ಶೀಘ್ರದಲ್ಲಿಯೇ ಪೌರತ್ವ ತಿದ್ದುಪಡಿ ಕಾಯ್ದೆ ಅನುಷ್ಠಾನ: ಬಿಜೆಪಿ ಅಧ್ಯಕ್ಷ ಜೆಪಿ ನಡ್ಡಾ
ಕೋಲ್ಕತಾ, ಅಕ್ಟೋಬರ್ 20: ಕೋವಿಡ್ ಪಿಡುಗಿನ ಕಾರಣದಿಂದ ವಿಳಂಬವಾಗಿದ್ದ ಪೌರತ್ವ ತಿದ್ದುಪಡಿ ಕಾಯ್ದೆಯ ಅನುಷ್ಠಾನವನ್ನು ಶೀಘ್ರದಲ್ಲಿಯೇ ನಡೆಸುವುದಾಗಿ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ. ನಡ್ಡಾ ತಿಳಿಸಿದ್ದಾರೆ.
ಉತ್ತರ ಬಂಗಾಳದ ಸಿಲಿಗುರಿಯಲ್ಲಿ ಪಕ್ಷದ ಕಾರ್ಯಕರ್ತರನ್ನು ಉದ್ದೇಶಿಸಿ ಮಾತನಾಡಿದ ನಡ್ಡಾ, ಪಶ್ಚಿಮ ಬಂಗಾಳ ಸರ್ಕಾರವು ಒಡೆದು ಆಳುವ ನೀತಿ ಅನುಸರಿಸುತ್ತಿದೆ ಮತ್ತು ಕೇಂದ್ರ ಸರ್ಕಾರದ ಯೋಜನೆಗಳ ಪ್ರಯೋಜನ ರಾಜ್ಯದ ಜನರಿಗೆ ಸಿಗದಂತೆ ತಡೆಯುತ್ತಿದ್ದಾರೆ ಎಂದು ಆರೋಪಿಸಿದ್ದಾರೆ.
'ಕೋವಿಡ್-19 ಸೋಂಕು ಪಿಡುಗಿನ ಕಾರಣದಿಂದ ಪೌರತ್ವ ತಿದ್ದುಪಡಿ ಕಾಯ್ದೆಯ ಜಾರಿ ತಡವಾಗಿತ್ತು. ಆದರೆ ಒಟ್ಟಾರೆ ಪರಿಸ್ಥಿತಿ ನಿಧಾನವಾಗಿ ಸುಧಾರಣೆಯಾಗುತ್ತಿದೆ. ಸಿಎಎ ಶೀಘ್ರದಲ್ಲಿಯೇ ಅನುಷ್ಠಾನಕ್ಕೆ ಬರಲಿದ್ದು, ನೀವು ಕಾನೂನಿನ ಪ್ರಯೋಜನವನ್ನು ಪಡೆದುಕೊಳ್ಳುತ್ತೀರಿ. ನಾವು ಅದಕ್ಕೆ ಬದ್ಧರಾಗಿದ್ದೇವೆ' ಎಂದಿದ್ದಾರೆ.
'ಪ್ರಧಾನಿ ನರೇಂದ್ರ ಮೋದಿ ಅವರ ನೀತಿಗಳು ಎಲ್ಲವನ್ನೂ ಒಳಗೊಳ್ಳುವ ಮತ್ತು ಎಲ್ಲರ ಅಭಿವೃದ್ಧಿಯ ಗುರಿ ಹೊಂದಿವೆ. ಸಬ್ಕಾ ಸಾತ್, ಸಬ್ಕಾ ವಿಕಾಸ್ ಎನ್ನುವುದು ನಮ್ಮ ಘೋಷವಾಕ್ಯ. ಇನ್ನೊಂದೆಡೆ ಮಮತಾ ಬ್ಯಾನರ್ಜಿ ಸರ್ಕಾರವು ಒಡೆದು ಮತ್ತು ಆಳುವ ನೀತಿಯ ಮೇಲೆ ನಂಬಿಕೆ ಇರಿಸಿದೆ. ಚುನಾವಣೆ ಸಮೀಪಿಸುತ್ತಿದ್ದಂತೆಯೇ ರಾಜ್ಯ ಸರ್ಕಾರವು ಸೌಲಭ್ಯಗಳನ್ನು ಒದಗಿಸುವ ಮೂಲಕ ಎಲ್ಲರನ್ನೂ ಒಂದುಗೂಡಿಸುವ ಪ್ರಯತ್ನ ಮಾಡುತ್ತದೆ. ಆದರೆ ಎಲ್ಲರನ್ನೂ ತಮ್ಮೊಂದಿಗೆ ಕೊಂಡೊಯ್ಯುವ ಸಾಮರ್ಥ್ಯ ಇರುವುದು ಪ್ರಧಾನಿ ಮೋದಿ ಅವರಿಗೆ ಮಾತ್ರ. ಜನರಿಗೆ ನೀಡಿದ ಭರವಸೆಯನ್ನು ಬಿಜೆಪಿ ಈಡೇರಿಸುತ್ತಿದೆ' ಎಂದು ಹೇಳಿದ್ದಾರೆ.