ರೌಡಿ ರಾಜಕಾರಣ: ಬಂಗಾಳದಲ್ಲಿ ಪ್ರಧಾನಿ ಮೋದಿ ವಿರುದ್ಧ ಇದೆಂಥಾ ಆರೋಪ!?
ಪುರುಲಿಯಾ, ಮಾರ್ಚ್ 24: ಪಶ್ಚಿಮ ಬಂಗಾಳ ವಿಧಾನಸಭಾ ಚುನಾವಣೆ ಹಿನ್ನೆಲೆ ಭಾರತೀಯ ಜನತಾ ಪಕ್ಷವು ರಾಜ್ಯಕ್ಕೆ ಗೂಂಡಾಗಳನ್ನು ಕರೆ ತಂದಿದೆ ಎಂದು ಟಿಎಂಸಿ ಮುಖ್ಯಸ್ಥೆ ಮಮತಾ ಬ್ಯಾನರ್ಜಿ ಅವರು ಆರೋಪಿಸಿದ್ದಾರೆ.
ಪಶ್ಚಿಮ ಬಂಗಾಳದ ಬಿಷ್ಣುಪುರ್ ಸಾರ್ವಜನಿಕ ಸಭೆಯನ್ನು ಉದ್ದೇಶಿಸಿ ಅವರು ಮಾತನಾಡಿ, "ದೇಶದ ಪ್ರಧಾನಮಂತ್ರಿ ಸ್ಥಾನದ ಬಗ್ಗೆ ನನಗೆ ಅಪಾರವಾದ ಗೌರವವಿದೆ. ಆದರೆ ನರೇಂದ್ರ ಮೋದಿ ಅವರಂತಾ ಸುಳ್ಳುಗಾರ ಪ್ರಧಾನಮಂತ್ರಿಯನ್ನು ನಾನು ಎಂದಿಗೂ ನೋಡಿರಲಿಲ್ಲ" ಎಂದು ಕಿಡಿ ಕಾರಿದ್ದಾರೆ.
ಬಿಜೆಪಿ ನಿಮ್ಮ ಖಾತೆಗೆ ಇನ್ನೂ 15 ಲಕ್ಷ ರೂ. ಹಾಕಿಲ್ಲ: ಮಮತಾ ಬ್ಯಾನರ್ಜಿ
ನರೇಂದ್ರ ಮೋದಿ ಅವರು ಕೇವಲ ಸುಳ್ಳನ್ನೇ ಮಾತನಾಡುತ್ತಾರೆ. ಇಂದು ದೇಶದಲ್ಲಿ ಯಾರು ಗೂಂಡಾಗಳು ಎಂಬ ಪ್ರಶ್ನೆ ಹುಟ್ಟಿಕೊಳ್ಳುತ್ತಿದೆ. ಉತ್ತರ ಪ್ರದೇಶದಲ್ಲಿ ಬಿಜೆಪಿ ಸರ್ಕಾರದ ಹಿಂಸೆ ಸಹಿಸಲಾಗದೇ ಐಪಿಎಂ ಅಧಿಕಾರಿಗಳೇ ರಾಜೀನಾಮೆ ನೀಡುತ್ತಿದ್ದಾರೆ ಎಂದು ಮಮತಾ ಬ್ಯಾನರ್ಜಿ ವಾಗ್ದಾಳಿ ನಡೆಸಿದರು.
"ಗೂಂಡಾಗಳನ್ನು ಬಂಗಾಳಕ್ಕೆ ಕರೆ ತಂದ ಬಿಜೆಪಿ"
ಪಶ್ಚಿಮ ಬಂಗಾಳದಲ್ಲಿ ಸಂಸ್ಕೃತಿಯನ್ನು ನಾಶಪಡಿಸುವ ಉದ್ದೇಶವನ್ನು ಇಟ್ಟುಕೊಂಡು ಭಾರತೀಯ ಜನತಾ ಪಕ್ಷವು ಉತ್ತರ ಪ್ರದೇಶದಿಂದ ಗೂಂಡಾಗಳನ್ನು ಕರೆ ತರುತ್ತಿದೆ ಎಂದು ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಆರೋಪಿಸಿದ್ದಾರೆ.
