ಕೊರೊನಾ ವೈರಸ್: ರಾಹುಲ್ ಗಾಂಧಿಗೆ ಸೀನಿಯರ್ ಎಂದಿದ್ದೇಕೆ ಆ ಮಿನಿಸ್ಟರ್?
ನವದೆಹಲಿ, ಫೆಬ್ರವರಿ.13: ಕೊರೊನಾ ವೈರಸ್ ಸೋಂಕನ್ನು ನಿಯಂತ್ರಿಸುವ ಬಗ್ಗೆ ಕೇಂದ್ರ ಸರ್ಕಾರವು ಸೂಕ್ತ ಕ್ರಮಗಳನ್ನು ತೆಗೆದುಕೊಂಡಿಲ್ಲ ಎಂದು ಆರೋಪಿಸಿದ ವಯನಾಡು ಸಂಸದ ರಾಹುಲ್ ಗಾಂಧಿಗೆ ಕೇಂದ್ರ ಆರೋಗ್ಯ ಸಚಿವ ಹರ್ಷವರ್ಧನ್ ತಿರುಗೇಟು ಕೊಟ್ಟಿದ್ದಾರೆ.
ಕೊರೊನಾ ವೈರಸ್ ಗೆ ಸಂಬಂಧಿಸಿದಂತೆ ಕೇಂದ್ರ ಸರ್ಕಾರವು ಎಲ್ಲ ರೀತಿಯ ಮುನ್ನೆಚ್ಚರಿಕೆ ಕ್ರಮಗಳನ್ನು ತೆಗೆದುಕೊಂಡಿದೆ. ಕಾಂಗ್ರೆಸ್ ಹಿರಿಯ ಮುಖಂಡ ಹಾಗೂ ಪ್ರಮುಖ ರಾಜಕಾರಣಿಯ ಪುತ್ರನ ಹೇಳಿಕೆ ಬಗ್ಗೆ ನಾನು ಟೀಕೆ ಮಾಡುವುದಕ್ಕೆ ಹೋಗುವುದಿಲ್ಲ ಎನ್ನುವ ಮೂಲಕ ರಾಹುಲ್ ಗಾಂಧಿ ಟ್ವೀಟ್ ಗೆ ಲೇವಡಿ ಮಾಡಿದ್ದಾರೆ.
ಭಾರತಕ್ಕೆ ಕೊರಾನಾ ವೈರಸ್ ಹೊತ್ತು ತಂದ ಬ್ಯಾಂಕಾಕ್ ಬಳಗ
ಬುಧವಾರವಷ್ಟೇ ಕೇಂದ್ರ ಸರ್ಕಾರದ ವಿರುದ್ಧ ಟ್ವೀಟ್ ಮಾಡಿದ್ದ ಸಂಸದ ರಾಹುಲ್ ಗಾಂಧಿ, ಜಾಗತಿಕ ಮಟ್ಟದಲ್ಲಿ ತಲ್ಲಣ ಸೃಷ್ಟಿಸಿರುವ ಸೋಂಕಿನ ಬಗ್ಗೆ ಸರ್ಕಾರವು ಗಂಭೀರವಾಗಿ ತೆಗೆದುಕೊಂಡಿಲ್ಲ ಎಂದು ಆರೋಪ ಮಾಡಿದ್ದರು.
ಗುರುವಾರ ಕೋಲ್ಕತ್ತಾದ ನೇತಾಜಿ ಸುಭಾಶ್ ಚಂದ್ರ ಭೋಸ್ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಬ್ಯಾಂಕಾಕ್ ನಿಂದ ಆಗಮಿಸಿದ ಇಬ್ಬರು ಪ್ರಯಾಣಿಕರಿಗೆ ಸೋಂಕು ತಗಲಿದ್ದು ಸ್ಪಷ್ಟವಾಗಿದ್ದು, ಖಾಸಗಿ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ. ದೆಹಲಿ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಬ್ಯಾಕಾಂಕ್ ನಿಂದ ಆಗಮಿಸಿದ ವ್ಯಕ್ತಿಯಲ್ಲೂ ಸೋಂಕು ಪತ್ತೆಯಾಗಿರುವ ಬಗ್ಗೆ ಅನುಮಾನ ವ್ಯಕ್ತವಾಗಿದೆ. ಇದುವರೆಗೂ ಭಾರತದಲ್ಲಿ 2 ಲಕ್ಷ ಪ್ರಯಾಣಿಕರನ್ನು ಕೊರೊನಾ ವೈರಸ್ ವೈದ್ಯಕೀಯ ತಪಾಸಣೆಗೆ ಒಳಪಡಿಸಲಾಗಿದೆ ಎಂದು ತಿಳಿದು ಬಂದಿದೆ.
ಚೀನಾದಲ್ಲಿ ಮರಣ ಮೃದಂಗ ಬಾರಿಸುತ್ತಿರುವ ಕೊರೊನಾ ವೈರಸ್ ನಿಯಂತ್ರಣಕ್ಕೆ ಅಗತ್ಯವಿರುವ ವೈದ್ಯಕೀಯ ಸಾಮಗ್ರಿಗಳನ್ನು ಭಾರತದ ಕೇಂದ್ರ ಸರ್ಕಾರವೇ ಸರಬರಾಜು ಮಾಡುತ್ತಿದೆ ಎಂದು ಕೇಂದ್ರ ಆರೋಗ್ಯ ಸಚಿವ ಹರ್ಷವರ್ಧನ್ ತಿಳಿಸಿದ್ದಾರೆ.