ಬಿಜೆಪಿ ನಂದಿಗ್ರಾಮದ ಮತದಾರರಲ್ಲಿ ಭಯ ಹುಟ್ಟಿಸುತ್ತಿದೆ: ಮಮತಾ ಬ್ಯಾನರ್ಜಿ
ನಂದಿಗ್ರಾಮ, ಮಾರ್ಚ್ 30: ಬಿಜೆಪಿಯು ನಂದಿಗ್ರಾಮದ ಮತದಾರರಲ್ಲಿ ಭಯ ಹುಟ್ಟಿಸುತ್ತಿದೆ ಎಂದು ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಆರೋಪಿಸಿದ್ದಾರೆ.
ಬಿಜೆಪಿ ಏನೇ ಮಾಡಿದರೂ ನಂದಿಗ್ರಾಮದಲ್ಲಿ ನಾನು ಭಾರಿ ಅಂತರದಿಂದ ಗೆಲುವು ಸಾಧಿಸುವ ವಿಶ್ವಾಸವಿದೆ ಮತ್ತು ರಾಜ್ಯದಲ್ಲಿ ಟಿಎಂಸಿ ಸತತ ಮೂರನೇ ಅವಧಿಗೆ ಅಧಿಕಾರಕ್ಕೆ ಬರಲಿದೆ ಎಂದು ಮಮತಾ ಬ್ಯಾನರ್ಜಿ ಅವರು ಹೇಳಿದ್ದಾರೆ.
ನಂದಿಗ್ರಾಮ ವಿಧಾನಸಭಾ ಕ್ಷೇತ್ರದ ಮತದಾರರಲ್ಲಿ ಭೀತಿ ಹುಟ್ಟಿಸಲು ಬಿಜೆಪಿ ಆಡಳಿತದ ರಾಜ್ಯಗಳ ಪೊಲೀಸ್ ಪಡೆಗಳನ್ನು ಕರೆತರಲಾಗಿದೆ ಎಂದು ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಮಂಗಳವಾರ ಆರೋಪಿಸಿದ್ದಾರೆ.

ಹೊರಗಿನಿಂದ ಬಂದ ಪೊಲೀಸ್ ಸಿಬ್ಬಂದಿ ಅನುಚಿತವಾಗಿ ವರ್ತಿಸಿದ್ದಾರೆಂದು ನಾವು ಚುನಾವಣಾ ಆಯೋಗಕ್ಕೆ ದೂರು ನೀಡುತ್ತೇವೆ ಎಂದು ಸಿಎಂ ಹೇಳಿದರು. ಪಶ್ಚಿಮ ಬಂಗಾಳ ವಿಧಾನಸಭೆ ಚುನಾವಣೆಯ ಕೇಂದ್ರಬಿಂದುವಾಗಿರುವ ನಂದಿಗ್ರಾಮದಲ್ಲಿ ಮಮತಾ ಬ್ಯಾನರ್ಜಿ ವಿರುದ್ಧ ಬಿಜೆಪಿಯಿಂದ ಸುವೇಂದು ಅಧಿಕಾರಿ ಸ್ಪರ್ಧಿಸಿದ್ದು, ಜಿದ್ದಾಜಿದ್ದಿನ ಕಣವಾಗಿ ಮಾರ್ಪಟ್ಟಿದೆ.
ಹೊರಗಿನಿಂದ ಬಂದ ಇತರೆ ರಾಜ್ಯಗಳ ಪೊಲೀಸರು ಕೆಲವೇ ದಿನ ಮಾತ್ರ ಇಲ್ಲಿರುತ್ತಾರೆ. ನೀವು ಯಾವುದೇ ತಪ್ಪು ಮಾಡಬೇಡಿ. ನಮಗೆ ದ್ರೋಹ ಮಾಡುವವರಿಗೆ ಸೂಕ್ತವಾದ ಉತ್ತರವನ್ನು ನೀಡುತ್ತೇವೆ ಎಂದರು.
ಪಶ್ಚಿಮ ಬಂಗಾಳದಲ್ಲಿ ಒಟ್ಟು 8 ಹಂತದಲ್ಲಿ ಚುನಾವಣೆ ನಡೆಯಲಿದ್ದು, ಈಗಾಗಲೇ ಮೊದಲನೇ ಹಂತದ ಚುನಾವಣೆ ಮುಗಿದಿದೆ.












Click it and Unblock the Notifications