"ಸಿಲಿಂಡರ್ ಬೆಲೆ ಏರಿಸಿದ ಸರ್ಕಾರ ಮೊದಲ ದೆಹಲಿಯಲ್ಲಿ ಪರಿವರ್ತನೆ ತರಲಿ": ದೀದಿ
ಕೋಲ್ಕತ್ತಾ, ಮಾರ್ಚ್.07: ಪಶ್ಚಿಮ ಬಂಗಾಳದಲ್ಲಿ ಬಿಜೆಪಿ ನಾಯಕರ ಏಟಿಗೆ ಎದುರೇಟು ನೀಡುವುದಕ್ಕೆ ನಾವೂ ಸದಾಸಿದ್ಧರಾಗಿ ಇರುತ್ತೇವೆ ಎಂದು ತೃಣಮೂಲ ಕಾಂಗ್ರೆಸ್ ಪಕ್ಷದ ಮುಖ್ಯಸ್ಥೆ ಮಮತಾ ಬ್ಯಾನರ್ಜಿ ಸವಾಲು ಹಾಕಿದ್ದಾರೆ.
ಪಶ್ಚಿಮ ಬಂಗಾಳ ವಿಧಾನಸಭಾ ಚುನಾವಣೆ ಹಿನ್ನೆಲೆ ಪ್ರಧಾನಮಂತ್ರಿ ನರೇಂದ್ರ ಮೋದಿ ಪ್ರಚಾರದ ದಿನವೇ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರು ಸಿಲಿಗುರಿಯಲ್ಲಿ ಅಬ್ಬರದ ಪ್ರಚಾರ ನಡೆಸಿದರು. ಎಲ್ ಪಿಜಿ ಸಿಲಿಂಡರ್, ಪೆಟ್ರೋಲ್ ಮತ್ತು ಡೀಸೆಲ್ ಬೆಲೆ ಏರಿಕೆಗೆ ಸಂಬಂಧಿಸಿದಂತೆ ಬಿಜೆಪಿ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದರು.
"ಚುನಾವಣಾ ಗೆಲ್ಲುವುದಕ್ಕಾಗಿ ಬಿಜೆಪಿಯವರು ಒಂದು ವೇಳೆ ಹಣದ ಆಮಿಷವನ್ನು ಒಡ್ಡಿದರೆ, ನೀವು ಅವರಿಂದ ಹಣವನ್ನು ತೆಗೆದುಕೊಳ್ಳಿ. ಆದರೆ ನಿಮ್ಮ ಅಮೂಲ್ಯವಾದ ಮತವನ್ನು ತೃಣಮೂಲ ಕಾಂಗ್ರೆಸ್ ಪಕ್ಷಕ್ಕೆ ನೀಡಿರಿ" ಎಂದು ಮಮತಾ ಬ್ಯಾನರ್ಜಿ ಕರೆ ನೀಡಿದ್ದಾರೆ.
ಮಹಿಳಾ ಸುರಕ್ಷತೆ ಬಗ್ಗೆ ಪ್ರಧಾನಿ ಹೇಳಿಕೆಗೆ ತಿರುಗೇಟು
ಕೇಂದ್ರ ಸರ್ಕಾರವು ಮೊದಲು ನವದೆಹಲಿಯಲ್ಲಿ ಪರಿವರ್ತನೆ ಮಾಡಬೇಕೇ ವಿನಃ ಪಶ್ಚಿಮ ಬಂಗಾಳದಲ್ಲಿ ಅಲ್ಲ. ಪ್ರಧಾನಮಂತ್ರಿ ನರೇಂದ್ರ ಮೋದಿಯವರು ಪಶ್ಚಿಮ ಬಂಗಾಳದಲ್ಲಿ ಮಹಿಳೆಯರಿಗೆ ಸುರಕ್ಷತೆ ಇಲ್ಲ ಎಂದು ಹೇಳುತ್ತಾರೆ. ಆದರೆ ಉತ್ತರ ಪ್ರದೇಶ, ಬಿಹಾರ ಮತ್ತು ಇತರೆ ರಾಜ್ಯಗಳನ್ನೊಮ್ಮೆ ನೋಡಿ. ಆ ರಾಜ್ಯಗಳಿಗೆ ಹೋಲಿಸಿದರೆ ಬಂಗಾಳದಲ್ಲಿ ಮಹಿಳೆಯರಿಗೆ ಹೆಚ್ಚಿನ ಸುರಕ್ಷತೆಯಿದೆ" ಎಂದು ಮಮತಾ ಬ್ಯಾನರ್ಜಿ ತಿಳಿಸಿದ್ದಾರೆ.
ಪಶ್ಚಿಮ ಬಂಗಾಳ ವಿಧಾನಸಭಾ ಚುನಾವಣಾ ದಿನಾಂಕ:
4 ರಾಜ್ಯ, 1 ಕೇಂದ್ರಾಡಳಿತ ಪ್ರದೇಶದಲ್ಲಿ ಚುನಾವಣೆ ದಿನಾಂಕ
ಭಾರತದ ನಾಲ್ಕು ರಾಜ್ಯ, ಒಂದು ಕೇಂದ್ರಾಡಳಿತ ಪ್ರದೇಶದಲ್ಲಿ ವಿಧಾನಸಭೆಗೆ ಮಾರ್ಚ್.27ರಿಂದ ಮತದಾನ ಆರಂಭವಾಗಲಿದೆ. ಪಶ್ಚಿಮ ಬಂಗಾಳದಲ್ಲಿ ಎಂಟು ಹಂತಗಳಲ್ಲಿ ಚುನಾವಣೆ ನಡೆಯಲಿದ್ದು, ಮಾರ್ಚ್.27, ಏಪ್ರಿಲ್.1, ಏಪ್ರಿಲ್.6, ಏಪ್ರಿಲ್.10, ಏಪ್ರಿಲ್.17, ಏಪ್ರಿಲ್.22, ಏಪ್ರಿಲ್.26 ಮತ್ತು ಏಪ್ರಿಲ್.29ರಂದು ಮತದಾನ ನಡೆಯಲಿದೆ. ಚುನಾವಣೆಯ ಅಂತಿಮ ಫಲಿತಾಂಶ ಮೇ.2ರಂದು ಹೊರ ಬೀಳಲಿದೆ.