ಮೋದಿ, ಅಮಿತ್ ಶಾ, ಅದಾನಿ ಬಗ್ಗೆ ದೀದಿ ಮಾತು
ದೇಶದಲ್ಲಿ ವಿವಾದಿತ ಕೃಷಿ ಕಾಯ್ದೆಗಳನ್ನು ವಾಪಸ್ ಪಡೆಯುವಂತೆ ಆಗ್ರಹಿಸಿ ರೈತರು ನಿರಂತರ ಹೋರಾಟ ನಡೆಸುತ್ತಿದ್ದಾರೆ. ಕೇಂದ್ರ ಸರ್ಕಾರ ಮಾತ್ರ ಈ ಬಗ್ಗೆ ತಲೆ ಕೆಡಿಸಿಕೊಳ್ಳುತ್ತಿಲ್ಲ. ಪ್ರಧಾನಿ ನರೇಂದ್ರ ಮೋದಿ, ಗೃಹ ಸಚಿವ ಅಮಿತ್ ಶಾ ಮತ್ತು ಅದಾನಿ ಒಕ್ಕೂಟವು ಲಾಭ ಗಳಿಕೆಯಲ್ಲೇ ಬ್ಯುಸಿ ಆಗಿದೆ. ಎಲ್ಲ ಹಣ ಮತ್ತು ಸರಕುಗಳನ್ನು ಅದಾನಿ ಲೂಟಿ ಹೊಡೆಯುತ್ತಿದ್ದಾರೆ. ಪ್ರಧಾನಿ ನರೇಂದ್ರ ಮೋದಿ, ಅಮಿತ್ ಶಾ, ಅದಾನಿ ತಮ್ಮ ಹೊಟ್ಟೆ ತುಂಬಿಸಿಕೊಳ್ಳುತ್ತಿದ್ದಾರೆ ಎಂದು ದೀದಿ ಕಿಡಿ ಕಾರಿದ್ದಾರೆ.
"ವಿದ್ಯಾರ್ಥಿನಿಯರ ಶಿಕ್ಷಣಕ್ಕೆ ಹಣ ನೀಡಿಲ್ಲ ಕೇಂದ್ರ"
ಕೇಂದ್ರ ಸರ್ಕಾರವು ಬೇಟಿ ಪಡಾವೋ, ಬೇಟಿ ಬಚಾವೋ ಯೋಜನೆ ಅಡಿ ಒಂದೇ ಒಂದು ರೂಪಾಯಿ ಖರ್ಚು ಮಾಡಿಲ್ಲ. ನಮ್ಮ ಸರ್ಕಾರವು ವಿದ್ಯಾರ್ಥಿನಿಯರ ಶಿಕ್ಷಣಕ್ಕೆ ಅನುಕೂಲವಾಗುವಂತೆ 1000 ದಿಂದ 2500ದವರೆಗೂ ವಿದ್ಯಾರ್ಥಿ ವೇತನವನ್ನು ನೀಡಲಾಗಿದೆ ಎಂದು ಮಮತಾ ಬ್ಯಾನರ್ಜಿ ತಿಳಿಸಿದ್ದಾರೆ.
ಪಶ್ಚಿಮ ಬಂಗಾಳದಲ್ಲಿ 8 ಹಂತದ ಚುನಾವಣೆ
ಪಶ್ಚಿಮ ಬಂಗಾಳದಲ್ಲಿ ಎಂಟು ಹಂತಗಳಲ್ಲಿ ಚುನಾವಣೆ ನಡೆಯಲಿದ್ದು, ಮಾರ್ಚ್ 27, ಏಪ್ರಿಲ್ 1, ಏಪ್ರಿಲ್ 6, ಏಪ್ರಿಲ್ 10, ಏಪ್ರಿಲ್ 17, ಏಪ್ರಿಲ್ 22, ಏಪ್ರಿಲ್ 26 ಮತ್ತು ಏಪ್ರಿಲ್ 29ರಂದು ಮತದಾನ ನಡೆಯಲಿದೆ. ಚುನಾವಣೆಯ ಅಂತಿಮ ಫಲಿತಾಂಶ ಮೇ 2ರಂದು ಹೊರ ಬೀಳಲಿದೆ.