ಬಂಗಾಳದಲ್ಲಿ ಕೋಮು ಗೊಂದಲ ಸೃಷ್ಟಿಸಲು ಬಿಜೆಪಿ ಯತ್ನ; ಮಮತಾ ಬ್ಯಾನರ್ಜಿ
ಕೋಲ್ಕತ್ತಾ, ಏಪ್ರಿಲ್ 04: ಪಶ್ಚಿಮ ಬಂಗಾಳವನ್ನು ವಶಪಡಿಸಿಕೊಳ್ಳುವುದಕ್ಕಾಗಿ ಭಾರತೀಯ ಜನತಾ ಪಕ್ಷವು ಉತ್ತರ ಪ್ರದೇಶ ಮತ್ತು ಗುಜರಾತ್ನಿಂದ ಗೂಂಡಾಗಳನ್ನು ಕರೆ ತರುತ್ತಿದೆ ಎಂದು ತೃಣಮೂಲ ಕಾಂಗ್ರೆಸ್ ಪಕ್ಷದ ಮುಖ್ಯಸ್ಥೆ ಮಮತಾ ಬ್ಯಾನರ್ಜಿ ಆರೋಪಿಸಿದ್ದಾರೆ.
ವಿಧಾನಸಭಾ ಚುನಾವಣೆ ಹಿನ್ನೆಲೆ ಹೌರಾ ಪ್ರದೇಶದ ಪ್ರಚಾರ ಸಭೆಯನ್ನು ಉದ್ದೇಶಿಸಿ ಅವರು ಮಾತನಾಡಿದರು. ರಾಜ್ಯದಲ್ಲಿ ಕೋಮು ಗೊಂದಲ ಸೃಷ್ಟಿಸುವುದಕ್ಕೆ ಬಿಜೆಪಿ ಪ್ರಯತ್ನಿಸುತ್ತಿದೆ. ಆದರೆ ನಾವು ಪಶ್ಚಿಮ ಬಂಗಾಳವನ್ನು ಗುಜರಾತ್ನಂತೆ ಮಾಡಲು ಬಿಡುವುದಿಲ್ಲ ಎಂದು ಕಿಡಿ ಕಾರಿದರು.
ಸಾಧ್ಯವಾದರೆ ನಮ್ಮನ್ನು ಗೆಲುವಿನಿಂದ ತಡೆಯಿರಿ; ಬಿಜೆಪಿಗೆ ಟಿಎಂಸಿ ಸವಾಲು
"ಬಿಜೆಪಿಯವರು ರೈತರಿಗೆ ಹಣ ನೀಡಿದ್ದೇವೆ ಎಂದು ದೊಡ್ಡ ದೊಡ್ಡ ಡೈಲಾಗ್ ಹೇಳಿಕೊಂಡು ತಿರುಗುತ್ತಿದ್ದಾರೆ. ನಾನು ಈಗಾಗಲೇ ಅವರಿಗೆ ಫಲಾನುಭವಿಗಳ ಪಟ್ಟಿಯನ್ನು ಕಳುಹಿಸಿದ್ದೇನೆ. ಆದರೆ ಅವರೇಕೆ ಹಣವನ್ನು ಕಳಿಸುತ್ತಿಲ್ಲ ಎಂದು ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಪ್ರಶ್ನೆ ಮಾಡಿದರು.
ಪೊಲೀಸ್ ಅಧಿಕಾರಿಗಳ ನಿರಂತರ ಬದಲಾವಣೆ:
ಪ್ರಧಾನಮಂತ್ರಿ ನರೇಂದ್ರ ಮೋದಿ ಸಿಂಡಿಕೇಟ್ 1 ಮತ್ತು ಗೃಹ ಸಚಿವ ಅಮಿತ್ ಶಾ ಸಿಂಡಿಕೇಟ್ 2ರಂತೆ ಕೆಲಸ ಮಾಡುತ್ತಿದ್ದಾರೆ. ಅವರು ಅಭಿಷೇಕ್ ನಿವಾಸ, ಸುದೀಪ್ ನಿವಾಸ ಹಾಗೂ ಸ್ಟಾಲಿನ್ ಅವರ ಮಗಳ ನಿವಾಸಕ್ಕೆ ಏಜೆನ್ಸಿಗಳನ್ನು ಕಳುಹಿಸುತ್ತಿದ್ದಾರೆ. ಪೊಲೀಸ್ ಅಧಿಕಾರಿಗಳನ್ನು ನಿರಂತರವಾಗಿ ಬದಲಾಯಿಸುತ್ತಿದ್ದಾರೆ ಎಂದು ಪಶ್ಚಿಮ ಬಂಗಾಳ ಸಿಎಂ ಮಮತಾ ಬ್ಯಾನರ್ಜಿ ಆರೋಪಿಸಿದರು.
ಪಶ್ಚಿಮ ಬಂಗಾಳದಲ್ಲಿ ಎಂಟು ಹಂತಗಳಲ್ಲಿ ಚುನಾವಣೆ ನಡೆಯಲಿದ್ದು, ಎರಡು ಹಂತದ ಮತದಾನ ಪ್ರಕ್ರಿಯೆ ಮುಕ್ತಾಯಗೊಂಡಿದೆ. ಏಪ್ರಿಲ್ 6, ಏಪ್ರಿಲ್ 10, ಏಪ್ರಿಲ್ 17, ಏಪ್ರಿಲ್ 22, ಏಪ್ರಿಲ್ 26 ಮತ್ತು ಏಪ್ರಿಲ್ 29ರಂದು ಮತದಾನ ನಡೆಯಲಿದೆ. ಚುನಾವಣೆಯ ಅಂತಿಮ ಫಲಿತಾಂಶ ಮೇ 2ರಂದು ಹೊರ ಬೀಳಲಿದೆ.