Breaking; ಪದ್ಮ ಪ್ರಶಸ್ತಿ ತಿರಸ್ಕರಿಸಿದ ಬುದ್ಧದೇವ್ ಭಟ್ಟಾಚಾರ್ಯ
ಕೋಲ್ಕತ್ತಾ, ಜನವರಿ 25; ಕೇಂದ್ರ ಸರ್ಕಾರ 73ನೇ ಗಣರಾಜ್ಯೋತ್ಸವದ ಮುನ್ನಾ ದಿನ ದೇಶದ ಅತ್ಯುನ್ನತ ನಾಗರಿಕ ಪ್ರಶಸ್ತಿಯಾದ ಪದ್ಮ ಪ್ರಶಸ್ತಿಗಳನ್ನು ಘೋಷಣೆ ಮಾಡಿದೆ. ಬುದ್ಧದೇವ್ ಭಟ್ಟಾಚಾರ್ಯ ಪದ್ಮ ಭೂಷಣ ಪ್ರಶಸ್ತಿ ತಿರಸ್ಕರಿಸಿದ್ದಾರೆ.
ಮಂಗಳವಾರ ಕೇಂದ್ರ ಗೃಹ ಇಲಾಖೆ 2022ನೇ ಸಾಲಿನ ಪದ್ಮ ಪ್ರಶಸ್ತಿ ಪ್ರಕಟಿಸಿತು. ಪಶ್ಚಿಮ ಬಂಗಾಳದ ಮಾಜಿ ಮುಖ್ಯಮಂತ್ರಿ ಬುದ್ಧದೇವ್ ಭಟ್ಟಾಚಾರ್ಯಗೆ ಪದ್ಮ ಭೂಷಣ ಪ್ರಶಸ್ತಿ ಘೋಷಣೆ ಮಾಡಿತ್ತು.
ಪ್ರಶಸ್ತಿ ಘೋಷಣೆಯಾದ ಕೆಲವೇ ಗಂಟೆಗಳಲ್ಲಿ ಸಿಪಿಎಂ ಪಕ್ಷದ ಹಿರಿಯ ನಾಯಕ, ಮಾಜಿ ಮುಖ್ಯಮಂತ್ರಿ ಬುದ್ಧದೇವ್ ಭಟ್ಟಾಚಾರ್ಯ ಪದ್ಮ ಭೂಷಣ ಪ್ರಶಸ್ತಿ ತಿರಸ್ಕಾರ ಮಾಡಿದ್ದಾರೆ. ಈ ಕುರಿತು ಅವರು ಪತ್ರಿಕಾ ಪ್ರಕಟಣೆ ಬಿಡುಗಡೆ ಮಾಡಿದ್ದಾರೆ.

"ನನಗೆ ಪದ್ಮ ಭೂಷಣ ಪ್ರಶಸ್ತಿ ಬಗ್ಗೆ ಏನೂ ಗೊತ್ತಿಲ್ಲ. ಯಾರೂ ನನಗೆ ಈ ಬಗ್ಗೆ ಏನೂ ಹೇಳಿಲ್ಲ. ಅವರು ನನಗೆ ಪದ್ಮ ಭೂಷಣ ಪ್ರಶಸ್ತಿ ನೀಡಿದ್ದರೆ ಅದನ್ನು ನಾನು ತಿರಸ್ಕಾರ ಮಾಡುತ್ತೇನೆ" ಎಂದು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಸಿಪಿಎಂನ ಹಿರಿಯ ನಾಯಕ ಬುದ್ಧದೇವ್ ಭಟ್ಟಾಚಾರ್ಯ ಜ್ಯೋತಿ ಬಸು ಬಳಿಕ ಪಶ್ಚಿಮ ಬಂಗಾಳ ಮುಖ್ಯಮಂತ್ರಿಯಾದ ಪ್ರಭಾವಿ ನಾಯಕ. ಮಮತಾ ಬ್ಯಾನರ್ಜಿ ಅಲೆ ಬಳಿಕ ಸಿಪಿಎಂ ರಾಜ್ಯದಲ್ಲಿ ತೆರೆಮರೆಗೆ ಸರಿದಿದೆ. ಬುದ್ಧದೇವ್ ಭಟ್ಟಾಚಾರ್ಯ ಅವರು ಸಹ ತೀವ್ರ ಅನಾರೋಗ್ಯದಿಂದ ಬಳಲುತ್ತಿದ್ದಾರೆ.
ಸರ್ಕಾರ ಹೇಳುವುದೇನು?; ಪದ್ಮ ಭೂಷಣ ಪ್ರಶಸ್ತಿ ಬಗ್ಗೆ ನನಗೆ ಏನೂ ಗೊತ್ತಿಲ್ಲ. ಯಾರೂ ನನಗೆ ಈ ಬಗ್ಗೆ ಏನೂ ಹೇಳಿಲ್ಲ ಎಂದು ಪ್ರಕಟಣೆಯಲ್ಲಿ ಬುದ್ಧದೇವ್ ಭಟ್ಟಾಚಾರ್ಯ ಹೇಳಿದ್ದರು. ಈ ಕುರಿತು ಸರ್ಕಾರದ ಮೂಲಗಳು ಮಾಹಿತಿ ನೀಡಿದ್ದು, ಇಂದು ಬೆಳಗ್ಗೆಯೇ ಕುಟುಂಬದವರಿಗೆ ಕೇಂದ್ರ ಸರ್ಕಾರದ ಹಿರಿಯ ಅಧಿಕಾರಿಗಳಿಂದ ಮಾಹಿತಿ ನೀಡಲಾಗಿತ್ತು. ಅವರ ಪತ್ನಿ ಅಧಿಕಾರಿಗಳ ಜೊತೆ ಮಾತನಾಡಿದ್ದರು ಎಂದು ಹೇಳಿದೆ.












Click it and Unblock the Notifications