ಪಶ್ಚಿಮ ಬಂಗಾಳದಲ್ಲಿ ಕೊರೊನಾ ಸೋಂಕು ಹೆಚ್ಚಳಕ್ಕೆ ಬಿಜೆಪಿಯೇ ಹೊಣೆ:ಮಮತಾ
ಕೋಲ್ಕತ್ತಾ, ಏಪ್ರಿಲ್ 16: ಪಶ್ಚಿಮ ಬಂಗಾಳದಲ್ಲಿ ಕೊರೊನಾ ಸೋಂಕು ಹೆಚ್ಚಳಕ್ಕೆ ಬಿಜೆಪಿಯೇ ನೇರ ಹೊಣೆ ಎಂದು ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ದೂರಿದ್ದಾರೆ.
ಪಶ್ಚಿಮ ಬಂಗಾಳದಲ್ಲಿ ಕೊರೊನಾ ಪ್ರಕರಣಗಳು ಹೆಚ್ಚಾಗಲು ಬಿಜೆಪಿಯೇ ಕಾರಣ ಎಂದು ಆರೋಪಿಸಿರುವ ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ, ಚುನಾವಣಾ ಪ್ರಚಾರದ ಸಮಯದಲ್ಲಿ ಕೇಸರಿ ಪಕ್ಷ ಹೊರಗಿನವರನ್ನು ಕರೆತರುವುದನ್ನು ತಡೆಯಬೇಕು ಎಂದು ಚುನಾವಣಾ ಆಯೋಗಕ್ಕೆ ಒತ್ತಾಯಿಸಿದ್ದಾರೆ.
ಪ್ರಧಾನಿ ಮೋದಿ ಅಥವಾ ಇತರ ನಾಯಕರು ಪ್ರಚಾರಕ್ಕಾಗಿ ಬಂದರೆ ನಾವು ಏನನ್ನೂ ಹೇಳುವುದಿಲ್ಲ. ಆದರೆ ಬಿಜೆಪಿ ಕೊರೊನಾ ಪೀಡಿತ ರಾಜ್ಯಗಳ ಜನರನ್ನು ರ್ಯಾಲಿಗಳಿಗೆ ಕರೆತರುತ್ತಿರುವುದು ಏಕೆ? ಎಂದು ದೀದಿ ಪ್ರಶ್ನಿಸಿದ್ದಾರೆ.

ನಾಡಿಯಾ ಜಿಲ್ಲೆಯಲ್ಲಿ ಚುನಾವಣಾ ಪ್ರಚಾರ ಸಭೆ ಉದ್ದೇಶಿಸಿ ಮಾತನಾಡಿದ ಬ್ಯಾನರ್ಜಿ, ಪ್ರಧಾನಿ ನರೇಂದ್ರ ಮೋದಿಯವರ ರ್ಯಾಲಿಗಳಿಗೆ ಹೆಚ್ಚಿನ ಸಂಖ್ಯೆಯಲ್ಲಿ ಜನ ಸೇರಿಸಲು ಬಿಜೆಪಿ ಕೊರೊನಾ ಪೀಡಿತ ಗುಜರಾತ್ನಂತಹ ರಾಜ್ಯಗಳಿಂದ ಜನರನ್ನು ಕರೆತರುತ್ತಿದೆ ಎಂದಿದ್ದಾರೆ.
ಬಂಗಾಳದಲ್ಲಿ ಕೋವಿಡ್ ಪ್ರಕರಣಗಳು ಹೆಚ್ಚಾಗಲು ಕಾರಣವಾಗಿರುವ ಗುಜರಾತ್ ನಂತಹ ರಾಜ್ಯಗಳಿಂದ ಬರುವ ಜನರಿಗೆ ಪ್ರವೇಶ ನಿಷೇಧಿಸಬೇಕು ಎಂದು ನಾನು ಚುನಾವಣಾ ಆಯೋಗಕ್ಕೆ ಒತ್ತಾಯಿಸುತ್ತೇವೆ ಎಂದಿದ್ದಾರೆ.
ದೇಶದಲ್ಲಿ ಕಳೆದ 24 ಗಂಟೆಗಳಲ್ಲಿ 2,17,353 ಮಂದಿಗೆ ಕೊರೊನಾವೈರಸ್ ಸೋಂಕು ತಗುಲಿರುವುದು ವೈದ್ಯಕೀಯ ತಪಾಸಣೆಯಲ್ಲಿ ಖಾತ್ರಿಯಾಗಿದೆ.
ಒಂದು ದಿನದಲ್ಲಿ 1185 ಮಂದಿ ಕೊವಿಡ್-19 ಸೋಂಕಿಗೆ ಬಲಿಯಾಗಿದ್ದು, ಸಾವಿನ ಸಂಖ್ಯೆ 1,74,308ಕ್ಕೆ ಏರಿಕೆಯಾಗಿದೆ. ಇದೇ ಅವಧಿಯಲ್ಲಿ 1,18,302 ಸೋಂಕಿತರು ಗುಣಮುಖರಾಗಿದ್ದು, ಈವರೆಗೂ 1,25,47,866 ಮಂದಿ ಗುಣಮುಖರಾಗಿ ಆಸ್ಪತ್ರೆಗಳಿಂದ ಡಿಸ್ಚಾರ್ಜ್ ಆಗಿದ್ದಾರೆ.
ದೇಶದಲ್ಲಿ ಒಟ್ಟು 1,42,91,917 ಸೋಂಕಿತ ಪ್ರಕರಣಗಳು ವರದಿಯಾಗಿದ್ದು, ಪ್ರಸ್ತುತ 15,69,743 ಸಕ್ರಿಯ ಪ್ರಕರಣಗಳಿವೆ ಎಂದು ಕೇಂದ್ರ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವಾಲಯ ಮಾಹಿತಿ ನೀಡಿದೆ.












Click it and Unblock the Notifications