಯಬೇಕು. ಇಲ್ಲದಿದ್ದರೆ ರಾಜ್ಯದಲ್ಲಿ ರಕ್ತಪಾತವಾಗಲಿದೆ ಎಂದು ದಿಲೀಪ್ ಘೋಷ್ ಆರೋಪಿಸಿದ್ದಾರೆ.
|
ಕೋಲ್ಕತ್ತಾದಲ್ಲಿರುವ ಆಯೋಗದ ಕಚೇರಿ ಬಳಿ ಪ್ರತಿಭಟನೆ
ಪಶ್ಚಿಮ ಬಂಗಾಳದ ಬಿಜೆಪಿ ರಾಜ್ಯಾಧ್ಯಕ್ಷ ದಿಲೀಪ್ ಘೋಷ್ ಮೇಲೆ ನಡೆಸಿದ ಹಲ್ಲೆಗೆ ಸಂಬಂಧಿಸಿದಂತೆ ಚುನಾವಣಾ ಆಯೋಗಕ್ಕೆ ದೂರು ನೀಡಿದ್ದೇವೆ ಎಂದು ಸೌಮೇಂದ್ರ ಖಾನ್ ತಿಳಿಸಿದರು. ಕೋಲ್ಕತ್ತಾದ ಚುನಾವಣಾ ಆಯೋಗದ ಕಚೇರಿ ಎದುರು ಪ್ರತಿಭಟನೆ ನಡೆಸಿದ ನಂತರದಲ್ಲಿ ಆಯೋಗದ ಅಧಿಕಾರಿಗಳಿಗೆ ಬಿಜೆಪಿ ದೂರು ಸಲ್ಲಿಸಿತು. ನಮ್ಮ ನಾಯಕರ ಮೇಲೆ ಹಲ್ಲೆ ನಡೆಸಿದ ಆರೋಪಿಗಳನ್ನು ಬಂಧಿಸಬೇಕು. ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರ ಸಾರ್ವಜನಿಕರ ಪ್ರಚಾರಕ್ಕೆ ನಿರ್ಬಂಧ ವಿಧಿಸಬೇಕು ಎಂದು ಕೋರಿ ಆಯೋಗದಲ್ಲಿ ದೂರು ಸಲ್ಲಿಸಲಾಗಿದೆ ಎಂದು ಅವರು ತಿಳಿಸಿದರು.